ನೆಲದನಿ

ಲೈಂಗಿಕ ಶಿಲ್ಪಗಳ ಹಿಂದಿನ ತತ್ವ ಏನು..?

Published

on

ಶಿವಮೊಗ್ಗ ಜಿಲ್ಲೆಯ ಉಳವಿಯ (ನಮ್ಮೂರಿನಿಂದ 25 ಕಿಲೋಮೀಟರ್ ದೂರದಲ್ಲಿರುವ) ಕೆರೆ ಏರಿಯೊಂದರ ಮೇಲೆ ಬೈಕಿನಲ್ಲಿ ಹೋಗುತ್ತಿರುವಾಗ ನನ್ನನ್ನು ಗಕ್ಕನೆ ನಿಲ್ಲಿಸುವಂತೆ ಮಾಡಿದ್ದು ಈ ಕಲ್ಲಿನ ಕೆತ್ತನೆಗಳು. ಇದನ್ನು ನೋಡಿ ಕೆಲವರು ನಾಚಿಕೆ ಪಟ್ಡುಕೊಳ್ಳಬಹುದು, ಲೇವಡಿ ಮಾಡಬಹುದು ಅಥವಾ ಇಂತಹ erotic ಲೈಂಗಿಕ ಶಿಲ್ಪಗಳ ಅರ್ಥ ಏನು ಎಂದೂ ತಲೆ ಕೆಡಿಸಿಕೊಳ್ಳಬಹುದು. ಗಂಭೀರವಾಗಿ ಅವಲೋಕಿಸಿದರೆ ಈ ದೇಶದ ಮೂಲ ಸಂಸ್ಕೃತಿ ಮತ್ತು ಮೂಲ ಧರ್ಮ ಇವುಗಳಲ್ಲಿದೆ.

ಪುರುಷ ತನ್ನ ಲಿಂಗವನ್ನು ಹಿಡಿದುಕೊಂಡಿರುವ ಮತ್ತು ಮಹಿಳೆ ಅದನ್ನು ಹೊತ್ತುಕೊಂಡಿರುವ ಒಂದು ಶಿಲ್ಪ, ಹಾಗೂ ಮಹಿಳೆ ತನ್ನ ಯೋನಿಯನ್ನು ಹಿಡಿದುಕೊಂಡಿರುವ ಮತ್ತೊಂದು ಶಿಲ್ಪ ಸೂಚಿಸುವುದು ದ್ರಾವಿಡ ಮತ್ತು ದ್ರಾವಿಡ ಪೂರ್ವ ಸಮುದಾಯಗಳ ಫಲವಂತಿಕೆಯ ಆಚರಣೆ (fertility cult) ಯನ್ನು ಜಗತ್ತಿನಲ್ಲಿ ಇಂದು ಇರುವ ವೈದಿಕ, ಇಸ್ಲಾಂ, ಪಾರ್ಸಿ, ಕ್ರೈಸ್ತ ಮೊದಲಾದ ಯಾವುದೇ ಮತಧರ್ಮ ಹುಟ್ಟುವುದಕ್ಕೆ ಮೊದಲು ವ್ಯಾಪಕವಾಗಿ ಇದ್ದ ಆಚರಣೆ ಇದು. ಭಾರತದ ಮಟ್ಟಿಗೆ ಆರ್ಯರು ಇಲ್ಲಿಗೆ ಕಾಲಿಡುವ ಮುನ್ನ ದ್ರಾವಿಡ ಸಮುದಾಯಗಳು ಎಲ್ಲೆಡೆ ಪಾಲಿಸುತ್ತಿದ್ದ “ಧರ್ಮ” ಇದು. ಇದೇ ಆಚರಣೆಗಳು ಮುಂದೆ ವ್ಯವಸ್ಥಿತ ರೂಪ ಪಡೆದು ತಾಂತ್ರಿಕ ಪಂಥದ ಏಳಿಗೆಗೆ ಅನುವು ಮಾಡಿಕೊಟ್ಟವು ಎಂದು ಮಾನವಶಾಸ್ತ್ರಜ್ಞರು, ಸಂಸ್ಕೃತಿ ಚಿಂತಕರು ಶೋಧಿಸಿದ್ದಾರೆ.

ಕರ್ನಾಟಕದಲ್ಲಿಯೇ ಅನೇಕ ಕಡೆಗಳಲ್ಲಿ ಲಜ್ಜಾ ಗೌರಿಯ ವಿಗ್ರಹಗಳು ದೊರೆತಿವೆ. ಲಜ್ಜಾಗೌರಿಯ ಮುಖವು ಅರಳಿದ ಕಮಲವನ್ನು ಹೊಂದಿದ್ದು ಯೋನಿ ಮೇಲ್ಮುಖವಾಗಿರುತ್ತದೆ. ಇದೂ ಸಹ ಫಲವಂತಿಕೆ ಪಂಥದ ಪೂಜಾ ಸಾಧನವೇ ಆಗಿದೆ. ಈ ಕೆತ್ತನೆಗಳಲ್ಲಿನ ಮೂಲ ತಿಳುವಳಿಕೆಯ ಸಾರ ಇಷ್ಟೇ. ಸಕಲ ಜೀವ ಜಂತುಗಳ ಸಂತಾನೋತ್ಪತ್ತಿಗೆ ಕಾರಣವಾಗುವ ಸ್ತ್ರೀ ಪುರುಷ ಜನನಾಂಗಗಳೇ ಪೂಜನೀಯವಾದವು. ಮುಂದೆ ಶೈವ ಪಂಥವು ಸ್ವೀಕರಿಸಿದ ಲಿಂಗವೂ ಸ್ತ್ರೀ-ಪುರುಷ ಸಮಾಗಮ ತತ್ವವನ್ನೇ ಸಾಂಕೇತಿಕಗೊಳಿಸಿಕೊಂಡದ್ದು. ಈ ಬಗ್ಗೆ ಸಂಸ್ಕೃತಿ ಚಿಂತಕರಾದ ಡಾ.ಲಕ್ಷ್ಮೀಪತಿ ಕೋಲಾರ ಅವರು, ಲಾಗಾಯ್ತಿನ ಲಿಂಗ ಪುರಾಣ ಲೇಖನದಲ್ಲಿ”ವೇದದಲ್ಲೆಲ್ಲೂ ‘ಶಿವ’ ಎಂಬ ಪದದ ಪ್ರಯೋಗವೂ ಆಗಿಲ್ಲ ಎಂಬುದನ್ನು ಶಂ.ಭಾ. ಜೋಶಿಯವರು ತಮ್ಮ ಶಿವ ರಹಸ್ಯ ದಲ್ಲಿ ದಾಖಲಿಸಿದ್ದಾರೆ. ವೈದಿಕ ಸಾಹಿತ್ಯದಲ್ಲಿ ಮೊದಲು ಶಿವ ಎಂಬ ನಾಮದ ಪ್ರಯೋಗವಾಗಿರುವುದು ಶ್ವೇತಾಶ್ವತೋಪನಿಷತ್ತಿನಲ್ಲೇ! ದ್ರಾವಿಡ ಭಾಷಾ ವಿಜ್ಞಾನಿಗಳು ಈಗಾಗಲೇ ದೃಢಪಡಿಸಿರುವಂತೆ ‘ಶಿವ’ ಮತ್ತು ‘ಲಿಂಗ’ ಶಬ್ದಗಳು ಸಂಸ್ಕೃತ ಭಾಷೆಯದ್ದಲ್ಲವೇ ಅಲ್ಲ…..” ಎನ್ನುತ್ತಾರೆ.

ಅಲ್ಲ ದ್ಚೈತ ಹಾಗೂ ಅದ್ವೈತ ಚಿಂತನೆಗಳ ಮೂಲವೂ ಸಹ ಈ ಸ್ತ್ರೀ ಪುರುಷ ಸಂಯೋಗದ ಫಲವಂತಿಕೆ ಪಂಥದಲ್ಲಿಯೇ ಇದ್ದವು ಎನ್ನಲಾಗುತ್ತದೆ. ಹೆಣ್ಣು ಗಂಡಿನ ಮಿಲನದ ಸರಳ ಸುಂದರ ಅದ್ವೈತ ತತ್ವವನ್ನು ಮುಂದೆ ಎಂಟನೇ ಶತಮಾನದಲ್ಲಿ ಜನವಿರೊಧಿ ಸಿದ್ಧಾಂತವಾಗಿಸಲಾಯಿತು ಎನ್ನಲಾಗುತ್ತದೆ. ಈ ಬಗ್ಗೆ ಲಕ್ಷ್ಮೀಪತಿ ಅವರು ಅದೇ ಲೇಖನದಲ್ಲಿ ಹೀಗ ಬರೆಯುತ್ತಾರೆ. “ಹೆಣ್ಣು- ಗಂಡುಗಳು ದ್ವೈತವಾಗಿದ್ದು, ಅವರ ಸಮಾಗಮದಿಂ ಸೃಷ್ಟಿಕ್ರಿಯೆ ನಡೆದು, ಅಲ್ಲಿ ಹುಟ್ಟುವ ಹೊಸ ಜೀವ ಅವರಿಂದ ಬೇರೆಯಲ್ಲವಾಗಿ ಅದು ಅದ್ವೈತ. ಇದು ಜೇನು ಕುರುಬರ ಅಣಪೆ ನೂರಾಳೊಡೆಯನ ಪರಿಕಲ್ಪನೆಯ ಹಿಂದಿರುವ ಆದಿಮವಾದ, ಸರಳ ಅದ್ವೈತ ತತ್ವ. ಜೇನು ಕುರುಬರಲ್ಲಿನ ಈ ಸೃಷ್ಟಿ ಕ್ರಿಯೆಯನ್ನಾಧರಿಸಿದ ಅದ್ವೈತ ತತ್ವವನ್ನೇ ವೈದಿಕ ಪೂರ್ವದ ಅಥವ ದ್ರಾವಿಡರ ತಂತ್ರ ಪಂಥವು ತಂತ್ರಾಕೃತಿಗಳ ಮೂಲಕವೇ ಹಿಡಿದಿಟ್ಟಿತು.

ಉದಾಹರಣೆಗೆ ಸರಳವಾಗಿ ಹೀಗೆ ವಿವರಿಸಬಹುದು

ಮೇಲ್ಮುಖವಾದ ತ್ರಿಕೋನವು ಪುರುಷ ಲಿಂಗದ ಸಂಕೇತವಾದರೆ ಕೆಳಮುಖವಾದ ತ್ರಿಕೋನವು ಸ್ತ್ರೀಲಿಂಗದ ಸಂಕೇತವೆಂದುಕೊಳ್ಳೋಣ. ಹೆಣ್ಣು ಗಂಡುಗಳು ಪ್ರತ್ಯೇಕವಾಗಿರುವವರೆಗೂ ಈ ತ್ರಿಕೋನಗಳು ಬೇರೆ ಬೇರೆಯೇ ಆಗಿ ದ್ವೈತವನ್ನು ಹೇಳುತ್ತವೆ. ಹೆಣ್ಣು- ಗಂಡುಗಳು ಸಮಾಗಮಗೊಂಡಾಗ ಎರಡು ತ್ರಿಕೋನಗಳೂ ಹೀಗ ಬೆಳೆದುಕೊಂಡು ಆರು ತ್ರಿಕೋನಗಳನ್ನು ಸೃಷ್ಟಿಸುತ್ತವೆ. ಈ ಹೊಸದಾದ ಆರು ತ್ರಿಕೋನಗಳೂ ಮೂಲದ ಹೆಣ್ಣು ಗಂಡುಗಳ ಎರಡು ತ್ರಿಕೋನಗಳಿಂದ ಹೊರತಾದುದಲ್ಲವಾದ್ದರಿಂದ ಅದು ಅದ್ವೈತವನ್ನು ಸಾರುತ್ತದೆ. ಮನುಷ್ಯ ಮೂರು ಸಂದರ್ಭಗಳಲ್ಲಿ ತುರಿಯಾವಸ್ಥೆಯನ್ನು (orgasm) ತಲುಪುತ್ತಾನೆಂದು ಶೈವ ತತ್ಬ ಹೇಳುತ್ತದೆ. ಅದು ಹೆಣ್ಣು ಗಂಡಿನ ಸಮಾಗಮ, ಸಂಗೀತ ಹಾಗೂ ನೃತ್ಯದ ತಲ್ಲೀನತೆಗಳಲ್ಲಿ. ಹಾಗಾಗಿ ಇದೇ ತಂತ್ರಾಕೃತಿಯನ್ನು
ಕೊಂಚ ಬದಲಿಸಿ ಢಮರುಗವನ್ನು ಸೃಷ್ಟಿಸಿ ಹೆಣ್ಣು ತ್ರಿಕೋನದಿಂದ ಶಕ್ತಿ ಮತ್ತು ಪುರುಷ ತ್ರಿಕೋನದಿಂದ ಶಿವನನ್ನು ಇರಿಸಿ ಶಿವ ಶಕ್ತಿಯರ ಸಮಾಗಮದಲ್ಲಿ ನಾದೋತ್ಪತ್ತಿಯ ತತ್ವವನ್ನು ವಿವರಿಸುತ್ತದೆ. ಇದು ದ್ರಾವಿಡ ಪೂರ್ವ ಬುಡಮಟ್ಟುಗಳ phallic cult ನಿಂದ ಎತ್ತಿ ವಿವರಿಸಿದ diagrammatic ಅದ್ವೈತವಾಗಿದೆ. ಈ ಮೂಲ ಅದ್ವೈತವನ್ನು ಸೃಷ್ಟಿಶೀಲ ನೆಲೆಯಿಂದ ಪಲ್ಲಟಗೊಳಿಸಿ ಪರ- ಬ್ರಹ್ಮ- ಆತ್ಮ- ಪರಮಾತ್ಮದ ವೈದಿಕೋಪನಿಷತ್ತಿನ ವಂಚ ಜಾಲದಲ್ಲಿ ಸಂಕೀರ್ಣಗೊಳಿಸಿ ಜನಸಾಮಾನ್ಯರಿಗೆ ಎಟುಕದಂತೆ ಜಟಿಲ ತತ್ವವನ್ನಾಗಿಸಿದ್ದೊಂದು ಪಿತೂರಿಯೂ ಆಗಿದೆ. ಈ ವಂಚಕ ಚರಿತ್ರೆಯ ವಿವರಣೆಯೂ ಮತ್ತೊಂದು ಅಧ್ಯಾಯವಾಗಬಲ್ಲದು” ಎನ್ನುತ್ತಾರೆ.

ಇಂದಿನ ಕಾಲದಲ್ಲಿ ಹಾಸ್ಯ ಎನಿಸುವ, ವಿಚಿತ್ರ ಎನಿಸುವ ಜನಪದರ ಎಷ್ಟೋ ಆಚರಣೆಗಳಲ್ಲಿ, ನಂಬಿಕೆಗಳಲ್ಲಿ ಇತಿಹಾಸದ ಸತ್ಯಗಳು ಹುದುಗಿ ಹೋಗಿರುತ್ತವೆ. ಅವುಗಳನ್ನು ಎತ್ತಿ ತೆಗೆದು ಜನರಿಗೆ ವಿವರಿಸುವ ಜರೂರು ಇಂದು ಎದುರಾಗಿದೆ.. ಬದುಕಿನ ಪ್ರತಿ ಕ್ಷಣವೂ ವೈದಿಕಗೊಳ್ಳುತ್ತಿರುವ ಕೇಡುಗಾಲದಲ್ಲಿರುವ ನಾವು ಸಂಸ್ಕೃತಿಯ ಮಹಾ ಮರೆವಿನಿಂದ ಹೊರಬರಲೇಬೇಕಾಗಿದೆ.

(ಲೇಖಕರು- ಹರ್ಷಕುಮಾರ್ ಕುಗ್ವೆ, ಪತ್ರಕರ್ತರು, ಉಡುಪಿ)

Leave a Reply

Your email address will not be published. Required fields are marked *

Trending

Exit mobile version