Connect with us

ಬಹಿರಂಗ

ಯುದ್ಧೋನ್ಮಾದದ ನಡುವೆ ನಾಗರಿಕ ಪ್ರಜ್ಞೆಯ ಜಾಗೃತಿ

Published

on

  • ನಾ ದಿವಾಕರ

ಕೋವಿದನ ರಣಕೇಕೆ, ಕೊರೋನಾದ ರಣಾಂಗಣ ಮತ್ತು ಸೂರ್ಯ ಗ್ರಹಣದ ಪ್ರಳಯಾಂತಕ ಆಕ್ರಮಣದ ಸುದ್ದಿಗಳು ತೆರೆಮರೆಗೆ ಸರಿದು ಇದೀಗ ಕನ್ನಡ ಸುದ್ದಿಮನೆಗಳಲ್ಲಿ ಚೀನಾ ಬಂದು ಕುಳಿತಿದೆ.

ಗಡಿ ಪ್ರದೇಶದಲ್ಲಿ ಚೀನಾ ಮತ್ತು ಭಾರತದ ಘರ್ಷಣೆ ನಡೆದು ತಹಬಂದಿಗೆ ಬಂದಿದ್ದು, ಉಭಯ ರಾಷ್ಟ್ರಗಳ ರಾಜಕೀಯ, ಸೇನಾ ನಾಯಕರು, ರಾಜತಾಂತ್ರಿಕ ಅಧಿಕಾರಿಗಳು ಮಾತುಕತೆಯಲ್ಲಿ ತೊಡಗಿದ್ದರೂ ಇತ್ತ ಕನ್ನಡದ ಸುದ್ದಿಮನೆಗಳಲ್ಲಿ ಯುದ್ಧದ ಸಿದ್ಧತೆ ಇನ್ನೂ ನಿಂತಿಲ್ಲ. ಜನತೆಗೆ ದೇಶದಲ್ಲಿ ನಡೆಯುವ ವಿದ್ಯಮಾನಗಳನ್ನು ಸುದ್ದಿಯ ಮೂಲಕ ಮುಟ್ಟಿಸುವ ತಮ್ಮ ಪ್ರಾಥಮಿಕ ಕರ್ತವ್ಯವನ್ನೇ ಮರೆತಂತಿರುವ ಸುದ್ದಿಮನೆಗಳು ಈಗ ಬಹುತೇಕ ಒಂದು ಪಕ್ಷದ ವಕ್ತಾರರಂತೆ ವರ್ತಿಸುತ್ತಿರುವುದು ದುರಂತ.

ಭಾರತದ ಪ್ರತಿಯೊಬ್ಬ ಪ್ರಜೆಯೂ ತನ್ನ ದೇಶದ ಬಗ್ಗೆ ಗೌರವ, ಕಾಳಜಿ, ವಿಶ್ವಾಸ ಮತ್ತು ನಂಬಿಕೆಯನ್ನು ಹೊಂದಿರುತ್ತಾನೆ. ರಾಜಕೀಯ ಪರಿಭಾಷೆಯ ಅಥವಾ ಸಾಂಸ್ಕೃತಿಕ ರಾಜಕಾರಣದ ಪರಿಭಾಷೆಯ ಪ್ರೇಮ, ಭಕ್ತಿ ಮತ್ತು ಉನ್ಮಾದಗಳನ್ನು ಬದಿಗಿಟ್ಟು ನೋಡಿದಾಗ ಜನಸಾಮಾನ್ಯರ ಈ ಭಾವನೆ ಸ್ಪಷ್ಟವಾಗಿ ಕಾಣುತ್ತದೆ.

ನಾನು ಭಾರತೀಯ ಎಂದು ಎದೆತಟ್ಟಿ ಹೇಳಿಕೊಳ್ಳುವುದು ಭಾವನಾತ್ಮಕವಾಗಿ ಗಮನ ಸೆಳೆಯಬಹುದು. ಆದರೆ ಈ ರೀತಿಯ ಸ್ವಯಂ ಘೋಷಣೆಯ ಅನಿವಾರ್ಯತೆ ಸೃಷ್ಟಿಯಾಗುವುದು ನೈತಿಕ ಅವಸಾನದ ಸಂಕೇತ. ಸಾಪೇಕ್ಷ ನೆಲೆಯಲ್ಲಿ ಸೃಷ್ಟಿಯಾಗುವ ಈ ಸ್ವಘೋಷಣಾ ಪ್ರವೃತ್ತಿ ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಅಸ್ಮಿತೆಗಳ ಚೌಕಟ್ಟಿಗೆ ಸಿಲುಕಿ ವಿಭಜಕ ರಾಜಕಾರಣಕ್ಕೆ ದಾರಿ ಮಾಡಿಕೊಡುತ್ತದೆ.

ಗಡಿಯಲ್ಲಿ ದೇಶ ಕಾಯುವ ಯೋಧರು ನಾಗರಿಕ ಸಮಾಜದ ನಡುವೆ ಸದಾ ನೆಲೆಸಿರುತ್ತಾರೆ. ಈ ಯೋಧರ ನಿತ್ಯ ಬವಣೆ, ಚಳಿ ಗಾಳಿಯೆನ್ನದೆ ಹಗಲಿರುಳೆನ್ನದೆ ದೇಶದ ರಕ್ಷಣೆಗಾಗಿ ಜೀವ ಪಣಕ್ಕಿಟ್ಟು ಹೋರಾಡಲು ಸಜ್ಜಾಗಿರುವ ಈ ಜೀವಿಗಳು ಸಮಾಜದ ಹಿತವಲಯದ ಕೂಸುಗಳಲ್ಲ ಎನ್ನುವ ಪರಿಜ್ಞಾನ ನಮ್ಮಲ್ಲಿದ್ದರೆ ನಾವು ಯೋಧರನ್ನು ಭಾವನಾತ್ಮಕ ನೆಲೆಯಲ್ಲಿ ನೋಡುವುದಿಲ್ಲ.

ಮಡಿದ ಮೇಲೆ ಹುತಾತ್ಮರಾಗಿ ಜನಮಾನಸದಲ್ಲಿ ನೆಲೆಸುವ ಯೋಧರು ಸೇವೆಯಿಂದ ನಿವೃತ್ತರಾಗಿ ಸಮಾಜದ ನಡುವೆ ಬದುಕು ಸವೆಸುವ ಸಂದರ್ಭದಲ್ಲಿ ಯಾವ ನೆಲೆಯಲ್ಲಿ ನಿಲ್ಲುತ್ತಾರೆ ಎಂದು ಸೂಕ್ಷ್ಮವಾಗಿ ಗಮನಿಸಿದಾಗ ನಮ್ಮ ಸಮಾಜದ ಮತ್ತೊಂದು ಮುಖ ಪರಿಚಯವಾಗಲು ಸಾಧ್ಯ.

ಆಧುನಿಕ ನಾಗರಿಕ ಪ್ರಪಂಚದಲ್ಲಿ ಸಾಂಕೇತಿಕ ಅಭಿವ್ಯಕ್ತಿಗೆ ಎಷ್ಟು ಮಾನ್ಯತೆ ದೊರೆಯುವುದೋ ಅಷ್ಟೇ ಮಾನ್ಯತೆ ವ್ಯಕ್ತಿಯ ಬಾಹ್ಯ ಚಹರೆ ಮತ್ತು ಈ ಚಹರೆಗೆ ಒಂದು ಅಸ್ಮಿತೆಯನ್ನು ನೀಡುವ ಪೋಷಾಕುಗಳಿಗೂ ದೊರೆಯುತ್ತದೆ. ಸಮವಸ್ತ್ರವನ್ನು ಕಳಚಿಟ್ಟ ಯೋಧರ ಬದುಕನ್ನು ಒಮ್ಮೆ ನೋಡಿದರೆ ಈ ವಾಸ್ತವದ ಅರಿವಾಗುತ್ತದೆ.

ಏಕೆ ಹೀಗೆ ಎಂದು ಯೋಚಿಸಿದಾಗ ನಾವು ಯುದ್ಧ ಸನ್ನಿವೇಶದ ನೈಜ ಚಿತ್ರಣದತ್ತ ಗಮನಹರಿಸಬೇಕಾಗುತ್ತದೆ. ಯುದ್ಧ ಎಂದರೆ ಕೇವಲ ಮಾರಣಾಂತಿಕ ಶಸ್ತ್ರಾಸ್ತ್ರಗಳ ಪೈಪೋಟಿ ಅಲ್ಲ ಎನ್ನುವ ವಾಸ್ತವವನ್ನು ನಾಗರಿಕ ಸಮಾಜ ಅರ್ಥಮಾಡಿಕೊಳ್ಳದೆ ಹೋದರೆ ಬಹುಶಃ ನಾಗರಿಕತೆಯೇ ಅಳಿಸಿಹೋಗುತ್ತದೆ.

ಈ ದುರಂತ ವಾಸ್ತವದ ಕಥನವನ್ನು ನಾವು, ವೀರ ಸೇನಾನಿಗಳ ಅನುಭವದಿಂದಲೇ ಗ್ರಹಿಸಬೇಕಿದೆ. ಸೇನೆ ಎಂದ ಕೂಡಲೇ ಮೈನವಿರೇಳುವಂತೆ ಮಾತನಾಡುವುದು , ರೋಮಾಂಚನವಾದಂತೆ ವರ್ತಿಸುವುದು, ದೇಶಭಕ್ತಿಯ ಉನ್ಮಾದದಲ್ಲಿ ತೇಲುವುದು ನಾಗರಿಕ ಸಮಾಜದ ಲಕ್ಷಣವಲ್ಲ. ಹೀಗೆ ಮಾಡುವುದರಿಂದಲೇ ನಮಗೆ ಹೆಣಗಳನ್ನು ಎಣಿಸುವ ಚಾಳಿ ಕರಗತವಾಗಿದೆ.

ಗಡಿಯಲ್ಲಿ ಮಡಿದ ಪ್ರತಿಯೊಬ್ಬ ಯೋಧ ನಮ್ಮೊಳಗಿನ ಮಾನವ ಪ್ರಜ್ಞೆಯನ್ನು ಬಡಿದೆಬ್ಬಿಸಿ ನಾಗರಿಕತೆಯ ರಕ್ಷಣೆಗೆ ಬದ್ಧರಾಗುವಂತೆ ಮಾಡಬೇಕು. ಆದರೆ ಉನ್ಮಾದದ ಪರಿಸ್ಥಿತಿಯಲ್ಲಿ ಈ ಪ್ರತಿಯೊಂದು ಸಾವು ಪ್ರತೀಕಾರದ ಕ್ರೋಧವನ್ನು ಬೆಳೆಸುತ್ತದೆ. ಈ ಕ್ರೌರ್ಯವೇ ಉರುಳಿದ ತಲೆಗಳಿಗಾಗಿ ಹಾತೊರೆಯುವಂತೆ ಮಾಡುತ್ತದೆ.

ನಾವು ಬಯಸುವುದಾದರೂ ಏನನ್ನು ? ನಮ್ಮ ದೇಶದ ಸುರಕ್ಷತೆಯೇ ನಮ್ಮ ಆದ್ಯತೆಯಾಗಿದ್ದರೆ ನಾವು ಯುದ್ಧ ಬಯಸುವುದಿಲ್ಲ, ಶಾಂತಿ ಬಯಸುತ್ತೇವೆ. ಆದರೆ ಮತ್ತಾವುದೋ ರಾಷ್ಟ್ರ ನಮ್ಮ ದೇಶದ ಮೇಲೆ ಆಕ್ರಮಣ ನಡೆಸಿದಾಗ ಮನಸು ವಿಚಲಿತವಾಗುತ್ತದೆ. ಆತಂಕ ಹೆಚ್ಚಾಗುತ್ತದೆ. ಅನಿಶ್ಚಿತತೆ ಕಾಡುತ್ತದೆ. ನಾಳಿನ ಚಿಂತೆ ಕಾಡುತ್ತದೆ.

ಏಕೆಂದರೆ ಯುದ್ಧ ಎನ್ನುವುದು ಸಮಾಜದ ಬಹುಸಂಖ್ಯೆಯ ಜನರಿಗೆ ಸಾವು ಬದುಕಿನ ಪ್ರಶ್ನೆಯಾಗುತ್ತದೆ. ಇದು ಹಿತವಲಯದಲ್ಲಿರುವವರಿಗೆ ಅರ್ಥವಾಗುವುದಿಲ್ಲ. ಗಡಿಯಲ್ಲಿ ದೇಶದ ರಕ್ಷಣೆಗಾಗಿ ಟೊಂಕಕಟ್ಟಿ ನಿಂತಿರುವ ಯೋಧರು ಈ ಅನಿಶ್ಚಿತತೆಯನ್ನು ಪ್ರತಿಕ್ಷಣವೂ ಎದುರಿಸುತ್ತಿರುತ್ತಾರೆ ಎನ್ನುವ ಪರಿಜ್ಞಾನವೂ ಸಮಾಜಕ್ಕೆ ಇರಬೇಕು.

ಈ ಪರಿಜ್ಞಾನ ಸಮಾಜದಲ್ಲಿ ಇದ್ದರೆ ಆಳುವ ವರ್ಗಗಳು ಆದಷ್ಟೂ ಮಟ್ಟಿಗೆ ತಮ್ಮ ಪರಾಕ್ರಮದ ಧೋರಣೆಯನ್ನು ಬದಿಗಿಟ್ಟು ಸ್ನೇಹಸೇತುವೆಗಳನ್ನು ನಿರ್ಮಿಸುವುದರಲ್ಲಿ ತೊಡಗುತ್ತವೆ. ಎರಡನೆ ಮಹಾಯುದ್ಧದ ನಂತರದಲ್ಲಿ ಅನೇಕ ರಾಷ್ಟ್ರಗಳು ಈ ನೀತಿಯನ್ನು ಪಾಲಿಸಲು ಸಜ್ಜಾಗಿದ್ದವು.

ಯಾವುದೇ ಹೊರ ದೇಶಗಳಿಗೆ ತನ್ನ ಸೇನೆಯ ನೆರವು ನೀಡುವುದಿಲ್ಲ ಎನ್ನುವ ನೀತಿಗೂ ಬದ್ಧವಾಗಿದ್ದವು. ಜಪಾನ್ ಇಂದಿಗೂ ಬದ್ಧವಾಗಿದೆ. ಏಕೆಂದರೆ ಯೋಧರು ಹರಕೆಯ ಕುರಿಗಳಾಗಬಾರದು, ಆಪದ್ಭಾಂಧವರಾಗಬೇಕು. ದುರಂತ ಎಂದರೆ ಸಾಮ್ರಾಜ್ಯಶಾಹಿಯ ವಿಸ್ತರಣೆಯ ರಾಜಕಾರಣದಲ್ಲಿ ಯೋಧರು ಬಲಿಪೀಠಕ್ಕೆ ಸಿದ್ಧರಾಗಿರುವ ಹರಕೆಯ ಕುರಿಗಳಂತೆಯೇ ಕಾಣುತ್ತಾರೆ.

ಈ ಧೋರಣೆಯೇ ವಿಶ್ವದ ಅಗ್ರಮಾನ್ಯ ರಾಷ್ಟ್ರಗಳನ್ನು ಶಸ್ತ್ರಾಸ್ತ್ರಗಳ ಭಂಡಾರಗಳನ್ನಾಗಿ ಮಾಡಿದೆ. ವಿಶ್ವದ ದೊಡ್ಡಣ್ಣ ಈ ಶಸ್ತ್ರಾಸ್ತ್ರಗಳ ಪೈಪೋಟಿಗೆ ಹರಾಜು ಮಾರುಕಟ್ಟೆಯಂತೆ ಕಾರ್ಯ ನಿರ್ವಹಿಸುತ್ತದೆ. ಬಂಡವಾಳ ವ್ಯವಸ್ಥೆ ಬಿಕ್ಕಟ್ಟಿಗೆ ಸಿಲುಕಿದಾಗಲೆಲ್ಲಾ ಯಾವುದೋ ಎರಡು ರಾಷ್ಟ್ರಗಳ ನಡುವೆ ಘರ್ಷಣೆ ಸಂಭವಿಸುತ್ತದೆ. ಯುದ್ಧದ ಕಾರ್ಮೋಡಗಳು ಕವಿಯುತ್ತವೆ.

ಕೊಂಚ ಮಟ್ಟಿಗೆ ಕಾಳಗವೂ ನಡೆಯುತ್ತದೆ. ನಂತರ ಶಾಂತಿ ಪ್ರಕ್ರಿಯೆ ಜಾರಿಯಾಗುತ್ತದೆ. ಈ ನಡುವೆ ಕೋಟ್ಯಂತರ ರೂಗಳ ಶಸ್ತ್ರಾಸ್ತ್ರ ಖರೀದಿಯ ಭರಾಟೆ ಸದ್ದಿಲ್ಲದೆ ನಡೆದಿರುತ್ತದೆ. ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರಗಳು ಆರೋಗ್ಯ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ವಲಯಗಳಿಗಿಂತಲೂ ರಕ್ಷಣಾ ವಲಯಕ್ಕೇ ಹೆಚ್ಚಿನ ಹಣಕಾಸು ಒದಗಿಸುವುದನ್ನು ಈ ಹಿನ್ನೆಲೆಯಲ್ಲೇ ನೋಡಬೇಕು.

ಇದೀಗ ಭಾರತ ಮತ್ತು ಚೀನಾದ ನಡುವೆ ಏರ್ಪಟ್ಟಿರುವ ಸಂಘರ್ಷದ ವಾತಾವರಣವೂ ಕೆಲವು ದಿನಗಳಲ್ಲಿ ತಿಳಿಯಾಗುತ್ತದೆ. ಏಕೆಂದರೆ ಬಂಡವಾಳ ವ್ಯವಸ್ಥೆಯ ಉಳಿವಿಗೆ ಯುದ್ಧ ಎಷ್ಟು ಅಗತ್ಯವೋ ಯುದ್ಧೋನ್ಮಾದವೂ ಅಷ್ಟೇ ಅಗತ್ಯ. ಕೊರೋನಾದಿಂದ ಉಂಟಾಗುತ್ತಿರುವ ಆತಂಕಕಾರಿ ವಿದ್ಯಮಾನಗಳನ್ನೂ ನಿರ್ಲಕ್ಷಿಸುವಷ್ಟು ಮಟ್ಟಿಗೆ ಯುದ್ಧೋನ್ಮಾದ ನಾಗರಿಕ ಸಮಾಜವನ್ನು ಆವರಿಸಿಬಿಡುತ್ತದೆ.

ಒಂದೆರಡು ಸಾವುಗಳು ನಮ್ಮನ್ನು ಜಾಗೃತಗೊಳಿಸುತ್ತವೆ, ಹುತಾತ್ಮ ಯೋಧರು ನಮ್ಮೊಳಗಿನ ಸುಪ್ತ ಕಳಕಳಿಯನ್ನು ಬಡಿದೆಬ್ಬಿಸುತ್ತಾರೆ. ಆಳುವ ವರ್ಗಗಳು ಸೃಷ್ಟಿಸುವ ದೇಶಪ್ರೇಮದ ಉನ್ಮಾದ ಸಮಸ್ತ ಜನತೆಯನ್ನು ಆವರಿಸುತ್ತದೆ. ಅಷ್ಟರೊಳಗೆ ಶಾಂತಿ ಮಾತುಕತೆಗಳು ಮುಗಿದು ಗಡಿಯಲ್ಲಿ ಯಥಾಸ್ಥಿತಿ ಮರಳುತ್ತದೆ.

ಹುತಾತ್ಮರಾದ ಯೋಧರು ಕೆಲವು ದಿನಗಳ ಬಳಿಕ ನಮ್ಮ ಸ್ಮರಣೆಯಿಂದ ದೂರವಾಗಿಬಿಡುತ್ತಾರೆ. ಭಾರತವೇ ಆಗಲೀ, ಚೀನಾ-ಪಾಕಿಸ್ತಾನ ಆಗಲೀ ಅಥವಾ ಇತರ ಯಾವುದೇ ದೇಶವಾಗಲೀ ಇಂತಹ ಲಕ್ಷಾಂತರ ಯೋಧರನ್ನು ಕಳೆದುಕೊಳ್ಳುತ್ತಲೇ ತಮ್ಮ ಭೌಗೋಳಿಕ ಅಸ್ಮಿತೆಯನ್ನು ರಕ್ಷಿಸಿಕೊಂಡುಬಂದಿವೆ. ಈ ಭೌಗೋಳಿಕ ಅಸ್ಮಿತೆಯ ರಕ್ಷಣೆಗೆ ದೇಶದ ಪ್ರತಿಯೊಬ್ಬ ನಾಗರಿಕರೂ ತಮ್ಮ ಕೊಡುಗೆ ಸಲ್ಲಿಸುತ್ತಲೇ ಇರುತ್ತಾರೆ.

ಒಂದು ದೇಶದ ರಕ್ಷಣೆಗೆ ಗಡಿಯಲ್ಲಿನ ಯೋಧರು ಶಸ್ತ್ರಾಸ್ತ್ರಗಳೊಡನೆ ಹೋರಾಡುತ್ತಾರೆ ಆಂತರಿಕವಾಗಿ ರೈತರು, ಕೃಷಿ ಕಾರ್ಮಿಕರು, ಶ್ರಮಜೀವಿಗಳು ತಮ್ಮ ಬಾಹುಗಳನ್ನು ಬಳಸಿ ನಿತ್ಯ ಹೋರಾಟದಲ್ಲಿ ತೊಡಗಿರುತ್ತಾರೆ. ಈ ಶ್ರಮಜೀವಿಗಳ ಬೆವರು ಗಡಿಯಲ್ಲಿನ ಯೋಧರ ಉಸಿರಾಗುತ್ತದೆ. ಯೋಧರ ಉಸಿರು ಶ್ರಮಜೀವಿಗಳ ಬದುಕಿಗೆ ನೆರಳಾಗುತ್ತದೆ.

ಒಂದು ಸಂವೇದನಾಶೀಲ ಸಮಾಜದಲ್ಲಿ ಈ ಶ್ರಮ, ಬೆವರು, ನೆತ್ತರು ಮತ್ತು ಪರಿಶ್ರಮದ ಮೌಲ್ಯಗಳನ್ನು ಮಾನವೀಯ ನೆಲೆಯಲ್ಲಿ ನೋಡಲಾಗುತ್ತದೆ. ಸಂವೇದನೆಯೇ ಇಲ್ಲದ ಸಮಾಜದಲ್ಲಿ ಭಾವನಾತ್ಮಕ ನೆಲೆಯಲ್ಲಿ ನೋಡಲಾಗುತ್ತದೆ. ಭಾರತ ಈ ವಿರೋಧಾಭಾಸವನ್ನು ಎದುರಿಸುತ್ತಿದೆ.

ರಾಷ್ಟ್ರೀಯತೆಯ ಉನ್ಮಾದಕ್ಕೆ ಬಲಿಯಾಗಿರುವ ಒಂದು ವರ್ಗ, ಒಂದು ಬೃಹತ್ ಸಮುದಾಯ ಮತ್ತು ಒಂದು ಪೀಳಿಗೆ ಇಂದು ರಾಷ್ಟ್ರದ ಪರಿಕಲ್ಪನೆಯೇ ಇಲ್ಲದೆ, ದೇಶ ಎಂದರೇನು ಎಂಬುದನ್ನೇ ತಿಳಿಯದೆ ಮುನ್ನಡೆಯುತ್ತಿದೆ. ಈ ಪ್ರಜೆಗಳಿಗೆ ಯುದ್ಧ ಎನ್ನುವುದು ರಾಷ್ಟ್ರೀಯ ಅಸ್ಮಿತೆಯ ಪ್ರಶ್ನೆಯಾಗಿ ಕಾಣುತ್ತದೆ. ಆದರೆ ವಿನಾಶದ ಮಾರ್ಗದಲ್ಲಿ ಅಸ್ಮಿತೆಗಳು ತಂತಾನೇ ಭಸ್ಮವಾಗಿಹೋಗುತ್ತವೆ ಎನ್ನುವ ಪ್ರಜ್ಞೆ ಇವರಲ್ಲಿ ಕಾಣುವುದಿಲ್ಲ.

ಹಾಗಾಗಿಯೇ ಕೊರೋನಾದಂತಹ ಮಾರಣಾಂತಿಕ ಪಿಡುಗಿನ ನಡುವೆಯೂ ಯುದ್ಧ ಬಯಸುವ ಮನಸುಗಳು ಮೆರೆದಾಡುತ್ತಿವೆ. ಯಾವುದೇ ಶಸ್ತ್ರಾಸ್ತ್ರ ಬಳಸದೆಯೇ ಲಕ್ಷಾಂತರ ಶ್ರಮಜೀವಿಗಳನ್ನು ಸಾವಿನ ಕೂಪಕ್ಕೆ ತಳ್ಳುತ್ತಿರುವ ಸಂದರ್ಭದಲ್ಲಿ ನಾವಿದ್ದೇವೆ. ಕೊರೋನಾ ಭಾರತದ ಜನಸಾಮಾನ್ಯರ ಬದುಕಿನ ಅನಿಶ್ಚಿತತೆಯನ್ನು ಹೆಚ್ಚಿಸುತ್ತಿರುವ ಸಂದರ್ಭದಲ್ಲೇ ಬಂಡವಾಳ ವ್ಯವಸ್ಥೆಯ ನೀತಿಗಳು ಬದುಕಿನ ನಾಳೆಗಳ ಮುಂದೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ.

ಯಾವುದೇ ಶಸ್ತ್ರಾಸ್ತ್ರಗಳಿಲ್ಲದೆಯೇ ಕೋಟ್ಯಂತರ ಪ್ರಜೆಗಳ ಬದುಕು ವಿನಾಶದತ್ತ ಸಾಗುವ ಸಂದರ್ಭವನ್ನು ಎದುರು ನೋಡುತ್ತಿದ್ದೇವೆ. ಬದುಕಬೇಕಾದವರ ಸಾವು ನಮ್ಮನ್ನು ವಿಚಲಿತಗೊಳಿಸುತ್ತಿಲ್ಲ. ಸಾವಿನ ಹೊಸ್ತಿಲಲ್ಲಿರುವವರ ಬದುಕು ನಮ್ಮನ್ನು ಜಾಗೃತಗೊಳಿಸುತ್ತಿಲ್ಲ.

ಈ ವಿರೋಧಾಭಾಸಗಳ ನಡುವೆಯೇ, ವಿತಂಡವಾದಗಳ ನಡುವೆಯೇ ನಾವು ನವ ಉದಾರವಾದ ಮತ್ತು ಜಾಗತೀಕರಣವನ್ನು ಒಪ್ಪಿಕೊಂಡು ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವ ಉನ್ಮಾದಕ್ಕೆ ಶರಣಾಗುತ್ತಿದ್ದೇವೆ. ಔದ್ಯಮಿಕ ಬಂಡವಾಳ ಪ್ರಧಾನವಾಗಿದ್ದ ಕಾಲದಲ್ಲಿ, ಭಾರತ ವಸಾಹತು ಆಳ್ವಿಕೆಯಲ್ಲಿದ್ದ ಸಂದರ್ಭದಲ್ಲಿ ಗಾಂಧಿ ಅನುಸರಿಸಿದ ಸ್ವದೇಶಿ ಮಾದರಿ ಇಂದಿನ ಡಿಜಿಟಲ್ ಯುಗದಲ್ಲಿ ಸಾಧ್ಯವಾಗುವುದಿಲ್ಲ ಎನ್ನುವುದನ್ನು ಅರ್ಥಶಾಸ್ತ್ರ ಬಲ್ಲವರಿಗೆ ಹೇಳಬೇಕಿಲ್ಲ.

ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವ ಶಪಥದ ಹಿಂದೆ ವಸ್ತುನಿಷ್ಠ ಅವಲೋಕನಕ್ಕಿಂತಲೂ ಕ್ಷಣಿಕ ಆಕ್ರೋಶ ಮತ್ತು ಉನ್ಮಾದವೇ ಹೆಚ್ಚಾಗಿರುವುದರಿಂದ ಬಹಿಷ್ಕೃತ ಉತ್ಪನ್ನಗಳು ಸಾಪೇಕ್ಷವಾಗಿಬಿಡುತ್ತವೆ. ಇಲ್ಲಿ ಜಾಗತಿಕ ಬಂಡವಾಳ ವ್ಯವಸ್ಥೆ ನಿರ್ವಹಿಸುವ ಪಾತ್ರವನ್ನು ಗಮನಿಸದೆ ಹೋದರೆ ಭಾರತದ ಶ್ರಮಜೀವಿಗಳು ಬಾಣಲೆಯಿಂದ ಬೆಂಕಿಗೆ ಬೀಳುವುದು ಶತಃಸಿದ್ಧ.

ಭಾರತ ಎನ್ನಲಾಗುವ ಭೌಗೋಳಿಕ ಪ್ರದೇಶ ಈ ದೇಶದ ಸಾರ್ವಭೌಮ ಪ್ರಜೆಗಳಿಗೆ ಸೇರಿದ ಸ್ವತ್ತು. ಈ ಭೂಪ್ರದೇಶದ ರಕ್ಷಣೆಗಾಗಿ ಯೋಧರು ಪ್ರಾಣ ತೆರುತ್ತಾರೆ, ಆಂತರಿಕವಾಗಿ ಕೋಟ್ಯಂತರ ಶ್ರಮಜೀವಿಗಳು ದೇಶದ ಮುನ್ನಡೆಗೆ ಬೆವರು ಸುರಿಸಿ ದುಡಿಯುತ್ತಾರೆ. ಬೆರಳೆಣಿಕೆಯಷ್ಟು ಜನರು ಈ ಶ್ರಮದ ಫಲಾನುಭವಿಗಳಾಗಿ ಅಭೇದ್ಯ ಕೋಟೆಗಳಲ್ಲಿ ಐಷಾರಾಮಿ ಬದುಕು ನಡೆಸುತ್ತಾರೆ.

ಬೆವರು ಸುರಿಸಿ ದುಡಿಯುವ ಜನತೆಗೆ ತಮ್ಮ ದೇಶದ ಮೇಲೆ ನಡೆಯುವ ಆಕ್ರಮಣದ ಬಗ್ಗೆ ಪೂರ್ಣ ಮಾಹಿತಿ ಪಡೆಯುವ ಹಕ್ಕು ಇರುತ್ತದೆ. ಇದು ಪ್ರಜಾತಂತ್ರದ ನಿಯಮ. ಭಾರತದ ಸುದ್ದಿಮನೆಗಳಿಗೆ, ಆಡಳಿತ ವ್ಯವಸ್ಥೆಗೆ ಈ ಸೂಕ್ಷ್ಮದ ಪರಿಜ್ಞಾನ ಇರಬೇಕಿತ್ತು. ಇಲ್ಲ ಎನ್ನುವುದು ಸ್ಪಷ್ಟ.

ಈ ಪರಿಜ್ಞಾನ ಇದ್ದಿದ್ದಲ್ಲಿ ಟಿವಿ ಪರದೆಯ ಮೇಲೆ ಉಭಯ ದೇಶಗಳ ಶಸ್ತ್ರಾಸ್ತ್ರಗಳ ಎಣಿಕೆ ಮಾಡುತ್ತಾ ಉರುಳಿದ ತಲೆಗಳನ್ನು ಎಣಿಸುತ್ತಿರಲಿಲ್ಲ. ಭಾರತೀಯ ಸೇನೆಯ ಶಕ್ತಿ ಸಾಮರ್ಥ್ಯವನ್ನು ಪರದೆಯ ಮೇಲೆ ಬಿಂಬಿಸುತ್ತಾ ತುಲನಾತ್ಮಕ ವಿಶ್ಲೇಷಣೆ ಮಾಡುವ ಸುದ್ದಿಮನೆಯ ಸಂಪಾದಕರಿಗೆ ಯುದ್ಧ ಎನ್ನುವುದು ಕೇವಲ ಗಡಿಯಲ್ಲಿ ನಡೆಯುವ ಕಸರತ್ತು ಅಲ್ಲ, ಮನುಕುಲವನ್ನು ವಿನಾಶದ ಅಂಚಿಗೆ ಕೊಂಡೊಯ್ಯುವ ಮಸಲತ್ತು ಎನ್ನುವ ಪರಿವೆ ಇರಬೇಕು.

ನಮ್ಮಲ್ಲಿ ಎಷ್ಟು ಅಣ್ವಸ್ತ್ರಗಳಿವೆ ಎಂದು ಯೋಚಿಸುವ ಮುನ್ನ ಒಂದು ಪರಮಾಣು ಬಾಂಬ್ ಇಡೀ ವಿಶ್ವವನ್ನೇ ನೆಲಸಮ ಮಾಡುತ್ತದೆ ಎನ್ನುವ ಅಲ್ಪ ಜ್ಞಾನವೂ ಸುದ್ದಿಮನೆಗಳ ಸಂಪಾದಕರಿಗೆ ಇರಬೇಕಲ್ಲವೇ ? ವಂದಿಮಾಗಧ ಪ್ರವೃತ್ತಿಗೂ ಒಂದು ಇತಿಮಿತಿ ಇರಬೇಕಲ್ಲವೇ ? ಸೇನಾ ಸಾಮರ್ಥ್ಯವನ್ನು ಬಹಿರಂಗವಾಗಿ ಬಿತ್ತರಿಸಲು ಸುದ್ದಿಮನೆಗಳಿಗೆ ಅನುಮತಿ ನೀಡಿದವರಾದರೂ ಯಾರು ? ಇದು ನಮ್ಮ ದೇಶದ ಗೋಪ್ಯತೆಯನ್ನು ಬಯಲು ಮಾಡಿದಂತಾಗುವುದಿಲ್ಲವೇ ?

ಪರದೆಯ ಮೇಲೆ ಬಿತ್ತರಿಸುವ ಹಾಲಿವುಡ್/ಬಾಲಿವುಡ್ ಚಿತ್ರಗಳ ದೃಶ್ಯಗಳು ವೀಕ್ಷಕರ ಮೈನವಿರೇಳಿಸುತ್ತವೆ. ಉನ್ಮಾದ ಹೆಚ್ಚಿಸುತ್ತವೆ. ಈ ಉನ್ಮಾದಕ್ಕೆ ಸುಲಭ ತುತ್ತಾಗುವ ಒಂದು ವರ್ಗ ಸಾವು ನೋವುಗಳನ್ನು ಅನಿವಾರ್ಯ ಕರ್ಮ ಎಂದು ಸ್ವೀಕರಿಸುವ ಮಟ್ಟಕ್ಕೆ ಯುದ್ಧೋನ್ಮಾದಕ್ಕೆ ಬಲಿಯಾಗಿಬಿಡುತ್ತದೆ. ಆದರೆ ಈ ಸಾವು ನೋವುಗಳೊಡನೆ ದೇಶ ನಲುಗಿಹೋಗುತ್ತದೆ.

ಯುದ್ಧ ಅನಿವಾರ್ಯವೇ ಆದರೆ ಸಂಭವಿಸಿಯೇ ತೀರುತ್ತದೆ ಏಕೆಂದರೆ ಆಳುವ ವರ್ಗಗಳಿಗೆ ಯುದ್ಧರಂಗದಿಂದಾಚೆಗಿನ ಪ್ರಪಂಚ ಕಾಣುವುದಿಲ್ಲ. ನಮಗೆ ಕಾಣುತ್ತದೆ. ಕಳೆದ ಒಂದು ಶತಮಾನದಲ್ಲಿ ಮಾನವ ಸಮಾಜ ಸಾಕಷ್ಟು ಯುದ್ಧಗಳನ್ನು, ಸಾವುನೋವುಗಳನ್ನು ಕಂಡಿದೆ. ಆದರೆ ಸ್ನೇಹದಿಂದಿರುವುದನ್ನು ಕಲಿತಿಲ್ಲ.

ಚೀನಾ, ರಷ್ಯಾ, ಅಮೆರಿಕ ಮತ್ತು ಇತರ ಬಂಡವಾಳಶಾಹಿ ಪಶ್ಚಿಮ ರಾಷ್ಟ್ರಗಳಿಗೆ ಯುದ್ಧಭೂಮಿಯೂ ಒಂದು ಮಾರುಕಟ್ಟೆ ಇದ್ದಂತೆ. ಈ ಮಾರುಕಟ್ಟೆಯಲ್ಲಿ ಬಿಕರಿಯಾಗುವ ಶವಗಳು ಜಾಗತಿಕ ಸಂತೆಯ ಕಚ್ಚಾವಸ್ತುಗಳಂತೆ ಕಾಣುತ್ತವೆ. ಇರಾನ್, ಇರಾಕ್, ಕೊಲ್ಲಿ ರಾಷ್ಟ್ರಗಳು, ಆಫ್ರಿಕಾದ ದೇಶಗಳು, ಭಾರತ ಪಾಕಿಸ್ತಾನ ಮುಂತಾದ ದೇಶಗಳು ಈ ಹರಾಜು ಮಾರುಕಟ್ಟೆಯಲ್ಲಿ ಬೆತ್ತಲಾಗಿಬಿಡುತ್ತವೆ.

ಆಧುನಿಕ ಯುದ್ಧ ಪರಂಪರೆಯಲ್ಲಿ ಶಸ್ತ್ರಾಸ್ತ್ರಗಳು ಕೆಲವು ಸಾವಿರ ಜೀವ ಹರಣ ಮಾಡಿದರೆ ಮಾರುಕಟ್ಟೆಯ ತಂತ್ರಗಳು ಕೋಟ್ಯಂತರ ಜನರ ಬದುಕನ್ನು ನಾಶಪಡಿಸುತ್ತವೆ. ಯುದ್ಧ ಮತ್ತು ಯುದ್ಧೋನ್ಮಾದ ಈ ಮಾರುಕಟ್ಟೆ ತಂತ್ರಗಳ ಒಂದು ಅವಿಭಾಜ್ಯ ಅಂಗ ಎನ್ನುವುದನ್ನು ನಾವು ಅರ್ಥಮಾಡಿಕೊಳ್ಳುವುದು ಕ್ಷೇಮ.

ಬಂಡವಾಳ ವ್ಯವಸ್ಥೆ ಮತ್ತು ಅಧಿಕಾರ ರಾಜಕಾರಣದ ವಕಾಲತ್ತು ವಹಿಸಿರುವ ಭಾರತದ ಸುದ್ದಿಮನೆಗಳಿಗೆ ಈ ಸೂಕ್ಷ್ಮಗಳ ಪರಿವೆ ಇಲ್ಲ ಎನ್ನುವುದು ಸ್ಪಷ್ಟ. ಇದ್ದರೂ ಅದೇ ಮಾರುಕಟ್ಟೆಯ ಅನಿವಾರ್ಯತೆಗಳು ಸುದ್ದಿಮನೆಗಳ ಪ್ರಜ್ಞೆಯನ್ನು ಕಲುಷಿತಗೊಳಿಸುತ್ತವೆ. ಆದರೆ ನಾಗರಿಕರಾದ ನಾವು ಜೀವ ಮತ್ತು ಸಾವಿನ ನಡುವೆ ಆಯ್ಕೆ ಮಾಡುವ ಅನಿವಾರ್ಯತೆಗೆ ಸಿಲುಕಿದ್ದೇವೆ.

ಈ ಸಂದಿಗ್ಧ ಪರಿಸ್ಥಿತಿಯಲ್ಲೇ ಸುದ್ದಿಮನೆಗಳು ಯುದ್ಧೋನ್ಮಾದ ಸೃಷ್ಟಿಸುತ್ತಿರುವುದು ಈ ದೇಶದ ದುರಂತ. ಆದರೆ ನಾಗರಿಕ ಪ್ರಜ್ಞೆ ಜಾಗೃತವಾದರೆ ಸ್ನೇಹಸೇತುವೆಗಳನ್ನು ನಿರ್ಮಿಸುವುದು ಕಷ್ಟವೇನಲ್ಲ. ದೇಶದಲ್ಲಿ ಸ್ನೇಹ ಭಾವ ಅಂತರ್ಗತವಾಗಿದ್ದರೆ ಸ್ನೇಹದಲ್ಲಿ ದೇಶಗಳು ಸಮ್ಮಿಳಿತಗೊಳ್ಳುತ್ತವೆ. ಇದು ಮಾನವತೆಯ ಪ್ರಶ್ನೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ

Published

on

ದಾವಣಗೆರೆ: ಎಸ್‌ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್‌ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಜಯದೇವ ವೃತ್ತದಲ್ಲಿ ಸೇರಿದ ಎಸ್‌ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು  ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.

ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್‌ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್‌ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್‌ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending