ದಿನದ ಸುದ್ದಿ

ವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ

Published

on

ಸುದ್ದಿದಿನ,ಬೆಂಗಳೂರು:ಕೋಡಿಪಾಳ್ಯದಲ್ಲಿರುವ ವಿಶ್ವ ವೆಂಕಟೇಶ್ವರ ವಿದ್ಯಾಧಾನ ಕೇಂದ್ರದ ವಿರುದ್ಧ ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದಿಂದ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಿ ಸಂಸ್ಥೆಯ ಹೆಸರಿಗೆ ಧಕ್ಕೆ ತರುವ ಹುನ್ನಾರ ಕಳೆದ 3 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಗಂಭೀರ ಆರೋಪ ಮಾಡಿದೆ.

ಕೇವಲ 20 ವಿದ್ಯಾರ್ಥಿಗಳಿಂದ ಆರಂಭವಾದ ಈ ಸಂಸ್ಥೆಯು ಇಂದು ವಿವಿಐಎಸ್ ಶಾಲೆ, ಕೆಬಿಸಿ ಪಿಯು ಕಾಲೇಜು ಮತ್ತು ವಿವಿ ಪದವಿ ಕಾಲೇಜುಗಳನ್ನು ಹೊಂದಿದೆ. ಬಡ ಕೂಲಿ ಕಾರ್ಮಿಕರು ಮತ್ತು ವಲಸೆ ಕುಟುಂಬಗಳ 600ಕ್ಕೂ ಹೆಚ್ಚು ಮಕ್ಕಳು ಇಲ್ಲಿ ಕಡಿಮೆ ಶುಲ್ಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಪದವಿ ಕಾಲೇಜು ಆರಂಭಿಸಲು ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದ ಖಾಲಿ ಕಟ್ಟಡವನ್ನು 5 ವರ್ಷಗಳ ಅವಧಿಗೆ ಬಾಡಿಗೆಗೆ ಪಡೆಯಲಾಗಿತ್ತು. ವಿಠಲಗಿರಿಧಾಮದ ಮಠಾಧೀಶರಾದ ಶ್ರೀ ನಿರ್ಮಲಾನಂದ ಪುರಿ ಅವರು ಪ್ರತಿ ವರ್ಷ 5% ಬಾಡಿಗೆ ಹೆಚ್ಚಳದ ಷರತ್ತಿನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು.

ಸಂಸ್ಥೆಯ ಅಧ್ಯಕ್ಷರು ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ, ಖಾಲಿ ಇದ್ದ ದೊಡ್ಡ ಕೊಠಡಿಗಳಿಗೆ ವಿಭಜನೆ, ಬಾಗಿಲುಗಳನ್ನು ಅಳವಡಿಸಿ, ಫರ್ನಿಚರ್ ತುಂಬಿ ತರಗತಿಗಳನ್ನು ಆರಂಭಿಸಿದರು. ಕಳೆದ 7 ವರ್ಷಗಳಿಂದ ಈ ಕಟ್ಟಡದಲ್ಲಿಯೇ ತರಗತಿಗಳು ನಡೆಯುತ್ತಿದ್ದು, ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅದೇ ಮಠದ ಮತ್ತೊಂದು ಭಾಗವನ್ನು “ಟಾಮ್ ಅಂಡ್ ಜೆರ್ರಿ” ವಿಶೇಷ ಮಕ್ಕಳ ಶಾಲೆಗೆ ಬಾಡಿಗೆಗೆ ನೀಡಲಾಗಿದೆ.

ಆದರೆ ಕಳೆದ 3 ವರ್ಷಗಳಿಂದ ಶ್ರೀ ನಿರ್ಮಲಾನಂದ ಪುರಿ ಮತ್ತು ಅವರ ಹಿಂಬಾಲಕರು ಶೈಕ್ಷಣಿಕ ವಾತಾವರಣಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಕಾಲೇಜಿನ ಸಿಬ್ಬಂದಿಯ ಮೇಲೆ ಅವಾಚ್ಯ ಶಬ್ದಗಳ ಪ್ರಯೋಗ, ಪರೀಕ್ಷಾ ಸಮಯದಲ್ಲಿ ಸ್ವಾಮೀಜಿಯ ಹಿಂಬಾಲಕರು ಕಾಲೇಜಿನ ಒಳಗೆ ನುಗ್ಗಿ ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಂಡು ತಪ್ಪು ಮಾಹಿತಿ ಹರಡುವ ಮೂಲಕ ಸಂಸ್ಥೆಯ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ ಎಂದು ಆಡಳಿತ ಮಂಡಳಿ ದೂರಿದೆ.

ಇದರ ಜೊತೆಗೆ ಇನ್ನೊಂದು ಗಂಭೀರ ಆರೋಪ ಕೇಳಿಬಂದಿದೆ. ವಿಠಲ ರುಕ್ಮಿಣಿ ಮಠದ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಮೀನನ್ನು *”ಗೋಶಾಲೆ ಮತ್ತು ವೃದ್ಧಾಶ್ರಮ”*ಕ್ಕಾಗಿ ಮಂಜೂರು ಮಾಡಲಾಗಿದೆ. ಆದರೆ ಮಂಜೂರಾದ ಉದ್ದೇಶವನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ಜಮೀನನ್ನು ವಾಣಿಜ್ಯ ಉದ್ದೇಶಕ್ಕಾಗಿ ಹಂತಹಂತವಾಗಿ ಬಾಡಿಗೆಗೆ ನೀಡಲಾಗುತ್ತಿದೆ.

ಸಭಾಂಗಣದಲ್ಲಿದ್ದ ದೇವರ ಮೂರ್ತಿಯನ್ನು ಸಹ ಹಣಕ್ಕಾಗಿ ಬೇರೆ ಕಡೆಗೆ ವರ್ಗಾಯಿಸಿ ವಾಣಿಜ್ಯ ಉದ್ದೇಶಕ್ಕೆ ಬಳಸಲಾಗಿದೆ. ಸರ್ಕಾರವು ಈ ಜಾಗವನ್ನು ಗೋಶಾಲೆ ಮತ್ತು ವೃದ್ಧಾಶ್ರಮ ನಡೆಸುವುದಕ್ಕೆ ಮಂಜೂರು ಮಾಡಿದ್ದರೂ, ಇಲ್ಲಿ ಯಾವುದೇ ಗೋಶಾಲೆ ಅಥವಾ ವೃದ್ಧಾಶ್ರಮ ನಡೆಯುತ್ತಿಲ್ಲ. ಮಠದ ಆಸ್ತಿಯನ್ನು ಸ್ವಾಮೀಜಿ ಮತ್ತು ಅವರ ಹಿಂಬಾಲಕರು ಕಮರ್ಷಿಯಲ್ ಉದ್ದೇಶಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದು ಆಡಳಿತ ಮಂಡಳಿಯ ಆರೋಪ.

ಈ ಬೆಳವಣಿಗೆಯಿಂದಾಗಿ ಕಾಲೇಜಿನಲ್ಲಿ ಓದುತ್ತಿರುವ ನೂರಾರು ಬಡ ವಿದ್ಯಾರ್ಥಿಗಳ ಭವಿಷ್ಯ ಪ್ರಶ್ನಾರ್ಥಕವಾಗಿದೆ. ಕಂದಾಯ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ತನಿಖೆ ನಡೆಸಿ ಮಠದ ಸ್ವಾಮೀಜಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಆಡಳಿತ ಮಂಡಳಿ ಮತ್ತಷ್ಟು ಆರೋಪಿಸಿರುವ ಪ್ರಕಾರ, ಮಠದ ಸ್ವಾಮೀಜಿ ಸಾರ್ವಜನಿಕವಾಗಿ “ಮಠದ ಆಸ್ತಿಯನ್ನು ಸರ್ಕಾರದಿಂದ 54 ಲಕ್ಷ ರೂ.ಗೆ ಖರೀದಿ ಮಾಡಿದ್ದೇನೆ” ಎಂದು ಹೇಳಿಕೊಂಡಿದ್ದಾರೆ. ಅವರ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಒಬ್ಬ ವೃದ್ಧ ಮಹಿಳೆಯನ್ನು ಮೋಸ ಮಾಡಿ ಸೈಟ್ ಕಬಳಿಕೆ ಮಾಡಿ ಬೇರೊಬ್ಬರಿಗೆ ಮಾರಾಟ ಮಾಡಲಾಗಿದೆ. ಅಲ್ಲದೆ ಒಬ್ಬ ವೈದ್ಯರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ನೀಡುವುದಾಗಿ ಹೇಳಿ 10 ಲಕ್ಷ ರೂ. ಟೋಕನ್ ಹಣ ಪಡೆದು, ಹಣ ಹಿಂತಿರುಗಿಸದೆ ಸಮಸ್ಯೆ ಮಾಡಿದ ಪ್ರಕರಣವೂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. “ಹಣಕ್ಕಾಗಿ ಕಾವಿ ಧರಿಸಿ ಸಮಾಜಕ್ಕೆ ನಾಚಿಕೆ ತರುವ ಕೆಲಸ ಮಾಡುತ್ತಿದ್ದಾರೆ” ಎಂದು ಆಡಳಿತ ಮಂಡಳಿ ಆರೋಪಿಸಿದೆ.

~ವರದಿ: ಪವನ್ ಕಲ್ಯಾಣ್ ಡಿ.ಜಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version