ಅಂತರಂಗ
ಕುಸಿಯುತ್ತಿರುವ ನೈತಿಕ ಮೌಲ್ಯಗಳು – ಸರಿಪಡಿಸುವ ಜವಾಬ್ದಾರಿ ಯಾರದ್ದು..?
- ಕ್ರಾಂತಿರಾಜ್ ಒಡೆಯರ್ ಎಂ,ಸಹಾಯಕ ಪ್ರಾಧ್ಯಾಪಕರು,ಮೈಸೂರು
ನನಗೆ ಆಪ್ತರಾಗಿರುವ ಪ್ರೊಫೆಸರ್ ಒಬ್ಬರ ಜೊತೆ “ಕುಸಿಯುತ್ತಿರುವ ಶಿಕ್ಷಣ ವ್ಯವಸ್ಥೆ” ಬಗ್ಗೆ ಮಾತನಾಡುತ್ತಾ, “ವಿಶ್ವವಿದ್ಯಾನಿಲಯಗಳು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ವಿಫಲವಾಗಿವೆ. ಶಿಕ್ಷಕರ ಬೌದ್ಧಿಕ ಮಟ್ಟ, ಬೋಧಿಸುವ ವಿಷಯಗಳಲ್ಲಿ ಅವರು ತೋರುತ್ತಿರುವ ಆಸಕ್ತಿ ಮತ್ತು ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಸಮರ್ಪಣಾ ಮನೋಭಾವದಲ್ಲಿ ಕೊರತೆ ಇದೆ.
ಇವೆಲ್ಲ ಕಾರಣಗಳಿಂದಾಗಿ ಶಿಕ್ಷಣ ವ್ಯವಸ್ಥೆ ಕನಿಷ್ಠ ಮಟ್ಟಕ್ಕೆ ದೂಡಲ್ಪಡುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಕ್ಕೆ, “WE WILL GET THE SYSTEM THAT WE DESERVE” (ನಮ್ಮ ಮನಸ್ಥಿತಿಗೆ ಹೊಂದುವ ವ್ಯವಸ್ಥೆಯನ್ನ ನಾವು ಪಡೆಯುತ್ತೇವೆ) ಎಂಬ ಅಭಿಪ್ರಾಯವನ್ನು ಪ್ರೊಫೆಸರ್ ಹಂಚಿಕೊಂಡರು. ಅವರ ಮಾತು ಸರಿ ಅನಿಸಿತು.
ನನ್ನ ವಿದ್ಯಾರ್ಥಿ ಜೀವನದ ಪಯಣದಲ್ಲಿ ಕೆಲವೇ ಕೆಲವು ಶಿಕ್ಷಕರನ್ನು ಹೊರತುಪಡಿಸಿ ಬಹುತೇಕ ಶಿಕ್ಷಕರು ಅತ್ಯುತ್ತಮ ಬೋದನಾ ಕೌಶಲ್ಯ/ಶೈಲಿಗೆ ಹೆಸರುವಾಸಿ. ನಾನು ಪ್ರೌಢ ಶಿಕ್ಷಣ ಪಡೆದ ಜವಾಹರ್ ನವೋದಯ ವಿದ್ಯಾಲಯ, ಶಿವಾರಗುಡ್ಡದಲ್ಲಿ ಪಠ್ಯ ಬೋಧನೆಯಲ್ಲಿ ಅತ್ಯುತ್ತಮ ಪರಿಣಿತಿಯನ್ನು ನಮಗೆ ಪಾಠ ಮಾಡುತ್ತಿದ್ದ ಶಿಕ್ಷಕರು ಹೊಂದಿದ್ದರು. ಅಲ್ಲಿನ ಅತ್ಯುತ್ತಮ ಶಿಕ್ಷಕರ ಗುಂಪಿಗೆ ಸೇರಿಸಬಹುದಾದವರ ಪಟ್ಟಿ ಬಹಳ ದೊಡ್ಡದು. ಈಗ ಅದರ ಗುಣಮಟ್ಟ ಕುಸಿದಿರುವ ವಾಸನೆ ಬರುತ್ತಿದೆ.
ನನ್ನ ಉನ್ನತ ಶಿಕ್ಷಣ ವ್ಯಾಸಂಗದಲ್ಲಂತೂ ಉತ್ತಮ ಶಿಕ್ಷಕರಿಂದ ಪಾಠ ಕೇಳುವ ಭಾಗ್ಯ ಒಲಿದು ಬಂತು. ಪ್ರತಿಷ್ಠಿತ ಮಹಾರಾಜಾ ಕಾಲೇಜಿನ ಇಂಗ್ಲಿಷ್ ವಿಭಾಗದಲ್ಲಿದ್ದ ಪ್ರೊಫೆಸರ್ ನಾಗಣ್ಣ, ಪ್ರೊಫೆಸರ್ ಭಗವಾನ್ ಅವರಂತಹ ಬೋಧಕರು ಒಂದೆಡೆಯಾದರೆ, ಮಾನಸ ಗಂಗೋತ್ರಿಯ ಎಂ ಬಿ ಈ ವಿಭಾಗದಲ್ಲಿದ್ದ ಪ್ರೊಫೆಸರ್ ಅನಂತನ್, ಪ್ರೊಫೆಸರ್ ಶಿವರಾಜ್, ಪ್ರೊಫೆಸರ್ ಆನಂದ್ ಹಾಗೂ ಇನ್ನೂ ಹಲವಾರು ಖ್ಯಾತ ಶಿಕ್ಷಕರ ದೊಡ್ಡ ಪಡೆಯೇ ಇತ್ತು. ಎಲ್ಲರೂ ಸ್ಪರ್ಧೆಗೆ ಇಳಿದವರಂತೆ ಪಾಠ ಮಾಡುತ್ತಿದ್ದರು. ಆದರೆ, ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಒಳ್ಳೆಯ ಶಿಕ್ಷಕರನ್ನು ಹುಡುಕಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ | ‘ಭಾಶಾಹೀನರ ಸಂಗ ಅಭಿಮಾನ ಭಂಗ’ | ದ್ವೇಶದ ಭಾಶೆ ಮತ್ತು ಪ್ರತಿದ್ವೇಶದ ಭಾಶೆಯ ಅಪಾಯಗಳು
ಪರಿಣಾಮವಾಗಿ, ಶಿಕ್ಷಣ ವ್ಯವಸ್ಥೆಯ ಗುಣಮಟ್ಟ ಕುಸಿಯುತ್ತಿದ್ದು, ವ್ಯವಸ್ಥೆಯ ಮುಂದಿನ ದಿನಗಳು ನಕಾರಾತ್ಮಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಇಂತಹ ಕೆಟ್ಟ ವ್ಯಸ್ಥೆ ಸೃಷ್ಟಿಯಾಗಿರುವುದಕ್ಕೆ ನಾನು ಇಂದಿನ ಶಿಕ್ಷಕ ವೃಂದವನ್ನಷ್ಟೇ ದೂಷಿಸುತ್ತಿಲ್ಲ.
ಬದಲಾಗಿ ವ್ಯವಸ್ಥೆಗೆ ಒಳಪಟ್ಟ ಎಲ್ಲರೂ ಇದರ ಕಾರಣಕರ್ತರಾಗಿದ್ದು, ಇದನ್ನು ಆದಷ್ಟು ಬೇಗ ಸರಿಪಡಿಸದೆ ಇದ್ದರೆ, ಇಂದಿನ ಹಾಗೂ ಮುಂಬರುವ ಯುವಪೀಳಿಗೆಗೆ ಸರಿಯಾದ ಮಾರ್ಗದರ್ಶನವಿಲ್ಲದೇ, ಸಮಾಜ ನಕಾರಾತ್ಮಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಕುಸಿಯುತ್ತಿರುವ ಮೌಲ್ಯಗಳು ಬರೀ ಶಿಕ್ಷಣ ವ್ಯವಸ್ಥೆಯಲ್ಲಷ್ಟೇ ಅಲ್ಲ, ಸಮಾಜದ ಎಲ್ಲಾ ಅಂಗಗಳಲ್ಲೂ ಇದು ಸರ್ವೇ ಸಾಮಾನ್ಯವಾಗಿದೆ.
ಇಪ್ಪತ್ತು ಇಪ್ಪತ್ತೈದು ವರ್ಷಗಳ ಹಿಂದೆ ತಿರುಗಿ ನೋಡಿದಾಗ, ಚುನಾವಣೆಗಳ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಹಾಗೂ ನಾಯಕರು ಜಾತಿ ಹಾಗೂ ಧರ್ಮಗಳನ್ನು ಮುಂದಿಟ್ಟುಕೊಂಡು ಮತವನ್ನು ಕೇಳುತ್ತಿದ್ದುದ್ದು, ಜಾತಿ ಹಾಗೂ ಧರ್ಮ ಆಧಾರಿತ ರಾಜಕೀಯ ಮಾಡುತ್ತಿದ್ದುದ್ದು ನಗಣ್ಯ.
ಒಳಗೊಳಗೇ ನೆಡೆಯುತ್ತಿದ್ದರೂ, ಸಾಮಾಜಿಕ ಸ್ತರಗಳಲ್ಲಿ ದೊಡ್ಡಮಟ್ಟದಲ್ಲಿ ಗೋಚರಿಸುತ್ತಿರಲಿಲ್ಲ. ಆದರೆ, ಇಂದಿನ ವ್ಯವಸ್ಥೆ ಅದಕ್ಕೆ ತದ್ವಿರುದ್ದವಾಗಿದ್ದು, ರಾಜಕೀಯ ವ್ಯವಸ್ಥೆ ಜಾತಿ, ಧರ್ಮಗಳನ್ನು ತನ್ನ ಕಾವಲುಗಾರನಂತೆ ಮಾಡಿಕೊಂಡಿದೆ.
ಪೊಲೀಸ್ ವ್ಯವಸ್ಥೆ, ಆರೋಗ್ಯ ವ್ಯವಸ್ಥೆ ಹಾಗೂ ಜನಸಾಮಾನ್ಯರಿಗಂತಲೇ ಇರುವ ಇತರೆ ಆಡಳಿತ ವ್ಯವಸ್ಥೆಯಲ್ಲಿನ ಅಧಿಕಾರಿಗಳೆಂದರೆ ಸಮಾಜದಲ್ಲಿ ಅವರಿಗೆ ಬಹಳ ಗೌರವ ಇರುತ್ತಿತ್ತು. ಇವರೆಲ್ಲಾ ಯುವಜರಿಗೆ ಆದರ್ಶ ಪುರುಷರೊ/ಮಹಿಳೆಯರೋ ಆಗಿರುತ್ತಿದ್ದರು. ಸರ್ಕಾರಿ ಆಫೀಸುಗಳಲ್ಲಿ ಲಂಚದ ವ್ಯವಹಾರವೂ ಗೌಪ್ಯವಾಗಿ ನೆಡೆಯುತ್ತಿತ್ತು.
ಲಂಚದ ಹಣ ಪಡೆಯಲು ಕೆಳಸ್ತರದ ನೌಕರರೂ ಕೂಡ ಆಫೀಸಿನ ಹಿಂದಕ್ಕೂ ಅಥವಾ ದೂರಕ್ಕೂ ಪಲಾನುಭವಿಯನ್ನು ಕರೆದುಕೊಂಡು ಹೋಗಿ ಲಂಚ ಪಡೆದುಕೊಳ್ಳುತ್ತಿದ್ದರು. ಆದರೆ ಇಂದು, ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎನ್ನುವುದು ಸರ್ಕಾರದ ನೀತಿಯಾಗಿ ರೂಪಗೊಂಡಿದ್ದು, ಸಮಾಜದ ಕಣ್ಣಿಗೆ ದೊಡ್ಡದಾಗಿ ಗೋಚರಿಸುವಂತೆ ಬೆಳೆದು ನಿಂತಿದೆ. ಈ ವ್ಯವಸ್ಥೆಯನ್ನ ಸಮಾಜದ ಎಲ್ಲರೂ ಸಂತೋಷದಿಂದ ಸ್ವೀಕರಿಸಿದ್ದೇವೆ. ಹೀಗಾಗಿ ಅನೈತಿಕತೆಯು ಶಾಸಕಾಂಗ, ಕಾರ್ಯಂಗ, ನ್ಯಾಯಾಂಗ, ಪತ್ರಿಕಾ ರಂಗ ಹಾಗೂ ಎಲ್ಲಾ ರಂಗಗಳಲ್ಲೂ ಬೇರೂರಿರುವುದು ನಮ್ಮೆಲ್ಲರ ಕಣ್ಣಿಗೆ ಗೋಚರಿಸುತ್ತಿದೆ.
ತಾಂಡವವಾಡುತ್ತಿರುವ ಭ್ರಷ್ಟಾಚಾರ, ಕುಸಿಯುತ್ತಿರುವ ನೈತಿಕ ಮೌಲ್ಯಗಳ ಪರಿಣಾಮ ಹಾಗೂ ಪರಿಹಾರಗಳ ಬಗ್ಗೆ ನನ್ನ ಸ್ನೇಹಿತರ ಜೊತೆ ಮಾತನಾಡುತ್ತಿದ್ದಾಗ, ಒಬ್ಬ ಸ್ನೇಹಿತ “ಇದು ಹೀಗೇ ಮುಂದುವರಿದಾಗ, ಇದರ ದುಷ್ಪರಿಣಾಮಗಳನ್ನು ಎದುರಿಸುವ ಜನರೆಲ್ಲಾ ರೊಚ್ಚಿಗೆದ್ದು, ಈ ಕೆಟ್ಟ ವ್ಯವಸ್ಥೆಯನ್ನು ಬದಲಾಯಿಸುತ್ತಾರೆ” ಎಂದು ಹೇಳಿದರು.
ಆದರೆ, ಅನೈತಿಕ ವ್ಯವಸ್ಥೆಯೊಂದಿಗೆ ಕಾಲಕ್ಕೆ ತಕ್ಕಂತೆ ರಾಜಿ ಮಾಡಿಕೊಂಡು ಬದುಕುವ ಕಲೆಯನ್ನು ಬಹುತೇಕ ಜನರು ಕರಗತ ಮಾಡಿಕೊಂಡಿದ್ದು, ಇಂತಹವರು ಸಮಾಜದ ಎಲ್ಲಾ ಸ್ತರಗಳಲ್ಲೋ ಹರಡಿಕೊಂಡಿರುವ ಈ ಸಂದರ್ಭದಲ್ಲಿ, ನನ್ನ ಸ್ನೇಹಿತರು ಹೇಳಿದ “ನೈತಿಕ/ಆದರ್ಶ ಸಮಾಜ” ನಿರ್ಮಾಣ ಸಾಧ್ಯವೇ ಎಂಬ ಯಕ್ಷಪ್ರಶ್ನೆ ನನ್ನನ್ನು ಕಾಡುತ್ತಿದೆ. ಕಾಲವೇ ಉತ್ತರ ನೀಡಬೇಕು. ಕಾಲಾಯ ತಸ್ಮಾಯೇ ನಮಃ…
(-ಕ್ರಾಂತಿರಾಜ್ ಒಡೆಯರ್ ಎಂ
ಸಹಾಯಕ ಪ್ರಾಧ್ಯಾಪಕರು
ವ್ಯವಹಾರ ನಿರ್ವಹಣಾ ಶಾಸ್ತ್ರ ವಿಭಾಗ
ಸೇಪಿಯೆಂಟ್ ಕಾಲೇಜು
ಮೈಸೂರು.)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ದೇವರ ಹೂವು
~ ಡಾ. ಸಿ.ಬಿ.ಐನಳ್ಳಿ
ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ
ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ
ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ
ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ
ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ4 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ3 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್


