Connect with us

ದಿನದ ಸುದ್ದಿ

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

Published

on

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ತಿಳಿಸಿದರು.

ಅವರು ಸೋಮವಾರ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಎಲ್ಲೂ ಕೂಡ ಸಾಮೂಹಿಕವಾಗಿ ಫಾರಂ ವಿತರಣೆ ಮಾಡುತ್ತಿಲ್ಲ ಮತ್ತು ಮಾಡುವುದೂ ಇಲ್ಲ, ಕೆಲವು ಬೂತ್‌ಗಳಲ್ಲಿ ಸಾರ್ವಜನಿಕರೇ ಗುಂಪುಗೂಡಿ ಇಲ್ಲೇ ಫಾರಂ ನೀಡಿ ಎಂದು ಕೇಳಿರುವ ಉದಾಹರಣೆಗಳು ಇವೆಯೇ ಹೊರತು, ಇಲಾಖೆಯಿಂದ ಸಾಮೂಹಿಕ ವಿತರಣೆ ನಡೆದಿಲ್ಲ ಎಂದರು.

ಪ್ರತಿಯೊಬ್ಬ ಬೂತ್ ಮಟ್ಟದ ಅಧಿಕಾರಿಗಳಿಗೆ ಈಗಾಗಲೇ ಲಿಖಿತ ಸೂಚನೆ ಹಾಗೂ ಸೂಕ್ತ ತರಬೇತಿಯನ್ನು ನೀಡಲಾಗಿದೆ. ಅವರು ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ ಮನೆಗೆ ಭೇಟಿ ನೀಡಿ ಫಾರಂಗಳನ್ನು ವಿತರಿಸುವರು. ಭೇಟಿ ನೀಡಿದ ನಂತರ ಮನೆಯ ಬಾಗಿಲಿನ ಮೇಲೆ ಕಡ್ಡಾಯವಾಗಿ ಸ್ಟಿಕ್ಕರ್ ಅಂಟಿಸಬೇಕೆಂದು ಆದೇಶಿಸಲಾಗಿದೆ. ಹಳ್ಳಿಗಳಲ್ಲಿ ಹಾಗೂ ಕೆಲವು ಕಡೆ ಸಾರ್ವಜನಿಕರು ತಮ್ಮ ಫಾರಂಗಳನ್ನು ಬೇಗ ಮಾಡಿಕೊಡಿ ಎಂದು ಬಿ.ಎಲ್.ಓಗಳ ಬಳಿ ಗುಂಪುಗೂಡುತ್ತಿರುವುದು ಕಂಡುಬಂದಿದೆ. ಆದರೆ, ಇನ್ನು ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಲು ನಮ್ಮ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಂಪೂರ್ಣ ತಂಡವು ಬಿ.ಎಲ್.ಓ.ಗಳಿಗೆ ನೆರವಾಗಲಿದ್ದಾರೆ ಎಂದು ತಿಳಿಸಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 40 ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ನೇರವಾಗಿ ಈ ಸಹಾಯ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಫಾರಂಗಳನ್ನು ಭರ್ತಿ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಫಾರಂಗಳನ್ನು ಕಡ್ಡಾಯವಾಗಿ ಬಿ.ಎಲ್.ಓ.ಗಳಿಗೆ ಹಸ್ತಾಂತರಿಸಬೇಕು ಎಂದರು
ರಾಷ್ಟ್ರೀಯ ಪಕ್ಷಗಳಿಂದ ನೇಮಕಗೊಂಡಿರುವ ಬಿ.ಎಲ್.ಎ (ಬೂತ್ ಮಟ್ಟದ ಏಜೆಂಟ್‌ಗಳು) ಸಾರ್ವಜನಿಕರಿಗೆ ಫಾರಂ ಭರ್ತಿ ಮಾಡಲು ಸಹಾಯ ಮಾಡಬಹುದು. ಅವರು ಮೊದಲ ಹಂತದಲ್ಲಿ ತಲಾ 50 ಫಾರಂಗಳನ್ನು ಸಂಗ್ರಹಿಸಿ, ಭರ್ತಿ ಮಾಡಿ ನಮ್ಮ ಬಿ.ಎಲ್.ಓ.ಗಳಿಗೆ ತಂದುಕೊಡಲು ಅವಕಾಶ ಕಲ್ಪಿಸಲಾಗಿದೆ. ಇದು ಗುಂಪಾಗಿ ಮಾಡುವುದಲ್ಲ, ಬದಲಿಗೆ ಮನೆ ಮನೆಗೆ ಹೋಗಿ ಬಿ.ಎಲ್.ಓಗಳ ಸಹಯೋಗದೊಂದಿಗೆ ಮಾಡುವ ಕಾರ್ಯವಾಗಿದೆ ಎಂದರು.

ಸಹಿ ಮಾಡುವ ಪ್ರಕ್ರಿಯೆಯು ಮತದಾರರದ್ದೇ ಆಗಿರುತ್ತದೆ. ಮೊಬೈಲ್ ಬಳಸಲು ಬಾರದ ಅನಕ್ಷರಸ್ಥರಿಗೆ ಅಥವಾ ತಾಂತ್ರಿಕ ತೊಂದರೆ ಇರುವವರಿಗೆ ಬಿ.ಎಲ್.ಓ ಹಾಗೂ ಬಿ.ಎಲ್.ಎ.ಗಳು ಸಹಾಯ ಮಾಡಲಿದ್ದಾರೆ. ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಅಡಿಯಲ್ಲೇ ನಮ್ಮ ಇಡೀ ತಂಡ ಕೆಲಸ ಮಾಡುತ್ತಿದೆ ಎಂದರು.

ಒಂದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಶಿಫ್ಟ್ ಮಾಡಿಕೊಂಡಿರುವ ಮತದಾರರು, ತಮ್ಮ ಹೆಸರು ಕೈಬಿಟ್ಟು ಹೋಗುವ ಆತಂಕ ಪಡಬೇಕಾಗಿಲ್ಲ. ಅಂತಹ ಮತದಾರರು ‘ಫಾರಂ-8’ ಅನ್ನು ಸಲ್ಲಿಸುವ ಮೂಲಕ ತಮ್ಮ ವಿಳಾಸವನ್ನು ಸುಲಭವಾಗಿ ಬದಲಾಯಿಸಿಕೊಳ್ಳಬಹುದು ಎಂದರು.

ಈಗಾಗಲೇ ಮ್ಯಾಪಿಂಗ್ ಆಗಿರುವ ಮತದಾರರು ಯಾವುದೇ ದಾಖಲೆಗಳನ್ನು ನೀಡುವ ಅಗತ್ಯವಿರುವುದಿಲ್ಲ. ಒಂದು ವೇಳೆ ತಪ್ಪಾಗಿ ಮ್ಯಾಪಿಂಗ್ ಆಗಿದ್ದರೆ ಅಥವಾ ತಂದೆ-ತಾಯಿಯ ಹೆಸರುಗಳಲ್ಲಿ ತಪ್ಪುಗಳಾಗಿದ್ದರೆ, 2002ರ ಹಳೆಯ ವೋಟರ್ ಐಡಿ ವಿವರಗಳ ಆಧಾರದ ಮೇಲೆ ಬಿ.ಎಲ್.ಓ ಮೊಬೈಲ್ ಆಪ್ (BLO Mobile App) ಮೂಲಕ ತಿದ್ದುಪಡಿ ಹಾಗೂ ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

18 ವರ್ಷ ತುಂಬಿರುವ ಅರ್ಹ ಯುವ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಿಗದಿಪಡಿಸಿದ ಫಾರಂಗಳನ್ನು ಪಡೆದು ಭರ್ತಿ ಮಾಡಬಹುದಾಗಿದೆ. ಇದಕ್ಕಾಗಿ ಸಾರ್ವಜನಿಕರು ಯಾರೂ ಮತಗಟ್ಟೆಗಳನ್ನಾಗಲಿ ಅಥವಾ ಬಿ.ಎಲ್.ಓಗಳನ್ನಾಗಲಿ ಹುಡುಕಿಕೊಂಡು ಹೋಗುವ ಅಗತ್ಯವಿಲ್ಲ, ನಾವೇ ನಿಮ್ಮ ಮನೆ ಬಾಗಿಲಿಗೆ ಬರುತ್ತೇವೆ ಎಂದು ತಿಳಿಸಿದರು.

ಅನಾಥಾಶ್ರಮಗಳಲ್ಲಿರುವ ಹಾಗೂ ತಂದೆ-ತಾಯಿಯರ ಮಾಹಿತಿ ಇಲ್ಲದವರಿಗೂ ಸಹ ಮತದಾನದ ಹಕ್ಕನ್ನು ಕಲ್ಪಿಸಲು ಚುನಾವಣಾ ಆಯೋಗವು ವಿಶೇಷ ಕ್ರಮ ಕೈಗೊಂಡಿದೆ. ಸರ್ಕಾರಿ ಅನಾಥಾಶ್ರಮವೊಂದರಲ್ಲಿರುವ 43 ಯುವಕರು 2025ನೇ ಇಸವಿಯಲ್ಲೂ ಮತದಾರರ ಪಟ್ಟಿಯಲ್ಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಸರ್ಕಾರವೇ ಅವರಿಗೆ ಪೋಷಕರಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರೆ ಅವರ ಅಧಿಕೃತ ಪೋಷಕರಾಗಿರುತ್ತಾರೆ ಎಂದರು.

ದೇವದಾಸಿಯರಂತಹ ಪ್ರಕರಣಗಳಲ್ಲಿ ತಂದೆಯ ವಿವರಗಳು ಲಭ್ಯವಿಲ್ಲದಿದ್ದರೆ, ತಾಯಿಯ ವಿವರಗಳನ್ನು ನೀಡಿ ಹೆಸರು ನಮೂದಿಸಲು ಅವಕಾಶವಿದೆ. ಇನ್ನು ಕೆಲವು ಸಂದರ್ಭಗಳಲ್ಲಿ ತಂದೆ-ತಾಯಿ ಇಬ್ಬರೂ ಇಲ್ಲದಿದ್ದರೆ, ಅಂತವರು ತಮ್ಮ ಅಜ್ಜ ಅಥವಾ ಅಜ್ಜಿಯ ಹೆಸರನ್ನು ಸಂಬಂಧದ ಕಾಲಂನಲ್ಲಿ ನಮೂದಿಸಿ ಗುರುತಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗವು ಇಂತಹ ಎಲ್ಲಾ ಸವಾಲುಗಳಿಗೂ ಕಾನೂನಾತ್ಮಕವಾಗಿ ಹಾಗೂ ecinet ಮೊಬೈಲ್ ಆಪ್ ಮತ್ತು https://voters.eci.gov.in ಮೂಲಕ ಸೂಕ್ತ ಪರಿಹಾರವನ್ನು ಕಲ್ಪಿಸಿದೆ. ಹೀಗಾಗಿ ಯಾವುದೇ ಮತದಾರರು ಆತಂಕ ಪಡುವ ಅಗತ್ಯವಿಲ್ಲ. ಬಿ.ಎ.ಲ್.ಓ ಗಳು ಮನೆಗೆ ಬಂದಾಗ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿದಾಗ ಸಾರ್ವಜನಿಕರು ಸ್ಪಂದಿಸಿ, ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಫಾರಂ ಹಂಚಿಕೆಯಲ್ಲಿ ರಾಜ್ಯದಲ್ಲೇ ದಾವಣಗೆರೆ ಜಿಲ್ಲೆಗೆ 2ನೇ ಸ್ಥಾನ; ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಪ್ರಗತಿಯಲ್ಲಿದ್ದು, ಜಿಲ್ಲಾದ್ಯಂತ ಒಟ್ಟಾರೆ ಶೇ. 94 ರಷ್ಟು ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಫಾರಂಗಳನ್ನು ಹಂಚಿಕೆ ಮಾಡುವ ಮೂಲಕ ದಾವಣಗೆರೆ ಜಿಲ್ಲೆಯು ರಾಜ್ಯದಲ್ಲಿಯೇ 2ನೇ ಸ್ಥಾನ ಪಡೆದು ಅಭೂತಪೂರ್ವ ಸಾಧನೆ ಮಾಡಿದೆ. ಇದೇ ವೇಳೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಶೇ. 99.81 ರಷ್ಟು ದಾಖಲೆ ಪ್ರಮಾಣದ ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಪಾರಂಗಳನ್ನು ಅತ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಲಾಗಿದ್ದು, ಇಡೀ ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ. ಹಾಗೂ ಶೇ. 10.8 ರಷ್ಟು ಗಣಕೀಕರಣವಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮನೆ ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹ ಪ್ರಗತಿಯಲ್ಲಿ

ದಾವಣಗೆರೆ ಜಿಲ್ಲೆಯಲ್ಲಿ ಜೂನ್‌ 16 ರ ವೇಳೆಗೆ ಒಟ್ಟು 14,99,282 ಮತದಾರರಿದ್ದು, ಇವರಿಗೆ ಸಂಬಂಧಿಸಿದ ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಮುದ್ರಿಸಿ ಬಿಎಲ್‌ಓಗಳಿಗೆ ವಿತರಿಸಲಾಗಿದೆ. ಜಿಲ್ಲಾದ್ಯಂತ ಜೂನ್‌ 06 ರಿಂದ ಜುಲೈ 29 ರ ಅವಧಿಯಲ್ಲಿ ಬಿಎಲ್‌ಓಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಇದೇ ಅವಧಿಯಲ್ಲಿ ಸಂಗ್ರಹಿಸಿದ ನಮೂನೆಗಳ ಗಣಕೀಕರಣ ಕಾರ್ಯವೂ ಪ್ರಗತಿಯಲ್ಲಿದೆ.

ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಮತ್ತು ಪ್ರಗತಿ ವಿವರ

ಜಿಲ್ಲೆಯ ಒಟ್ಟು 14,99,282 ಮತದಾರರ ಪೈಕಿ ಬಿಎಲ್‌ಓಗಳು ಇದುವರೆಗೆ ಒಟ್ಟು 14,06,472 ಎನ್ಯುಮರೇಷನ್ ನಮೂನೆಗಳನ್ನು ವಿತರಿಸಿದ್ದು, 1,54,504 ನಮೂನೆಗಳನ್ನು ಗಣಕೀಕರಿಸಿದ್ದಾರೆ.

103-ಜಗಳೂರು: ಒಟ್ಟು 2,00,836 ಮತದಾರರಿದ್ದು, 1,88,446 ನಮೂನೆಗಳನ್ನು ವಿತರಿಸಲಾಗಿದ್ದು, 18,003 ನಮೂನೆಗಳನ್ನು ಗಣಕೀಕರಿಸಲಾಗಿದೆ. 105-ಹರಿಹರ: ಒಟ್ಟು 2,11,023 ಮತದಾರರಿದ್ದು, 2,06,550 ನಮೂನೆಗಳನ್ನು ವಿತರಿಸಲಾಗಿದ್ದು, 32,630 ನಮೂನೆಗಳನ್ನು ಗಣಕೀಕರಿಸಲಾಗಿದೆ. 106-ದಾವಣಗೆರೆ ಉತ್ತರ: ಒಟ್ಟು 2,58,718 ಮತದಾರರಿದ್ದು, 2,44,948 ನಮೂನೆಗಳನ್ನು ವಿತರಿಸಲಾಗಿದ್ದು, 7,120 ನಮೂನೆಗಳನ್ನು ಗಣಕೀಕರಿಸಲಾಗಿದೆ. 107-ದಾವಣಗೆರೆ ದಕ್ಷಿಣ : ಒಟ್ಟು 2,27,996 ಮತದಾರರಿದ್ದು, 194,785 ನಮೂನೆಗಳನ್ನು ವಿತರಿಸಲಾಗಿದ್ದು, 5,085 ನಮೂನೆಗಳನ್ನು ಗಣಕೀಕರಿಸಲಾಗಿದೆ. 108-ಮಾಯಕೊಂಡ: ಒಟ್ಟು 197,048 ಮತದಾರರಿದ್ದು, 196,486 ನಮೂನೆಗಳನ್ನು ವಿತರಿಸಲಾಗಿದ್ದು, 42,785 ನಮೂನೆಗಳನ್ನು ಗಣಕೀಕರಿಸಲಾಗಿದೆ. 109-ಚನ್ನಗಿರಿ ಒಟ್ಟು 2,03,628 ಮತದಾರರಿದ್ದು, 192,838 ನಮೂನೆಗಳನ್ನು ವಿತರಿಸಲಾಗಿದ್ದು, 36,531 ನಮೂನೆಗಳನ್ನು ಗಣಕೀಕರಿಸಲಾಗಿದೆ. 110- ಹೊನ್ನಾಳಿ ಒಟ್ಟು 2,00,033 ಮತದಾರರಿದ್ದು, 182,419 ನಮೂನೆಗಳನ್ನು ವಿತರಿಸಲಾಗಿದ್ದು, 12,350 ನಮೂನೆಗಳನ್ನು ಗಣಕೀಕರಿಸಲಾಗಿದೆ.

ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಮತದಾರರ ಗುರುತಿಸುವಿಕೆ ಪ್ರಗತಿ

ಜೂನ್‌ 6 ರಿಂದ ಜಿಲ್ಲೆಯಲ್ಲಿ ಮತದಾರರ ಎನ್ಯುಮರೇಷನ್ ಫಾರ್ಮ್ಸ್ ಹಂಚಿಕೆ ಹಾಗೂ ಮಾಹಿತಿ ಸಂಗ್ರಹಣೆಯ ವೇಳೆ ಒಟ್ಟು 1,707 ವಿವಿಧ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಒಟ್ಟು 30 ನಮೂನೆಗಳು ಸಂಗ್ರಹವಾಗದ/ಗೈರು ಹಾಜರಿ ಪ್ರಕರಣಗಳಾಗಿದ್ದು, 641 ಶಾಶ್ವತ ವಲಸೆ, 751 ಮರಣ ಹಾಗೂ 271 ದ್ವಿಪ್ರತಿ (Duplicate) ಪ್ರಕರಣಗಳಾಗಿವೆ.
ಜಗಳೂರು ಕ್ಷೇತ್ರದಲ್ಲಿ 122 ಪ್ರಕರಣಗಳನ್ನು ಗುರುತಿಸಲಾಗಿದ್ದು (2 ಗೈರು, 31 ಶಾಶ್ವತ ವಲಸೆ, 47 ಮರಣ, 40 ದ್ವಿಪ್ರತಿ, 2 ಇತರೆ), ಹರಿಹರ ಕ್ಷೇತ್ರದಲ್ಲಿ 149 ಪ್ರಕರಣಗಳು (2 ಗೈರು, 48 ಶಾಶ್ವತ ವಲಸೆ, 71 ಮರಣ, 26 ದ್ವಿಪ್ರತಿ, 2 ಇತರೆ), ದಾವಣಗೆರೆ ಉತ್ತರ ಕ್ಷೇತ್ರದಲ್ಲಿ 246 ಪ್ರಕರಣಗಳು (5 ಗೈರು, 98 ಶಾಶ್ವತ ವಲಸೆ, 112 ಮರಣ, 31 ದ್ವಿಪ್ರತಿ), ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 235 ಪ್ರಕರಣಗಳು (6 ಗೈರು, 123 ಶಾಶ್ವತ ವಲಸೆ, 60 ಮರಣ, 44 ದ್ವಿಪ್ರತಿ, 2 ಇತರೆ), ಮಾಯಕೊಂಡ ಕ್ಷೇತ್ರದಲ್ಲಿ 337 ಪ್ರಕರಣಗಳು (4 ಗೈರು, 113 ಶಾಶ್ವತ ವಲಸೆ, 174 ಮರಣ, 45 ದ್ವಿಪ್ರತಿ,1 ಇತರೆ), ಚನ್ನಗಿರಿ ಕ್ಷೇತ್ರದಲ್ಲಿ 386 ಪ್ರಕರಣಗಳು (10 ಗೈರು, 139 ಶಾಶ್ವತ ವಲಸೆ, 167 ಮರಣ, 63 ದ್ವಿಪ್ರತಿ, 7 ಇತರೆ) ಹಾಗೂ ಹೊನ್ನಾಳಿ ಕ್ಷೇತ್ರದಲ್ಲಿ ಒಟ್ಟು 232 ಪ್ರಕರಣಗಳ (1 ಗೈರು, 89 ಶಾಶ್ವತ ವಲಸೆ, 120 ಮರಣ, 22 ದ್ವಿಪ್ರತಿ) ಗುರುತಿಸಿದೆ ಎಂದು ತಿಳಿಸಿದರು.

ಪತ್ರಿಕಾ ಗೋಷ್ಠಿಗೂ ಮುನ್ನ ವಿವಿಧ ರಾಷ್ಟ್ರೀಯ ಪಕ್ಷಗಳೊಂದಿಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಬಿ.ಎಲ್.ಎ ಗಳನ್ನು ನೇಮಕ ಮಾಡಿದ್ದು ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಪಾರಂಗಳನ್ನು ನಮೂದಿಸಿ ಬಿ.ಎಲ್.ಓ ಗಳಿಗೆ ನೀಡಲು ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾರ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ಸಹಕಾರ ನೀಡುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌, ಉಪ ಕಾರ್ಯದರ್ಶಿ ಮಮತ ಹಸ ಗೌಡರ್‌, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಪಾಲಿಕೆ ಆಯುಕ್ತ ಮಹಾಂತೇಶ್‌ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್‌ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್‌ಒಗಳನ್ನು ಅಥವಾ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್‌ವೈಸರ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.

ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.

1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್‌ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್‌ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.

ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

Published

on

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ.

ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending