ಅಂತರಂಗ
ಅರಿಮೆಯ ಅರಿವಿರಲಿ-50 : ಮನಸ್ಸೆಂದರೆ ಏನದು..?
- ಯೋಗೇಶ್ ಮಾಸ್ಟರ್
ದೇವರು, ಧರ್ಮ, ಪ್ರೇಮ, ರಾಷ್ಟ್ರಭಕ್ತಿ, ಸಂಬಂಧ, ಶೀಲ, ಜೀವನ, ಆತ್ಮ, ಪರಮಾತ್ಮ, ಆಧ್ಯಾತ್ಮವೇ ಮೊದಲಾದ ಅನೇಕ ವಿಷಯಗಳು ಅತ್ಯಂತ ಅಪವ್ಯಾಖ್ಯಾನಕ್ಕೊಳಗಾಗಿವೆ. ಅದರಂತೆಯೇ ಮನಸ್ಸೂ ಕೂಡಾ. ವ್ಯಕ್ತಿಯು ತನ್ನ ಬದುಕಿನಲ್ಲಿ ಬಹು ಜನರು ಉಪಯೋಗಿಸುವ ಮತ್ತು ಬಹಳ ಗೌರವ ಕೊಡುವ ಕೆಲವು ಪರಿಕಲ್ಪನೆಗಳನ್ನು ತಾನೂ ಬಳಸಲು ಇಷ್ಟಪಡುತ್ತಾನೆ.
ಹಾಗೆ ಅವುಗಳನ್ನು ಬಳಸುವುದರಿಂದ ತನ್ನ ಗೌರವವು ಹೆಚ್ಚುತ್ತದೆ ಎಂದು ಭಾವಿಸುತ್ತಾನೆ. ಹಾಗಾಗಿ ಅದನ್ನು ತನಗೆ ತಿಳಿದ ಮಟ್ಟಿಗೆ ಬಳಸಲು, ವಿವರಿಸಲು ಪ್ರಾರಂಭಿಸುತ್ತಾನೆ. ಅವುಗಳೆಲ್ಲವೂ ಅಮೂರ್ತ (ಅಬ್ಸ್ಟ್ರಾಕ್ಟ್) ಆಗಿರುವುದರಿಂದ, ಭೌತಿಕವಾಗಿ ಸಿಕ್ಕು ಪ್ರಯೋಗಾಲಯದಲ್ಲಿ ಪ್ರಯೋಗಗಳ ಮೂಲಕ ಪರೀಕ್ಷಿಸಲು ಆಗದೇ ಇರುವುದಾಗಿರುವುದರಿಂದ ತಮ್ಮ ತಮ್ಮ ಮೂಗಿನ ನೇರಕ್ಕೆ, ತಮ್ಮ ತಮ್ಮ ಬಯಕೆಗಳಿಗೆ ವಿವರಿಸಿಕೊಂಡು ಆ ಅಮೂರ್ತ ಮತ್ತು ಮೌಲಿಕ ಪದಗಳು ತಮ್ಮವಾಗಿವೆ ಎಂದು ತೃಪ್ತಿಪಡಲು ಸಾಧ್ಯ.
ಸರಿ, ಇವು ಅಪವ್ಯಾಖ್ಯಾನಗಳು ಎಂದು ತಿಳಿವುದು ಹೇಗೆ? ವ್ಯಕ್ತಿಗಳು ಪ್ರಸ್ತುತಪಡಿಸುವ ವಿವರಣೆಗಳನ್ನು ಅಥವಾ ಅರ್ಥಗಳನ್ನು ಛೇದಿಸಿಕೊಂಡು ಹೋದಂತೆಲ್ಲಾ ಒಂದು ಕ್ರಮವರಿದ, ಹದವರಿತ ಅರಿವಿಗೆ ನಿಲುಕುತ್ತಾ ಹೋಗುತ್ತವೆ. ಉತ್ಪ್ರೇಕ್ಷೆಯಿಂದ, ಏಕಮುಖ ಅಭಿಪ್ರಾಯದಿಂದಲೋ, ಪೂರ್ವಾಗ್ರಹ ಪೀಡಿತವಾಗಿಯೋ ಇರುವಂತಹ ಜಾಳುಜಾಳಾದ ವಿವರಣೆಗಳ ಹೊಟ್ಟು ಹಾರಿಹೋಗುತ್ತವೆ. ಆಗ ಆ ಪರಿಕಲ್ಪನೆಗಳ ಅರ್ಥ ಒಂದು ಹಂತಕ್ಕೆ ಸರಿಯಾಗಿ ಆಗುತ್ತವೆ.
ಮನಸ್ಸಾಗಲಿ, ದೇವರಾಗಲಿ; ಅವು ಅಮೂರ್ತವಾದರೂ, ಅದೆಷ್ಟೇ ಗೊಂದಲಗಳ ಗೂಡಾದರೂ ಕ್ರಮವರಿತ ಮತ್ತು ನಿಖರವಾದ ಗ್ರಹಿಸುವಿಕೆಯಿಂದ ಅರ್ಥ ಮಾಡಿಕೊಳ್ಳುವುದು ಕಷ್ಟವೇನಿಲ್ಲ. ವಾಸ್ತವವಾಗಿ ಯಾವುದ್ಯಾವುದು ಅತ್ಯಂತ ಜಟಿಲವೆಂದು, ಸಂಕೀರ್ಣವೆಂದು ಮತ್ತು ಅರ್ಥಕ್ಕೆ ನಿಲುಕದೆಂದು ಹೇಳುತ್ತಾರೋ ಅವೆಲ್ಲವೂ ಸರಳವೇ ಆಗಿರುತ್ತದೆ. ಆದರೆ ಅವು ಅಷ್ಟೊಂದು ಸರಳವೂ ಮತ್ತು ನೇರವೂ ಆಗಿವೆ ಎಂದರೆ ಅದನ್ನು ಸ್ವೀಕರಿಸುವ ಮತ್ತು ಗೌರವಿಸುವವರು ಲಘುವಾಗಿ ಅಥವಾ ಹಗುರವಾಗಿ ಕಂಡುಬಿಡಬಹುದು.
ಅದರ ಮೌಲ್ಯವನ್ನು ಗುರುತಿಸದೇ ಹೋಗಿಬಿಡಬಹುದು ಎಂಬ ಆತಂಕದಿಂದ ಅವುಗಳನ್ನು ಕ್ಲಿಷ್ಟಗೊಳಿಸುತ್ತಾರೆ. ಸಂಕೀರ್ಣವೆಂಬಂತೆ ಪ್ರದರ್ಶಿಸುತ್ತಾರೆ. ಈ ಅಮೂರ್ತವಾದ ಪರಿಕಲ್ಪನೆಗಳನ್ನು ವಿವರಿಸುವವರು ಗೊಂದಲಗಳನ್ನು ಸೃಷ್ಟಿಸುತ್ತಾರೆಯೇ ಹೊರತು, ಅವುಗಳ ರಚನೆಯಲ್ಲಿ, ಸ್ವಭಾವದಲ್ಲಿ, ಅಸ್ತಿತ್ವದಲ್ಲಿ ಯಾವ ಗೊಂದಲಗಳೂ ಇಲ್ಲ.
ಮನಸ್ಸಿನ ವಿಜ್ಞಾನ
ಇನ್ನು ಮನಸ್ಸಂತೂ ಬರಿಯ ಅಮೂರ್ತವಾಗಿದ್ದರೂ ಪರಿಕಲ್ಪನೆಯಲ್ಲ. ಅದು ವಿಚಾರವೂ ಹೌದು, ವಿಜ್ಞಾನವೂ ಹೌದು. ಹೆಸರಿಸಿರುವಂತಹ ಚೈತನ್ಯ. ವಿದ್ಯುತ್ಚಕ್ತಿಯಂತೆ ಅದು ವಿಜ್ಞಾನದ ಶಾಖೆಯಾಗಿದ್ದು ಅನೇಕ ರೀತಿಯ ಪ್ರಯೋಗಗಳಿಗೆ ಒಳಗಾಗಿದೆ. ದೇವರ ರೀತಿಯಲ್ಲಿ ತಾತ್ವಿಕವಾಗಿ ಮಾತ್ರ ವಿವರಿಸುವ ಅಗತ್ಯವಿಲ್ಲ. ದೇವರಿಗೂ ಮತ್ತು ಮನಸ್ಸಿಗೂ ಏನೂ ಸಂಬಂಧವಿಲ್ಲ. ಮನಸ್ಸು ನೇರವಾಗಿ ಮನುಷ್ಯನ ಚಿಂತನಾ ಸಾಮರ್ಥ್ಯ ಮತ್ತು ಆಲೋಚನಾ ಕ್ರಮಕ್ಕೆ ಸಂಬಂಧಿಸಿದ್ದು.
ದೇವರ ವರ ಅಥವಾ ಶಾಪ ಕೂಡಾ ಮನಸ್ಸಿನ ಗ್ರಹಿಕೆಯ ಸಾಮರ್ಥ್ಯ ಅಥವಾ ದೌರ್ಬಲ್ಯಕ್ಕೆ ಸಂಬಂಧಿಸಿದ್ದೇ ಹೊರತು ಇದು ದೇವರ ಶಕ್ತಿಗೆ ಸಂಬಂಧಿಸಿದ ಪ್ರಾಯೋಗಿಕ ವಿಜ್ಞಾನದ ಶಾಖೆಯಲ್ಲ. ಇದು ಸರಳ ಎಂಬುದೇನೋ ನಿಜ. ಆದರೆ ಬಹಳ ಸೂಕ್ಷ್ಮವೂ ಮತ್ತು ಸಂವೇದನಾಶೀಲವೂ ಆಗಿರುವುದರಿಂದ ನಿಭಾಯಿಸುವುದರಲ್ಲಿ ಜಟಿಲತೆ ತೋರುತ್ತದೆ. ಆದರೆ, ಇದನ್ನು ಅರಿಯುವುದರಿಂದ ಮತ್ತು ನಿಭಾಯಿಸುವ ತಂತ್ರಗಳನ್ನು ಗಮನಪೂರ್ವಕವಾಗಿ ಬಳಸಿದ್ದಲ್ಲಿ ಸರಾಗವೇ ಇರುತ್ತದೆ.
“ಮನಸ್ಸು, ಆಲೋಚಿಸಲಾಗುವ ಜೀವಿಗಳಲ್ಲಿನ ಚೈತನ್ಯ ಅಥವಾ ಸಾಮರ್ಥ್ಯವಿದು. ಈ ಸಾಮರ್ಥ್ಯದ ಅಥವಾ ಚೈತನ್ಯದ ಪ್ರಧಾನ ಕೆಲಸಗಳೆಂದರೆ ಭಾವಿಸುತ್ತದೆ, ಆಲೋಚಿಸುತ್ತದೆ ಮತ್ತು ಸಂಕಲ್ಪಿಸುತ್ತದೆ.” ಇಷ್ಟೇ ಎಂದು ಹೇಳಿಬಿಟ್ಟರೆ ಬಹಳ ಸಣ್ಣ ವ್ಯಾಖ್ಯಾನವೇನೋ ನಿಜ. ಆದರೆ ಮನಸ್ಸಿನ ಅಸ್ತಿತ್ವ ಮತ್ತು ಅದರ ಚಟುವಟಿಕೆಗಳ ರೂಪುಗೊಳ್ಳುವುದು ಪ್ರಕ್ರಿಯೆಯ ಮೂಲಕ. ಅದನ್ನು ಆಧರಿಸಿಕೊಂಡು ಬೇಕಾದಂತೆ ಟಿಪ್ಪಣಿಗಳನ್ನು ಮಾಡಬಹುದು, ಪ್ರಮೇಯಗಳನ್ನು ಮಾಡಬಹುದು ಹಾಗೂ ವಿಚಾರ ಸರಣಿಗಳನ್ನು ವಿಸ್ತಾರಗೊಳಿಸುತ್ತಾ ಹೋಗಬಹುದು.
ಮನಸ್ಸೆಂಬ ಅದು
ಮನಸ್ಸನ್ನು ಸಿಕ್ಕಾಪಟ್ಟೆ ಶಾಸ್ತ್ರೀಯವಾಗಿ ನಾವು ಈಗ ಅಧ್ಯಯನ ಮಾಡಲು ಹೋಗುವುದು ಬೇಡ. ನಾವು ಮಹಾಪ್ರಭಂದವನ್ನು ರಚಿಸಬೇಕಿಲ್ಲ. ಮನಸ್ಸೆಂಬ ‘ಅದು’ ನಮ್ಮಲ್ಲಿ ಇರುವುದರಿಂದ ಅದರ ಸಾಮರ್ಥ್ಯ ಮತ್ತು ದೌರ್ಬಲ್ಯಗಳ ಬಗ್ಗೆ ತಿಳಿದರೆ ಎರಡು ಹೆಜ್ಜೆ ಮುಂದೆ ಇಡಬೇಕಾದ ಜಾಗದಲ್ಲಿ ಮುನ್ನಡೆಯಬಹುದು, ಹಿಂದಕ್ಕೆ ಸರಿಯಬೇಕಾದ ಕಡೆ ಸರಿಯಬಹುದು.
ಇಷ್ಟಕ್ಕಷ್ಟೇ ನಾವೀಗ ಗಮನ ಕೊಡಬೇಕಾಗಿರುವುದು. ಸಮಸ್ಯೆ ಏನೆಂದರೆ ಮುನ್ನಡೆಯ ಬೇಕಾದ ಕಡೆ ಹಿಂದೆ ಸರಿಯುವುದು, ಹಿಂದೆ ಸರಿಯಬೇಕಾದರೆ ಕಡೆ ಮುನ್ನುಗ್ಗುವುದು ಮಾನಸಿಕ ಸಮಸ್ಯೆಯ ಮಹಾಲಕ್ಷಣ.
ಮನಸ್ಸಿನ ಮತ್ತೊಂದು ಗುಣ ಲಕ್ಷಣವೆಂದರೆ ಅದರ ಚಟುವಟಿಕೆಯನ್ನು ಅದರಿಂದಲೇ ನಿಲ್ಲಿಸಬೇಕು. ಅದು ಮಂಕಾಗಿ ಮೂಲೆ ಹಿಡಿದಿದ್ದರೆ ಅದೇ ಪ್ರೇರೇಪಿಸಬೇಕು. ವಿಲಕ್ಷಣವಾದರೂ ನಿಜ. ಅಂದರೆ ಮನಸ್ಸಿನ ಚಟುವಟಿಕೆಗಳನ್ನು ಮನಸ್ಸೇ ನಿಯಂತ್ರಿಸಬೇಕು.
ಆಲೋಚನೆಗಳೇ ಅದರ ಚಟುವಟಿಕೆಗಳು. ಅದರ ಆ ಚಟುವಟಿಕೆಗಳೇ ಮನಸ್ಸು ಎಂಬ ಅಮೂರ್ತವನ್ನು ಮೂರ್ತೀಭವಿಸುವಂತೆ ಮಾಡುವುದು. ಅದೇ ಮನಸ್ಥಿತಿ ಎಂಬುದನ್ನು ಅಸ್ತಿತ್ವಕ್ಕೆ ತರುವುದು. ಅದೇ ಮನೋಭಾವ ಎಂಬುದನ್ನು ರೂಪಿಸುವುದು ಮತ್ತು ಅದೇ ಗೊಂದಲಗಳನ್ನು ಸೃಷ್ಟಿಸಿಕೊಂಡು ಸಮಸ್ಯೆಗಳನ್ನು ತಂದೊಡ್ಡಿಕೊಳ್ಳುವುದು.
ಮನಸ್ಸೆಂಬುದೇ ಬಯಸುವುದು, ಆಲೋಚಿಸುವುದು, ಸಂಕಲ್ಪಿಸುವುದು, ಆಶಿಸುವುದು, ಭಾವಿಸುವುದು, ವಿಚಾರಿಸುವುದು; ಇವುಗಳಿಂದಲೇ ಆ ಮನಸ್ಸು ಎಂಬುದೂ ಕೂಡಾ ರೂಪುಗೊಳ್ಳುವುದು. ಅದೇ ಸಾಮರ್ಥ್ಯವೂ ಆಗುವುದು, ಅದೇ ದೌರ್ಬಲ್ಯವೂ ಆಗುವುದು.ಯಾವುದು ಆಲೋಚಿಸುವುದೋ ಅದರ ಬಗ್ಗೆ ಆಲೋಚಿಸಬೇಕು. ಇದೇ ಮಜ.
ಮನಸ್ಸು ಮಿತ್ರ ಮತ್ತು ಶತ್ರು
- ಉದ್ಧರೇದಾತ್ಮನಾತ್ಮಾನಂ ನಾತ್ಮನಮವಸಾಧಯೇತ್
ಆತ್ಮೈವಹ್ಯಾತ್ಮನೋ ಬಂಧುರಾತ್ಮೈವ ರಿಪುರಾತ್ಮನಃ
ಭಗವತ್ಗೀತೆಯ 6:5 ಶ್ಲೋಕದಲ್ಲಿ ಆತ್ಮ ಎಂಬ ಪದವನ್ನು ಮನಶಕ್ತಿಯನ್ನಾಗಿಯೇ ಹೆಸರಿಸಿದ್ದಾರೆ. ಉದ್ಧಾರ ಅಂತ ಏನಾದರೂ ಆಗುವುದಿದ್ದರೆ ಅದು ನಿನ್ನ ಮನಸ್ಸಿನಿಂದಲೇ ಆಗುವುದು. ಅದರಿಂದಲೇ ಪತನಗೊಳ್ಳುವುದು ಬೇಡ. ಮನಸ್ಸೇ ಮನಸ್ಸಿಗೆ ಸ್ನೇಹಿತ. ಮನಸ್ಸೇ ಮನಸ್ಸಿಗೆ ಶತ್ರುವಾಗಬಹುದು. ಬಹಳ ಸ್ಪಷ್ಟವಾಗಿ ಮನಸ್ಸಿಂದಲೇ ಮನಸ್ಸು. ಮನಸ್ಸಿನ ಆಲೋಚನೆಗಳಿಂದಲೇ ಮನಸ್ಸಿನ ಚಟುವಟಿಕೆಗಳು.
ಆ ಆಲೋಚನೆಗಳು ರೂಪಿಸಿಕೊಂಡಿರುವ ತನ್ನತನಕ್ಕೆ ಪೂರಕವಾಗಿದ್ದರೆ ಮನಸ್ಸೆಂಬುದು ಗೆಳೆಯನಂತೆ. ಅದೇ ತನ್ನತನಕ್ಕೆ ಮಾರಕವಾಗಿದ್ದರೆ ಶತ್ರುವಿನಂತೆ. ತತ್ವಗಳು, ಸಿದ್ಧಾಂತಗಳು, ಆಧ್ಯಾತ್ಮದ ಚಿಂತನೆಗಳು ಮತ್ತು ಪ್ರಯೋಗಗಳು; ಎಲ್ಲವೂ ಈ ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲೇ ಸಾವಿರಾರು ವರ್ಷಗಳಿಂದ ತಮ್ಮ ಸಮಯ, ಶ್ರಮ, ಸಂಪನ್ಮೂಲ, ಪ್ರತಿಭೆಗಳನ್ನೆಲ್ಲಾ ಬಳಸಿವೆ.
