Connect with us

ಅಂತರಂಗ

ಅರಿಮೆಯ ಅರಿವಿರಲಿ-50 : ಮನಸ್ಸೆಂದರೆ ಏನದು..?

Published

on

  • ಯೋಗೇಶ್ ಮಾಸ್ಟರ್

ದೇವರು, ಧರ್ಮ, ಪ್ರೇಮ, ರಾಷ್ಟ್ರಭಕ್ತಿ, ಸಂಬಂಧ, ಶೀಲ, ಜೀವನ, ಆತ್ಮ, ಪರಮಾತ್ಮ, ಆಧ್ಯಾತ್ಮವೇ ಮೊದಲಾದ ಅನೇಕ ವಿಷಯಗಳು ಅತ್ಯಂತ ಅಪವ್ಯಾಖ್ಯಾನಕ್ಕೊಳಗಾಗಿವೆ. ಅದರಂತೆಯೇ ಮನಸ್ಸೂ ಕೂಡಾ. ವ್ಯಕ್ತಿಯು ತನ್ನ ಬದುಕಿನಲ್ಲಿ ಬಹು ಜನರು ಉಪಯೋಗಿಸುವ ಮತ್ತು ಬಹಳ ಗೌರವ ಕೊಡುವ ಕೆಲವು ಪರಿಕಲ್ಪನೆಗಳನ್ನು ತಾನೂ ಬಳಸಲು ಇಷ್ಟಪಡುತ್ತಾನೆ.

ಹಾಗೆ ಅವುಗಳನ್ನು ಬಳಸುವುದರಿಂದ ತನ್ನ ಗೌರವವು ಹೆಚ್ಚುತ್ತದೆ ಎಂದು ಭಾವಿಸುತ್ತಾನೆ. ಹಾಗಾಗಿ ಅದನ್ನು ತನಗೆ ತಿಳಿದ ಮಟ್ಟಿಗೆ ಬಳಸಲು, ವಿವರಿಸಲು ಪ್ರಾರಂಭಿಸುತ್ತಾನೆ. ಅವುಗಳೆಲ್ಲವೂ ಅಮೂರ್ತ (ಅಬ್ಸ್‍ಟ್ರಾಕ್ಟ್) ಆಗಿರುವುದರಿಂದ, ಭೌತಿಕವಾಗಿ ಸಿಕ್ಕು ಪ್ರಯೋಗಾಲಯದಲ್ಲಿ ಪ್ರಯೋಗಗಳ ಮೂಲಕ ಪರೀಕ್ಷಿಸಲು ಆಗದೇ ಇರುವುದಾಗಿರುವುದರಿಂದ ತಮ್ಮ ತಮ್ಮ ಮೂಗಿನ ನೇರಕ್ಕೆ, ತಮ್ಮ ತಮ್ಮ ಬಯಕೆಗಳಿಗೆ ವಿವರಿಸಿಕೊಂಡು ಆ ಅಮೂರ್ತ ಮತ್ತು ಮೌಲಿಕ ಪದಗಳು ತಮ್ಮವಾಗಿವೆ ಎಂದು ತೃಪ್ತಿಪಡಲು ಸಾಧ್ಯ.

ಸರಿ, ಇವು ಅಪವ್ಯಾಖ್ಯಾನಗಳು ಎಂದು ತಿಳಿವುದು ಹೇಗೆ? ವ್ಯಕ್ತಿಗಳು ಪ್ರಸ್ತುತಪಡಿಸುವ ವಿವರಣೆಗಳನ್ನು ಅಥವಾ ಅರ್ಥಗಳನ್ನು ಛೇದಿಸಿಕೊಂಡು ಹೋದಂತೆಲ್ಲಾ ಒಂದು ಕ್ರಮವರಿದ, ಹದವರಿತ ಅರಿವಿಗೆ ನಿಲುಕುತ್ತಾ ಹೋಗುತ್ತವೆ. ಉತ್ಪ್ರೇಕ್ಷೆಯಿಂದ, ಏಕಮುಖ ಅಭಿಪ್ರಾಯದಿಂದಲೋ, ಪೂರ್ವಾಗ್ರಹ ಪೀಡಿತವಾಗಿಯೋ ಇರುವಂತಹ ಜಾಳುಜಾಳಾದ ವಿವರಣೆಗಳ ಹೊಟ್ಟು ಹಾರಿಹೋಗುತ್ತವೆ. ಆಗ ಆ ಪರಿಕಲ್ಪನೆಗಳ ಅರ್ಥ ಒಂದು ಹಂತಕ್ಕೆ ಸರಿಯಾಗಿ ಆಗುತ್ತವೆ.

ಮನಸ್ಸಾಗಲಿ, ದೇವರಾಗಲಿ; ಅವು ಅಮೂರ್ತವಾದರೂ, ಅದೆಷ್ಟೇ ಗೊಂದಲಗಳ ಗೂಡಾದರೂ ಕ್ರಮವರಿತ ಮತ್ತು ನಿಖರವಾದ ಗ್ರಹಿಸುವಿಕೆಯಿಂದ ಅರ್ಥ ಮಾಡಿಕೊಳ್ಳುವುದು ಕಷ್ಟವೇನಿಲ್ಲ. ವಾಸ್ತವವಾಗಿ ಯಾವುದ್ಯಾವುದು ಅತ್ಯಂತ ಜಟಿಲವೆಂದು, ಸಂಕೀರ್ಣವೆಂದು ಮತ್ತು ಅರ್ಥಕ್ಕೆ ನಿಲುಕದೆಂದು ಹೇಳುತ್ತಾರೋ ಅವೆಲ್ಲವೂ ಸರಳವೇ ಆಗಿರುತ್ತದೆ. ಆದರೆ ಅವು ಅಷ್ಟೊಂದು ಸರಳವೂ ಮತ್ತು ನೇರವೂ ಆಗಿವೆ ಎಂದರೆ ಅದನ್ನು ಸ್ವೀಕರಿಸುವ ಮತ್ತು ಗೌರವಿಸುವವರು ಲಘುವಾಗಿ ಅಥವಾ ಹಗುರವಾಗಿ ಕಂಡುಬಿಡಬಹುದು.

ಅದರ ಮೌಲ್ಯವನ್ನು ಗುರುತಿಸದೇ ಹೋಗಿಬಿಡಬಹುದು ಎಂಬ ಆತಂಕದಿಂದ ಅವುಗಳನ್ನು ಕ್ಲಿಷ್ಟಗೊಳಿಸುತ್ತಾರೆ. ಸಂಕೀರ್ಣವೆಂಬಂತೆ ಪ್ರದರ್ಶಿಸುತ್ತಾರೆ. ಈ ಅಮೂರ್ತವಾದ ಪರಿಕಲ್ಪನೆಗಳನ್ನು ವಿವರಿಸುವವರು ಗೊಂದಲಗಳನ್ನು ಸೃಷ್ಟಿಸುತ್ತಾರೆಯೇ ಹೊರತು, ಅವುಗಳ ರಚನೆಯಲ್ಲಿ, ಸ್ವಭಾವದಲ್ಲಿ, ಅಸ್ತಿತ್ವದಲ್ಲಿ ಯಾವ ಗೊಂದಲಗಳೂ ಇಲ್ಲ.

ಮನಸ್ಸಿನ ವಿಜ್ಞಾನ

ಇನ್ನು ಮನಸ್ಸಂತೂ ಬರಿಯ ಅಮೂರ್ತವಾಗಿದ್ದರೂ ಪರಿಕಲ್ಪನೆಯಲ್ಲ. ಅದು ವಿಚಾರವೂ ಹೌದು, ವಿಜ್ಞಾನವೂ ಹೌದು. ಹೆಸರಿಸಿರುವಂತಹ ಚೈತನ್ಯ. ವಿದ್ಯುತ್ಚಕ್ತಿಯಂತೆ ಅದು ವಿಜ್ಞಾನದ ಶಾಖೆಯಾಗಿದ್ದು ಅನೇಕ ರೀತಿಯ ಪ್ರಯೋಗಗಳಿಗೆ ಒಳಗಾಗಿದೆ. ದೇವರ ರೀತಿಯಲ್ಲಿ ತಾತ್ವಿಕವಾಗಿ ಮಾತ್ರ ವಿವರಿಸುವ ಅಗತ್ಯವಿಲ್ಲ. ದೇವರಿಗೂ ಮತ್ತು ಮನಸ್ಸಿಗೂ ಏನೂ ಸಂಬಂಧವಿಲ್ಲ. ಮನಸ್ಸು ನೇರವಾಗಿ ಮನುಷ್ಯನ ಚಿಂತನಾ ಸಾಮರ್ಥ್ಯ ಮತ್ತು ಆಲೋಚನಾ ಕ್ರಮಕ್ಕೆ ಸಂಬಂಧಿಸಿದ್ದು.

ದೇವರ ವರ ಅಥವಾ ಶಾಪ ಕೂಡಾ ಮನಸ್ಸಿನ ಗ್ರಹಿಕೆಯ ಸಾಮರ್ಥ್ಯ ಅಥವಾ ದೌರ್ಬಲ್ಯಕ್ಕೆ ಸಂಬಂಧಿಸಿದ್ದೇ ಹೊರತು ಇದು ದೇವರ ಶಕ್ತಿಗೆ ಸಂಬಂಧಿಸಿದ ಪ್ರಾಯೋಗಿಕ ವಿಜ್ಞಾನದ ಶಾಖೆಯಲ್ಲ. ಇದು ಸರಳ ಎಂಬುದೇನೋ ನಿಜ. ಆದರೆ ಬಹಳ ಸೂಕ್ಷ್ಮವೂ ಮತ್ತು ಸಂವೇದನಾಶೀಲವೂ ಆಗಿರುವುದರಿಂದ ನಿಭಾಯಿಸುವುದರಲ್ಲಿ ಜಟಿಲತೆ ತೋರುತ್ತದೆ. ಆದರೆ, ಇದನ್ನು ಅರಿಯುವುದರಿಂದ ಮತ್ತು ನಿಭಾಯಿಸುವ ತಂತ್ರಗಳನ್ನು ಗಮನಪೂರ್ವಕವಾಗಿ ಬಳಸಿದ್ದಲ್ಲಿ ಸರಾಗವೇ ಇರುತ್ತದೆ.

“ಮನಸ್ಸು, ಆಲೋಚಿಸಲಾಗುವ ಜೀವಿಗಳಲ್ಲಿನ ಚೈತನ್ಯ ಅಥವಾ ಸಾಮರ್ಥ್ಯವಿದು. ಈ ಸಾಮರ್ಥ್ಯದ ಅಥವಾ ಚೈತನ್ಯದ ಪ್ರಧಾನ ಕೆಲಸಗಳೆಂದರೆ ಭಾವಿಸುತ್ತದೆ, ಆಲೋಚಿಸುತ್ತದೆ ಮತ್ತು ಸಂಕಲ್ಪಿಸುತ್ತದೆ.” ಇಷ್ಟೇ ಎಂದು ಹೇಳಿಬಿಟ್ಟರೆ ಬಹಳ ಸಣ್ಣ ವ್ಯಾಖ್ಯಾನವೇನೋ ನಿಜ. ಆದರೆ ಮನಸ್ಸಿನ ಅಸ್ತಿತ್ವ ಮತ್ತು ಅದರ ಚಟುವಟಿಕೆಗಳ ರೂಪುಗೊಳ್ಳುವುದು ಪ್ರಕ್ರಿಯೆಯ ಮೂಲಕ. ಅದನ್ನು ಆಧರಿಸಿಕೊಂಡು ಬೇಕಾದಂತೆ ಟಿಪ್ಪಣಿಗಳನ್ನು ಮಾಡಬಹುದು, ಪ್ರಮೇಯಗಳನ್ನು ಮಾಡಬಹುದು ಹಾಗೂ ವಿಚಾರ ಸರಣಿಗಳನ್ನು ವಿಸ್ತಾರಗೊಳಿಸುತ್ತಾ ಹೋಗಬಹುದು.

ಮನಸ್ಸೆಂಬ ಅದು

ಮನಸ್ಸನ್ನು ಸಿಕ್ಕಾಪಟ್ಟೆ ಶಾಸ್ತ್ರೀಯವಾಗಿ ನಾವು ಈಗ ಅಧ್ಯಯನ ಮಾಡಲು ಹೋಗುವುದು ಬೇಡ. ನಾವು ಮಹಾಪ್ರಭಂದವನ್ನು ರಚಿಸಬೇಕಿಲ್ಲ. ಮನಸ್ಸೆಂಬ ‘ಅದು’ ನಮ್ಮಲ್ಲಿ ಇರುವುದರಿಂದ ಅದರ ಸಾಮರ್ಥ್ಯ ಮತ್ತು ದೌರ್ಬಲ್ಯಗಳ ಬಗ್ಗೆ ತಿಳಿದರೆ ಎರಡು ಹೆಜ್ಜೆ ಮುಂದೆ ಇಡಬೇಕಾದ ಜಾಗದಲ್ಲಿ ಮುನ್ನಡೆಯಬಹುದು, ಹಿಂದಕ್ಕೆ ಸರಿಯಬೇಕಾದ ಕಡೆ ಸರಿಯಬಹುದು.

ಇಷ್ಟಕ್ಕಷ್ಟೇ ನಾವೀಗ ಗಮನ ಕೊಡಬೇಕಾಗಿರುವುದು. ಸಮಸ್ಯೆ ಏನೆಂದರೆ ಮುನ್ನಡೆಯ ಬೇಕಾದ ಕಡೆ ಹಿಂದೆ ಸರಿಯುವುದು, ಹಿಂದೆ ಸರಿಯಬೇಕಾದರೆ ಕಡೆ ಮುನ್ನುಗ್ಗುವುದು ಮಾನಸಿಕ ಸಮಸ್ಯೆಯ ಮಹಾಲಕ್ಷಣ.
ಮನಸ್ಸಿನ ಮತ್ತೊಂದು ಗುಣ ಲಕ್ಷಣವೆಂದರೆ ಅದರ ಚಟುವಟಿಕೆಯನ್ನು ಅದರಿಂದಲೇ ನಿಲ್ಲಿಸಬೇಕು. ಅದು ಮಂಕಾಗಿ ಮೂಲೆ ಹಿಡಿದಿದ್ದರೆ ಅದೇ ಪ್ರೇರೇಪಿಸಬೇಕು. ವಿಲಕ್ಷಣವಾದರೂ ನಿಜ. ಅಂದರೆ ಮನಸ್ಸಿನ ಚಟುವಟಿಕೆಗಳನ್ನು ಮನಸ್ಸೇ ನಿಯಂತ್ರಿಸಬೇಕು.

ಆಲೋಚನೆಗಳೇ ಅದರ ಚಟುವಟಿಕೆಗಳು. ಅದರ ಆ ಚಟುವಟಿಕೆಗಳೇ ಮನಸ್ಸು ಎಂಬ ಅಮೂರ್ತವನ್ನು ಮೂರ್ತೀಭವಿಸುವಂತೆ ಮಾಡುವುದು. ಅದೇ ಮನಸ್ಥಿತಿ ಎಂಬುದನ್ನು ಅಸ್ತಿತ್ವಕ್ಕೆ ತರುವುದು. ಅದೇ ಮನೋಭಾವ ಎಂಬುದನ್ನು ರೂಪಿಸುವುದು ಮತ್ತು ಅದೇ ಗೊಂದಲಗಳನ್ನು ಸೃಷ್ಟಿಸಿಕೊಂಡು ಸಮಸ್ಯೆಗಳನ್ನು ತಂದೊಡ್ಡಿಕೊಳ್ಳುವುದು.

ಮನಸ್ಸೆಂಬುದೇ ಬಯಸುವುದು, ಆಲೋಚಿಸುವುದು, ಸಂಕಲ್ಪಿಸುವುದು, ಆಶಿಸುವುದು, ಭಾವಿಸುವುದು, ವಿಚಾರಿಸುವುದು; ಇವುಗಳಿಂದಲೇ ಆ ಮನಸ್ಸು ಎಂಬುದೂ ಕೂಡಾ ರೂಪುಗೊಳ್ಳುವುದು. ಅದೇ ಸಾಮರ್ಥ್ಯವೂ ಆಗುವುದು, ಅದೇ ದೌರ್ಬಲ್ಯವೂ ಆಗುವುದು.ಯಾವುದು ಆಲೋಚಿಸುವುದೋ ಅದರ ಬಗ್ಗೆ ಆಲೋಚಿಸಬೇಕು. ಇದೇ ಮಜ.

ಮನಸ್ಸು ಮಿತ್ರ ಮತ್ತು ಶತ್ರು

  • ಉದ್ಧರೇದಾತ್ಮನಾತ್ಮಾನಂ ನಾತ್ಮನಮವಸಾಧಯೇತ್
    ಆತ್ಮೈವಹ್ಯಾತ್ಮನೋ ಬಂಧುರಾತ್ಮೈವ ರಿಪುರಾತ್ಮನಃ

ಭಗವತ್ಗೀತೆಯ 6:5 ಶ್ಲೋಕದಲ್ಲಿ ಆತ್ಮ ಎಂಬ ಪದವನ್ನು ಮನಶಕ್ತಿಯನ್ನಾಗಿಯೇ ಹೆಸರಿಸಿದ್ದಾರೆ. ಉದ್ಧಾರ ಅಂತ ಏನಾದರೂ ಆಗುವುದಿದ್ದರೆ ಅದು ನಿನ್ನ ಮನಸ್ಸಿನಿಂದಲೇ ಆಗುವುದು. ಅದರಿಂದಲೇ ಪತನಗೊಳ್ಳುವುದು ಬೇಡ. ಮನಸ್ಸೇ ಮನಸ್ಸಿಗೆ ಸ್ನೇಹಿತ. ಮನಸ್ಸೇ ಮನಸ್ಸಿಗೆ ಶತ್ರುವಾಗಬಹುದು. ಬಹಳ ಸ್ಪಷ್ಟವಾಗಿ ಮನಸ್ಸಿಂದಲೇ ಮನಸ್ಸು. ಮನಸ್ಸಿನ ಆಲೋಚನೆಗಳಿಂದಲೇ ಮನಸ್ಸಿನ ಚಟುವಟಿಕೆಗಳು.

ಆ ಆಲೋಚನೆಗಳು ರೂಪಿಸಿಕೊಂಡಿರುವ ತನ್ನತನಕ್ಕೆ ಪೂರಕವಾಗಿದ್ದರೆ ಮನಸ್ಸೆಂಬುದು ಗೆಳೆಯನಂತೆ. ಅದೇ ತನ್ನತನಕ್ಕೆ ಮಾರಕವಾಗಿದ್ದರೆ ಶತ್ರುವಿನಂತೆ. ತತ್ವಗಳು, ಸಿದ್ಧಾಂತಗಳು, ಆಧ್ಯಾತ್ಮದ ಚಿಂತನೆಗಳು ಮತ್ತು ಪ್ರಯೋಗಗಳು; ಎಲ್ಲವೂ ಈ ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲೇ ಸಾವಿರಾರು ವರ್ಷಗಳಿಂದ ತಮ್ಮ ಸಮಯ, ಶ್ರಮ, ಸಂಪನ್ಮೂಲ, ಪ್ರತಿಭೆಗಳನ್ನೆಲ್ಲಾ ಬಳಸಿವೆ.

ಆದರೂ ನಾವು ಇನ್ನೂ ಸಶಕ್ತವಾದ ಮನಸ್ಸನ್ನು ಹೊಂದದೇ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದೇವೆ. ಇದಕ್ಕೆ ಕಾರಣವೆಂದರೆ ಮನಸ್ಸೆಂಬ ಸೂಕ್ಷ್ಮ ಚೈತನ್ಯವನ್ನು ನಿಭಾಯಿಸುವ ಎಲ್ಲಾ ವಿಧಾನಗಳನ್ನು ಅಥವಾ ಮಾರ್ಗಗಳನ್ನು ಸಾಂಪ್ರದಾಯಿಕ ಆಚರಣೆಗಳನ್ನಾಗಿಸಿ ಮೇಲಿನ ಸ್ತರದಲ್ಲಿಯೇ ಉಳಿಸಿಬಿಟ್ಟಿದ್ದು. ಚಟುವಟಿಕೆಗಳ ಜೊತೆಜೊತೆಗೆ ಬಹಳ ಮುಖ್ಯವಾಗಿ ದೃಷ್ಟಿ ಮತ್ತು ಗಮನವೆರಡನ್ನೂ ಹೊಂದುವ ಬದಲು, ಬರಿದೇ ಗೊಡ್ಡು ಆಚರಣೆಗಳನ್ನಾಗಿಸಿದ್ದು. ಆಸೆ ಮತ್ತು ಭಯಗಳ ಮೂಲಧಾತುಗಳ ಮೇಲೆಯೇ ಆಧರಿಸಿರುವ ಲೌಕಿಕವಾದ ಹೊರದೃಷ್ಟಿಯನ್ನು ಒಳದೃಷ್ಟಿಯನ್ನಾಗಿಸಿಕೊಳ್ಳದೇ ಹೋದದ್ದು.

ಆಧ್ಯಾತ್ಮ, ಸಿದ್ಧಾಂತಗಳು, ಧಾರ್ಮಿಕ ಆಚರಣೆಗಳು, ದೈವಿಕ ಪರಿಕಲ್ಪನೆಗಳು; ಯಾವುದ್ಯಾವುದು ಮನುಷ್ಯನ ಉದ್ಧಾರಕ್ಕಾಗಿ ಮನಸ್ಸನ್ನು ತರಬೇತಿಗೊಳಿಸಲು ಬಂದವೋ ಅವೆಲ್ಲವೂ ಬಹುಪಾಲು ವಿಫಲಗೊಂಡವು. ಇಂದು ಇನ್ನೂ ಮಾನಸಿಕ ಸಮಸ್ಯೆಗಳು ಅಸ್ತಿತ್ವದಲ್ಲಿ ಬಹುದೊಡ್ಡ ಸ್ವರೂಪದಲ್ಲಿ ಇರಲು ಕಾರಣ ಅದನ್ನು ಅರಿಯುವ ಸೂಕ್ಷ್ಮತೆ ಮತ್ತು ಸಂವೇದನೆಯನ್ನು ಬೆಳೆಸಿಕೊಳ್ಳದೇ ಬರಿಯ ಆಚರಣೆಗಳ ಮಟ್ಟಕ್ಕೆ ನಿಂತದ್ದು.

ನಿಜಕ್ಕೂ ಇವುಗಳ ಯಶಸ್ಸಿಗೆ ಬೇಕಾಗಿದ್ದದ್ದು ಅರಿವು. ಸಂವೇದನಾಶೀಲ ಅರಿವು. ಸುಮ್ಮನೆ ಆಲೋಚಿಸಿ ನೋಡಿ. ನಮ್ಮ ಮನಸ್ಸೇ ಸಬ್ಜೆಕ್ಟ್. ಆ ಸಬ್ಜೆಕ್ಟಿಗೆ ತಾನೇ ಅಂದರೆ ಮನಸ್ಸೇ ಆಬ್ಜೆಕ್ಟ್. ಮಾಡುವುದು ಮತ್ತು ಮಾಡಿಸಿಕೊಳ್ಳುವುದು ಒಂದೇ ಆಗಿರುವುದು. ಸಾಲದಲ್ಲೆ ಮಾಡುವ ಕ್ರಿಯೆಯಾಗಿಯೂ ರೂಪಾಂತರ ಹೊಂದುತ್ತದೆ. ನಿಜಕ್ಕೂ ಮನಸ್ಸು ಬಹಳ ಕುತೂಹಲಕಾರಿಯಾದ, ಆಸಕ್ತಿಕರವಾಗಿ ಮತ್ತು ಸೃಜನಶೀಲ ಪ್ರಯೋಗಗಳಿಗೆ ಒಡ್ಡಿಕೊಳ್ಳಲಾಗುವಂತಹ ವಸ್ತು.

ಬೌದ್ಧರಲ್ಲಿಯೂ ಈ ಮನಸ್ಸಿನ ಸೂಕ್ಷ್ಮತೆಯ ಬಗ್ಗೆ ಬಹಳಷ್ಟು ಸಂವೇದನಾಶೀಲವಾದ ಮತ್ತು ಸೃಜನಶೀಲವಾದ ಪ್ರಯೋಗಗಳು ನಡೆದಿವೆ. ಅದರಲ್ಲೂ ಜೆನ್ ಮತ್ತು ಟಾವೋ ಹಾದಿಗಳು ಬಹಳ ಮುಕ್ತವಾಗಿಯೂ ಮತ್ತು ಆಳವಾಗಿಯೂ ಇವೆ.

ಗುರು ಲಾಟ್ಸೆ ಒಂದು ದಿನ ನಿದ್ರೆಯಿಂದ ಎದ್ದಾದ ಮೇಲೆ ಗಂಭೀರವಾಗಿ ಚಿಂತಿಸುತ್ತಿದ್ದನಂತೆ. ಶಿಷ್ಯರು ಕಾರಣ ಕೇಳಿದರೆ, “ನಾನು ನನ್ನ ಕನಸಿನಲ್ಲಿ ಚಿಟ್ಟೆಯಾಗಿ ಹಾರಾಡುತ್ತಿದ್ದೆ” ಎಂದನಂತೆ. ಸರಿ, ಈಗ ಅದಕ್ಕೇನೆಂದು ಕೇಳಿದರೆ, “ನಾನು ಚಿಟ್ಟೆಯಾಗಿ ಹಾರಾಡುವಂತೆ ಕನಸು ಕಂಡೆ. ಒಂದು ವೇಳೆ ಆ ಚಿಟ್ಟೆಯೇ ಲಾಟ್ಸೆಯಾಗಿರುವ ಕನಸನ್ನು ಕಾಣುತ್ತಿದೆಯೇ? ಯಾವುದು ನಿಜ?” ಎಂದನಂತೆ.

ಹೀಗೆ ಆಲೋಚಿಸುವಷ್ಟು ಸೂಕ್ಷ್ಮ ಸಂವೇದನೆಯ ದೃಷ್ಟಿಗಳು ಮನಸ್ಸನ್ನು ಅರಿಯುವಲ್ಲಿ, ಅದರ ಜಾಡನ್ನು ಅನುಸರಿಸುವಲ್ಲಿ, ಅದರ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ತಿಳಿಯುವಲ್ಲಿ ಆನಂದವನ್ನು ಪಡೆಯುತ್ತವೆ. ತನ್ನ ಮನಸ್ಸನ್ನು ತಾನು ಕಾಣುವುದೇ ಒಂದು ಮಜ.

ಮನ ಮೂಲ

ಮನಸ್ಸಿಗೆ ಸಂಬಂಧಿಸಿದಂತೆ ಸಮಾಜದಲ್ಲಿ ಕಾಣುವ ಮತ್ತು ಅಸ್ತಿತ್ವದಲ್ಲಿರುವ ಎಲ್ಲಾ ಕ್ಷೇತ್ರಗಳಿಂದಲೂ ಸಹಾಯ ಪಡೆದುಕೊಳ್ಳಬೇಕಾಗಿರುವ ಅಗತ್ಯತೆ ಇದೆ. ಸಾಹಿತ್ಯ, ವಿಜ್ಞಾನ, ಕಲೆ, ರಾಜಕೀಯ, ಕೈಗಾರಿಕೆ, ಧಾರ್ಮಿಕ, ಆಧ್ಯಾತ್ಮಿಕ, ದೈನಂದಿನ ಚಟುವಟಿಕೆಗಳು; ಹೀಗೆ ಮನುಷ್ಯರು ಭಾಗವಾಗಿರುವ ಅಥವಾ ಪಾಲುಗೊಳ್ಳುವ ಯಾವುದೇ ಕ್ಷೇತ್ರದ ಚಟುವಟಿಕೆಗಳು ಪೂರ್ಣಪ್ರಮಾಣದಲ್ಲಿ ಮನಸ್ಸಿನ ಚಟುವಟಿಕೆಗಳ ಮೇಲೆಯೇ ಆಧರಿಸಿರುತ್ತದೆ.

ಮನುಷ್ಯನೊಬ್ಬನ ವೈಯಕ್ತಿಕ ಸಾಧನೆ ಅಥವಾ ಸಾಮೂಹಿಕ ಸಾಧನೆಗಳೂ ಕೂಡ ಮನಸ್ಸಿನ ಸಂಕಲ್ಪ, ಸಾಮರ್ಥ್ಯ ಮತ್ತು ಮುಂದುವರಿಸಿಕೊಂಡು ಹೋಗುವ ಸಾಮರ್ಥ್ಯದ ಮೇಲೆಯೇ ಅವಲಂಬಿತವಾಗಿರುತ್ತದೆ. ಹಾಗೆಯೇ ಯುದ್ಧ, ನಾಗರಿಕ ದಂಗೆ, ಸರ್ಕಾರದ ವೈಫಲ್ಯ, ವ್ಯವಸ್ಥೆಯ ವೈಫಲ್ಯ, ವ್ಯಕ್ತಿಗಳ ಮತ್ತು ಸಮೂಹಗಳ ಅಪರಾಧಗಳು, ಗುಂಪು ಘರ್ಷಣೆ; ಇತ್ಯಾದಿ ಅವಘಡಗಳಿಗೆಲ್ಲಾ ಅನಿಯಂತ್ರಿತ ಮತ್ತು ಅನುಚಿತ ಸ್ಥಿತಿಗಳ ಮನಸ್ಸಿನ ಚಟುವಟಿಕೆಗಳೇ ಕಾರಣವಾಗಿರುತ್ತವೆ. ಹೀಗಿರುವಾಗ ಮನಶಾಸ್ತ್ರ ಅಥವಾ ಮನೋವಿಜ್ಞಾನವನ್ನು ಗಂಭೀರವಾಗಿ ಪರಿಗಣಿಸದಿರುವುದು ಅತ್ಯಂತ ನಿರಾಶಾದಾಯಕ ಸ್ಥಿತಿ.

ಅದಕ್ಕೆ ತೀರಾ ಘನ ಪಾಂಡಿತ್ಯವಲ್ಲ ಬೇಕಾಗಿರುವುದು. ಸಾಮಾನ್ಯ ತಿಳುವಳಿಕೆ. ಸದಾ ಜಾಗೃತಿಯಲ್ಲಿರುವ ಸಾದಾ ಅರಿವು. ಅದೇ ನಮ್ಮೆಲ್ಲಾ ಒಳಗಿನ ಮತ್ತು ಹೊರಗಿನ ಸಮಸ್ಯೆಗಳನ್ನು ಗುಡಿಸಿ ಹಾಕುವುದು.
ಮನಮೂಲದಿಂದ ಸ್ಥಿತಿಗತಿಗಳು
ಮನವೇ ಅವುಗಳ ಮುಂದಾಳು
ನಡೆಯುವ ಎತ್ತಿನ ಹೆಜ್ಜೆಯ ಹಿಂದೆ
ಗಾಡಿಯು ನಡೆಯಲೇ ಬೇಕಹುದಂತೆ (ದಮ್ಮಪದ)

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಮರೆಯಾದ ಅಪೂರ್ವ ಚಿತ್ರಕಲಾ ಪ್ರತಿಭೆ ‘ಶೋಭಾ ಕರಣಿಕ್’

Published

on

ಶೋಭಾ ಕರಣಿಕ್
  • ಡಾ.ಎನ್.ಕೆ.ಪದ್ಮನಾಭ, ಸಹಾಯಕ ಪ್ರಾಧ್ಯಾಪಕರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ,ಉಜಿರೆ

ವರು ಬಿಡಿಸುತ್ತಿದ್ದ ರೇಖೆಗಳು ನಮ್ಮ ದೇಶೀ ಸಂಸ್ಕೃತಿಯ ವಕ್ತಾರಿಕೆಯ ಪಾತ್ರ ನಿರ್ವಹಿಸುತ್ತಿದ್ದವು. ಕನ್ನಡದ್ದೇ ಆದ ಕಲಾತ್ಮಕ ಪರಂಪರೆಯನ್ನು ಸೂಕ್ಷ್ಮವಾಗಿ ಗ್ರಹಿಸಿದ್ದ ಅವರ ಚಿತ್ರಗಳು ಜೀವಂತಿಕೆಯ ಗುಣಲಕ್ಷಣದೊಂದಿಗೆ ಕಂಗೊಳಿಸುತ್ತಿದ್ದವು.

ಸಾಂಪ್ರದಾಯಿಕ ಚಿತ್ರಶೈಲಿಯನ್ನು ಆಧುನಿಕ ಅಗತ್ಯಗಳಿಗೆ ತಕ್ಕಂತೆ ಮಣಿಸಿ ಪರಂಪರೆಯೊಳಗೇ ಅಡಗಿದ್ದ ಮೌಲಿಕ ಮಾದರಿಗಳನ್ನು ಮನಗಾಣಿಸುವ ಶ್ರದ್ಧೆಯೊಂದಿಗೇ ಅವರು ಚಿತ್ರವಿನ್ಯಾಸ ರೂಪಿಸುತ್ತಿದ್ದರು. ಇನ್ಸ್ಟಾಗ್ರಾಮ್, ಫೇಸ್‌ಬುಕ್ ಮತ್ತಿತರ ಮಾಧ್ಯಮಗಳ ಮೂಲಕ ತಮ್ಮ ಚಿತ್ರಗಳನ್ನು ಕಾಣಿಸುತ್ತಿದ್ದರು. ಪರಂಪರೆ ಮತ್ತು ವರ್ತಮಾನವನ್ನು ಬೆಸೆದು ಹೊಸ ಬಗೆಯ ಚಿತ್ರಪ್ರಯೋಗಗಳನ್ನು ನಡೆಸುವ ಹುಮ್ಮಸ್ಸಿನೊಂದಿಗೆ ಚಿತ್ರಕಲಾಯಾನ ಮುಂದುವರೆಸಿದ್ದರು. ಅವರ ಹೆಸರು ಶೋಭಾ ಕರಣಿಕ್.

ಇತ್ತೀಚೆಗಷ್ಟೇ ಅವರ ಚಿತ್ರಕಲಾಯಾನ ನಿಂತಿತು. ಅವರ ನಿಧನವು ವಿನೂತನವಾದ ಪ್ರಯೋಗಶೀಲ ಚಿತ್ರಕಲಾ ಸಾಧ್ಯತೆಗಳನ್ನು ತಡೆದು ನಿಲ್ಲಿಸಿತು. ಪುರಾಣದ ಕಥನ ಪ್ರಸಂಗಗಳಲ್ಲಿ ಉಲ್ಲೇಖಿತ ದೇವರು-ದೇವತೆಗಳ ಅಸ್ಮಿತೆ ಮತ್ತು ದೇಸೀ ಸಂಸ್ಕೃತಿಯನ್ನು ಬಿಂಬಿಸುವ ವಿನ್ಯಾಸಗಳನ್ನು ಸಮನ್ವಯಗೊಳಿಸಿ ಚಿತ್ರಕಲೆಗೆ ಹೊಸ ಆಯಾಮ ತಂದುಕೊಟ್ಟ ಪ್ರತಿಭೆಯಾಗಿ ಶೋಭಾ ಕರಣಿಕ್ ಅವರದ್ದು ವಿಶೇಷ ವ್ಯಕ್ತಿತ್ವವಾಗಿತ್ತು. ಮ್ಯೂರಲ್ ಪೇಂಟಿಂಗ್‌ನಲ್ಲಿ ಅವರಿಗಿದ್ದ ಪರಿಣತಿ, ಉತ್ತರ ಕನ್ನಡದ ಕಾವಿ ಕಲೆಯ ಕುರಿತಾದ ವಿಸ್ತೃತ ಜ್ಞಾನವು ಚಿತ್ರಕಲೆಯನ್ನು ಉನ್ನತೀಕರಿಸುವುದಕ್ಕೆ ಅವರಿಗೆ ನೆರವಾಗಿತ್ತು.

ಕಲೆಯ ಜೊತೆಗಿನ ಅನುಸಂಧಾನದ ಕ್ಷಣಗಳು ಅಪೂರ್ವ. ಒಂದು ನಿರ್ದಿಷ್ಟ ನಿರ್ಣಾಯಕ ಸಂದರ್ಭ, ಸಮಯದಲ್ಲಿ ಕಲೆಯೊಂದು ವ್ಯಕ್ತಿತ್ವವನ್ನು ಪ್ರಭಾವಿಸಿ ಸೃಜನಶೀಲತೆಯ ಹಸಿವನ್ನು ನೆಲೆಗೊಳಿಸುವುದಕ್ಕೆ ಪ್ರೇರಣೆಯಾಗುತ್ತದೆ. ಕಲೆಯ ಪ್ರಭಾವ ಎರಡು ಬಗೆಯದ್ದು. ಸಹೃದಯರನ್ನು ತನ್ನ ಕಲಾತ್ಮಕ ಮಾದರಿಗಳಿಂದ ಸೆಳೆದು ಅವರೊಳಗೆ ವಿಶೇಷ ಅನುಭೂತಿ ಧಾರೆ ಎರೆಯುವಂಥದ್ದು ಒಂದು ಬಗೆಯಾದರೆ ಹೀಗೆ ಸೆಳೆದುಕೊಂಡು ಮತ್ತೆ ಮತ್ತೆ ಪ್ರಭಾವಿಸುತ್ತಾ ಸಹೃದಯರನ್ನೇ ಕಲಾವಿದರನ್ನಾಗಿಸುವ ಸಾಧ್ಯತೆ ಮತ್ತೊಂದು ತೆರನಾದದ್ದು.

ಈ ಕಾರಣಕ್ಕಾಗಿಯೇ ಕಲಾತ್ಮಕ ಸಂಭವನೀಯತೆಯು ಅನನ್ಯವೆನ್ನಿಸಿಕೊಂಡಿದೆ. ಇಂಥ ಅನನ್ಯತೆಯೊಂದಿಗೇ ಶೋಭಾ ಕರಣಿಕ್ ಗುರುತಿಸಿಕೊಂಡಿದ್ದರು. ಅವರು ಓದಿದ್ದು ತಾಂತ್ರಿಕ ವಿಜ್ಞಾನ. ಆದರೆ, ಅವರ ನಿಜದ ಪ್ರತಿಭೆ ಅಭಿವ್ಯಕ್ತವಾದದ್ದು ಚಿತ್ರಕಲೆಯ ಮೂಲಕ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರಿಸರದಲ್ಲಿ ಬೆಳೆದ ಶೋಭಾ ಕರಣಿಕ್ ಮೊದಲಿನಿಂದಲೂ ದೇಶೀ ಕಲೆಯ ಕುರಿತು ವಿಶೇಷ ಆಸಕ್ತಿಯನ್ನು ಬೆಳೆಸಿಕೊಂಡು ಬಂದಿದ್ದರು. ಹೈಸ್ಕೂಲ್ ಓದುತ್ತಿರುವಾಗಲೇ ಕಾವಿಕಲೆಯ ವಿನ್ಯಾಸ ಅವರನ್ನು ಸೆಳೆದಿತ್ತು. ಇವುಗಳನ್ನು ಮತ್ತೆ ಮತ್ತೆ ನೋಡುತ್ತಾ ಹೋದಂತೆಲ್ಲಾ ಕಾವಿ ಕಲೆಯ ಕುರಿತ ಆಕರ್ಷಣೆ ಕಲಿಕೆಯ ಹಂಬಲವಾಗಿ ಮಾರ್ಪಟ್ಟಿತು. ಉತ್ತರ ಕನ್ನಡದ ಟೆಂಪಲ್ ರ‍್ಟ್ ಪ್ರಕಾರದ ಭಾಗವಾಗಿ ಕಾವಿ ಕಲೆಯನ್ನು ಪರಿಚಯಿಸುವ ದೃಷ್ಟಿಯಿಂದ ಅವರು ರಚಿಸಿದ್ದ ತರಹೇವಾರಿ ವಿನ್ಯಾಸಗಳು ವಿವಿಧ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮಗಳಲ್ಲಿ ಗಮನ ಸೆಳೆದಿದ್ದವು.

ಕಾವಿ ಕಲೆಯೂ ಸೇರಿದಂತೆ ನಮ್ಮ ಸಾಂಪ್ರದಾಯಿಕ ಕಲೆಗಳು ಈ ಹಿಂದಿನ ಕಾಲದ ತಲೆಮಾರನ್ನಷ್ಟೇ ಪ್ರಭಾವಿಸಿದ್ದಲ್ಲದೇ ನಂತರದ ಹೊಸ ಪೀಳಿಗೆಯನ್ನೂ ಆಕರ್ಷಿಸುವ ಗುಣ ಹೊಂದಿವೆ. ಮೂಲ ಅಂತಃಸತ್ವಕ್ಕೆ ಧಕ್ಕೆಯೊದಗದ ಹಾಗೆ ಹೊಸ ಕಾಲದ ಅಗತ್ಯಗಳಿಗೆ ಅನುಗುಣವಾಗಿ ಈ ಸಾಂಪ್ರದಾಯಿಕ ಚಿತ್ರಕಲಾ ವಿನ್ಯಾಸಗಳನ್ನು ಮರುರೂಪಿಸಬಹುದು. ಹೊಸ ಕಾಲದಲ್ಲಿ ಅವುಗಳ ಮಹತ್ವವನ್ನು ಮನಗಾಣಿಸಬಹುದು ಎಂಬುದು ಅವರ ಆಶಯವಾಗಿತ್ತು.

ಕಲೆಯೊಂದು ಒಂದು ಕಾಲದಿಂದ ಮತ್ತೊಂದು ಕಾಲಕ್ಕೆ ದಾಟಿಕೊಳ್ಳುವಾಗ ಪಲ್ಲಟಗಳು ಸಹಜ. ಈ ಪಲ್ಲಟಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಇಂತಹ ಕಲೆಗಳಿಗೆ ಹೊಸಕಾಲದಲ್ಲೂ ಜೀವಂತಿಕೆಯನ್ನು ತಂದುಕೊಡುವ ಪ್ರಯತ್ನದ ಅಗತ್ಯವನ್ನು ಮನಗಾಣಿಸುವುದಕ್ಕಾಗಿಯೇ ಶೋಭಾ ಕರಣಿಕ್ ಅವರು ಚಿತ್ರಕಲಾ ರಚನೆಯ ವೈವಿಧ್ಯಮಯ ಪ್ರಯೋಗಗಳಲ್ಲಿ ತೊಡಗಿಸಿಕೊಂಡಿದ್ದರು.

ಅವರ ನಿಧನದಿಂದ ಈ ಪ್ರಯೋಗಶೀಲ ಹೆಜ್ಜೆಗಳು ನಿಂತಂತಾಗಿವೆ. ಆದರೆ, ಅವರು ಪರಂಪರೆ ಮತ್ತು ವರ್ತಮಾನವನ್ನು ಸಮನ್ವಯಗೊಳಿಸಿ ಸಾಬೀತುಪಡಿಸಿದ ಅಪೂರ್ವ ಚಿತ್ರಕಲಾ ಪ್ರಯೋಗಶೀಲತೆಯ ಜೀವಂತಿಕೆ ಹೊಸ ಪೀಳಿಗೆಗೆ ಸದಾ ಸ್ಫೂರ್ತಿಯ ಸೆಲೆಯಾಗಿರುತ್ತದೆ. ಅವರ ಹೆಸರಿನ ಇನಸ್ಟಾಗ್ರಾಂನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳು ಇಂಥ ಸ್ಫೂರ್ತಿಯ ಪ್ರಭೆಯನ್ನು ದಾಟಿಸುತ್ತಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಹೊಸತನದ ಹೊಸ್ತಿಲಲ್ಲಿ..!

Published

on

ಬರಹ : ಮೀನಾಕ್ಷಿ. ಬಿ
  • ಮೀನಾಕ್ಷಿ .ಬಿ, ಎಂ. ಎ ವಿದ್ಯಾರ್ಥಿನಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ದಾವಣಗೆರೆ ವಿಶ್ವವಿದ್ಯಾಲಯ

ಹೊಸವರ್ಷ ವೆಂಬುದು ಪ್ರತಿಯೊಬ್ಬರ ಬಾಳಲ್ಲಿ ವರ್ಷಕ್ಕೊಮ್ಮೆ ಬರುವ ಹೊಸದಿನಗಳ ಆಗಮನ ಯಾಕೆಂದರೆ ಹೊಸತನವನ್ನು ತರುತ್ತಾ ಇರುವ ಹೊಸವರ್ಷ ಕೂಡ ಒಂದು ಜೀವನದ ಭರವಸೆ, ನಿರೀಕ್ಷೆ ಕನಸುಗಳ ಬಂಡಿಯ ಮೇಲೆ ಸಾಗುವ ಪ್ರಯಾಣ ನಮ್ಮ ಜೀವನ.

ವ್ಯಕ್ತಿಯ ನಂಬಿಕೆಯ ಆಧಾರದ ಮೇಲೆಯೇ ಜೀವನ ಸಾಗುಸುತ್ತಿರುವುದು.ಯಾಕೆಂದರೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿಯೂ ಕೂಡ ಕಷ್ಟ -ಸುಖ ದುಃಖದ ಸಂಗತಿಗಳು ಇದ್ದೆ ಇರುತ್ತದೆ. ಕೆಲವೊಂದು ಬಾರಿ ಹತಾಶೆಯನ್ನು ಹೊಂದಿ ಜೀವನದಲ್ಲಿ ಜಿಗುಪ್ಸೆ ಒಂದು ಕೆಟ್ಟ ನಿರ್ಧಾರಕ್ಕೆ ಮನಸ್ಸು ದಾರಿ ಮಾಡಿಕೊಡುತ್ತದೆ. ಹಾಗೆಯೇ ಕಷ್ಟ ಇದ್ದಲ್ಲಿ ಸುಖವಿರುವುದುಂಟು ಅನ್ನುವ ಹಾಗೇ ಇವತ್ತಲ್ಲ ನಾಳೆ ಒಳ್ಳೆಯ ದಿನಗಳು ನಮ್ಮ ಜೀವನದಲ್ಲಿ ಬರಬಹುದೆಂಬ ಭರವಸೆ,ಆತ್ಮವಿಶ್ವಾಸವನ್ನು ಇಟ್ಟುಕೊಂಡು ಜೀವನ ನಡೆಸುತ್ತಲೇ ಇದ್ದೇವೆ.

ಈ ವರ್ಷ ಒಳ್ಳೆಯದಾಗಿಲ್ಲ ಅಂದರೆ ಏನು ಮುಂದಿನ ವರ್ಷ ಆದರೂ ನನ್ನ ಬದುಕು ಬದಲಾಗಬಹುದು ಎಂಬ ಹೊಸತನವನ್ನು ನಮ್ಮಲ್ಲಿ ಭರವಸೆ,ನಂಬಿಕೆಯ ಬೇರಿನೊಂದಿಗೆ ಬೆರೆಸಿಕೊಂಡು ಬದುಕಬೇಕು.ನಾಳೆಯ ದಿನಗಳ ಮೇಲಿನ ಅನಿರೀಕ್ಷಿತ ತೀರಿವಿನಿಂದಾಗುವ ಬದುಕಿನಲ್ಲಾಗುವ ಬದಲಾವಣೆ ಹೊಸತನದ ಚಾಪನ್ನು ಮೂಡಿಸುತ್ತದೆ.
ಎಂಥ ಹತಾಶ ಮನಸ್ಥಿತಿಯವರಲ್ಲೂ ಹೊಸವರ್ಷ ಭರವಸೆಯ ಅಭಯ ಹಸ್ತವನ್ನು ಚಾಚುತ್ತದೆ. ಅದೆಲ್ಲಿಂದಲೇ ಆತ್ಮ ವಿಶ್ವಾಸದ ಬೆಳಕಿನ ಕಿಡಿಯೊಂದು ಕಾಣಿಸಿಕೊಳ್ಳುತ್ತದೆ.

ಹೊಸವರ್ಷವೆಂಬುದು ಕೇವಲ ಸಂಭ್ರಮದ ಕಾಲ ಮಾತ್ರವಲ್ಲ. ಕಳೆದ ದಿನಗಳತ್ತ ಹಿಂತಿರುಗಿ ನೋಡುವ ಸಮಯ ಕೂಡ ಹಿಂದಿನ ದಿನಗಳ ಪುಟಗಳನ್ನು ತೆಗೆದು ನೋಡಿದರೆ. ಉತ್ಸಾಹದ ಗಳಿಗೆಗಳು ಮುಂದಿನ ಕೆಲಸಗಳಿಗೆ ಚೈತನ್ಯ, ಉತ್ಸಾಹ ನೀಡಬಲ್ಲದು.ನಮ್ಮ ದಿಕ್ಕಿಲ್ಲದ ದಾರಿಗೆ ಖಚಿತ ದಿಕ್ಕು ದಾರಿಯನ್ನು ತೋರಬಲ್ಲದು.

ಜೀವನದ ಪ್ರಯಾಣಕ್ಕೆ ಒಂದು ನಿಲ್ದಾಣವಾಗಿದೆ. ನಾವು ಕಾಣುವ ಕನಸಗಳು ಕನಸಾಗಿಯೇ ಉಳಿದಿದೆ ಯಾಕೆಂದರೆ ನಮ್ಮಲ್ಲಿನ ಬೇಜವಾಬ್ದಾರಿ, ನಿರ್ಲಕ್ಷತನ ಆಮೇಲೆ ಮಾಡಿದರೆ ಆಯ್ತು ಅನ್ನೋ ಮನೋಭಾವನೆ ಯಾವುದರ ಬಗ್ಗೆಯೂ ಆಸಕ್ತಿ ಕೊಡದೆ ಇರೋದು ಎಲ್ಲವು ನಮ್ಮ ಕನಸಿನ ಜೀವನ ರೂಪಿಸಿಕೊಳ್ಳುವಲ್ಲಿ ಸಫಲರಾಗದೆ ಉಳಿಯಲು ಕಾರಣ.

ಮೊದಲು ಆತ್ಮವಿಶ್ವಾಸ ಬೇಕು ನಾನು ಈ ಕೆಲಸವನ್ನು ಮಾಡುವೆ ಎಂಬ ಒಂದು ನಿರ್ಧಿಷ್ಟ ಗುರಿ ಇರಬೇಕು ಅಂಗಿದ್ರೆ ಅಷ್ಟೇ ಜೀವನದ ಪಯಣದ ಹಾದಿಯಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಇಲ್ಲವಾದಲ್ಲಿ ಸೋಲನ್ನು ಅನುಭವಿಸುವ ಪರಿಸ್ಥಿತಿ ಎದುರಾಗುತ್ತದೆ. ಮುಂದಿನ ದಿನಗಳ ಆಗಮನದೊಂದಿಗೆ ನಾವು ಕಂಡ ಕನಸನ್ನು ಈಡೇರಿಸಿಕೊಳ್ಳುವ ಸತತ ಪ್ರಯತ್ನದೊಂದಿಗೆ ಬರುವ ದಿನವನ್ನು ಸ್ವಾಗತಿಸಿಕೊಳ್ಳೋಣ.
ಎಲ್ಲರ ಬಾಳಲಿ ಹರುಷ ,ಸಂತೋಷ ಮನೆಮಾಡಲಿ ಎಂದು ಆಶಿಸುತ್ತಾ ಎಲ್ಲರಿಗೂ ಹೊಸವರ್ಷದ ಶುಭಾಶಯಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕಾಮರೂಪದ ಪ್ರಭಾಕರ

Published

on

  • ಪ್ರೊ.ರಹಮತ್ ತರೀಕೆರೆ

ನಾನು ಕೋಲಾರಕ್ಕೆ ಹೋದಾಗೆಲ್ಲ ಎರಡು ಜಾಗಗಳಿಗೆ ತಪ್ಪದೆ ಭೇಟಿ ಕೊಡುತ್ತೇನೆ. ಒಂದು-ಕೆ.ರಾಮಯ್ಯ ಮತ್ತವರ ಸಂಗಾತಿಗಳು ಸೇರಿ ತೇರುಹಳ್ಳಿ ಬೆಟ್ಟದ ಮೇಲೆ ಕಟ್ಟಿರುವ `ಆದಿಮ’ಕ್ಕೆ; ಇನ್ನೊಂದು-`ಕಾಮರೂಪಿ’ ಎಂಬ ಹೆಸರಲ್ಲಿ ಬರೆಯುತ್ತಿದ್ದ ಕನ್ನಡ ಲೇಖಕ ಡಾ. ಎಂ.ಎಸ್. ಪ್ರಭಾಕರ ಅವರಿರುವ ಕಠಾರಿಪಾಳ್ಯದ ಮನೆಗೆ. 50ರ ದಶಕದ ಕೊನೆಯಲ್ಲಿ ಕರ್ನಾಟಕ ಬಿಟ್ಟುಹೋದ ಪ್ರಭಾಕರ, ‘ಹಿಂದೂ’ ಪತ್ರಿಕೆಯ ವರದಿಗಾರರಾಗಿ ಆಫ್ರಿಕಾ ಅಮೇರಿಕ ಬಾಂಗ್ಲಾದೇಶ ಈಶಾನ್ಯ ಭಾರತವನ್ನೆಲ್ಲ ಅಲೆದಾಡಿ, ಕಡೆಗೆ ಕಾಮರೂಪದಲ್ಲಿ (ಅಸ್ಸಾಮಿನ ಪುರಾತನ ಹೆಸರಿದು) ನೆಲೆಸಿಬಿಟ್ಟರು.

`ಕಾಮರೂಪ’ ಶಬ್ದಕ್ಕೆ ಬಯಸಿದ ರೂಪಧಾರಣೆ ಮಾಡುವ ಮಾಯಾವಿ ವಿದ್ಯೆ ಎಂಬರ್ಥವೂ ಇದೆ. ಎಂಬತ್ತರ ಪ್ರಾಯದಲ್ಲಿ ಕರ್ನಾಟಕಕ್ಕೆ ಮರಳಿ ಬಂದಿರುವ ಪ್ರಭಾಕರ ಅವರು, ತಾವು ಹುಟ್ಟಿಬೆಳೆದ ಮನೆಯಲ್ಲಿ ಬಿಡಾರ ಹೂಡಿದ್ದಾರೆ. ಹಿರೀಕರು ಕಟ್ಟಿದ ದೊಡ್ಡಮನೆ. ಮನೆಯೊಳಗೊಂದೇ ಜೀವ; ಮನೆ ತುಂಬ ಪುಸ್ತಕದ ರಾಶಿ (ಹೆಚ್ಚಿನವು ಇಂಗ್ಲೀಶ್ ಬಂಗಾಳಿ ಅಸ್ಸಾಮಿ). ನಟ್ಟನಡುವಿರುವ ಹಾಲಿನ ಮೂಲೆಯಲ್ಲಿ ಬೀದಿಗೆ ಬೆನ್ನುಕೊಟ್ಟಂತೆ ಕೂತು, ಲ್ಯಾಪ್‌ಟಾಪಿನಲ್ಲಿ ಬರೆಯುತ್ತ, ವೆಬ್‌ಸೈಟುಗಳನ್ನು ಜಾಲಾಡುತ್ತ, ಬ್ಲಾಗುಗಳನ್ನೋದುತ್ತ ಪ್ರಭಾಕರ ಕುಳಿತಿರುತ್ತಾರೆ.

ಅವರ ಮನಗೆ ಹೋದಾಗಲೆಲ್ಲ ನನಗೆ ರಾಗಿಮುದ್ದೆ ಸೊಪ್ಪಿನ ಸಾರಿನ ಊಟ ಸಿಗುತ್ತದೆ. ಅವರು ಉಣ್ಣುವುದೊಂದು ಅಪೂರ್ವ ದೃಶ್ಯ. ತಣಿಗೆಯ ನಡುವೆ ಹದವಾಗಿ ಬೆಂದು ಕಂಪು ಬೀರುವ ಗೋಂದಿನಂತಹ ಕೆಂಗಪ್ಪು ಬಣ್ಣದ ಬಿಸಿಮುದ್ದೆಯನ್ನಿಟ್ಟು, ಅದರ ತಲೆಯ ಮೇಲೆ ಶಿಖರವನ್ನು ಹಿಮವು ಅಲಂಕರಿಸುವಂತೆ ಬೆಣ್ಣೆಯ ಚೂರನ್ನಿಡುತ್ತಾರೆ; ಬೆಣ್ಣೆಯು ಮುದ್ದೆ ಕಾವಿಗೆ ಕರಗಿ ಇಡೀ ಚೆಂಡನ್ನು ಆವರಿಸಿ ಅಭಿಷೇಕ ಮಾಡಿಸಿಕೊಂಡ ಮೂರುತಿಯಂತೆ ಥಳಥಳ ಹೊಳೆಯುತ್ತದೆ. ಆಗ ಘಮಿಸುವ ಮುದ್ದೆಯನ್ನು ಚೆನ್ನಾಗಿ ಮಿದ್ದು, ಒಂದು ಬದಿಯಿಂದ ಇಷ್ಟಿಷ್ಟೇ ಮುರಿದು ತುತ್ತು ಮಾಡಿ, ಸೊಪ್ಪಿನ ಗಟ್ಟಿಸಾರಲ್ಲಿ ಹೊರಳಾಡಿಸಿ ಗುಕ್ಕನೆ ನುಂಗಿ ಕಣ್ಮುಚ್ಚಿ ಕೊಳ್ಳುತ್ತಾರೆ. ತರುವಾಯ ಶ್ರೀಯುತರು ಜ್ಞಾನೋದಯವಾದ ಸಿದ್ಧನಂತೆ ಅವರ ಮುಖದಲ್ಲಿ ಪರಮಾನಂದದ ಒಂದು ಕಳೆ ಆವಿರ್ಭವಿಸುತ್ತದೆ. ಇದನ್ನೆಲ್ಲ ಕಾಣುವಾಗ, ಲೋಕವನ್ನೆಲ್ಲ ಸುತ್ತಾಡಿರುವ ಇವರು ಕೋಲಾರಕ್ಕೆ ಮುದ್ದೆಸುಖಕ್ಕಾಗಿಯೆ ಬಂದರೇನೊ ಎಂದು ಶಂಕೆ ಬರುತ್ತದೆ. ಪ್ರಭಾಕರ ಅವರಿಗೆ ಆಧುನಿಕ ಕನ್ನಡ ಸಾಹಿತ್ಯದ ಮೇಲೆ ಅನೇಕ ದೂರುಗಳಿವೆ. ಅವುಗಳಲ್ಲಿ ಆಹಾರ ತಯಾರಿಕೆ ಮತ್ತು ಸೇವನೆ ಕುರಿತು ಅದರಲ್ಲಿ ವಿವರಗಳೇ ಇಲ್ಲ ಎಂಬುದೂ ಒಂದು.

ಕನ್ನಡದ ಅತಿಹಿರಿಯ ಮತ್ತು ಹೆಚ್ಚು ಬರೆಯದ ಲೇಖಕರಲ್ಲಿ ಪ್ರಭಾಕರ ಅವರೂ ಒಬ್ಬರು. ನಾನು ಅವರ ‘ಕುದುರೆಮೊಟ್ಟೆ’ ಕಾದಂಬರಿಯನ್ನೂ ‘ಒಂದು ತೊಲ ಪುನುಗು ಮತ್ತು ಇತರ ಕತೆಗಳು’ ಸಂಕಲನವನ್ನೂ ಓದಿದ್ದೆ. ಇವುಗಳಲ್ಲಿ ‘ಕುದುರೆ ಮೊಟ್ಟೆ’ ಈಗಲೂ ಪ್ರಿಯವಾದ ಪುಸ್ತಕ. ಅದರಲ್ಲಿರುವ ಕೆಲವು ಪಾತ್ರಗಳು ಕೊಂಚ ವಿಕ್ಷಿಪ್ತವಾಗಿವೆ; ಅಲ್ಲಿನ ಬಾಳಿನ ಸನ್ನಿವೇಶಗಳೂ ಅನಿರೀಕ್ಷಿತವಾಗಿವೆ. ಆದರೆ ಎಲ್ಲಿಯೂ ಹುಸಿ ಅನಿಸದಂತೆ, ಒಂದೇ ಶಬ್ದ ಅಪವ್ಯಯವಾಗದಂತೆ ಅದನ್ನು ಬರೆಯಲಾಗಿದೆ. ಪಾತ್ರಗಳನ್ನು ತಮ್ಮ ಸಿದ್ಧಾಂತಕ್ಕೆ ತಕ್ಕಂತೆ ಮಣಿಸಿ ಕೈಗೊಂಬೆಯಂತೆ ಆಡಿಸುತ್ತ, ಕೆಲವನ್ನು ಮುದ್ದಾಮಾಗಿ ದುರುಳಗೊಳಿಸಿ ಕಲೆಯ ಜಾಣಮುಸುಕಿನಲ್ಲಿ ಅಡಗಿಸುತ್ತ, ಕೆಲವು ಕಾದಂಬರಿಗಳು ಕನ್ನಡದಲ್ಲಿ ಪ್ರಕಟವಾಗುತ್ತಿವೆ. ಇಂತಹ ಹೊತ್ತಲ್ಲಿ ಅರ್ಧ ಶತಮಾನದ ಹಿಂದೆ ಪ್ರಕಟವಾದ ಈ ಕಾದಂಬರಿ, ಬಾಳನ್ನು ಕುರಿತು ತೋರುವ ಕಕ್ಕುಲಾತಿ ಕಂಡು ಖುಶಿಯಾಗುತ್ತದೆ. ಕತೆಗಾರರಿಗೆ ತಾವು ಸೃಷ್ಟಿಸುವ ಕೆಲವು ಪಾತ್ರಗಳ ಮೇಲೆ ಕೊಂಚ ಭಾವ ಪಕ್ಷಪಾತವಿರುತ್ತದೆ. ಆದರೆ ತಾವು ಸೃಜಿಸುವ ಎಲ್ಲ ಪಾತ್ರಗಳನ್ನು ತಾಯಿಯಂತೆ ನೋಡುವುದು ಬರೆಹದ ನೈತಿಕತೆ. ಈ ಸಂಗತಿ ಕುವೆಂಪು ಮತ್ತು ಟಾಲ್ ಸ್ಟಾಯ್ ಕಾದಂಬರಿ ಓದಿದವರಿಗೆ ಗೊತ್ತಿದೆ.

ಕಾಮವನ್ನು ಇಟ್ಟುಕೊಂಡು ಜೀವನದ ಸತ್ಯಗಳನ್ನು ಶೋಧಿಸುವ ವಿಷಯದಲ್ಲಿ ಕಾಮರೂಪಿಯವರು, ಒಬ್ಬ ಟಿಪಿಕಲ್ ನವ್ಯಲೇಖಕರೇ. ಆದರೆ ನವ್ಯದ ಕೆಲವು ಲೇಖಕರಲ್ಲಿ ಕಾಣುವಂತೆ, ಅದಕ್ಕವರು ಅನಗತ್ಯ ಪ್ರಾಮುಖ್ಯ ಕೊಡುವುದಿಲ್ಲ. ಅದನ್ನು ಚಪ್ಪರಿಸುವುದಿಲ್ಲ. ವೈಭವೀಕರಿಸುವುದಿಲ್ಲ. ಬದಲಿಗೆ, ಮನುಷ್ಯರಾದವರು ಜೀವನದ ಇಕ್ಕಟ್ಟುಗಳಲ್ಲಿ ಸಿಲುಕಿ ಅನಿವಾರ್ಯವಾಗಿ ವರ್ತಿಸುವ ಪರಿಯನ್ನು ತಣ್ಣಗೆ ವ್ಯಂಗ್ಯವಾಗಿ ಚಿತ್ರಿಸುತ್ತಾ ಹೋಗುತ್ತಾರೆ. ಸತ್ಯಕ್ಕಿರುವ ಹಲವು ಮುಖಗಳನ್ನು ಹಿಡಿಯುವಂತಹ ಕುರುಸೋವಾನ ‘ರಶೋಮನ್’ ಸಿನಿಮಾ ನೆನಪಿಸುವ ಈ ಕಾದಂಬರಿ, ಮತ್ತೆಮತ್ತೆ ಓದಬೇಕು ಎನಿಸುವಷ್ಟು ತಾಜಾ ಆಗಿದೆ. ‘ಉಪಪತ್ತಿಯೋಗ’ ಎಂಬುದನ್ನು ಬಿಟ್ಟರೆ, ಉಳಿದಂತೆ ವ್ಯಕ್ತಿವಾದವನ್ನು ಅತಿಯಾಗಿ ಬಿಂಬಿಸುವ ತಂತ್ರದ ಬಿಗಿತದಲ್ಲಿರುವ ಅವರ ಕತೆಗಳು ಅಷ್ಟು ಆಪ್ತವೆನಿಸಿಲ್ಲ.

ನನಗೆ ಪ್ರಭಾಕರ್ ಕುರಿತು ಆಸಕ್ತಿ ಮೂಡಿಸಿದವರು ಮಾರ್ಕ್ಸ್‌ವಾದಿ ಚಿಂತಕ ಕೆ.ರಾಘವೇಂದ್ರರಾವ್ ಅವರು. ಅಮೆರಿಕೆಯ ವಿಶ್ವವಿದ್ಯಾಲಯಗಳಲ್ಲಿ ಕೆಲಸ ಮಾಡುತ್ತಿದ್ದ ಎ.ಕೆ.ರಾಮಾನುಜನರ ಹೊಂದಾಣಿಕೆಯ ಗುಣವನ್ನು ಕಟುವಾಗಿ ವಿಮರ್ಶಿಸುತ್ತ, ಅಲ್ಲಿನ ಶೈಕ್ಷಣಿಕ ಕ್ಷೇತ್ರದಲ್ಲಿರುವ ಬಿಳಿಯರ ಯಜಮಾನಿಕೆಗೆ ಬಾಗದೆ ಹೊರಬಂದ ಪ್ರಭಾಕರ ಅವರ ದಿಟ್ಟ ಸ್ವಭಾವವನ್ನು ಅವರು ತಮ್ಮ ಸಂದರ್ಶನದಲ್ಲಿ ಪ್ರಸ್ತಾಪಿಸಿದ್ದರು. ಪ್ರಭಾಕರ ಅವರನ್ನು ಭೇಟಿಯಾಗಬೇಕು ಎಂದು ಅನಿಸುತ್ತಿತ್ತು. ಅದರಲ್ಲೂ ಭಾರತದ ಶಾಕ್ತಪೀಠಗಳಲ್ಲಿ ಮುಖ್ಯವಾಗಿರುವ ಅಸ್ಸಾಮಿನ ಕಾಮಾಖ್ಯಕ್ಕೆ ಹೋಗಲು ಯತ್ನಿಸುತ್ತಿದ್ದ ನಾನು, ಅಲ್ಲೇ ಸಮೀಪದ ಗೌಹಾತಿಯಲ್ಲಿರುವ ಅವರನ್ನು ಕಾಣಲು ಹವಣಿಕೆ ಮಾಡಿಕೊಂಡಿದ್ದೆ. ಆದರೆ ಸಾರ್ವಜನಿಕ ವ್ಯಕ್ತಿಯಾಗಲು ನಿರಾಕರಿಸಿ ಅಜ್ಞಾತವಾಗಿಯೇ ಬಾಳುವ ಅವರು ಸುಲಭವಾಗಿ ಸಿಗುತ್ತಿರಲಿಲ್ಲ.

ನನ್ನ ತವಕವನ್ನರಿತಿದ್ದ ಕೆ.ರಾಮಯ್ಯ, ‘ಪ್ರಭಾಕರ್ ಕರ್ನಾಟಕಕ್ಕೆ ಬಂದಿದ್ದಾರೆ. ಬನ್ನಿ’ ಎಂದು ಅವರ ಮನೆಗೆ ಕರೆದುಕೊಂಡು ಹೋದರು. ಮಧ್ಯಾಹ್ನದ ಸುಡುಹೊತ್ತು. ಪ್ರಭಾಕರ ಪ್ರೀತಿಯಿಂದ ಬರಮಾಡಿಕೊಂಡು ನೊರೆ ತುಂಬಿದ ಒಗರು ಬೀರಿನ ಮಗ್ಗನ್ನು ಕೈಗೆ ಕೊಟ್ಟು, ಕಾಮಾಖ್ಯದ ಬಗ್ಗೆಯೂ ತಂತ್ರ ಪಂಥದ ಬಗ್ಗೆಯೂ ಇರುವ ಕೃತಿಗಳನ್ನು ತೋರಿಸುತ್ತ, ಗಂಟೆಗಟ್ಟಳೆ ಮಾತಾಡಿದರು. ಅರಿವಿನ ಕಿಡಿಗಳು ಹಾರುವ ಅದೊಂದು ವಿದ್ವತ್‌ಪೂರ್ಣ ಹರಟೆ.

ನಾನು ಅವರಲ್ಲಿ ಶಿಷ್ಯವೃತ್ತಿ ಸ್ವೀಕರಿಸಿ ಹಲವಾರು ಸಲ ಕೋಲಾರಕ್ಕೆ ಹೋಗಿ ಬಂದಿದ್ದೇನೆ. ಅವರ ಮಾತುಕತೆಗಳಲ್ಲಿ ನನಗೆ ಮುಖ್ಯವಾಗಿ ಕಂಡಿದ್ದು, ಜಾತ್ಯತೀತವಾದ ಮನಸ್ಸು; ಸಣ್ಣಪುಟ್ಟ ಸಂಗತಿಗಳ ಮೇಲೂ ಕಾಳಜಿಯಿಂದ ಸೂಕ್ಷ್ಮವಾಗಿ ಚಿಂತಿಸುವ ಮಾನವೀಯತೆ; ಗತಕಾಲದ ಬಗ್ಗೆ ಹಳಹಳಿಕೆಯಿಲ್ಲದೆ ವರ್ತಮಾನದ ಸಮಸ್ಯೆಗಳನ್ನು ಕುರಿತು ಚಿಂತಿಸುವ ಪ್ರಖರವೂ ನಿಷ್ಠುರವೂ ಆದ ರಾಜಕೀಯ ಪ್ರಜ್ಞೆ. ಸಾರ್ವಜನಿಕ ಬದುಕಿನಲ್ಲಿ ಜಾತಿಪದ್ಧತಿ ಎಲ್ಲೆಮೀರಿ ನಿರತವಾಗಿರುವ ಕುರಿತ ಹೇವರಿಕೆ. ಹಿರಿಯ ಲೇಖಕರಲ್ಲಿ ಸಾಮಾನ್ಯವಾಗಿ ಎರಡು ಸ್ವಭಾವಗಳಿರುತ್ತವೆ. ಒಂದು- ಕಳೆದುಹೋದ ಕಾಲದ ಬಗ್ಗೆ ಭಾವುಕ ಮರುಕಳಿಕೆ. ಎರಡು-ವರ್ತಮಾನದ ಸಾಮಾಜಿಕ ರಾಜಕೀಯ ವೈರುಧ್ಯಗಳನ್ನು ಉದಾರವಾಗಿ ನೋಡುತ್ತ, ಚಿಂತನೆಯ ಮೊನಚನ್ನು ಕಳೆದುಕೊಳ್ಳುವುದು. ಆದರೆ ಆತ್ಮಕ್ಕೆ ಸದಾ ಬೆಂಕಿ ಹತ್ತಿಸಿಕೊಂಡಂತೆ ಉರಿಯುವ ಕೆಲವರಿದ್ದಾರೆ. ಕೋಚೆ, ಕುಸುಮಾಕರ ದೇವರಗೆಣ್ಣೂರ, ಎಂ.ಡಿ. ನಂಜುಂಡಸ್ವಾಮಿ, ನೀಲಗಂಗಯ್ಯ ಪೂಜಾರ, ಕೆ.ರಾಘವೇಂದ್ರರಾವ್, ಅಬ್ಬಿಗೇರಿ ವಿರೂಪಾಕ್ಷಪ್ಪ, ಸಾರಾ ಅಬೂಬಕರ್, ಕಾಮರೂಪಿ ಪ್ರಭಾಕರ-ಇವರೆಲ್ಲ ಇಂತಹವರು. ಈ ಹಿರಿಯರ ಜತೆ ಮಾತಾಡುವಾಗ ಇವರ ಹಠಮಾರಿತನ, ಜಗಳಗಂಟಿತನ, ಆದರ್ಶವಾದ, ನೈತಿಕ ಪ್ರಜ್ಞೆ ಹಾಗೂ ಭಿನ್ನಮತ ಇಷ್ಟವಾಗುತ್ತದೆ.

ಕರ್ನಾಟಕದಿಂದ ಬಹುಕಾಲ ದೂರವಿದ್ದ ಕಾರಣದಿಂದ ಏರ್ಪಟ್ಟಿರುವ ಅಪರಿಚಿತತೆಯಿಂದಲೊ ಅಥವಾ ಕರ್ನಾಟಕದ ಒಳಗೇ ಇದ್ದೂಇದ್ದೂ ನಮಗೆ ಕಾಣದಂತಾಗಿರುವ ವೈರುಧ್ಯಗಳು ‘ಹೊರಗಿನಿಂದ’ ಬಂದಿರುವ ಅವರಿಗೆ ಒಡೆದು ಕಾಣುತ್ತಿರುವುದರಿಂದಲೊ, ಪ್ರಭಾಕರ ಕರ್ನಾಟಕದ ಸಮಕಾಲೀನ ಸಾಂಸ್ಕೃತಿಕ ರಾಜಕಾರಣದ ವೈರುಧ್ಯಗಳ ಬಗ್ಗೆ ತೀಕ್ಷ್ಣವಾದ ಟಿಪ್ಪಣಿ ಮಾಡುತ್ತಿರುತ್ತಾರೆ; ಕನ್ನಡಿಗರ ಸ್ವಭಾವದಲ್ಲೇ ವ್ಯಕ್ತಿನಿಷ್ಠೆಗಾಗಿ ವಿಮರ್ಶೆಯ ನಿಷ್ಠುರತೆ ಬಿಟ್ಟುಕೊಡುವ, ಸಜ್ಜನಿಕೆಯ ಭಾಷೆಯಲ್ಲಿ ವಾಸ್ತವವನ್ನು ಅಡಗಿಸುವ ಪ್ರವೃತ್ತಿಯಿದೆ ಎಂದು ಹೇಳುತ್ತಿರುತ್ತಾರೆ. ಸಂಘಟಕರೊಬ್ಬರು ಕಾರ್ಯಕ್ರಮವೊಂದಕ್ಕೆ ಕರೆಸಿಕೊಂಡು ಪರಿಚಯ ಭಾಷಣದಲ್ಲಿ ತಮ್ಮನ್ನು ಅತಿಯಾಗಿ ಹೊಗಳಿದ್ದನ್ನು ನೆನೆಯುತ್ತ ಅವರೊಮ್ಮೆ ಹೇಳಿದರು: “ಏನ್ ಸ್ವಾಮಿ ಕನ್ನಡಿಗರು? ಎಷ್ಟು ಉದಾರತೆ! ನನ್ನ ಬಗ್ಗೆ ಅವರಿಗೆ ಏನೂ ಗೊತ್ತಿಲ್ಲ. ನಾನು ಎಲ್ಲ ಸೇರಿದರೆ ನೂರೈವತ್ತು ಪುಟಗಳನ್ನೂ ಬರೆದಿಲ್ಲ. ಕನ್ನಡಕ್ಕೆ ದೊಡ್ಡ ಕೊಡುಗೆಯನ್ನು ಕೊಟ್ಟಿಲ್ಲ. ಆದರೂ ವಾಚಾಮಗೋಚರ ಹೊಗಳಿಬಿಟ್ಟರು. ಕರ್ನಾಟಕದಲ್ಲಿ ಮಾತಿಗೆ ಬೆಲೆಯೇ ಇದ್ದಂತಿಲ್ಲ.’’

ಇದನ್ನು ಕೇಳುವಾಗ ಈಚೆಗೆ ಕಲ್ಕತ್ತಾದಲ್ಲಿ ನಾನು ಕಂಡ, ಹಿರಿಯ ಲೇಖಕ ರುದ್ರಪ್ರತಾಪ ಸೇನರ ಸನ್ಮಾನ ಕಾರ್ಯಕ್ರಮ ನೆನಪಾಯಿತು. ಸೇನರಿಗೆ 75ವರ್ಷ ತುಂಬಿದ ನೆಪದಲ್ಲಿ ಇರಿಸಿಕೊಂಡಿದ್ದ ಆ ಕಾರ್ಯಕ್ರಮ ಎಷ್ಟು ವಿಮರ್ಶಾತ್ಮಕವಾಗಿತ್ತು ಎಂದರೆ, ಅವರ ಶಿಷ್ಯರು ತಮ್ಮ ಗುರುವಿನ ಜತೆ ಕೋರ್ಟ್ಮಾರ್ಶಲ್ ನಡೆಸುವವರ ಹಾಗೆ ಪ್ರಶ್ನೆ ಕೇಳುತ್ತಿದ್ದರು. ಸೇನರು ಆ ಕಟುತರ ಪ್ರಶ್ನೆಗಳಿಗೆಲ್ಲ ಪ್ರಾಮಾಣಿಕವಾಗಿ ದ್ವಂದ್ವವಿಲ್ಲದೆ ಉತ್ತರಿಸುತ್ತಿದ್ದರು. ಹಿರಿಯರ ತಲೆಗೆ ಅಭಿನಂದನ ಗ್ರಂಥಗಳ ಸರಮಾಲೆಯನ್ನು ತಂದು ಕಟ್ಟಿ, ಎಗ್ಗಿಲದೆ ಹೊಗಳಿ ವೈಭವೀಕರಿಸುವ ಪದ್ಧತಿಯಿರುವ ಕರ್ನಾಟಕದಲ್ಲಿ, ಈ ಪರಿಯ ನಿಷ್ಠುರತೆ ಕಲ್ಪಿಸಿಕೊಳ್ಳುವುದೇ ಕಷ್ಟ.

ತೋರುಗಾಣಿಕೆಯನ್ನು ಸದಾ ನಿರಾಕರಿಸುವ ಪ್ರಭಾಕರ ಅವರಲ್ಲಿ, ಅವರ ಖಂಡಿತವಾದಿ ನಿಲುವಿಗೆ ಅಷ್ಟೊಂದು ತಾಳೆಯಾಗದ ಇನ್ನೊಂದು ಮುಖವಿದೆ. ಅದೆಂದರೆ, ಜೀವನಪ್ರೀತಿಯ ಸಂಕೇತದಂತಿರುವ ತಮಾಶೆ ಮತ್ತು ಪೋಲಿತನ. ಈ ತಮಾಶೆಯ ಗುಣ ಅದ್ಭುತ ನಾಟಕೀಯ ಶೈಲಿಯಾಗಿ ಅವರ ಕಥೆ ಕಾದಂಬರಿಗಳಲ್ಲೆಲ್ಲ ಆವರಿಸಿಕೊಂಡಿದೆ. ತಮಗೆ ಪಾಠ ಹೇಳಿದ ಗುರುಗಳ ವೈಯಕ್ತಿಕ ಬದುಕಿನಲ್ಲಿದ್ದ ಸನಾತನವಾದ ಮತ್ತು ತರಗತಿಗಳಲ್ಲಿ ಕನ್ನಡ ಬಳಸದ ಅವರ ಇಂಗ್ಲಿಷಿನ ವ್ಯಾಮೋಹ ಕುರಿತಂತೆ, ಅವರಲ್ಲಿ ಸ್ವಾರಸ್ಯಕರ ಮಾಹಿತಿಗಳಿವೆ. ಪ್ರಭಾಕರ ಅವರು ಆಪ್ತರ ಎದುರು ತಾವು ಬರೆದಿರುವ ಅಪ್ರಕಟಿತ ಪೋಲಿ ಪದ್ಯಗಳನ್ನು ವಾಚಿಸುವುದುಂಟು. ಬಹುಶಃ ಇದು ಅವರ ಗೆಳೆಯರಾಗಿದ್ದ ಎಚ್.ಎಸ್. ಬಿಳಿಗಿರಿಯವರ ಸಹವಾಸ ಫಲವಿರಬೇಕು.

ಒಂದೇ ವ್ಯಕ್ತಿತ್ವದಲ್ಲಿ ಒಟ್ಟಿಗೇ ಇರಲು ಕಷ್ಟವೆನಿಸಬಹುದಾದ ಇನ್ನೂ ಅನೇಕ ಸಂಗತಿಗಳು ಅವರಲ್ಲಿ ಸಹಜವಾಗಿ ನಿರಾಳವಾಗಿ ಇವೆ. ಉದಾ.ಗೆ, ಬಹುಭಾಷಿಕರಾದ ಅವರ ಮನೆಮಾತು ತಮಿಳುಗನ್ನಡ; ಬರವಣಿಗೆ ಕನ್ನಡ ಮತ್ತು ಇಂಗ್ಲೀಶಿನಲ್ಲಿ; ಸಂಸ್ಕೃತ ಅಸ್ಸಾಮಿ ಬಂಗಾಳಿ ಭಾಷೆಗಳಲ್ಲಿ ದೊಡ್ಡ ವಿದ್ವತ್ತು. (ಅವರ ಅಸ್ಸಾಮಿ ಬಂಗಾಳಿ ತಿಳಿವಳಿಕೆಯಿಂದ ಕನ್ನಡಕ್ಕೆ ಪ್ರಯೋಜನವಿನ್ನೂ ಆಗಿಲ್ಲ). ಪಂಪ ಅವರ ಇಷ್ಟದ ಕವಿ. ಮೂಲತಃ ಇಂಗ್ಲೀಶ್ ಸಾಹಿತ್ಯದ ವಿದ್ಯಾರ್ಥಿಯಾದರೂ ಸಾಹಿತ್ಯಕ್ಕಿಂತ ಹೆಚ್ಚಾಗಿ ಅಂತರಾಷ್ಟ್ರೀಯ ರಾಷ್ಟ್ರೀಯ ರಾಜಕಾರಣದ ಮೇಲೆ ಹೆಚ್ಚು ಬರೆವಣಿಗೆ. ಅದರಲ್ಲೂ ಈಶಾನ್ಯ ಭಾರತದ ರಾಜಕಾರಣ ಭಾಷೆ ಧರ್ಮ ಸಂಸ್ಕೃತಿ ಕುರಿತ ಅವರ ತಿಳಿವಳಿಕೆ ಅಪರೂಪದ್ದು. ಇವನ್ನೆಲ್ಲ ಒಟ್ಟಿಗೆ ಹೇಗೆ ಕಲ್ಪಿಸಿಕೊಳ್ಳುವುದು? ಪ್ರಭಾಕರ ತಮ್ಮ ಕಾದಂಬರಿಯ ಒಂದು ಪಾತ್ರದ ಹಾಗೇ ಬದುಕಿದ್ದಾರೆ.

ಅವರು ಈಚೆಗೆ ಮಾತಾಡುತ್ತ ಕೊಂಚ ದಣಿದ ದನಿಯಲ್ಲಿ “ಸ್ವಾಮಿ, ಕರ್ನಾಟಕ ನನಗೆ ಸಾಕಾಗಿದೆ. ಗೌಹಾಟಿಗೆ ಹೋಗಬೇಕು ಅನಿಸುತ್ತಿದೆ’ ಎಂದು ಗೊಣಗಿದರು. “ಹೋಗಿ. ಆದರೆ ಮತ್ತೆಬನ್ನಿ’’ ಎಂದೆ. ಅವರಲ್ಲಿ ಕೋಲಾರ-ಗೌಹಾತಿಗಳ ನಡುವೆ ವಿಚಿತ್ರವಾದ ಆಕರ್ಷಣೆ ವಿಕರ್ಷಣೆಯಿದೆ. ಇದು ಬಹುಕಾಲ ಬೇರೆಡೆ ಬೆಳೆದ ಮರ ತನ್ನ ಮೂಲನೆಲಕ್ಕೆ ಬಂದು ನಾಟಿಗೊಂಡರೆ ಬೇರೂರುವ ಕಷ್ಟ. ಮರಳಿ ಹುಟ್ಟಿದೂರಿಗೆ ಬರುವಿಕೆ ಬಾಲ್ಯದ ನೆನಪುಗಳನ್ನು ಎಚ್ಚರಿಸಿ ಸುಖ ಕೊಡುತ್ತದೆ; ಆದರೆ ಹೊಚ್ಚ ಹೊಸತೆೆನಿಸುವಷ್ಟು ಬದಲಾಗಿರುವ ಪರಿಸರವು, ಕಾಡುವ ಏಕಾಂಗಿತನವನ್ನೂ ತಂದಿಡುತ್ತದೆ. ಯಾರ ಮರುಕವನ್ನೂ ಬಯಸದೆ ಏಕಾಂತದಲ್ಲಿ ಘನತೆಯಿಂದ ಕೊನೆಯ ದಿನಗಳನ್ನು ಕಳೆಯ ಬಯಸುವ ಇಂತಹ ಹಠಮಾರಿ ಜೀವಗಳು, ಒಳಗೇ ಮೃದ್ವಂಗಿಗಳಾಗಿ ಆಪ್ತಸಂಗಾತಕ್ಕೆ ಹಾತೊರೆಯುತ್ತಿರುತ್ತವೆ.

ಆ ಸಂಗಾತದ ಸ್ವರೂಪ ಎಂತಹುದು ಎಂದು ಸ್ಪಷ್ಟವಾಗುವುದಿಲ್ಲ. ನಾನು ‘ಕಾಮರೂಪಕ್ಕೆ ಯಾವಾಗ ಹೋಗುತ್ತೀರಿ’ ಎಂದು ಕೇಳಿದೆ: ‘ಆದಿಮದ 50ನೇ ಬೆಳುದಿಂಗಳ ಕಾರ್ಯಕ್ರಮ ಮುಗಿಸಿಕೊಂಡು’ ಎಂದರು.
ಪ್ರತಿಯೊಬ್ಬರಿಗೂ ಬಾಳಿನಲ್ಲಿ ಬಹುರೂಪಧಾರಣೆ ಮಾಡಬೇಕಾದ ಒತ್ತಡಗಳು ಎದುರಾಗಬಹುದು. ಆದರೆ ಈ ರೂಪಧಾರಣೆಗೆ ಕಾರಣ, ನಮ್ಮ ಇಚ್ಛಾನಿಚ್ಛೆಗಳು ಮಾತ್ರವಲ್ಲ, ಬಾಳಿನ ಅನೂಹ್ಯ ಒತ್ತಡಗಳು ಸಹ. ಈ ಒತ್ತಡಗಳು ಬರೆಹ ಇಲ್ಲವೇ ಮಾತಿನ ವ್ಯಾಖ್ಯಾನಕ್ಕೆ ಕೆಲವೊಮ್ಮೆ ನಿಲುಕುವಂತೆ ಇರುವುದಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending