ದಿನದ ಸುದ್ದಿ
14 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಸೌಲಭ್ಯ
ಸುದ್ದಿದಿನ,ಬೆಂಗಳೂರು : ಕಳೆದ ವರ್ಷ 7 ಲಕ್ಷ ರೈತರ ಮಕ್ಕಳು ವಿದ್ಯಾಸಿರಿ ಯೋಜನೆ ಲಾಭ ಪಡೆದಿದ್ದು, ಪ್ರಸ್ತುತ ವರ್ಷ ಎರಡು ಪಟ್ಟು ಈ ಯೋಜನೆಯ ಪ್ರಯೋಜನ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕು ಮುನುವಳ್ಳಿ ಗ್ರಾಮದಲ್ಲಿ ಸಿದ್ಧ ಉಡುಪು ತಯಾರಿಕಾ ಘಟಕದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ದುಡಿಯುವ ಕೈಗಳಳಿಗೆ ಬಲ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಜನರಿಗೆ ಉದ್ಯೋಗ ನೀಡುವ ಮೂಲಕ ಸ್ವಾವಲಂಬಿ ಬದುಕು ನಿರ್ಮಿಸಲು ಸರ್ಕಾರ ಬದ್ಧವಾಗಿದೆ.
ಹಾವೇರಿ ಜಿಲ್ಲೆಯ ಶಿಗ್ಗಾವಿ ಬಳಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಹಾವೇರಿಯಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದ್ದು, ಈಗಾಗಲೇ ಮತ್ತೊಂದು ಸುತ್ತಿನ ಸರ್ವೇ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಇದಕ್ಕೂ ಮುನ್ನ ಹುಬ್ಬಳ್ಳಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ದ್ವೇಷ ಭಾಷಣ ನಿಯಂತ್ರಿಸಲು ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು. ದ್ವೇಷ ಭಾಷಣ ವಿಶೇಷವಾಗಿ ಸಾಮಾಜಿಕ ಮಾಧ್ಯಮ ಜಾಲತಾಣಗಳಲ್ಲಿ ಹೆಚ್ಚಾಗುತ್ತಿದೆ. ಇದಕ್ಕೆ ನಿಯಂತ್ರಣ ತರಲು ನ್ಯಾಯಾಲಯದ ಆದೇಶಗಳನ್ನು ಮಾರ್ಗಸೂಚಿಗಳಂತೆ ಪಾಲಿಸಲಾಗುವುದು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243