ಆದರೂ ನಾವು ಇನ್ನೂ ಸಶಕ್ತವಾದ ಮನಸ್ಸನ್ನು ಹೊಂದದೇ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದೇವೆ. ಇದಕ್ಕೆ ಕಾರಣವೆಂದರೆ ಮನಸ್ಸೆಂಬ ಸೂಕ್ಷ್ಮ ಚೈತನ್ಯವನ್ನು ನಿಭಾಯಿಸುವ ಎಲ್ಲಾ ವಿಧಾನಗಳನ್ನು ಅಥವಾ ಮಾರ್ಗಗಳನ್ನು ಸಾಂಪ್ರದಾಯಿಕ ಆಚರಣೆಗಳನ್ನಾಗಿಸಿ ಮೇಲಿನ ಸ್ತರದಲ್ಲಿಯೇ ಉಳಿಸಿಬಿಟ್ಟಿದ್ದು. ಚಟುವಟಿಕೆಗಳ ಜೊತೆಜೊತೆಗೆ ಬಹಳ ಮುಖ್ಯವಾಗಿ ದೃಷ್ಟಿ ಮತ್ತು ಗಮನವೆರಡನ್ನೂ ಹೊಂದುವ ಬದಲು, ಬರಿದೇ ಗೊಡ್ಡು ಆಚರಣೆಗಳನ್ನಾಗಿಸಿದ್ದು. ಆಸೆ ಮತ್ತು ಭಯಗಳ ಮೂಲಧಾತುಗಳ ಮೇಲೆಯೇ ಆಧರಿಸಿರುವ ಲೌಕಿಕವಾದ ಹೊರದೃಷ್ಟಿಯನ್ನು ಒಳದೃಷ್ಟಿಯನ್ನಾಗಿಸಿಕೊಳ್ಳದೇ ಹೋದದ್ದು.
ಆಧ್ಯಾತ್ಮ, ಸಿದ್ಧಾಂತಗಳು, ಧಾರ್ಮಿಕ ಆಚರಣೆಗಳು, ದೈವಿಕ ಪರಿಕಲ್ಪನೆಗಳು; ಯಾವುದ್ಯಾವುದು ಮನುಷ್ಯನ ಉದ್ಧಾರಕ್ಕಾಗಿ ಮನಸ್ಸನ್ನು ತರಬೇತಿಗೊಳಿಸಲು ಬಂದವೋ ಅವೆಲ್ಲವೂ ಬಹುಪಾಲು ವಿಫಲಗೊಂಡವು. ಇಂದು ಇನ್ನೂ ಮಾನಸಿಕ ಸಮಸ್ಯೆಗಳು ಅಸ್ತಿತ್ವದಲ್ಲಿ ಬಹುದೊಡ್ಡ ಸ್ವರೂಪದಲ್ಲಿ ಇರಲು ಕಾರಣ ಅದನ್ನು ಅರಿಯುವ ಸೂಕ್ಷ್ಮತೆ ಮತ್ತು ಸಂವೇದನೆಯನ್ನು ಬೆಳೆಸಿಕೊಳ್ಳದೇ ಬರಿಯ ಆಚರಣೆಗಳ ಮಟ್ಟಕ್ಕೆ ನಿಂತದ್ದು.
ನಿಜಕ್ಕೂ ಇವುಗಳ ಯಶಸ್ಸಿಗೆ ಬೇಕಾಗಿದ್ದದ್ದು ಅರಿವು. ಸಂವೇದನಾಶೀಲ ಅರಿವು. ಸುಮ್ಮನೆ ಆಲೋಚಿಸಿ ನೋಡಿ. ನಮ್ಮ ಮನಸ್ಸೇ ಸಬ್ಜೆಕ್ಟ್. ಆ ಸಬ್ಜೆಕ್ಟಿಗೆ ತಾನೇ ಅಂದರೆ ಮನಸ್ಸೇ ಆಬ್ಜೆಕ್ಟ್. ಮಾಡುವುದು ಮತ್ತು ಮಾಡಿಸಿಕೊಳ್ಳುವುದು ಒಂದೇ ಆಗಿರುವುದು. ಸಾಲದಲ್ಲೆ ಮಾಡುವ ಕ್ರಿಯೆಯಾಗಿಯೂ ರೂಪಾಂತರ ಹೊಂದುತ್ತದೆ. ನಿಜಕ್ಕೂ ಮನಸ್ಸು ಬಹಳ ಕುತೂಹಲಕಾರಿಯಾದ, ಆಸಕ್ತಿಕರವಾಗಿ ಮತ್ತು ಸೃಜನಶೀಲ ಪ್ರಯೋಗಗಳಿಗೆ ಒಡ್ಡಿಕೊಳ್ಳಲಾಗುವಂತಹ ವಸ್ತು.
ಬೌದ್ಧರಲ್ಲಿಯೂ ಈ ಮನಸ್ಸಿನ ಸೂಕ್ಷ್ಮತೆಯ ಬಗ್ಗೆ ಬಹಳಷ್ಟು ಸಂವೇದನಾಶೀಲವಾದ ಮತ್ತು ಸೃಜನಶೀಲವಾದ ಪ್ರಯೋಗಗಳು ನಡೆದಿವೆ. ಅದರಲ್ಲೂ ಜೆನ್ ಮತ್ತು ಟಾವೋ ಹಾದಿಗಳು ಬಹಳ ಮುಕ್ತವಾಗಿಯೂ ಮತ್ತು ಆಳವಾಗಿಯೂ ಇವೆ.
ಗುರು ಲಾಟ್ಸೆ ಒಂದು ದಿನ ನಿದ್ರೆಯಿಂದ ಎದ್ದಾದ ಮೇಲೆ ಗಂಭೀರವಾಗಿ ಚಿಂತಿಸುತ್ತಿದ್ದನಂತೆ. ಶಿಷ್ಯರು ಕಾರಣ ಕೇಳಿದರೆ, “ನಾನು ನನ್ನ ಕನಸಿನಲ್ಲಿ ಚಿಟ್ಟೆಯಾಗಿ ಹಾರಾಡುತ್ತಿದ್ದೆ” ಎಂದನಂತೆ. ಸರಿ, ಈಗ ಅದಕ್ಕೇನೆಂದು ಕೇಳಿದರೆ, “ನಾನು ಚಿಟ್ಟೆಯಾಗಿ ಹಾರಾಡುವಂತೆ ಕನಸು ಕಂಡೆ. ಒಂದು ವೇಳೆ ಆ ಚಿಟ್ಟೆಯೇ ಲಾಟ್ಸೆಯಾಗಿರುವ ಕನಸನ್ನು ಕಾಣುತ್ತಿದೆಯೇ? ಯಾವುದು ನಿಜ?” ಎಂದನಂತೆ.
ಹೀಗೆ ಆಲೋಚಿಸುವಷ್ಟು ಸೂಕ್ಷ್ಮ ಸಂವೇದನೆಯ ದೃಷ್ಟಿಗಳು ಮನಸ್ಸನ್ನು ಅರಿಯುವಲ್ಲಿ, ಅದರ ಜಾಡನ್ನು ಅನುಸರಿಸುವಲ್ಲಿ, ಅದರ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ತಿಳಿಯುವಲ್ಲಿ ಆನಂದವನ್ನು ಪಡೆಯುತ್ತವೆ. ತನ್ನ ಮನಸ್ಸನ್ನು ತಾನು ಕಾಣುವುದೇ ಒಂದು ಮಜ.
ಮನ ಮೂಲ
ಮನಸ್ಸಿಗೆ ಸಂಬಂಧಿಸಿದಂತೆ ಸಮಾಜದಲ್ಲಿ ಕಾಣುವ ಮತ್ತು ಅಸ್ತಿತ್ವದಲ್ಲಿರುವ ಎಲ್ಲಾ ಕ್ಷೇತ್ರಗಳಿಂದಲೂ ಸಹಾಯ ಪಡೆದುಕೊಳ್ಳಬೇಕಾಗಿರುವ ಅಗತ್ಯತೆ ಇದೆ. ಸಾಹಿತ್ಯ, ವಿಜ್ಞಾನ, ಕಲೆ, ರಾಜಕೀಯ, ಕೈಗಾರಿಕೆ, ಧಾರ್ಮಿಕ, ಆಧ್ಯಾತ್ಮಿಕ, ದೈನಂದಿನ ಚಟುವಟಿಕೆಗಳು; ಹೀಗೆ ಮನುಷ್ಯರು ಭಾಗವಾಗಿರುವ ಅಥವಾ ಪಾಲುಗೊಳ್ಳುವ ಯಾವುದೇ ಕ್ಷೇತ್ರದ ಚಟುವಟಿಕೆಗಳು ಪೂರ್ಣಪ್ರಮಾಣದಲ್ಲಿ ಮನಸ್ಸಿನ ಚಟುವಟಿಕೆಗಳ ಮೇಲೆಯೇ ಆಧರಿಸಿರುತ್ತದೆ.
ಮನುಷ್ಯನೊಬ್ಬನ ವೈಯಕ್ತಿಕ ಸಾಧನೆ ಅಥವಾ ಸಾಮೂಹಿಕ ಸಾಧನೆಗಳೂ ಕೂಡ ಮನಸ್ಸಿನ ಸಂಕಲ್ಪ, ಸಾಮರ್ಥ್ಯ ಮತ್ತು ಮುಂದುವರಿಸಿಕೊಂಡು ಹೋಗುವ ಸಾಮರ್ಥ್ಯದ ಮೇಲೆಯೇ ಅವಲಂಬಿತವಾಗಿರುತ್ತದೆ. ಹಾಗೆಯೇ ಯುದ್ಧ, ನಾಗರಿಕ ದಂಗೆ, ಸರ್ಕಾರದ ವೈಫಲ್ಯ, ವ್ಯವಸ್ಥೆಯ ವೈಫಲ್ಯ, ವ್ಯಕ್ತಿಗಳ ಮತ್ತು ಸಮೂಹಗಳ ಅಪರಾಧಗಳು, ಗುಂಪು ಘರ್ಷಣೆ; ಇತ್ಯಾದಿ ಅವಘಡಗಳಿಗೆಲ್ಲಾ ಅನಿಯಂತ್ರಿತ ಮತ್ತು ಅನುಚಿತ ಸ್ಥಿತಿಗಳ ಮನಸ್ಸಿನ ಚಟುವಟಿಕೆಗಳೇ ಕಾರಣವಾಗಿರುತ್ತವೆ. ಹೀಗಿರುವಾಗ ಮನಶಾಸ್ತ್ರ ಅಥವಾ ಮನೋವಿಜ್ಞಾನವನ್ನು ಗಂಭೀರವಾಗಿ ಪರಿಗಣಿಸದಿರುವುದು ಅತ್ಯಂತ ನಿರಾಶಾದಾಯಕ ಸ್ಥಿತಿ.
ಅದಕ್ಕೆ ತೀರಾ ಘನ ಪಾಂಡಿತ್ಯವಲ್ಲ ಬೇಕಾಗಿರುವುದು. ಸಾಮಾನ್ಯ ತಿಳುವಳಿಕೆ. ಸದಾ ಜಾಗೃತಿಯಲ್ಲಿರುವ ಸಾದಾ ಅರಿವು. ಅದೇ ನಮ್ಮೆಲ್ಲಾ ಒಳಗಿನ ಮತ್ತು ಹೊರಗಿನ ಸಮಸ್ಯೆಗಳನ್ನು ಗುಡಿಸಿ ಹಾಕುವುದು.
ಮನಮೂಲದಿಂದ ಸ್ಥಿತಿಗತಿಗಳು
ಮನವೇ ಅವುಗಳ ಮುಂದಾಳು
ನಡೆಯುವ ಎತ್ತಿನ ಹೆಜ್ಜೆಯ ಹಿಂದೆ
ಗಾಡಿಯು ನಡೆಯಲೇ ಬೇಕಹುದಂತೆ (ದಮ್ಮಪದ)
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ದೇವರ ಹೂವು
~ ಡಾ. ಸಿ.ಬಿ.ಐನಳ್ಳಿ
ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ
ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ
ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ
ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ
ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ7 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ6 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ


