ದಿನದ ಸುದ್ದಿ
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ ಮನೆಗೆ ಬಿಎಲ್ಒಗಳ ಭೇಟಿ ಪ್ರಾರಂಭ
ಸುದ್ದಿದಿನ,ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಾದ್ಯಂತ ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜೂನ್ 30 ರಿಂದಲೇ ಬೂತ್ ಮಟ್ಟದ ಅಧಿಕಾರಿಗಳು ಎನುಮೆರೇಷನ್ ನಮೂನೆಗಳೊಂದಿಗೆ ಮತದಾರರ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.
ಜೂನ್ 16ರ ವರೆಗಿನ ಅಂಕಿ-ಅಂಶಗಳಂತೆ ಜಿಲ್ಲೆಯಲ್ಲಿ ಒಟ್ಟು 14,99,282 ಮತದಾರರಿದ್ದಾರೆ. ಮತದಾರರ ನಿಖರ ಮಾಹಿತಿ ಪಡೆಯಲು ಈಗಾಗಲೇ 8,99,435 ಎನುಮೆರೇಷನ್ ನಮೂನೆಗಳನ್ನು ಬಿಎಲ್ಒಗಳ ಮೂಲಕ ಸಾರ್ವಜನಿಕರಿಗೆ ವಿತರಿಸಲಾಗಿದ್ದು, ಈ ಪೈಕಿ 38,003 ನಮೂನೆಗಳ ಗಣಕೀಕರಣ ಪ್ರಕ್ರಿಯೆಯೂ ಪೂರ್ಣಗೊಂಡಿದೆ.
ಕ್ಷೇತ್ರವಾರು ಮಾಹಿತಿ ಮತ್ತು ಪ್ರಗತಿ ವಿವರ
ಜಗಳೂರು: 2,00,836 ಒಟ್ಟು ಮತದಾರರಿದ್ದು, 1,27,608 ನಮೂನೆಗಳನ್ನು ವಿತರಿಸಲಾಗಿದೆ. ಹರಿಹರ: 2,11,023 ಮತದಾರರಿದ್ದು, 1,55,143 ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ. ದಾವಣಗೆರೆ ಉತ್ತರ: 2,58,718 ಮತದಾರರ ಪೈಕಿ 69,881 ನಮೂನೆಗಳನ್ನು ವಿತರಿಸಲಾಗಿದೆ. ದಾವಣಗೆರೆ ದಕ್ಷಿಣ: 2,27,996 ಮತದಾರರಿದ್ದು, 79,365 ನಮೂನೆಗಳನ್ನು ಹಂಚಲಾಗಿದೆ. ಮಾಯಕೊಂಡ: 1,97,048 ಮತದಾರರಿದ್ದು, 1,66,618 ನಮೂನೆ ವಿತರಣೆಯಾಗಿದೆ. ಚನ್ನಗಿರಿ: 2,03,628 ಮತದಾರರ ಪೈಕಿ 1,64,380 ನಮೂನೆಗಳನ್ನು ತಲುಪಿಸಲಾಗಿದೆ. ಹೊನ್ನಾಳಿ: 2,00,033 ಒಟ್ಟು ಮತದಾರರಿದ್ದು, 1,36,440 ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ.
ಸ್ಥಳಾಂತರ, ವಲಸೆ ಹಾಗೂ ಮರಣ ಪ್ರಕರಣಗಳ ಪತ್ತೆ: ಮನೆ ಮನೆ ಭೇಟಿಯ ಸಂದರ್ಭದಲ್ಲಿ ಬಿಎಲ್ಒಗಳು ಮತದಾರರ ವಿವರಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ. ಜುಲೈ 1ರ ವರೆಗಿನ ವರದಿಯ ಪ್ರಕಾರ, ಜಿಲ್ಲಾದ್ಯಂತ ಒಟ್ಟು 421 ವಿಶೇಷ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ 188 ಮರಣ ಹೊಂದಿದ ಪ್ರಕರಣಗಳು, 153 ಶಾಶ್ವತವಾಗಿ ವಲಸೆ ಹೋದವರು, 71 ದ್ವಿಪ್ರತಿ ಮತದಾರರು ಹಾಗೂ 5 ಅಪೂರ್ಣ ಮಾಹಿತಿ ಇರುವ ಪ್ರಕರಣಗಳು ಸೇರಿವೆ. ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಗರಿಷ್ಠ 110 ಹಾಗೂ ಮಾಯಕೊಂಡದಲ್ಲಿ 93 ಇಂತಹ ಪ್ರಕರಣಗಳು ಪತ್ತೆಯಾಗಿವೆ. ಈ ಮನೆ ಮನೆ ಭೇಟಿ ಹಾಗೂ ನಮೂನೆಗಳ ಸಂಗ್ರಹಣೆ ಮತ್ತು ಗಣಕೀಕರಣ ಪ್ರಕ್ರಿಯೆಯು ಜುಲೈ 29, 2026 ರವರೆಗೆ ಮುಂದುವರಿಯಲಿದ್ದು, ಸಾರ್ವಜನಿಕರು ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿ ಸಹಕರಿಸಬೇಕೆಂದು ಜಿಲ್ಲಾಡಳಿತ ಕೋರಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು ತಿಳಿಸಿದ್ದಾರೆ.
ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ5 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ4 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ3 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ1 day agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ23 hours agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

