Connect with us

ಅಂತರಂಗ

ಅರಿಮೆಯ ಅರಿವಿರಲಿ-50 : ಮನಸ್ಸೆಂದರೆ ಏನದು..?

Published

on

  • ಯೋಗೇಶ್ ಮಾಸ್ಟರ್

ದೇವರು, ಧರ್ಮ, ಪ್ರೇಮ, ರಾಷ್ಟ್ರಭಕ್ತಿ, ಸಂಬಂಧ, ಶೀಲ, ಜೀವನ, ಆತ್ಮ, ಪರಮಾತ್ಮ, ಆಧ್ಯಾತ್ಮವೇ ಮೊದಲಾದ ಅನೇಕ ವಿಷಯಗಳು ಅತ್ಯಂತ ಅಪವ್ಯಾಖ್ಯಾನಕ್ಕೊಳಗಾಗಿವೆ. ಅದರಂತೆಯೇ ಮನಸ್ಸೂ ಕೂಡಾ. ವ್ಯಕ್ತಿಯು ತನ್ನ ಬದುಕಿನಲ್ಲಿ ಬಹು ಜನರು ಉಪಯೋಗಿಸುವ ಮತ್ತು ಬಹಳ ಗೌರವ ಕೊಡುವ ಕೆಲವು ಪರಿಕಲ್ಪನೆಗಳನ್ನು ತಾನೂ ಬಳಸಲು ಇಷ್ಟಪಡುತ್ತಾನೆ.

ಹಾಗೆ ಅವುಗಳನ್ನು ಬಳಸುವುದರಿಂದ ತನ್ನ ಗೌರವವು ಹೆಚ್ಚುತ್ತದೆ ಎಂದು ಭಾವಿಸುತ್ತಾನೆ. ಹಾಗಾಗಿ ಅದನ್ನು ತನಗೆ ತಿಳಿದ ಮಟ್ಟಿಗೆ ಬಳಸಲು, ವಿವರಿಸಲು ಪ್ರಾರಂಭಿಸುತ್ತಾನೆ. ಅವುಗಳೆಲ್ಲವೂ ಅಮೂರ್ತ (ಅಬ್ಸ್‍ಟ್ರಾಕ್ಟ್) ಆಗಿರುವುದರಿಂದ, ಭೌತಿಕವಾಗಿ ಸಿಕ್ಕು ಪ್ರಯೋಗಾಲಯದಲ್ಲಿ ಪ್ರಯೋಗಗಳ ಮೂಲಕ ಪರೀಕ್ಷಿಸಲು ಆಗದೇ ಇರುವುದಾಗಿರುವುದರಿಂದ ತಮ್ಮ ತಮ್ಮ ಮೂಗಿನ ನೇರಕ್ಕೆ, ತಮ್ಮ ತಮ್ಮ ಬಯಕೆಗಳಿಗೆ ವಿವರಿಸಿಕೊಂಡು ಆ ಅಮೂರ್ತ ಮತ್ತು ಮೌಲಿಕ ಪದಗಳು ತಮ್ಮವಾಗಿವೆ ಎಂದು ತೃಪ್ತಿಪಡಲು ಸಾಧ್ಯ.

ಸರಿ, ಇವು ಅಪವ್ಯಾಖ್ಯಾನಗಳು ಎಂದು ತಿಳಿವುದು ಹೇಗೆ? ವ್ಯಕ್ತಿಗಳು ಪ್ರಸ್ತುತಪಡಿಸುವ ವಿವರಣೆಗಳನ್ನು ಅಥವಾ ಅರ್ಥಗಳನ್ನು ಛೇದಿಸಿಕೊಂಡು ಹೋದಂತೆಲ್ಲಾ ಒಂದು ಕ್ರಮವರಿದ, ಹದವರಿತ ಅರಿವಿಗೆ ನಿಲುಕುತ್ತಾ ಹೋಗುತ್ತವೆ. ಉತ್ಪ್ರೇಕ್ಷೆಯಿಂದ, ಏಕಮುಖ ಅಭಿಪ್ರಾಯದಿಂದಲೋ, ಪೂರ್ವಾಗ್ರಹ ಪೀಡಿತವಾಗಿಯೋ ಇರುವಂತಹ ಜಾಳುಜಾಳಾದ ವಿವರಣೆಗಳ ಹೊಟ್ಟು ಹಾರಿಹೋಗುತ್ತವೆ. ಆಗ ಆ ಪರಿಕಲ್ಪನೆಗಳ ಅರ್ಥ ಒಂದು ಹಂತಕ್ಕೆ ಸರಿಯಾಗಿ ಆಗುತ್ತವೆ.

ಮನಸ್ಸಾಗಲಿ, ದೇವರಾಗಲಿ; ಅವು ಅಮೂರ್ತವಾದರೂ, ಅದೆಷ್ಟೇ ಗೊಂದಲಗಳ ಗೂಡಾದರೂ ಕ್ರಮವರಿತ ಮತ್ತು ನಿಖರವಾದ ಗ್ರಹಿಸುವಿಕೆಯಿಂದ ಅರ್ಥ ಮಾಡಿಕೊಳ್ಳುವುದು ಕಷ್ಟವೇನಿಲ್ಲ. ವಾಸ್ತವವಾಗಿ ಯಾವುದ್ಯಾವುದು ಅತ್ಯಂತ ಜಟಿಲವೆಂದು, ಸಂಕೀರ್ಣವೆಂದು ಮತ್ತು ಅರ್ಥಕ್ಕೆ ನಿಲುಕದೆಂದು ಹೇಳುತ್ತಾರೋ ಅವೆಲ್ಲವೂ ಸರಳವೇ ಆಗಿರುತ್ತದೆ. ಆದರೆ ಅವು ಅಷ್ಟೊಂದು ಸರಳವೂ ಮತ್ತು ನೇರವೂ ಆಗಿವೆ ಎಂದರೆ ಅದನ್ನು ಸ್ವೀಕರಿಸುವ ಮತ್ತು ಗೌರವಿಸುವವರು ಲಘುವಾಗಿ ಅಥವಾ ಹಗುರವಾಗಿ ಕಂಡುಬಿಡಬಹುದು.

ಅದರ ಮೌಲ್ಯವನ್ನು ಗುರುತಿಸದೇ ಹೋಗಿಬಿಡಬಹುದು ಎಂಬ ಆತಂಕದಿಂದ ಅವುಗಳನ್ನು ಕ್ಲಿಷ್ಟಗೊಳಿಸುತ್ತಾರೆ. ಸಂಕೀರ್ಣವೆಂಬಂತೆ ಪ್ರದರ್ಶಿಸುತ್ತಾರೆ. ಈ ಅಮೂರ್ತವಾದ ಪರಿಕಲ್ಪನೆಗಳನ್ನು ವಿವರಿಸುವವರು ಗೊಂದಲಗಳನ್ನು ಸೃಷ್ಟಿಸುತ್ತಾರೆಯೇ ಹೊರತು, ಅವುಗಳ ರಚನೆಯಲ್ಲಿ, ಸ್ವಭಾವದಲ್ಲಿ, ಅಸ್ತಿತ್ವದಲ್ಲಿ ಯಾವ ಗೊಂದಲಗಳೂ ಇಲ್ಲ.

ಮನಸ್ಸಿನ ವಿಜ್ಞಾನ

ಇನ್ನು ಮನಸ್ಸಂತೂ ಬರಿಯ ಅಮೂರ್ತವಾಗಿದ್ದರೂ ಪರಿಕಲ್ಪನೆಯಲ್ಲ. ಅದು ವಿಚಾರವೂ ಹೌದು, ವಿಜ್ಞಾನವೂ ಹೌದು. ಹೆಸರಿಸಿರುವಂತಹ ಚೈತನ್ಯ. ವಿದ್ಯುತ್ಚಕ್ತಿಯಂತೆ ಅದು ವಿಜ್ಞಾನದ ಶಾಖೆಯಾಗಿದ್ದು ಅನೇಕ ರೀತಿಯ ಪ್ರಯೋಗಗಳಿಗೆ ಒಳಗಾಗಿದೆ. ದೇವರ ರೀತಿಯಲ್ಲಿ ತಾತ್ವಿಕವಾಗಿ ಮಾತ್ರ ವಿವರಿಸುವ ಅಗತ್ಯವಿಲ್ಲ. ದೇವರಿಗೂ ಮತ್ತು ಮನಸ್ಸಿಗೂ ಏನೂ ಸಂಬಂಧವಿಲ್ಲ. ಮನಸ್ಸು ನೇರವಾಗಿ ಮನುಷ್ಯನ ಚಿಂತನಾ ಸಾಮರ್ಥ್ಯ ಮತ್ತು ಆಲೋಚನಾ ಕ್ರಮಕ್ಕೆ ಸಂಬಂಧಿಸಿದ್ದು.

ದೇವರ ವರ ಅಥವಾ ಶಾಪ ಕೂಡಾ ಮನಸ್ಸಿನ ಗ್ರಹಿಕೆಯ ಸಾಮರ್ಥ್ಯ ಅಥವಾ ದೌರ್ಬಲ್ಯಕ್ಕೆ ಸಂಬಂಧಿಸಿದ್ದೇ ಹೊರತು ಇದು ದೇವರ ಶಕ್ತಿಗೆ ಸಂಬಂಧಿಸಿದ ಪ್ರಾಯೋಗಿಕ ವಿಜ್ಞಾನದ ಶಾಖೆಯಲ್ಲ. ಇದು ಸರಳ ಎಂಬುದೇನೋ ನಿಜ. ಆದರೆ ಬಹಳ ಸೂಕ್ಷ್ಮವೂ ಮತ್ತು ಸಂವೇದನಾಶೀಲವೂ ಆಗಿರುವುದರಿಂದ ನಿಭಾಯಿಸುವುದರಲ್ಲಿ ಜಟಿಲತೆ ತೋರುತ್ತದೆ. ಆದರೆ, ಇದನ್ನು ಅರಿಯುವುದರಿಂದ ಮತ್ತು ನಿಭಾಯಿಸುವ ತಂತ್ರಗಳನ್ನು ಗಮನಪೂರ್ವಕವಾಗಿ ಬಳಸಿದ್ದಲ್ಲಿ ಸರಾಗವೇ ಇರುತ್ತದೆ.

“ಮನಸ್ಸು, ಆಲೋಚಿಸಲಾಗುವ ಜೀವಿಗಳಲ್ಲಿನ ಚೈತನ್ಯ ಅಥವಾ ಸಾಮರ್ಥ್ಯವಿದು. ಈ ಸಾಮರ್ಥ್ಯದ ಅಥವಾ ಚೈತನ್ಯದ ಪ್ರಧಾನ ಕೆಲಸಗಳೆಂದರೆ ಭಾವಿಸುತ್ತದೆ, ಆಲೋಚಿಸುತ್ತದೆ ಮತ್ತು ಸಂಕಲ್ಪಿಸುತ್ತದೆ.” ಇಷ್ಟೇ ಎಂದು ಹೇಳಿಬಿಟ್ಟರೆ ಬಹಳ ಸಣ್ಣ ವ್ಯಾಖ್ಯಾನವೇನೋ ನಿಜ. ಆದರೆ ಮನಸ್ಸಿನ ಅಸ್ತಿತ್ವ ಮತ್ತು ಅದರ ಚಟುವಟಿಕೆಗಳ ರೂಪುಗೊಳ್ಳುವುದು ಪ್ರಕ್ರಿಯೆಯ ಮೂಲಕ. ಅದನ್ನು ಆಧರಿಸಿಕೊಂಡು ಬೇಕಾದಂತೆ ಟಿಪ್ಪಣಿಗಳನ್ನು ಮಾಡಬಹುದು, ಪ್ರಮೇಯಗಳನ್ನು ಮಾಡಬಹುದು ಹಾಗೂ ವಿಚಾರ ಸರಣಿಗಳನ್ನು ವಿಸ್ತಾರಗೊಳಿಸುತ್ತಾ ಹೋಗಬಹುದು.

ಮನಸ್ಸೆಂಬ ಅದು

ಮನಸ್ಸನ್ನು ಸಿಕ್ಕಾಪಟ್ಟೆ ಶಾಸ್ತ್ರೀಯವಾಗಿ ನಾವು ಈಗ ಅಧ್ಯಯನ ಮಾಡಲು ಹೋಗುವುದು ಬೇಡ. ನಾವು ಮಹಾಪ್ರಭಂದವನ್ನು ರಚಿಸಬೇಕಿಲ್ಲ. ಮನಸ್ಸೆಂಬ ‘ಅದು’ ನಮ್ಮಲ್ಲಿ ಇರುವುದರಿಂದ ಅದರ ಸಾಮರ್ಥ್ಯ ಮತ್ತು ದೌರ್ಬಲ್ಯಗಳ ಬಗ್ಗೆ ತಿಳಿದರೆ ಎರಡು ಹೆಜ್ಜೆ ಮುಂದೆ ಇಡಬೇಕಾದ ಜಾಗದಲ್ಲಿ ಮುನ್ನಡೆಯಬಹುದು, ಹಿಂದಕ್ಕೆ ಸರಿಯಬೇಕಾದ ಕಡೆ ಸರಿಯಬಹುದು.

ಇಷ್ಟಕ್ಕಷ್ಟೇ ನಾವೀಗ ಗಮನ ಕೊಡಬೇಕಾಗಿರುವುದು. ಸಮಸ್ಯೆ ಏನೆಂದರೆ ಮುನ್ನಡೆಯ ಬೇಕಾದ ಕಡೆ ಹಿಂದೆ ಸರಿಯುವುದು, ಹಿಂದೆ ಸರಿಯಬೇಕಾದರೆ ಕಡೆ ಮುನ್ನುಗ್ಗುವುದು ಮಾನಸಿಕ ಸಮಸ್ಯೆಯ ಮಹಾಲಕ್ಷಣ.
ಮನಸ್ಸಿನ ಮತ್ತೊಂದು ಗುಣ ಲಕ್ಷಣವೆಂದರೆ ಅದರ ಚಟುವಟಿಕೆಯನ್ನು ಅದರಿಂದಲೇ ನಿಲ್ಲಿಸಬೇಕು. ಅದು ಮಂಕಾಗಿ ಮೂಲೆ ಹಿಡಿದಿದ್ದರೆ ಅದೇ ಪ್ರೇರೇಪಿಸಬೇಕು. ವಿಲಕ್ಷಣವಾದರೂ ನಿಜ. ಅಂದರೆ ಮನಸ್ಸಿನ ಚಟುವಟಿಕೆಗಳನ್ನು ಮನಸ್ಸೇ ನಿಯಂತ್ರಿಸಬೇಕು.

ಆಲೋಚನೆಗಳೇ ಅದರ ಚಟುವಟಿಕೆಗಳು. ಅದರ ಆ ಚಟುವಟಿಕೆಗಳೇ ಮನಸ್ಸು ಎಂಬ ಅಮೂರ್ತವನ್ನು ಮೂರ್ತೀಭವಿಸುವಂತೆ ಮಾಡುವುದು. ಅದೇ ಮನಸ್ಥಿತಿ ಎಂಬುದನ್ನು ಅಸ್ತಿತ್ವಕ್ಕೆ ತರುವುದು. ಅದೇ ಮನೋಭಾವ ಎಂಬುದನ್ನು ರೂಪಿಸುವುದು ಮತ್ತು ಅದೇ ಗೊಂದಲಗಳನ್ನು ಸೃಷ್ಟಿಸಿಕೊಂಡು ಸಮಸ್ಯೆಗಳನ್ನು ತಂದೊಡ್ಡಿಕೊಳ್ಳುವುದು.

ಮನಸ್ಸೆಂಬುದೇ ಬಯಸುವುದು, ಆಲೋಚಿಸುವುದು, ಸಂಕಲ್ಪಿಸುವುದು, ಆಶಿಸುವುದು, ಭಾವಿಸುವುದು, ವಿಚಾರಿಸುವುದು; ಇವುಗಳಿಂದಲೇ ಆ ಮನಸ್ಸು ಎಂಬುದೂ ಕೂಡಾ ರೂಪುಗೊಳ್ಳುವುದು. ಅದೇ ಸಾಮರ್ಥ್ಯವೂ ಆಗುವುದು, ಅದೇ ದೌರ್ಬಲ್ಯವೂ ಆಗುವುದು.ಯಾವುದು ಆಲೋಚಿಸುವುದೋ ಅದರ ಬಗ್ಗೆ ಆಲೋಚಿಸಬೇಕು. ಇದೇ ಮಜ.

ಮನಸ್ಸು ಮಿತ್ರ ಮತ್ತು ಶತ್ರು

  • ಉದ್ಧರೇದಾತ್ಮನಾತ್ಮಾನಂ ನಾತ್ಮನಮವಸಾಧಯೇತ್
    ಆತ್ಮೈವಹ್ಯಾತ್ಮನೋ ಬಂಧುರಾತ್ಮೈವ ರಿಪುರಾತ್ಮನಃ

ಭಗವತ್ಗೀತೆಯ 6:5 ಶ್ಲೋಕದಲ್ಲಿ ಆತ್ಮ ಎಂಬ ಪದವನ್ನು ಮನಶಕ್ತಿಯನ್ನಾಗಿಯೇ ಹೆಸರಿಸಿದ್ದಾರೆ. ಉದ್ಧಾರ ಅಂತ ಏನಾದರೂ ಆಗುವುದಿದ್ದರೆ ಅದು ನಿನ್ನ ಮನಸ್ಸಿನಿಂದಲೇ ಆಗುವುದು. ಅದರಿಂದಲೇ ಪತನಗೊಳ್ಳುವುದು ಬೇಡ. ಮನಸ್ಸೇ ಮನಸ್ಸಿಗೆ ಸ್ನೇಹಿತ. ಮನಸ್ಸೇ ಮನಸ್ಸಿಗೆ ಶತ್ರುವಾಗಬಹುದು. ಬಹಳ ಸ್ಪಷ್ಟವಾಗಿ ಮನಸ್ಸಿಂದಲೇ ಮನಸ್ಸು. ಮನಸ್ಸಿನ ಆಲೋಚನೆಗಳಿಂದಲೇ ಮನಸ್ಸಿನ ಚಟುವಟಿಕೆಗಳು.

ಆ ಆಲೋಚನೆಗಳು ರೂಪಿಸಿಕೊಂಡಿರುವ ತನ್ನತನಕ್ಕೆ ಪೂರಕವಾಗಿದ್ದರೆ ಮನಸ್ಸೆಂಬುದು ಗೆಳೆಯನಂತೆ. ಅದೇ ತನ್ನತನಕ್ಕೆ ಮಾರಕವಾಗಿದ್ದರೆ ಶತ್ರುವಿನಂತೆ. ತತ್ವಗಳು, ಸಿದ್ಧಾಂತಗಳು, ಆಧ್ಯಾತ್ಮದ ಚಿಂತನೆಗಳು ಮತ್ತು ಪ್ರಯೋಗಗಳು; ಎಲ್ಲವೂ ಈ ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲೇ ಸಾವಿರಾರು ವರ್ಷಗಳಿಂದ ತಮ್ಮ ಸಮಯ, ಶ್ರಮ, ಸಂಪನ್ಮೂಲ, ಪ್ರತಿಭೆಗಳನ್ನೆಲ್ಲಾ ಬಳಸಿವೆ.

ಆದರೂ ನಾವು ಇನ್ನೂ ಸಶಕ್ತವಾದ ಮನಸ್ಸನ್ನು ಹೊಂದದೇ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದೇವೆ. ಇದಕ್ಕೆ ಕಾರಣವೆಂದರೆ ಮನಸ್ಸೆಂಬ ಸೂಕ್ಷ್ಮ ಚೈತನ್ಯವನ್ನು ನಿಭಾಯಿಸುವ ಎಲ್ಲಾ ವಿಧಾನಗಳನ್ನು ಅಥವಾ ಮಾರ್ಗಗಳನ್ನು ಸಾಂಪ್ರದಾಯಿಕ ಆಚರಣೆಗಳನ್ನಾಗಿಸಿ ಮೇಲಿನ ಸ್ತರದಲ್ಲಿಯೇ ಉಳಿಸಿಬಿಟ್ಟಿದ್ದು. ಚಟುವಟಿಕೆಗಳ ಜೊತೆಜೊತೆಗೆ ಬಹಳ ಮುಖ್ಯವಾಗಿ ದೃಷ್ಟಿ ಮತ್ತು ಗಮನವೆರಡನ್ನೂ ಹೊಂದುವ ಬದಲು, ಬರಿದೇ ಗೊಡ್ಡು ಆಚರಣೆಗಳನ್ನಾಗಿಸಿದ್ದು. ಆಸೆ ಮತ್ತು ಭಯಗಳ ಮೂಲಧಾತುಗಳ ಮೇಲೆಯೇ ಆಧರಿಸಿರುವ ಲೌಕಿಕವಾದ ಹೊರದೃಷ್ಟಿಯನ್ನು ಒಳದೃಷ್ಟಿಯನ್ನಾಗಿಸಿಕೊಳ್ಳದೇ ಹೋದದ್ದು.

ಆಧ್ಯಾತ್ಮ, ಸಿದ್ಧಾಂತಗಳು, ಧಾರ್ಮಿಕ ಆಚರಣೆಗಳು, ದೈವಿಕ ಪರಿಕಲ್ಪನೆಗಳು; ಯಾವುದ್ಯಾವುದು ಮನುಷ್ಯನ ಉದ್ಧಾರಕ್ಕಾಗಿ ಮನಸ್ಸನ್ನು ತರಬೇತಿಗೊಳಿಸಲು ಬಂದವೋ ಅವೆಲ್ಲವೂ ಬಹುಪಾಲು ವಿಫಲಗೊಂಡವು. ಇಂದು ಇನ್ನೂ ಮಾನಸಿಕ ಸಮಸ್ಯೆಗಳು ಅಸ್ತಿತ್ವದಲ್ಲಿ ಬಹುದೊಡ್ಡ ಸ್ವರೂಪದಲ್ಲಿ ಇರಲು ಕಾರಣ ಅದನ್ನು ಅರಿಯುವ ಸೂಕ್ಷ್ಮತೆ ಮತ್ತು ಸಂವೇದನೆಯನ್ನು ಬೆಳೆಸಿಕೊಳ್ಳದೇ ಬರಿಯ ಆಚರಣೆಗಳ ಮಟ್ಟಕ್ಕೆ ನಿಂತದ್ದು.

ನಿಜಕ್ಕೂ ಇವುಗಳ ಯಶಸ್ಸಿಗೆ ಬೇಕಾಗಿದ್ದದ್ದು ಅರಿವು. ಸಂವೇದನಾಶೀಲ ಅರಿವು. ಸುಮ್ಮನೆ ಆಲೋಚಿಸಿ ನೋಡಿ. ನಮ್ಮ ಮನಸ್ಸೇ ಸಬ್ಜೆಕ್ಟ್. ಆ ಸಬ್ಜೆಕ್ಟಿಗೆ ತಾನೇ ಅಂದರೆ ಮನಸ್ಸೇ ಆಬ್ಜೆಕ್ಟ್. ಮಾಡುವುದು ಮತ್ತು ಮಾಡಿಸಿಕೊಳ್ಳುವುದು ಒಂದೇ ಆಗಿರುವುದು. ಸಾಲದಲ್ಲೆ ಮಾಡುವ ಕ್ರಿಯೆಯಾಗಿಯೂ ರೂಪಾಂತರ ಹೊಂದುತ್ತದೆ. ನಿಜಕ್ಕೂ ಮನಸ್ಸು ಬಹಳ ಕುತೂಹಲಕಾರಿಯಾದ, ಆಸಕ್ತಿಕರವಾಗಿ ಮತ್ತು ಸೃಜನಶೀಲ ಪ್ರಯೋಗಗಳಿಗೆ ಒಡ್ಡಿಕೊಳ್ಳಲಾಗುವಂತಹ ವಸ್ತು.

ಬೌದ್ಧರಲ್ಲಿಯೂ ಈ ಮನಸ್ಸಿನ ಸೂಕ್ಷ್ಮತೆಯ ಬಗ್ಗೆ ಬಹಳಷ್ಟು ಸಂವೇದನಾಶೀಲವಾದ ಮತ್ತು ಸೃಜನಶೀಲವಾದ ಪ್ರಯೋಗಗಳು ನಡೆದಿವೆ. ಅದರಲ್ಲೂ ಜೆನ್ ಮತ್ತು ಟಾವೋ ಹಾದಿಗಳು ಬಹಳ ಮುಕ್ತವಾಗಿಯೂ ಮತ್ತು ಆಳವಾಗಿಯೂ ಇವೆ.

ಗುರು ಲಾಟ್ಸೆ ಒಂದು ದಿನ ನಿದ್ರೆಯಿಂದ ಎದ್ದಾದ ಮೇಲೆ ಗಂಭೀರವಾಗಿ ಚಿಂತಿಸುತ್ತಿದ್ದನಂತೆ. ಶಿಷ್ಯರು ಕಾರಣ ಕೇಳಿದರೆ, “ನಾನು ನನ್ನ ಕನಸಿನಲ್ಲಿ ಚಿಟ್ಟೆಯಾಗಿ ಹಾರಾಡುತ್ತಿದ್ದೆ” ಎಂದನಂತೆ. ಸರಿ, ಈಗ ಅದಕ್ಕೇನೆಂದು ಕೇಳಿದರೆ, “ನಾನು ಚಿಟ್ಟೆಯಾಗಿ ಹಾರಾಡುವಂತೆ ಕನಸು ಕಂಡೆ. ಒಂದು ವೇಳೆ ಆ ಚಿಟ್ಟೆಯೇ ಲಾಟ್ಸೆಯಾಗಿರುವ ಕನಸನ್ನು ಕಾಣುತ್ತಿದೆಯೇ? ಯಾವುದು ನಿಜ?” ಎಂದನಂತೆ.

ಹೀಗೆ ಆಲೋಚಿಸುವಷ್ಟು ಸೂಕ್ಷ್ಮ ಸಂವೇದನೆಯ ದೃಷ್ಟಿಗಳು ಮನಸ್ಸನ್ನು ಅರಿಯುವಲ್ಲಿ, ಅದರ ಜಾಡನ್ನು ಅನುಸರಿಸುವಲ್ಲಿ, ಅದರ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ತಿಳಿಯುವಲ್ಲಿ ಆನಂದವನ್ನು ಪಡೆಯುತ್ತವೆ. ತನ್ನ ಮನಸ್ಸನ್ನು ತಾನು ಕಾಣುವುದೇ ಒಂದು ಮಜ.

ಮನ ಮೂಲ

ಮನಸ್ಸಿಗೆ ಸಂಬಂಧಿಸಿದಂತೆ ಸಮಾಜದಲ್ಲಿ ಕಾಣುವ ಮತ್ತು ಅಸ್ತಿತ್ವದಲ್ಲಿರುವ ಎಲ್ಲಾ ಕ್ಷೇತ್ರಗಳಿಂದಲೂ ಸಹಾಯ ಪಡೆದುಕೊಳ್ಳಬೇಕಾಗಿರುವ ಅಗತ್ಯತೆ ಇದೆ. ಸಾಹಿತ್ಯ, ವಿಜ್ಞಾನ, ಕಲೆ, ರಾಜಕೀಯ, ಕೈಗಾರಿಕೆ, ಧಾರ್ಮಿಕ, ಆಧ್ಯಾತ್ಮಿಕ, ದೈನಂದಿನ ಚಟುವಟಿಕೆಗಳು; ಹೀಗೆ ಮನುಷ್ಯರು ಭಾಗವಾಗಿರುವ ಅಥವಾ ಪಾಲುಗೊಳ್ಳುವ ಯಾವುದೇ ಕ್ಷೇತ್ರದ ಚಟುವಟಿಕೆಗಳು ಪೂರ್ಣಪ್ರಮಾಣದಲ್ಲಿ ಮನಸ್ಸಿನ ಚಟುವಟಿಕೆಗಳ ಮೇಲೆಯೇ ಆಧರಿಸಿರುತ್ತದೆ.

ಮನುಷ್ಯನೊಬ್ಬನ ವೈಯಕ್ತಿಕ ಸಾಧನೆ ಅಥವಾ ಸಾಮೂಹಿಕ ಸಾಧನೆಗಳೂ ಕೂಡ ಮನಸ್ಸಿನ ಸಂಕಲ್ಪ, ಸಾಮರ್ಥ್ಯ ಮತ್ತು ಮುಂದುವರಿಸಿಕೊಂಡು ಹೋಗುವ ಸಾಮರ್ಥ್ಯದ ಮೇಲೆಯೇ ಅವಲಂಬಿತವಾಗಿರುತ್ತದೆ. ಹಾಗೆಯೇ ಯುದ್ಧ, ನಾಗರಿಕ ದಂಗೆ, ಸರ್ಕಾರದ ವೈಫಲ್ಯ, ವ್ಯವಸ್ಥೆಯ ವೈಫಲ್ಯ, ವ್ಯಕ್ತಿಗಳ ಮತ್ತು ಸಮೂಹಗಳ ಅಪರಾಧಗಳು, ಗುಂಪು ಘರ್ಷಣೆ; ಇತ್ಯಾದಿ ಅವಘಡಗಳಿಗೆಲ್ಲಾ ಅನಿಯಂತ್ರಿತ ಮತ್ತು ಅನುಚಿತ ಸ್ಥಿತಿಗಳ ಮನಸ್ಸಿನ ಚಟುವಟಿಕೆಗಳೇ ಕಾರಣವಾಗಿರುತ್ತವೆ. ಹೀಗಿರುವಾಗ ಮನಶಾಸ್ತ್ರ ಅಥವಾ ಮನೋವಿಜ್ಞಾನವನ್ನು ಗಂಭೀರವಾಗಿ ಪರಿಗಣಿಸದಿರುವುದು ಅತ್ಯಂತ ನಿರಾಶಾದಾಯಕ ಸ್ಥಿತಿ.

ಅದಕ್ಕೆ ತೀರಾ ಘನ ಪಾಂಡಿತ್ಯವಲ್ಲ ಬೇಕಾಗಿರುವುದು. ಸಾಮಾನ್ಯ ತಿಳುವಳಿಕೆ. ಸದಾ ಜಾಗೃತಿಯಲ್ಲಿರುವ ಸಾದಾ ಅರಿವು. ಅದೇ ನಮ್ಮೆಲ್ಲಾ ಒಳಗಿನ ಮತ್ತು ಹೊರಗಿನ ಸಮಸ್ಯೆಗಳನ್ನು ಗುಡಿಸಿ ಹಾಕುವುದು.
ಮನಮೂಲದಿಂದ ಸ್ಥಿತಿಗತಿಗಳು
ಮನವೇ ಅವುಗಳ ಮುಂದಾಳು
ನಡೆಯುವ ಎತ್ತಿನ ಹೆಜ್ಜೆಯ ಹಿಂದೆ
ಗಾಡಿಯು ನಡೆಯಲೇ ಬೇಕಹುದಂತೆ (ದಮ್ಮಪದ)

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

Trending