ದಿನದ ಸುದ್ದಿ
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ತಿಳಿಸಿದರು.
ಅವರು ಸೋಮವಾರ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಎಲ್ಲೂ ಕೂಡ ಸಾಮೂಹಿಕವಾಗಿ ಫಾರಂ ವಿತರಣೆ ಮಾಡುತ್ತಿಲ್ಲ ಮತ್ತು ಮಾಡುವುದೂ ಇಲ್ಲ, ಕೆಲವು ಬೂತ್ಗಳಲ್ಲಿ ಸಾರ್ವಜನಿಕರೇ ಗುಂಪುಗೂಡಿ ಇಲ್ಲೇ ಫಾರಂ ನೀಡಿ ಎಂದು ಕೇಳಿರುವ ಉದಾಹರಣೆಗಳು ಇವೆಯೇ ಹೊರತು, ಇಲಾಖೆಯಿಂದ ಸಾಮೂಹಿಕ ವಿತರಣೆ ನಡೆದಿಲ್ಲ ಎಂದರು.
ಪ್ರತಿಯೊಬ್ಬ ಬೂತ್ ಮಟ್ಟದ ಅಧಿಕಾರಿಗಳಿಗೆ ಈಗಾಗಲೇ ಲಿಖಿತ ಸೂಚನೆ ಹಾಗೂ ಸೂಕ್ತ ತರಬೇತಿಯನ್ನು ನೀಡಲಾಗಿದೆ. ಅವರು ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ ಮನೆಗೆ ಭೇಟಿ ನೀಡಿ ಫಾರಂಗಳನ್ನು ವಿತರಿಸುವರು. ಭೇಟಿ ನೀಡಿದ ನಂತರ ಮನೆಯ ಬಾಗಿಲಿನ ಮೇಲೆ ಕಡ್ಡಾಯವಾಗಿ ಸ್ಟಿಕ್ಕರ್ ಅಂಟಿಸಬೇಕೆಂದು ಆದೇಶಿಸಲಾಗಿದೆ. ಹಳ್ಳಿಗಳಲ್ಲಿ ಹಾಗೂ ಕೆಲವು ಕಡೆ ಸಾರ್ವಜನಿಕರು ತಮ್ಮ ಫಾರಂಗಳನ್ನು ಬೇಗ ಮಾಡಿಕೊಡಿ ಎಂದು ಬಿ.ಎಲ್.ಓಗಳ ಬಳಿ ಗುಂಪುಗೂಡುತ್ತಿರುವುದು ಕಂಡುಬಂದಿದೆ. ಆದರೆ, ಇನ್ನು ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಲು ನಮ್ಮ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಂಪೂರ್ಣ ತಂಡವು ಬಿ.ಎಲ್.ಓ.ಗಳಿಗೆ ನೆರವಾಗಲಿದ್ದಾರೆ ಎಂದು ತಿಳಿಸಿದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 40 ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ನೇರವಾಗಿ ಈ ಸಹಾಯ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಫಾರಂಗಳನ್ನು ಭರ್ತಿ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಫಾರಂಗಳನ್ನು ಕಡ್ಡಾಯವಾಗಿ ಬಿ.ಎಲ್.ಓ.ಗಳಿಗೆ ಹಸ್ತಾಂತರಿಸಬೇಕು ಎಂದರು
ರಾಷ್ಟ್ರೀಯ ಪಕ್ಷಗಳಿಂದ ನೇಮಕಗೊಂಡಿರುವ ಬಿ.ಎಲ್.ಎ (ಬೂತ್ ಮಟ್ಟದ ಏಜೆಂಟ್ಗಳು) ಸಾರ್ವಜನಿಕರಿಗೆ ಫಾರಂ ಭರ್ತಿ ಮಾಡಲು ಸಹಾಯ ಮಾಡಬಹುದು. ಅವರು ಮೊದಲ ಹಂತದಲ್ಲಿ ತಲಾ 50 ಫಾರಂಗಳನ್ನು ಸಂಗ್ರಹಿಸಿ, ಭರ್ತಿ ಮಾಡಿ ನಮ್ಮ ಬಿ.ಎಲ್.ಓ.ಗಳಿಗೆ ತಂದುಕೊಡಲು ಅವಕಾಶ ಕಲ್ಪಿಸಲಾಗಿದೆ. ಇದು ಗುಂಪಾಗಿ ಮಾಡುವುದಲ್ಲ, ಬದಲಿಗೆ ಮನೆ ಮನೆಗೆ ಹೋಗಿ ಬಿ.ಎಲ್.ಓಗಳ ಸಹಯೋಗದೊಂದಿಗೆ ಮಾಡುವ ಕಾರ್ಯವಾಗಿದೆ ಎಂದರು.
ಸಹಿ ಮಾಡುವ ಪ್ರಕ್ರಿಯೆಯು ಮತದಾರರದ್ದೇ ಆಗಿರುತ್ತದೆ. ಮೊಬೈಲ್ ಬಳಸಲು ಬಾರದ ಅನಕ್ಷರಸ್ಥರಿಗೆ ಅಥವಾ ತಾಂತ್ರಿಕ ತೊಂದರೆ ಇರುವವರಿಗೆ ಬಿ.ಎಲ್.ಓ ಹಾಗೂ ಬಿ.ಎಲ್.ಎ.ಗಳು ಸಹಾಯ ಮಾಡಲಿದ್ದಾರೆ. ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಅಡಿಯಲ್ಲೇ ನಮ್ಮ ಇಡೀ ತಂಡ ಕೆಲಸ ಮಾಡುತ್ತಿದೆ ಎಂದರು.
ಒಂದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಶಿಫ್ಟ್ ಮಾಡಿಕೊಂಡಿರುವ ಮತದಾರರು, ತಮ್ಮ ಹೆಸರು ಕೈಬಿಟ್ಟು ಹೋಗುವ ಆತಂಕ ಪಡಬೇಕಾಗಿಲ್ಲ. ಅಂತಹ ಮತದಾರರು ‘ಫಾರಂ-8’ ಅನ್ನು ಸಲ್ಲಿಸುವ ಮೂಲಕ ತಮ್ಮ ವಿಳಾಸವನ್ನು ಸುಲಭವಾಗಿ ಬದಲಾಯಿಸಿಕೊಳ್ಳಬಹುದು ಎಂದರು.
ಈಗಾಗಲೇ ಮ್ಯಾಪಿಂಗ್ ಆಗಿರುವ ಮತದಾರರು ಯಾವುದೇ ದಾಖಲೆಗಳನ್ನು ನೀಡುವ ಅಗತ್ಯವಿರುವುದಿಲ್ಲ. ಒಂದು ವೇಳೆ ತಪ್ಪಾಗಿ ಮ್ಯಾಪಿಂಗ್ ಆಗಿದ್ದರೆ ಅಥವಾ ತಂದೆ-ತಾಯಿಯ ಹೆಸರುಗಳಲ್ಲಿ ತಪ್ಪುಗಳಾಗಿದ್ದರೆ, 2002ರ ಹಳೆಯ ವೋಟರ್ ಐಡಿ ವಿವರಗಳ ಆಧಾರದ ಮೇಲೆ ಬಿ.ಎಲ್.ಓ ಮೊಬೈಲ್ ಆಪ್ (BLO Mobile App) ಮೂಲಕ ತಿದ್ದುಪಡಿ ಹಾಗೂ ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.
18 ವರ್ಷ ತುಂಬಿರುವ ಅರ್ಹ ಯುವ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಿಗದಿಪಡಿಸಿದ ಫಾರಂಗಳನ್ನು ಪಡೆದು ಭರ್ತಿ ಮಾಡಬಹುದಾಗಿದೆ. ಇದಕ್ಕಾಗಿ ಸಾರ್ವಜನಿಕರು ಯಾರೂ ಮತಗಟ್ಟೆಗಳನ್ನಾಗಲಿ ಅಥವಾ ಬಿ.ಎಲ್.ಓಗಳನ್ನಾಗಲಿ ಹುಡುಕಿಕೊಂಡು ಹೋಗುವ ಅಗತ್ಯವಿಲ್ಲ, ನಾವೇ ನಿಮ್ಮ ಮನೆ ಬಾಗಿಲಿಗೆ ಬರುತ್ತೇವೆ ಎಂದು ತಿಳಿಸಿದರು.
ಅನಾಥಾಶ್ರಮಗಳಲ್ಲಿರುವ ಹಾಗೂ ತಂದೆ-ತಾಯಿಯರ ಮಾಹಿತಿ ಇಲ್ಲದವರಿಗೂ ಸಹ ಮತದಾನದ ಹಕ್ಕನ್ನು ಕಲ್ಪಿಸಲು ಚುನಾವಣಾ ಆಯೋಗವು ವಿಶೇಷ ಕ್ರಮ ಕೈಗೊಂಡಿದೆ. ಸರ್ಕಾರಿ ಅನಾಥಾಶ್ರಮವೊಂದರಲ್ಲಿರುವ 43 ಯುವಕರು 2025ನೇ ಇಸವಿಯಲ್ಲೂ ಮತದಾರರ ಪಟ್ಟಿಯಲ್ಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಸರ್ಕಾರವೇ ಅವರಿಗೆ ಪೋಷಕರಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರೆ ಅವರ ಅಧಿಕೃತ ಪೋಷಕರಾಗಿರುತ್ತಾರೆ ಎಂದರು.
ದೇವದಾಸಿಯರಂತಹ ಪ್ರಕರಣಗಳಲ್ಲಿ ತಂದೆಯ ವಿವರಗಳು ಲಭ್ಯವಿಲ್ಲದಿದ್ದರೆ, ತಾಯಿಯ ವಿವರಗಳನ್ನು ನೀಡಿ ಹೆಸರು ನಮೂದಿಸಲು ಅವಕಾಶವಿದೆ. ಇನ್ನು ಕೆಲವು ಸಂದರ್ಭಗಳಲ್ಲಿ ತಂದೆ-ತಾಯಿ ಇಬ್ಬರೂ ಇಲ್ಲದಿದ್ದರೆ, ಅಂತವರು ತಮ್ಮ ಅಜ್ಜ ಅಥವಾ ಅಜ್ಜಿಯ ಹೆಸರನ್ನು ಸಂಬಂಧದ ಕಾಲಂನಲ್ಲಿ ನಮೂದಿಸಿ ಗುರುತಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.
