ಬಹಿರಂಗ
ಧ್ವಂಸ ಕಾರ್ಯಾಚರಣೆ ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ
ದಂಗೆಕೋರರನ್ನು ಸಾಮೂಹಿಕ ಶಿಕ್ಷೆಗೊಳಪಡಿಸುವ ಧ್ವಂಸ ಕಾರ್ಯಾಚರಣೆ ಸಂವಿಧಾನಬದ್ಧವಲ್ಲ.
- ಮೂಲ : ಪ್ರಭಾಶ್ ರಂಜನ್ ಮತ್ತು ಅಮನ್ ಕುಮಾರ್, ಅನುವಾದ : ನಾ ದಿವಾಕರ
ಈ ವರ್ಷದ ರಾಮನವಮಿ ಆಚರಣೆಯ ಮೆರವಣಿಗೆಗಳ ಸಂದರ್ಭದಲ್ಲಿ ಮಧ್ಯಪ್ರದೇಶದ ಕರ್ಗೋನ್ ಸೇರಿದಂತೆ ದೇಶದ ಹಲವೆಡೆ ಕೋಮು ಸಂಘರ್ಷ ಏರ್ಪಟ್ಟಿತ್ತು. ಮಧ್ಯಪ್ರದೇಶ ಸರ್ಕಾರವು ಈ ಗಲಭೆಗಳಲ್ಲಿ ಪಾಲ್ಗೊಂಡಿದ್ದವರ ಮನೆಗಳನ್ನು ಧ್ವಂಸ ಮಾಡುವಂತೆ ಅಧಿಕೃತವಾಗಿ ಆದೇಶ ಹೊರಡಿಸಿತ್ತು.
ಈ ಕಟ್ಟಡ ಧ್ವಂಸ ಕಾರ್ಯಾಚರಣೆಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಕಟ್ಟಡಗಳ ವಿರುದ್ಧ ನಡೆಸಲಾಯಿತು ಎಂದು ಮಧ್ಯಪ್ರದೇಶ ಸರ್ಕಾರ ಹೇಳಿದೆ. ಆದರೆ ಈ ಧ್ವಂಸ ಕಾರ್ಯಾಚರಣೆಯನ್ನು ಕೋಮು ದಂಗೆಗಳ ತರುವಾಯ ಒಂದು ನಿರ್ದಿಷ್ಟ ಕೋಮಿಗೆ ಸೇರಿದ ದಂಗೆಕೋರರ ವಿರುದ್ಧ, ಸ್ವೇಚ್ಚಾನುಸಾರ ಕೈಗೊಳ್ಳಲಾಗಿರುವುದನ್ನು ಗಮನಿಸಿದರೆ, ಈ ಕಾರ್ಯಾಚರಣೆಯ ಉದ್ದೇಶ ಸಾಮೂಹಿಕ ಶಿಕ್ಷೆಗೊಳಪಡಿಸುವುದೇ ಆಗಿದೆ ಎನ್ನುವುದು ಸ್ಪಷ್ಟ.
ಪ್ರಭುತ್ವದ ಕ್ರೂರ ಬಲದ ಸಂಕೇತವೇ ಆಗಿರುವ ಈ ಧ್ವಂಸ ಮಾಡುವ ಯಂತ್ರಗಳು ಕೇವಲ ಮನೆಗಳನ್ನು, ಕಟ್ಟಡಗಳನ್ನು ಮಾತ್ರವೇ ಧ್ವಂಸ ಮಾಡುತ್ತಿಲ್ಲ, ಬದಲಾಗಿ ಸಾಂವಿಧಾನಿಕ ನಿಯಮಗಳನ್ನೂ, ಕಾನೂನು ಕಟ್ಟಳೆಗಳನ್ನೂ ಧ್ವಂಸ ಮಾಡುತ್ತಿವೆ. ಕ್ಷಿಪ್ರಗತಿಯಲ್ಲಿ ನ್ಯಾಯ ವಿತರಣೆ ಮಾಡುವ ಈ ಕ್ರೂರ ಪದ್ಧತಿ ಆರಂಭವಾದದ್ದು ಉತ್ತರಪ್ರದೇಶದಲ್ಲಿ.
2019ರ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆಗಳು ತೀವ್ರಗೊಂಡ ಸಂದರ್ಭದಲ್ಲಿ ಉತ್ತರ ಪ್ರದೇಶ ಸರ್ಕಾರವು ಯಾವುದೇ ಸಮೂಹ ಗಲಭೆಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಉಂಟಾದರೆ ಅದರ ನಷ್ಟವನ್ನು ದಂಗೆಕೋರರಿಂದಲೇ ವಸೂಲಿ ಮಾಡುವ ಆದೇಶವೊಂದನ್ನು ಹೊರಡಿಸಿತ್ತು ಈ ನಿಯಮವನ್ನು ಸಾಂಸ್ಥೀಕರಿಸುವ ಸಲುವಾಗಿಯೇ ಉತ್ತರಪ್ರದೇಶ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ವಸೂಲಾತಿ ಕಾಯ್ದೆ 2020ನ್ನು ಜಾರಿಗೊಳಿಸಲಾಯಿತು.
ಈ ರೀತಿಯ ಪ್ರಭುತ್ವದ ಕ್ರೂರ ಬಲ ಪ್ರಯೋಗವು ಅನೇಕ ಸ್ಥಳೀಯ ಕಾನೂನುಗಳ ಉಲ್ಲಂಘನೆಯಾಗುತ್ತದೆ ಎಂದು ಈಗಾಗಲೇ ಹಲವು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಸೂಕ್ತ ಕಾನೂನು ಪ್ರಕ್ರಿಯೆಯನ್ನು ಅನುಸರಿಸದೆ, ಕಾನೂನು ಸಮ್ಮತಿ ಪಡೆಯದೆ, ಈ ರೀತಿ ಮನೆಗಳನ್ನು ಧ್ವಂಸ ಮಾಡುವುದು ಭಾರತವು ಒಪ್ಪಿರುವಂತಹ ಹಲವು ಅಂತರರಾಷ್ಟ್ರೀಯ ಕಾನೂನುಗಳ ಉಲ್ಲಂಘನೆಯಾಗುತ್ತದೆ ಎನ್ನುವುದನ್ನು ಗಮನಿಸಬೇಕಿದೆ.
ಸಮರ್ಪಕ ವಸತಿಯ ಹಕ್ಕು
ವಸತಿ ಅಥವಾ ಸೂರಿನ ಹಕ್ಕು ಭಾರತೀಯ ಸಂವಿಧಾನದ ಅನುಚ್ಚೇದ 21ರ ಅನ್ವಯ ಮೂಲಭೂತ ಹಕ್ಕು ಎಂದೇ ಪರಿಗಣಿಸಲ್ಪಟ್ಟಿದ್ದು, ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನು ಚೌಕಟ್ಟಿನಲ್ಲೂ ಸಹ ಇದನ್ನು ಮೂಲಭೂತ ಹಕ್ಕು ಎಂದೇ ಪರಿಗಣಿಸಲಾಗುತ್ತದೆ. ಈ ಅಂತರರಾಷ್ಟ್ರೀಯ ಕಾನೂನು ನಿಯಮಗಳಿಗೆ ಭಾರತವೂ ಒಳಪಟ್ಟಿರುತ್ತದೆ. ಉದಾಹರಣೆಗೆ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆ (ಯುಡಿಹೆಚ್ಆರ್)ಯ ಅನುಚ್ಚೇದ 25ರ ಅನ್ವಯ “ ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಕುಟುಂಬದೊಡನೆ, ಸಮರ್ಪಕ ಆಹಾರ, ವಸ್ತ್ರ ವಸತಿ ಮತ್ತು ಆರೋಗ್ಯ ಸೇವೆಯನ್ನೊಳಗೊಂಡಂತೆ ಆರೋಗ್ಯಕರವಾದ, ಯೋಗಕ್ಷೇಮದ ಜೀವನಮಟ್ಟವನ್ನು ಕಾಪಾಡಿಕೊಳ್ಳುವ ಹಕ್ಕು ಇರುತ್ತದೆ ”.
ಇದೇ ರೀತಿ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಅಂತರರಾಷ್ಟ್ರೀಯ ಒಡಂಬಡಿಕೆ(ಐಸಿಇಎಸ್ಸಿಆರ್) ಅನುಚ್ಚೇದ 11.1ರಲ್ಲಿ “ ಪ್ರತಿಯೊಬ್ಬ ವ್ಯಕ್ತಿಯೂ ತನಗಾಗಿ ಮತ್ತು ತನ್ನ ಕುಟುಂಬದವರಿಗಾಗಿ ಸಮರ್ಪಕವಾದ ಆಹಾರ, ಆರೋಗ್ಯ, ವಸ್ತ್ರ ಮತ್ತು ವಸತಿ ಸೌಲಭ್ಯಗಳನ್ನು ಹೊಂದಿರುವ ಜೀವನಮಟ್ಟವನ್ನು ಕಾಪಾಡಿಕೊಳ್ಳುವ ಹಕ್ಕು ಇರುವುದೇ ಅಲ್ಲದೆ, ತನ್ನ ಜೀವನಮಟ್ಟವನ್ನು ನಿರಂತರವಾಗಿ ಉತ್ತಮಪಡಿಸಿಕೊಳ್ಳುವ ಹಕ್ಕು ಸಹ ಇರುತ್ತದೆ ” ಎಂದು ಹೇಳಲಾಗಿದೆ. ಇದೇ ಅನುಚ್ಚೇದದ ಅಡಿಯಲ್ಲಿ ಪ್ರತಿಯೊಂದು ದೇಶವೂ “ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ” ಎಂದೂ ಹೇಳಲಾಗಿದ್ದು, ಸಮರ್ಪಕ ವಸತಿ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ವ್ಯಕ್ತಿಗಳ ಹಕ್ಕುಗಳನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಹೇಳಲಾಗಿದೆ.
ಅನುಚ್ಚೇದ 4ರ ಅನ್ವಯ, ಐಸಿಇಎಸ್ಸಿಆರ್ ಒಡಂಬಡಿಕೆಯಲ್ಲಿ ಮಾನ್ಯ ಮಾಡಲಾಗಿರುವ ಹಕ್ಕುಗಳನ್ನು ಯಾವುದೇ ದೇಶದ ಸರ್ಕಾರಗಳು ಅಮಾನ್ಯ ಮಾಡಬೇಕಾದಲ್ಲಿ, ಸರ್ಕಾರಗಳು ವಿಧಿಸುವ ನಿರ್ಬಂಧಗಳು ಈ ಹಕ್ಕುಗಳ ಮೂಲ ಲಕ್ಷಣಗಳಿಗೆ ಪೂರಕವಾಗಿರಬೇಕಾಗುತ್ತದೆ ಮತ್ತು ಸಮಾಜದ ಸಮಗ್ರ ಒಳಿತಿನ ಉದ್ದೇಶವನ್ನು ಹೊಂದಿರಬೇಕಾಗುತ್ತದೆ. ಆದಾಗ್ಯೂ ಈ ಒಡಂಬಡಿಕೆಯಲ್ಲಿ ಸ್ವೀಕೃತವಾಗಿರುವ ಯಾವುದೇ ಹಕ್ಕುಗಳಿಗೆ ನಿರ್ಬಂಧ ಹೇರುವುದು, ಅದರಲ್ಲೂ ವಸತಿ ಹಕ್ಕಿನ ಮೇಲೆ ನಿರ್ಬಂಧ ಹೇರುವುದು, ಮೂಲತಃ ಈ ಹಕ್ಕುಗಳ ಉಲ್ಲಂಘನೆಯೇ ಆಗುತ್ತದೆ. ಈ ಅಂಶವನ್ನು ಒಡಂಬಡಿಕೆಯ ಅನುಚ್ಚೇದ 5ರಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.
ಅಷ್ಟೇ ಅಲ್ಲದೆ ಯಾವುದೇ ವ್ಯಕ್ತಿಯ ಖಾಸಗಿ ಆಸ್ತಿಯ ಹಕ್ಕುಗಳಲ್ಲಿ ಸ್ವೇಚ್ಚಾನುಸಾರದಿಂದ ಹಸ್ತಕ್ಷೇಪ ಮಾಡುವುದು ಅಂತರರಾಷ್ಟ್ರೀಯ ಕಾನೂನುಗಳ ಉಲ್ಲಂಘನೆಯಾಗುತ್ತದೆ. ಉದಾಹರಣೆಗೆ ಯುಡಿಹೆಚ್ಆರ್ ಒಡಂಬಡಿಕೆಯ ಅನುಚ್ಚೇದ 12ರಲ್ಲಿ “ ಯಾವುದೇ ವ್ಯಕ್ತಿಯ ವ್ಯಕ್ತಿಗತ ಅಥವಾ ಕೌಟುಂಬಿಕ ಖಾಸಗಿತನ, ವಸತಿ ಅಥವಾ ಸಂವಹನ ಪ್ರಕ್ರಿಯೆಯಲ್ಲಿ ಸ್ವೇಚ್ಚಾನುಸಾರದ ಹಸ್ತಕ್ಷೇಪ ಮಾಡುವಂತಿಲ್ಲ ಅಥವಾ ಆತನ/ಆಕೆಯ ಗೌರವ ಮತ್ತು ಘನತೆಯ ಮೇಲಿನ ದಾಳಿ ಮಾಡುವಂತಿಲ್ಲ” ಎಂದು ಹೇಳಲಾಗಿದೆ. “ ಇಂತಹ ಯಾವುದೇ ಹಸ್ತಕ್ಷೇಪದ ವಿರುದ್ಧ ಅಥವಾ ಆಕ್ರಮಣದ ವಿರುದ್ಧ ಕಾನೂನು ರಕ್ಷಣೆ ಪಡೆಯುವ ಹಕ್ಕು ಪ್ರತಿಯೊಬ್ಬ ವ್ಯಕ್ತಿಗೂ ಇರುತ್ತದೆ ” ಎಂದು ಅನುಚ್ಚೇದ 12ರಲ್ಲಿ ಹೇಳಲಾಗಿದೆ.
ಇದೇ ಹಕ್ಕುಗಳನ್ನು ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಅಂತರರಾಷ್ಟ್ರೀಯ ಒಡಂಬಡಿಕೆ (ಐಸಿಸಿಪಿಆರ್)ಯ ಅನುಚ್ಚೇದ 17ರಲ್ಲಿ ಮಾನ್ಯ ಮಾಡಲಾಗಿದ್ದು , ಈ ಅನುಚ್ಚೇದದ ಅನ್ವಯ ಪ್ರತಿಯೊಬ್ಬ ವ್ಯಕ್ತಿಯೂ ವೈಯಕ್ತಿಕವಾಗಿ ಅಥವಾ ಇತರರ ಜೊತೆಗೂಡಿ ತನ್ನದೇ ಆದ ಆಸ್ತಿಯನ್ನು ಹೊಂದುವ ಹಕ್ಕು ಹೊಂದಿರುತ್ತಾನೆ ಹಾಗೂ ಯಾವುದೇ ವ್ಯಕ್ತಿಯ ಆಸ್ತಿಯ ಹಕ್ಕನ್ನು ಸ್ವೇಚ್ಚಾನುಸಾರದಿಂದ ಕಸಿದುಕೊಳ್ಳಲಾಗುವುದಿಲ್ಲ. ಈ ದೃಷ್ಟಿಯಿಂದ ನೋಡಿದಾಗ ವ್ಯಕ್ತಿಗಳ ಆಸ್ತಿಯ ಹಕ್ಕುಗಳಲ್ಲಿ ಸ್ವೇಚ್ಚಾನುಸಾರ ಹಸ್ತಕ್ಷೇಪ ಮಾಡುವುದು ಐಸಿಸಿಪಿಆರ್ ಒಡಂಬಡಿಕೆಯ ಉಲ್ಲಂಘನೆಯೇ ಆಗುತ್ತದೆ.
ಬಲಾತ್ಕಾರದ ಎತ್ತಂಗಡಿಗಳು
ಸಂಯುಕ್ತ ರಾಷ್ಟ್ರಗಳ ಮಾನವ ಹಕ್ಕುಗಳ ಕಚೇರಿ ಎಂದೇ ಪರಿಗಣಿಸಲ್ಪಡುವ ಮಾನವ ಹಕ್ಕುಗಳ ಉನ್ನತ ಆಯುಕ್ತರ ಕಚೇರಿ (ಓಹೆಚ್ಸಿಹೆಚ್ಆರ್) ಅಂತರರಾಷ್ಟ್ರೀಯ ಕಾನೂನುಗಳ ಅನ್ವಯ ಒದಗಿಸಲಾಗುವ ಮಾನವ ಹಕ್ಕುಗಳನ್ನು ರಕ್ಷಿಸಲೆಂದೇ ಸ್ಥಾಪಿಸಲಾಗಿರುವ ಒಂದು ಸಂಸ್ಥೆ. ಈ ಸಂಸ್ಥೆಯು ಸಮರ್ಪಕ ವಸತಿ ಸೌಕರ್ಯದ ಬಗ್ಗೆ ಸೂಕ್ತವಾದ ನಿಯಮಗಳನ್ನು ಸಹ ರೂಪಿಸಿದೆ. ಸಂಯುಕ್ತ ರಾಷ್ಟ್ರಗಳ ಮಾನವ ಹಕ್ಕುಗಳ ಕಚೇರಿಯ ನಿಯಮಗಳ ಅನ್ವಯ, ಯಾವುದೇ ವ್ಯಕ್ತಿಯ ಸಮರ್ಪಕ ವಸತಿಯ ಹಕ್ಕು ರಕ್ಷಣೆ ಎಂದರೆ ಬಲಾತ್ಕಾರದ ಎತ್ತಂಗಡಿ ಅಥವಾ ಉಚ್ಚಾಟನೆಯಿಂದ ರಕ್ಷಣೆ ಪಡೆಯುವುದೇ ಆಗಿರುತ್ತದೆ.
ಐಸಿಇಎಸ್ಸಿಆರ್ ಒಡಂಬಡಿಕೆಯ ಅನುಚ್ಚೇದ 11.1ರಲ್ಲಿ “ ಬಲಾತ್ಕಾರದ ಎತ್ತಂಗಡಿ ಅಥವಾ ಉಚ್ಚಾಟನೆ ಎನ್ನುವುದು, ವ್ಯಕ್ತಿ, ಕುಟುಂಬ ಅಥವಾ ಸಮುದಾಯಗಳನ್ನು ಅವರು ನೆಲೆಸಿರುವ ಮನೆಗಳಿಂದ ಅಥವಾ ಭೂಮಿಯಿಂದ, ಯಾವುದೇ ಕಾನೂನು ರಕ್ಷಣೆ ಅಥವಾ ನೆರವು ಇಲ್ಲದೆಯೇ, ಶಾಶ್ವತವಾಗಿ ಬೇರ್ಪಡಿಸುವುದೇ ಆಗಿರುತ್ತದೆ ”. ಸಮರ್ಪಕ ವಸತಿಯ ಹಕ್ಕು ಎಂದರೆ ಯಾವುದೇ ವ್ಯಕ್ತಿಯ ವಸತಿ, ಖಾಸಗಿತನ, ಕುಟುಂಬದ ಹಕ್ಕುಗಳು ಸ್ವೇಚ್ಚಾನುಸಾರದ ಹಸ್ತಕ್ಷೇಪದಿಂದ ಮುಕ್ತವಾಗಿರುವುದು ಎಂದೇ ಪರಿಗಣಿಸಬೇಕಾಗುತ್ತದೆ.
ಮಧ್ಯಪ್ರದೇಶ ಸರ್ಕಾರವು ಆರೋಪಿತ ದಂಗೆಕೋರರ ಮನೆಗಳ ಮೇಲೆ ಧ್ವಂಸ ಕಾರ್ಯಾಚರಣೆ ನಡೆಸಿರುವುದು ಬಲಾತ್ಕಾರದ ಎತ್ತಂಗಡಿಯೇ ಆಗುತ್ತದೆ. ಹಾಗೆಯೇ ವ್ಯಕ್ತಿಯ ವಸತಿ ಹಕ್ಕುಗಳಲ್ಲಿ ಸ್ವೇಚ್ಚಾನುಸಾರದ ಹಸ್ತಕ್ಷೇಪ ಮಾಡಿದಂತಾಗುವುದರಿಂದ ಇದು ಐಸಿಇಎಸ್ಸಿಆರ್ ಒಡಂಬಡಿಕೆಯ ಅನುಚ್ಚೇದ 11.1ರ ಉಲ್ಲಂಘನೆಯೇ ಆಗುತ್ತದೆ. ಈ ಎತ್ತಂಗಡಿಯ ಕಾರ್ಯಾಚರಣೆ ಕಾನೂನು ಪ್ರಕಾರ ಕೈಗೊಳ್ಳಲಾಗಿದೆ ಮತ್ತು ಮಾನವ ಹಕ್ಕು ಒಡಂಬಡಿಕೆಗಳ ಅನ್ವಯ ಕೈಗೊಳ್ಳಲಾಗಿದೆ ಎಂದು ನಿರೂಪಿಸಿದಲ್ಲಿ ಮಾತ್ರ ಈ ಧ್ವಂಸ ಕಾರ್ಯಾಚರಣೆಯನ್ನು ಅಂತರರಾಷ್ಟ್ರೀಯ ಕಾನೂನುಗಳಡಿ ಸಮರ್ಥಿಸಿಕೊಳ್ಳಲು ಸಾಧ್ಯ. ಹಾಗೆಯೇ ರಾಜ್ಯ ಸರ್ಕಾರಗಳ ಈ ಕಾರ್ಯಾಚರಣೆ ಅವಶ್ಯಕವಾಗಿತ್ತೇ ಮತ್ತು ಪರಿಸ್ಥಿತಿಗೆ ಪೂರಕವಾಗಿತ್ತೇ ಎನ್ನುವುದೂ ಮುಖ್ಯವಾಗುತ್ತದೆ.
ಆದರೆ ಈ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿರುವ ಸಮಯವನ್ನು ಗಮನಿಸಿದರೆ ಈ ಬಲಾತ್ಕಾರದ ಎತ್ತಂಗಡಿಯನ್ನು ಕಾನೂನಾತ್ಮಕವಾಗಿ ಸಮರ್ಥಿಸಿಕೊಳ್ಳಲಾಗುವುದಿಲ್ಲ. ಒಂದು ವೇಳೆ ಈ ಧ್ವಂಸ ಕಾರ್ಯಾಚರಣೆಗೆ ಅಕ್ರಮ ಒತ್ತುವರಿಯೇ ಕಾರಣ ಎಂದಾದಲ್ಲಿ, ಕೋಮು ದಂಗೆಗಳು ಸಂಭವಿಸಿದ ದಿನದಂದು ಅಧಿಕಾರಿಗಳು ಮುನ್ಸೂಚನೆ ಅಥವಾ ನೋಟಿಸ್ ನೀಡಿದ್ದರೇ ಎಂದು ಗಮನಿಸಬೇಕಾಗುತ್ತದೆ. ಅಥವಾ ಮುಂಚಿತವಾಗಿಯೇ ಎತ್ತಂಗಡಿಯ ಆದೇಶವನ್ನು ಹೊಂದಿದ್ದರೇ ಎಂದು ಪ್ರಶ್ನಿಸಬೇಕಾಗುತ್ತದೆ. ಅಥವಾ ದಂಗೆಗಳ ನಂತರವೇ ಈ ನಿರ್ಧಾರವನ್ನು ಕೈಗೊಳ್ಳಲಾಯಿತೇ ? ಈ ಎತ್ತಂಗಡಿಯ ಆದೇಶ ಕೇವಲ ಮುಸ್ಲಿಂ ಸಮುದಾಯಕ್ಕೆ ಮಾತ್ರವೇ ಸೀಮಿತವಾಗಿದೆಯೇ ? ಈ ಪ್ರಶ್ನೆಗಳೂ ಉದ್ಭವಿಸುತ್ತವೆ.
ನ್ಯಾಯಾಂಗದ ನಿಯಮಗಳು
ಮೇಲಾಗಿ, ಮೇಲೆ ಉಲ್ಲೇಖಿಸಲಾದ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನು, ಒಡಂಬಡಿಕೆಗಳನ್ನು ಭಾರತದ ಸರ್ವೋಚ್ಚ ನ್ಯಾಯಾಲಯವು ಭಾರತೀಯ ನ್ಯಾಯ ವ್ಯವಸ್ಥೆಯಲ್ಲೂ ಅಳವಡಿಸಿದೆ. ಬಚ್ಚನ್ ಸಿಂಗ್ ಮತ್ತು ಪಂಜಾಬ್ ರಾಜ್ಯದ ಪ್ರಕರಣ, ವಿಶಾಖ ಮತ್ತು ರಾಜಸ್ತಾನ ಸರ್ಕಾರದ ಪ್ರಕರಣ ಮತ್ತು ಇತ್ತೀಚಿನ ಪುಟ್ಟಸ್ವಾಮಿ ಮತ್ತು ಒಕ್ಕೂಟ ಸರ್ಕಾರ ಪ್ರಕರಣಗಳ ಸಂದರ್ಭದಲ್ಲಿ ಸುಪ್ರೀಂಕೋರ್ಟ್ “ ಭಾರತದ ಸಂವಿಧಾನದಲ್ಲಿ ನೀಡಲಾಗಿರುವ ಮೂಲಭೂತ ಹಕ್ಕುಗಳನ್ನು ವ್ಯಾಖ್ಯಾನ ಮಾಡುವ ಸಂದರ್ಭದಲ್ಲಿ ಈ ಹಕ್ಕುಗಳನ್ನು ಅಂತರರಾಷ್ಟ್ರೀಯ ಮಾನವ ಹಕ್ಕು ಕಾನೂನುಗಳ ವ್ಯಾಪ್ತಿಯೊಳಗೆ ಅಳವಡಿಸಿ ವ್ಯಾಖ್ಯಾನಕ್ಕೊಳಪಡಿಸಬೇಕು ” ಎಂದು ಹೇಳಿದೆ.
ಭಾರತದ ಸಾಂವಿಧಾನಿಕ ವ್ಯವಸ್ಥೆಯನ್ನು ಸಂರಕ್ಷಿಸುವ ಗುರುತರ ಜವಾಬ್ದಾರಿ ಹೊಂದಿರುವ ನ್ಯಾಯಾಂಗವು ಕಾರ್ಯಾಂಗ ಕೈಗೊಳ್ಳುತ್ತಿರುವ ಈ ಅನಿರ್ಬಂಧಿತ ಕಾರ್ಯಾಚರಣೆಯ ಮೇಲೆ ನಿರ್ಬಂಧಗಳನ್ನು ಹೇರಲು ಮುಂದಾಗಬೇಕಿದೆ. ರಾಷ್ಟ್ರೀಯವಾದಿ-ಜನಪ್ರಿಯ ರಾಜಕಾರಣದ ಸಂಕಥನಕ್ಕೆ ಪ್ರತಿಯಾಗಿ ನ್ಯಾಯಾಲಯಗಳು ಅಂತರರಾಷ್ಟ್ರೀಯ ಕಾನೂನುಗಳನ್ನು ಬಳಸಲು ಮುಂದಾಗಬೇಕಿದೆ.
ಕೃಪೆ : ದ ಹಿಂದೂ : 20-04-22
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ3 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ2 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