ಚುನಾವಣಾ ಆಯೋಗವು ಇಂತಹ ಎಲ್ಲಾ ಸವಾಲುಗಳಿಗೂ ಕಾನೂನಾತ್ಮಕವಾಗಿ ಹಾಗೂ ecinet ಮೊಬೈಲ್ ಆಪ್ ಮತ್ತು https://voters.eci.gov.in ಮೂಲಕ ಸೂಕ್ತ ಪರಿಹಾರವನ್ನು ಕಲ್ಪಿಸಿದೆ. ಹೀಗಾಗಿ ಯಾವುದೇ ಮತದಾರರು ಆತಂಕ ಪಡುವ ಅಗತ್ಯವಿಲ್ಲ. ಬಿ.ಎ.ಲ್.ಓ ಗಳು ಮನೆಗೆ ಬಂದಾಗ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿದಾಗ ಸಾರ್ವಜನಿಕರು ಸ್ಪಂದಿಸಿ, ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಫಾರಂ ಹಂಚಿಕೆಯಲ್ಲಿ ರಾಜ್ಯದಲ್ಲೇ ದಾವಣಗೆರೆ ಜಿಲ್ಲೆಗೆ 2ನೇ ಸ್ಥಾನ; ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಪ್ರಗತಿಯಲ್ಲಿದ್ದು, ಜಿಲ್ಲಾದ್ಯಂತ ಒಟ್ಟಾರೆ ಶೇ. 94 ರಷ್ಟು ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಫಾರಂಗಳನ್ನು ಹಂಚಿಕೆ ಮಾಡುವ ಮೂಲಕ ದಾವಣಗೆರೆ ಜಿಲ್ಲೆಯು ರಾಜ್ಯದಲ್ಲಿಯೇ 2ನೇ ಸ್ಥಾನ ಪಡೆದು ಅಭೂತಪೂರ್ವ ಸಾಧನೆ ಮಾಡಿದೆ. ಇದೇ ವೇಳೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಶೇ. 99.81 ರಷ್ಟು ದಾಖಲೆ ಪ್ರಮಾಣದ ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಪಾರಂಗಳನ್ನು ಅತ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಲಾಗಿದ್ದು, ಇಡೀ ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ. ಹಾಗೂ ಶೇ. 10.8 ರಷ್ಟು ಗಣಕೀಕರಣವಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮನೆ ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹ ಪ್ರಗತಿಯಲ್ಲಿ
ದಾವಣಗೆರೆ ಜಿಲ್ಲೆಯಲ್ಲಿ ಜೂನ್ 16 ರ ವೇಳೆಗೆ ಒಟ್ಟು 14,99,282 ಮತದಾರರಿದ್ದು, ಇವರಿಗೆ ಸಂಬಂಧಿಸಿದ ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಮುದ್ರಿಸಿ ಬಿಎಲ್ಓಗಳಿಗೆ ವಿತರಿಸಲಾಗಿದೆ. ಜಿಲ್ಲಾದ್ಯಂತ ಜೂನ್ 06 ರಿಂದ ಜುಲೈ 29 ರ ಅವಧಿಯಲ್ಲಿ ಬಿಎಲ್ಓಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಇದೇ ಅವಧಿಯಲ್ಲಿ ಸಂಗ್ರಹಿಸಿದ ನಮೂನೆಗಳ ಗಣಕೀಕರಣ ಕಾರ್ಯವೂ ಪ್ರಗತಿಯಲ್ಲಿದೆ.
ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಮತ್ತು ಪ್ರಗತಿ ವಿವರ
ಜಿಲ್ಲೆಯ ಒಟ್ಟು 14,99,282 ಮತದಾರರ ಪೈಕಿ ಬಿಎಲ್ಓಗಳು ಇದುವರೆಗೆ ಒಟ್ಟು 14,06,472 ಎನ್ಯುಮರೇಷನ್ ನಮೂನೆಗಳನ್ನು ವಿತರಿಸಿದ್ದು, 1,54,504 ನಮೂನೆಗಳನ್ನು ಗಣಕೀಕರಿಸಿದ್ದಾರೆ.
103-ಜಗಳೂರು: ಒಟ್ಟು 2,00,836 ಮತದಾರರಿದ್ದು, 1,88,446 ನಮೂನೆಗಳನ್ನು ವಿತರಿಸಲಾಗಿದ್ದು, 18,003 ನಮೂನೆಗಳನ್ನು ಗಣಕೀಕರಿಸಲಾಗಿದೆ. 105-ಹರಿಹರ: ಒಟ್ಟು 2,11,023 ಮತದಾರರಿದ್ದು, 2,06,550 ನಮೂನೆಗಳನ್ನು ವಿತರಿಸಲಾಗಿದ್ದು, 32,630 ನಮೂನೆಗಳನ್ನು ಗಣಕೀಕರಿಸಲಾಗಿದೆ. 106-ದಾವಣಗೆರೆ ಉತ್ತರ: ಒಟ್ಟು 2,58,718 ಮತದಾರರಿದ್ದು, 2,44,948 ನಮೂನೆಗಳನ್ನು ವಿತರಿಸಲಾಗಿದ್ದು, 7,120 ನಮೂನೆಗಳನ್ನು ಗಣಕೀಕರಿಸಲಾಗಿದೆ. 107-ದಾವಣಗೆರೆ ದಕ್ಷಿಣ : ಒಟ್ಟು 2,27,996 ಮತದಾರರಿದ್ದು, 194,785 ನಮೂನೆಗಳನ್ನು ವಿತರಿಸಲಾಗಿದ್ದು, 5,085 ನಮೂನೆಗಳನ್ನು ಗಣಕೀಕರಿಸಲಾಗಿದೆ. 108-ಮಾಯಕೊಂಡ: ಒಟ್ಟು 197,048 ಮತದಾರರಿದ್ದು, 196,486 ನಮೂನೆಗಳನ್ನು ವಿತರಿಸಲಾಗಿದ್ದು, 42,785 ನಮೂನೆಗಳನ್ನು ಗಣಕೀಕರಿಸಲಾಗಿದೆ. 109-ಚನ್ನಗಿರಿ ಒಟ್ಟು 2,03,628 ಮತದಾರರಿದ್ದು, 192,838 ನಮೂನೆಗಳನ್ನು ವಿತರಿಸಲಾಗಿದ್ದು, 36,531 ನಮೂನೆಗಳನ್ನು ಗಣಕೀಕರಿಸಲಾಗಿದೆ. 110- ಹೊನ್ನಾಳಿ ಒಟ್ಟು 2,00,033 ಮತದಾರರಿದ್ದು, 182,419 ನಮೂನೆಗಳನ್ನು ವಿತರಿಸಲಾಗಿದ್ದು, 12,350 ನಮೂನೆಗಳನ್ನು ಗಣಕೀಕರಿಸಲಾಗಿದೆ.
ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಮತದಾರರ ಗುರುತಿಸುವಿಕೆ ಪ್ರಗತಿ
ಜೂನ್ 6 ರಿಂದ ಜಿಲ್ಲೆಯಲ್ಲಿ ಮತದಾರರ ಎನ್ಯುಮರೇಷನ್ ಫಾರ್ಮ್ಸ್ ಹಂಚಿಕೆ ಹಾಗೂ ಮಾಹಿತಿ ಸಂಗ್ರಹಣೆಯ ವೇಳೆ ಒಟ್ಟು 1,707 ವಿವಿಧ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಒಟ್ಟು 30 ನಮೂನೆಗಳು ಸಂಗ್ರಹವಾಗದ/ಗೈರು ಹಾಜರಿ ಪ್ರಕರಣಗಳಾಗಿದ್ದು, 641 ಶಾಶ್ವತ ವಲಸೆ, 751 ಮರಣ ಹಾಗೂ 271 ದ್ವಿಪ್ರತಿ (Duplicate) ಪ್ರಕರಣಗಳಾಗಿವೆ.
ಜಗಳೂರು ಕ್ಷೇತ್ರದಲ್ಲಿ 122 ಪ್ರಕರಣಗಳನ್ನು ಗುರುತಿಸಲಾಗಿದ್ದು (2 ಗೈರು, 31 ಶಾಶ್ವತ ವಲಸೆ, 47 ಮರಣ, 40 ದ್ವಿಪ್ರತಿ, 2 ಇತರೆ), ಹರಿಹರ ಕ್ಷೇತ್ರದಲ್ಲಿ 149 ಪ್ರಕರಣಗಳು (2 ಗೈರು, 48 ಶಾಶ್ವತ ವಲಸೆ, 71 ಮರಣ, 26 ದ್ವಿಪ್ರತಿ, 2 ಇತರೆ), ದಾವಣಗೆರೆ ಉತ್ತರ ಕ್ಷೇತ್ರದಲ್ಲಿ 246 ಪ್ರಕರಣಗಳು (5 ಗೈರು, 98 ಶಾಶ್ವತ ವಲಸೆ, 112 ಮರಣ, 31 ದ್ವಿಪ್ರತಿ), ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 235 ಪ್ರಕರಣಗಳು (6 ಗೈರು, 123 ಶಾಶ್ವತ ವಲಸೆ, 60 ಮರಣ, 44 ದ್ವಿಪ್ರತಿ, 2 ಇತರೆ), ಮಾಯಕೊಂಡ ಕ್ಷೇತ್ರದಲ್ಲಿ 337 ಪ್ರಕರಣಗಳು (4 ಗೈರು, 113 ಶಾಶ್ವತ ವಲಸೆ, 174 ಮರಣ, 45 ದ್ವಿಪ್ರತಿ,1 ಇತರೆ), ಚನ್ನಗಿರಿ ಕ್ಷೇತ್ರದಲ್ಲಿ 386 ಪ್ರಕರಣಗಳು (10 ಗೈರು, 139 ಶಾಶ್ವತ ವಲಸೆ, 167 ಮರಣ, 63 ದ್ವಿಪ್ರತಿ, 7 ಇತರೆ) ಹಾಗೂ ಹೊನ್ನಾಳಿ ಕ್ಷೇತ್ರದಲ್ಲಿ ಒಟ್ಟು 232 ಪ್ರಕರಣಗಳ (1 ಗೈರು, 89 ಶಾಶ್ವತ ವಲಸೆ, 120 ಮರಣ, 22 ದ್ವಿಪ್ರತಿ) ಗುರುತಿಸಿದೆ ಎಂದು ತಿಳಿಸಿದರು.
ಪತ್ರಿಕಾ ಗೋಷ್ಠಿಗೂ ಮುನ್ನ ವಿವಿಧ ರಾಷ್ಟ್ರೀಯ ಪಕ್ಷಗಳೊಂದಿಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಬಿ.ಎಲ್.ಎ ಗಳನ್ನು ನೇಮಕ ಮಾಡಿದ್ದು ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಪಾರಂಗಳನ್ನು ನಮೂದಿಸಿ ಬಿ.ಎಲ್.ಓ ಗಳಿಗೆ ನೀಡಲು ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾರ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ಸಹಕಾರ ನೀಡುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ಕಾರ್ಯದರ್ಶಿ ಮಮತ ಹಸ ಗೌಡರ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಪಾಲಿಕೆ ಆಯುಕ್ತ ಮಹಾಂತೇಶ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
ಸುದ್ದಿದಿನ,ಬೆಂಗಳೂರು:ಕೋಡಿಪಾಳ್ಯದಲ್ಲಿರುವ ವಿಶ್ವ ವೆಂಕಟೇಶ್ವರ ವಿದ್ಯಾಧಾನ ಕೇಂದ್ರದ ವಿರುದ್ಧ ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದಿಂದ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಿ ಸಂಸ್ಥೆಯ ಹೆಸರಿಗೆ ಧಕ್ಕೆ ತರುವ ಹುನ್ನಾರ ಕಳೆದ 3 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಗಂಭೀರ ಆರೋಪ ಮಾಡಿದೆ.
ಕೇವಲ 20 ವಿದ್ಯಾರ್ಥಿಗಳಿಂದ ಆರಂಭವಾದ ಈ ಸಂಸ್ಥೆಯು ಇಂದು ವಿವಿಐಎಸ್ ಶಾಲೆ, ಕೆಬಿಸಿ ಪಿಯು ಕಾಲೇಜು ಮತ್ತು ವಿವಿ ಪದವಿ ಕಾಲೇಜುಗಳನ್ನು ಹೊಂದಿದೆ. ಬಡ ಕೂಲಿ ಕಾರ್ಮಿಕರು ಮತ್ತು ವಲಸೆ ಕುಟುಂಬಗಳ 600ಕ್ಕೂ ಹೆಚ್ಚು ಮಕ್ಕಳು ಇಲ್ಲಿ ಕಡಿಮೆ ಶುಲ್ಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಪದವಿ ಕಾಲೇಜು ಆರಂಭಿಸಲು ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದ ಖಾಲಿ ಕಟ್ಟಡವನ್ನು 5 ವರ್ಷಗಳ ಅವಧಿಗೆ ಬಾಡಿಗೆಗೆ ಪಡೆಯಲಾಗಿತ್ತು. ವಿಠಲಗಿರಿಧಾಮದ ಮಠಾಧೀಶರಾದ ಶ್ರೀ ನಿರ್ಮಲಾನಂದ ಪುರಿ ಅವರು ಪ್ರತಿ ವರ್ಷ 5% ಬಾಡಿಗೆ ಹೆಚ್ಚಳದ ಷರತ್ತಿನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು.
ಸಂಸ್ಥೆಯ ಅಧ್ಯಕ್ಷರು ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ, ಖಾಲಿ ಇದ್ದ ದೊಡ್ಡ ಕೊಠಡಿಗಳಿಗೆ ವಿಭಜನೆ, ಬಾಗಿಲುಗಳನ್ನು ಅಳವಡಿಸಿ, ಫರ್ನಿಚರ್ ತುಂಬಿ ತರಗತಿಗಳನ್ನು ಆರಂಭಿಸಿದರು. ಕಳೆದ 7 ವರ್ಷಗಳಿಂದ ಈ ಕಟ್ಟಡದಲ್ಲಿಯೇ ತರಗತಿಗಳು ನಡೆಯುತ್ತಿದ್ದು, ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅದೇ ಮಠದ ಮತ್ತೊಂದು ಭಾಗವನ್ನು “ಟಾಮ್ ಅಂಡ್ ಜೆರ್ರಿ” ವಿಶೇಷ ಮಕ್ಕಳ ಶಾಲೆಗೆ ಬಾಡಿಗೆಗೆ ನೀಡಲಾಗಿದೆ.
ಆದರೆ ಕಳೆದ 3 ವರ್ಷಗಳಿಂದ ಶ್ರೀ ನಿರ್ಮಲಾನಂದ ಪುರಿ ಮತ್ತು ಅವರ ಹಿಂಬಾಲಕರು ಶೈಕ್ಷಣಿಕ ವಾತಾವರಣಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಕಾಲೇಜಿನ ಸಿಬ್ಬಂದಿಯ ಮೇಲೆ ಅವಾಚ್ಯ ಶಬ್ದಗಳ ಪ್ರಯೋಗ, ಪರೀಕ್ಷಾ ಸಮಯದಲ್ಲಿ ಸ್ವಾಮೀಜಿಯ ಹಿಂಬಾಲಕರು ಕಾಲೇಜಿನ ಒಳಗೆ ನುಗ್ಗಿ ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಂಡು ತಪ್ಪು ಮಾಹಿತಿ ಹರಡುವ ಮೂಲಕ ಸಂಸ್ಥೆಯ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ ಎಂದು ಆಡಳಿತ ಮಂಡಳಿ ದೂರಿದೆ.
ಇದರ ಜೊತೆಗೆ ಇನ್ನೊಂದು ಗಂಭೀರ ಆರೋಪ ಕೇಳಿಬಂದಿದೆ. ವಿಠಲ ರುಕ್ಮಿಣಿ ಮಠದ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಮೀನನ್ನು *”ಗೋಶಾಲೆ ಮತ್ತು ವೃದ್ಧಾಶ್ರಮ”*ಕ್ಕಾಗಿ ಮಂಜೂರು ಮಾಡಲಾಗಿದೆ. ಆದರೆ ಮಂಜೂರಾದ ಉದ್ದೇಶವನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ಜಮೀನನ್ನು ವಾಣಿಜ್ಯ ಉದ್ದೇಶಕ್ಕಾಗಿ ಹಂತಹಂತವಾಗಿ ಬಾಡಿಗೆಗೆ ನೀಡಲಾಗುತ್ತಿದೆ.
ಸಭಾಂಗಣದಲ್ಲಿದ್ದ ದೇವರ ಮೂರ್ತಿಯನ್ನು ಸಹ ಹಣಕ್ಕಾಗಿ ಬೇರೆ ಕಡೆಗೆ ವರ್ಗಾಯಿಸಿ ವಾಣಿಜ್ಯ ಉದ್ದೇಶಕ್ಕೆ ಬಳಸಲಾಗಿದೆ. ಸರ್ಕಾರವು ಈ ಜಾಗವನ್ನು ಗೋಶಾಲೆ ಮತ್ತು ವೃದ್ಧಾಶ್ರಮ ನಡೆಸುವುದಕ್ಕೆ ಮಂಜೂರು ಮಾಡಿದ್ದರೂ, ಇಲ್ಲಿ ಯಾವುದೇ ಗೋಶಾಲೆ ಅಥವಾ ವೃದ್ಧಾಶ್ರಮ ನಡೆಯುತ್ತಿಲ್ಲ. ಮಠದ ಆಸ್ತಿಯನ್ನು ಸ್ವಾಮೀಜಿ ಮತ್ತು ಅವರ ಹಿಂಬಾಲಕರು ಕಮರ್ಷಿಯಲ್ ಉದ್ದೇಶಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದು ಆಡಳಿತ ಮಂಡಳಿಯ ಆರೋಪ.
ಈ ಬೆಳವಣಿಗೆಯಿಂದಾಗಿ ಕಾಲೇಜಿನಲ್ಲಿ ಓದುತ್ತಿರುವ ನೂರಾರು ಬಡ ವಿದ್ಯಾರ್ಥಿಗಳ ಭವಿಷ್ಯ ಪ್ರಶ್ನಾರ್ಥಕವಾಗಿದೆ. ಕಂದಾಯ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ತನಿಖೆ ನಡೆಸಿ ಮಠದ ಸ್ವಾಮೀಜಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಆಡಳಿತ ಮಂಡಳಿ ಮತ್ತಷ್ಟು ಆರೋಪಿಸಿರುವ ಪ್ರಕಾರ, ಮಠದ ಸ್ವಾಮೀಜಿ ಸಾರ್ವಜನಿಕವಾಗಿ “ಮಠದ ಆಸ್ತಿಯನ್ನು ಸರ್ಕಾರದಿಂದ 54 ಲಕ್ಷ ರೂ.ಗೆ ಖರೀದಿ ಮಾಡಿದ್ದೇನೆ” ಎಂದು ಹೇಳಿಕೊಂಡಿದ್ದಾರೆ. ಅವರ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಒಬ್ಬ ವೃದ್ಧ ಮಹಿಳೆಯನ್ನು ಮೋಸ ಮಾಡಿ ಸೈಟ್ ಕಬಳಿಕೆ ಮಾಡಿ ಬೇರೊಬ್ಬರಿಗೆ ಮಾರಾಟ ಮಾಡಲಾಗಿದೆ. ಅಲ್ಲದೆ ಒಬ್ಬ ವೈದ್ಯರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ನೀಡುವುದಾಗಿ ಹೇಳಿ 10 ಲಕ್ಷ ರೂ. ಟೋಕನ್ ಹಣ ಪಡೆದು, ಹಣ ಹಿಂತಿರುಗಿಸದೆ ಸಮಸ್ಯೆ ಮಾಡಿದ ಪ್ರಕರಣವೂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. “ಹಣಕ್ಕಾಗಿ ಕಾವಿ ಧರಿಸಿ ಸಮಾಜಕ್ಕೆ ನಾಚಿಕೆ ತರುವ ಕೆಲಸ ಮಾಡುತ್ತಿದ್ದಾರೆ” ಎಂದು ಆಡಳಿತ ಮಂಡಳಿ ಆರೋಪಿಸಿದೆ.
~ವರದಿ: ಪವನ್ ಕಲ್ಯಾಣ್ ಡಿ.ಜಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
ಸುದ್ದಿದಿನ,ದಾವಣಗೆರೆ: ಅಪರೂಪದ ಲಿವರ್ (ಯಕೃತ್ತಿನ) ಟ್ಯೂಮರ್ನಿಂದ ಬಳಲುತ್ತಿದ್ದ 56 ವರ್ಷದ ಮಹಿಳೆಗೆ ಇಲ್ಲಿನ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸುಮಾರು ಆರು ಗಂಟೆಗಳ ಕಾಲ ನಡೆದ ಈ ಅತ್ಯಂತ ಸಂಕೀರ್ಣ ಶಸ್ತ್ರಚಿಕಿತ್ಸೆಯಲ್ಲಿ, ವೈದ್ಯರು ಟ್ಯೂಮರ್ (ಗಡ್ಡೆ) ಯನ್ನುಸಂಪೂರ್ಣವಾಗಿ ತೆಗೆದುಹಾಕುವುದರ ಜೊತೆಗೆ ಲಿವರ್ನ ಆರೋಗ್ಯಕರ ಭಾಗಗಳಿಗೆ ಯಾವುದೇ ಹಾನಿಯಾಗದಂತೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿತ್ರದುರ್ಗ ಮೂಲದ ಈ ಮಹಿಳೆ, ಬೊಜ್ಜಿನ ಸಮಸ್ಯೆಯ ಜೊತೆಗೆ ಟೈಪ್-2 ಮಧುಮೇಹ ಮತ್ತು ಹೈಪೋಥೈರಾಯ್ಡಿಸಮ್ (ಥೈರಾಯ್ಡ್ ಸಮಸ್ಯೆ) ದಂತಹ ಕಾಯಿಲೆಗಳಿಂದಲೂ ಬಳಲುತ್ತಿದ್ದರು. ಕಳೆದ ಎರಡು ತಿಂಗಳಿನಿಂದ ನಿರಂತರ ಹೊಟ್ಟೆನೋವು ಹಾಗೂ ಹಸಿವಾಗದಿರುವ ಸಮಸ್ಯೆಯಿಂದ ಅವರು ಒದ್ದಾಡುತ್ತಿದ್ದರು. ಇದಕ್ಕಾಗಿ ಸ್ಥಳೀಯ ಕ್ಲಿನಿಕ್ಗಳು ಮತ್ತು ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಅಲ್ಲಿನ ತಪಾಸಣೆಯಲ್ಲಿ ಅವರಿಗೆ ಲಿವರ್ ಟ್ಯೂಮರ್ ಇರುವುದು ಪತ್ತೆಯಾಗಿತ್ತು.
ಸರಿಯಾದ ಚಿಕಿತ್ಸೆ ಸಿಗದೆ ಕಾಯಿಲೆ ಉಲ್ಬಣಗೊಂಡಿದ್ದಾಗ, ಅವರ ಪರಿಚಿತರೊಬ್ಬರು ದಾವಣಗೆರೆಯ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ಗೆ ಭೇಟಿ ನೀಡಿ, ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಆರ್.ಕೆ. ಹನುಮಂತ ನಾಯ್ಕ್ ಅವರನ್ನು ಸಂಪರ್ಕಿಸಲು ಸಲಹೆ ನೀಡಿದರು. ಮೊದಲ ತಪಾಸಣೆಯ ನಂತರ, ಮಹಿಳೆಯನ್ನು ಸ್ಕ್ಯಾನಿಂಗ್ ಮತ್ತು ಇತರ ಪರೀಕ್ಷೆಗಳಿಗೆ ಒಳಪಡಿಸಲಾಯಿತು. ಈ ವೇಳೆ ಅವರ ಲಿವರ್ನ ಎಡಭಾಗದ (ಲೆಫ್ಟ್ ಲೋಬ್) ಆಳದಲ್ಲಿ ಗಡ್ಡೆಯೊಂದು ಬೆಳೆದಿರುವುದು ಕಂಡುಬಂತು. ಹೆಚ್ಚಿನ ಪರೀಕ್ಷೆಗಳ ನಂತರ ಇದು ‘ಇಂಟ್ರಾಹೆಪಾಟಿಕ್ ಚೋಲಾಂಜಿಯೋಕಾರ್ಸಿನೋಮ’ (intrahepatic cholangiocarcinoma) ಎಂಬ ಕಾಯಿಲೆ ಎಂದು ದೃಢಪಟ್ಟಿತು. ಈ ಹಿಂದೆಯೇ ಅವರಿಗೆ ಈ ಕಾಯಿಲೆ ಇರುವುದು ಪತ್ತೆಯಾಗಿದ್ದರೂ, ಶಸ್ತ್ರಚಿಕಿತ್ಸೆಯಲ್ಲಿನ ಸಂಕೀರ್ಣತೆಯ ಕಾರಣದಿಂದಾಗಿ ಹಿಂದಿನ ವೈದ್ಯರು ಅದನ್ನು ತೆಗೆದುಹಾಕಲು ಹಿಂದೇಟು ಹಾಕಿದ್ದರು.
ಸುಮಾರು 95 ಕೆ.ಜಿ ತೂಕವಿದ್ದ ಆ ಮಹಿಳೆ ಬೊಜ್ಜು ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರಿಂದ, ಇಂತಹ ದೊಡ್ಡ ಶಸ್ತ್ರಚಿಕಿತ್ಸೆಗೆ ಒಳಪಡಿಸುವುದು ಅತ್ಯಂತ ಅಪಾಯಕಾರಿಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ, ಈ ರೋಗಿಯು ಶಸ್ತ್ರಚಿಕಿತ್ಸೆಯನ್ನು ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವೈದ್ಯರು ಹೃದಯ ಮತ್ತು ಶ್ವಾಸಕೋಶದ ವಿವರವಾದ ಪರೀಕ್ಷೆಗಳನ್ನು ನಡೆಸಿದರು.
ಈ ಸವಾಲಿನ ಪ್ರಕರಣವನ್ನು ಕೈಗೆತ್ತಿಕೊಂಡ ಡಾ. ಹನುಮಂತ ನಾಯ್ಕ್ ಮತ್ತು ಅವರ ತಂಡ, ಕ್ಯಾನ್ಸರ್ ಗಡ್ಡೆಯನ್ನು ಯಶಸ್ವಿಯಾಗಿ ತೆಗೆದುಹಾಕಲು ಸುಮಾರು ಆರು ಗಂಟೆಗಳ ಕಾಲ ಶ್ರಮಿಸಿತು. ಇದರ ಜೊತೆಗೆ ಸಾಕಷ್ಟು ಆರೋಗ್ಯಕರ ಲಿವರ್ ಸರಿಯಾಗಿ ಕಾರ್ಯನಿರ್ವಹಿಸುವಂತೆಯೂ ನೋಡಿಕೊಂಡಿತು. ಈ ಶಸ್ತ್ರಚಿಕಿತ್ಸೆಯು ಪಿತ್ತಕೋಶದ (ಗಾಲ್ ಬ್ಲಾಡರ್) ಜೊತೆಗೆ ಲಿವರ್ನ II, III, IVa ಮತ್ತು IVb ಭಾಗಗಳನ್ನು ತೆಗೆದುಹಾಕುವ ದೊಡ್ಡ ಶಸ್ತ್ರಚಿಕಿತ್ಸೆಯನ್ನು (ಮೇಜರ್ ಲೆಫ್ಟ್ ಹೆಪಟೆಕ್ಟಮಿ) ಒಳಗೊಂಡಿತ್ತು. ಈ ಪ್ರಕ್ರಿಯೆಯಲ್ಲಿ ಮಧ್ಯದ ಹೆಪಾಟಿಕ್ ರಕ್ತನಾಳವನ್ನು ಅತ್ಯಂತ ಎಚ್ಚರಿಕೆಯಿಂದ ರಕ್ಷಿಸಲಾಯಿತು.
ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯು ಅತ್ಯಂತ ತ್ವರಿತವಾಗಿ ಚೇತರಿಸಿಕೊಂಡರು. ಶಸ್ತ್ರಚಿಕಿತ್ಸೆ ಮುಗಿದ ಆರು ಗಂಟೆಗಳಲ್ಲೇ ದ್ರವಾಹಾರ ಸೇವಿಸಲು ಆರಂಭಿಸಿದ ಅವರು, ಕ್ರಮೇಣ ಮೃದುವಾದ ಆಹಾರವನ್ನು ಸೇವಿಸುವ ಹಂತಕ್ಕೆ ತಲುಪಿದರು. ಅವರ ಆರೋಗ್ಯ ಸ್ಥಿರವಾಗಿದ್ದರಿಂದ ಕೇವಲ ಐದು ದಿನಗಳಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.
ಶಸ್ತ್ರಚಿಕಿತ್ಸೆ ಬಗ್ಗೆ ಮಾತನಾಡಿದ ಡಾ. ಆರ್. ಕೆ. ಹನುಮಂತ ನಾಯ್ಕ್, “ಟ್ಯೂಮರ್ನ ಗಾತ್ರ ಮತ್ತು ಅದು ಇದ್ದ ಜಾಗ, ಅದರ ಜೊತೆಗೆ ರೋಗಿಯ ಬೊಜ್ಜು ಮತ್ತು ಇತರ ವೈದ್ಯಕೀಯ ಸಮಸ್ಯೆಗಳಿಂದಾಗಿ ಇದು ತಾಂತ್ರಿಕವಾಗಿ ಅತ್ಯಂತ ಸವಾಲಿನ ಶಸ್ತ್ರಚಿಕಿತ್ಸೆಯಾಗಿತ್ತು. ಆರೋಗ್ಯಕರ ಲಿವರ್ ಅನ್ನು ಉಳಿಸಿಕೊಂಡು ಕ್ಯಾನ್ಸರ್ ಗಡ್ಡೆಯನ್ನು ಸಂಪೂರ್ಣವಾಗಿ ತೆಗೆದುಹಾಕುವುದು ನಮ್ಮ ಮೊದಲ ಆದ್ಯತೆಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ ಎಚ್ಚರಿಕೆಯ ಮೌಲ್ಯಮಾಪನ, ಶಸ್ತ್ರಚಿಕಿತ್ಸೆಯ ನಿಖರವಾದ ಯೋಜನೆ ಮತ್ತು ಶಸ್ತ್ರಚಿಕಿತ್ಸೆಯ ನಂತರದ ವ್ಯವಸ್ಥಿತ ಆರೈಕೆಯು ಈ ಯಶಸ್ಸಿಗೆ ಕಾರಣವಾಯಿತು” ಎಂದು ತಿಳಿಸಿದರು.
ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಕೇಂದ್ರದ ಫೆಸಿಲಿಟಿ ಡೈರೆಕ್ಟರ್ ಶ್ರೀ ಸುನಿಲ್ ಭಂಡಾರಿಗಲ್ ಮಾತನಾಡಿ, “ಹೆಚ್ಚಿನ ಅಪಾಯದಲ್ಲಿದ್ದ ರೋಗಿಗೆ ಇಂತಹ ಸಂಕೀರ್ಣವಾದ ಲಿವರ್ ಟ್ಯೂಮರ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿಭಾಯಿಸಿರುವುದು ನಮ್ಮ ಶಸ್ತ್ರಚಿಕಿತ್ಸಾ ತಂಡದ ಪರಿಣತಿ ಮತ್ತು ವಿವಿಧ ವಿಭಾಗಗಳ ವೈದ್ಯರ ಸಂಯೊಜನೆ ಆರೈಕೆಯ (multidisciplinary care) ಮಹತ್ವವನ್ನು ತೋರಿಸುತ್ತದೆ. ಸಂಕೀರ್ಣ ಆರೋಗ್ಯ ಸಮಸ್ಯೆಗಳಿಗೆ ಸುಧಾರಿತ, ಸಕಾಲಿಕ ಮತ್ತು ರೋಗಿ-ಕೇಂದ್ರಿತ ಚಿಕಿತ್ಸೆಯನ್ನು ಒದಗಿಸುವುದೇ ನಮ್ಮ ಪ್ರಮುಖ ಗುರಿಯಾಗಿದೆ” ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ5 days agoಶಿಕ್ಷಣ ಸಂಸ್ಥೆಗಳು ವೈಚಾರಿಕತೆ ; ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಾಗಲಿ
-
ಅಂತರಂಗ5 days agoದಿಮಾಗಿ ನಕ್ಸಲ್-ನಗರ ನಕ್ಸಲ್
-
ದಿನದ ಸುದ್ದಿ7 days agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ
-
ದಿನದ ಸುದ್ದಿ3 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ14 hours agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ

