ಅಂತರಂಗ
ವರ್ಕ್ ಹಾರ್ಡ್ , ದೆನ್ ಯು ವಿಲ್ ಸಕ್ಸಸ್ ; ಯುಪಿಎಸ್ಸಿ ಪರೀಕ್ಷೆ ಬಗ್ಗೆ ದಾವಣಗೆರೆ ಎಸ್ಪಿ ರಿಷ್ಯಂತ್ ಮಾತು..!
‘ಹಣ, ಪ್ರಭಾವವಿದ್ದರೆ ಸಿವಿಲ್ ಸರ್ವೀಸ್ ಪಾಸಾಗಲು ಸಾಧ್ಯವಿಲ್ಲ.’ : ಎಸ್ಪಿ ಸಿ ಬಿ ರಿಷ್ಯಂತ್
ಸುದ್ದಿದಿನ,ದಾವಣಗೆರೆ : ನಾನು ಮೊದಲು ಹೇಳೋದಕ್ಕೆ ಇಷ್ಟ ಪಡೋದು ಏನೂ ಅಂದ್ರೆ, ಯುಪಿಎಸ್ಸಿ ಎಕ್ಸಾಂ ಅಂದ್ರೆ ಸಾಕು. ಏನೇನೋ ಊಹಾಪೋಹ ಇರುತ್ತೆ. ಅದನ್ನು ತೆಗೆದು ಹಾಕಬೇಕು. ‘ನೌವ್, ಐ ಎಮ್ ಟೆಲ್ ಎಬೌಟ್ ಯುಪಿಎಸ್ಸಿ ಎಕ್ಸಾಂ. ಯುಪಿಎಸ್ಸಿ ಎಕ್ಸಾಂ ಅಂದ್ರೆ ಅನೇಕರ ತಲೆಯಲ್ಲಿ ‘ಸರ್ಟನ್ ಥಿಂಗ್ಸ್ ಆರ್ ದೇರ್ ಎಂಬ ಕಲ್ಪನೆ ಇರುತ್ತದೆ. ‘ ಇದರಲ್ಲಿ ಏನೋ ನಡೆಯುತ್ತಂತೆ, ಅವರಿಗೆ ಬೇಕಾದವರನ್ನು ಆಯ್ಕೆ ಮಾಡುತ್ತಾರಂತೆ.
ಪ್ರಿಲಿಮ್ಸ್, ಮೇನ್ಸ್ ಕ್ಲಿಯರ್ ಮಾಡಿದ್ರೂ, ಸಂದರ್ಶನದಲ್ಲಿ ಏನೋ ಅಡ್ಜೆಸ್ಟೆಮೆಂಟ್ ಆಗುತ್ತೆ. ನಮ್ಮಂಥವರಿಗೆ ಸಿಗೋದಿಲ್ಲ. ರಾಜಕೀಯ ಪ್ರಭಾವ ಬೇಕು. ನಾನು ಐಪಿಎಸ್ ಆಫೀಸರ್ ಆಗೋಕೆ ಸಾಧ್ಯವಿಲ್ಲ. ಹಣ ಇದ್ದರೆ ಮಾತ್ರ ಯುಪಿಎಸ್ಸಿ. ನಂಥಿಂಗ್. ಡೋಂಟ್ ಬಾದರ್ ಆ್ಯಬೌಟೋ ಧಿಸ್ ಥಿಂಗ್
ಇಂತಹ ಊಹ ಪೋಹ ಬಿಟ್ಟುಬಿಡಿ. ಇವ್ಯಾವೂ ನಡೆಯಲ್ಲ. ಕಷ್ಟಪಟ್ಟು ಓದಬೇಕು. ಯುಪಿಎಸ್ಸಿ ಎಕ್ಸಾಂ ಪಾಸ್ ಆಗಬೇಕು..! ”
ಹೀಗಂಥ ಒಬ್ಬ ಸಾಮಾನ್ಯ ವ್ಯಕ್ತಿ ಹೇಳಿದ್ದರೇ ಯಾರೂ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇರಲಿಲ್ಲ. ಆದರೆ ಇದನ್ನು ಹೇಳಿದ್ದು 2013 ರ ಬ್ಯಾಚ್ ನ ಯುಪಿಎಸ್ಸಿ ಎಕ್ಸಾಂನಲ್ಲಿ ರಾಜ್ಯದ ಟಾಪರ್ ರಲ್ಲಿ ಒಬ್ಬರಾದ ಸಿ.ಬಿ.ರಿಷ್ಯಂತ್. ‘ಯುಪಿಎಸ್ಸಿ ಎಕ್ಸಾಂ ಅಂದ್ರೆ ಇದರಲ್ಲಿ ಏನೋ ನಡೆಯುತ್ತೆ. ನೆವರ್. ಇದನ್ನು ಶೇ.100 ರಷ್ಟು ತಲೆಯಿಂದ ತೆಗೆದುಬಿಡಿ. ಶ್ರದ್ದೆ, ಪರಿಶ್ರಮ ಇದ್ದರೆ ಸಾಕು’ ಎನ್ನುತ್ತಾರೆ ರಿಷ್ಯಂತ್.
ಯುಪಿಎಸ್ಸಿ ಎಕ್ಸಾಂ ಇಡೀ ದೇಶದಲ್ಲಿ ಉನ್ನತ ಪರೀಕ್ಷೆ. ಪಾರದರ್ಶಕವಾಗಿ ನಡೆಯುತ್ತದೆ. ಮೆರಿಟ್ ಬೇಸ್ ಮೇಲೆ ಎಕ್ಸಾಂ ನಡೆಯುತ್ತದೆ. ಪ್ರಿಮಿಲ್ಸ್ ಆಬ್ಜಿಕ್ಟೀವ್ ಮಾದರಿ ಆಗಿರುತ್ತದೆ. ಸುಮ್ಮನೆ ಮನಸ್ಸಿಗೆ ತೋಚಿದ್ದನ್ನ ರೌಂಡ್ ಮಾರ್ಕ್ ಹಾಕಿದರೆ ಸಾಕು. ಪಾಸ್ ಆಗಬಹುದು ಎಂಬ ಭ್ರಮೆ ಬಿಡಬೇಕು.
ಕೆಎಎಸ್, ಬ್ಯಾಂಕಿಂಗ್, ಕೆಪಿಎಸ್ಸಿಯ ಎಲ್ಲಾ ಎಕ್ಸಾಂ ಬರೆಯೋದು. ಯಾವುದಾದರೂ ಒಂದು ಸಿಗುತ್ತೆ ಎಂದು ಬರೆದರೆ ಅದು ಖಂಡಿತ ಆಗೋದಿಲ್ಲ. ” ಬೈ ಲಕ್ ” ಅನ್ನೊದನ್ನು ಬಿಡಬೇಕು. ಯುಪಿಎಸ್ಸಿಗೆ ಓದು ಒಂದೇ ದಾರಿ. ಹಾಗಂತ ಬುಕ್ ಹಿಡಿದು ಇಡೀ ದಿನ ಓದುವುದಲ್ಲ. ಬದಲಾಗಿ ವಾರದಲ್ಲಿ ಯಾವ ವಿಷಯ ಎಷ್ಟು ಓದಬೇಕು ಎಂಬುದನ್ನು ಡಿಸೈಡ್ ಮಾಡ್ಕೊಬೇಕು. ಆಗಾಗ ರೆಸ್ಟ್ ಕೊಡಬೇಕು. ನಾನು ಕೂಡ ಹಾಗೇ ಓದಿದ್ದು, ಸ್ವಲ್ಪ ಹೊತ್ತು ಓದು, ಸ್ವಲ್ಪ ಹೊತ್ತು ಫ್ರೆಂಡ್ಸ್ ಜೊತೆ ಹರಟೆ. ನಡು ನಡುವೆ ಸ್ನಾಕ್ಸ್ ತಿನ್ನುತ್ತಿದ್ದೆ. ಹೀಗಾದಾಗ ಮೈಂಡ್ ಫ್ರೀಯಾಗುತ್ತದೆ.
ಯುಪಿಎಸ್ಸಿ ಎಕ್ಸಾಂಗೆ ಸಿಲಿಬಿಸ್ ಇಡುತ್ತಾರೆ. ಪ್ರಿಲಿಮ್ಸ್, ಮೈನ್ಸ್ ಟಾಪಿಕ್ ಇದೆ, ಎಕ್ಸಾಂ ಇದೆ. ಆ ಸಿಲಿಬಸ್ ಪ್ರಕಾರ ಮೆಟಿರಿಯಲ್ ತಗೊಂಡು ಓದಬೇಕು. ಯುಪಿಎಸ್ಸಿ ಎಕ್ಸಾಂ ಪಾಸ್ ಆಗೋದಕ್ಕೆ ಶೇ.95 ರಷ್ಟು ಹಾರ್ಡ್ ವರ್ಕ್ ಮಾಡಬೇಕು.
ಯುಪಿಎಸ್ಸಿಯನ್ನು ಹೆಚ್ಚು ಬುದ್ದಿವಂತರೇ ಪಾಸ್ ಆಗುತ್ತಾರೆ ಎಂಬ ಮಾತು ಸುಳ್ಳು. ನಾನು ಕೂಡ ಆವರೇಜ್ ಅಂಕ ಗಳಿಸಿದವನು. ಮೂಲತಃ ವಾಣಿಜ್ಯ ಶಾಸ್ತ್ರದ ಬಿಕಾಂ ಓದಿ ಸಿಎ ಮಾಡಿದ್ದೇನೆ. ಓದಿದ್ದು ಬೆಂಗಳೂರಿನಲ್ಲಿ. ಪಿಯುಸಿ ಆದ ನಂತರ ಸಿಎ ಮಾಡುವಾಗ ದೆಹಲಿಯಲ್ಲಿ ಆಡಿಟ್ ಗೆ ಹೋಗಿದ್ದೆ. ಅಲ್ಲಿ ಯುಪಿಎಸ್ಸಿ ಬರೆಯಲು ನಿರ್ಧಾರ ಮಾಡಿದೆ. ಮೊದಲು ಪ್ರಿಲಿಮ್ಸ್ ಗೆ ‘ ಕಾಮರ್ಸ್ ಆ್ಯಂಡ್ ಅಕೌಂಟೆನ್ಸ್’ ಐಚ್ಚಿಕ ವಿಷಯ ತಗೊಂಡೆ. ಹೀಗೆ ವಾಣಿಜ್ಯ, ವಿಜ್ಞಾನ, ಕಲೆಯಲ್ಲಿ ಡಿಗ್ರಿ ಮಾಡಿದವರು ತಮ್ಮ ಇಚ್ಚಾನುಸಾರ ಐಚ್ಚಿಕ ವಿಷಯಗಳನ್ನು ಸೆಲೆಕ್ಟ್ ಮಾಡಿಕೊಳ್ಳುತ್ತಾರೆ.
ಪ್ರಿಲಿಮ್ಸ್ ನಲ್ಲಿ ಎರಡು ಪೇಪರ್ . ಒಂದು ಪೇಪರ್ ಗೆ ಎರಡು ಗಂಟೆ ಸಮಯವಕಾಶ. ನೆಗೆಟಿವ್ ಮಾರ್ಕ್ ಇರುತ್ತದೆ. 1:3 ನೆಗೆಟಿವ್ ಮಾರ್ಕ್ ಇರುತ್ತದೆ..ಅಂದರೆ ಮೂರು ತಪ್ಪು ಉತ್ತರ ಬರೆದರೆ, ಒಂದು ಸರಿ ಮಾರ್ಕ್ಸ್ ಹೋಗುತ್ತದೆ. ಪ್ರಿಲಿಮ್ಸ್ ನಲ್ಲಿ ಮೊದಲನೇ ಪೇಪರ್ ನೂರು ಅಂಕಗಳಿಗೆ ಬರೆಯಬೇಕು. ಜನರಲ್ ಸ್ಟೇಡಿಗೆ ಎಕ್ಸಾಂ ಬರೆಯಬೇಕು. ಎರಡನೇ ಪೇಪರ್ ಸಿ-ಸ್ಯಾಟ್ . 80 ಅಂಕಗಳಿಗೆ ಪರೀಕ್ಷೆ ಬರೆಯಬೇಕು. ಎರಡಕ್ಕೂ ಎರಡು ಗಂಟೆ ಸಮಯವಕಾಶವಿರುತ್ತದೆ.
ಜನರಲ್ ಸ್ಟಡಿ ಪೇಪರ್ ಗೋಸ್ಕರ ಸಾಮಾನ್ಯವಾಗಿ ಎಲ್ಲರೂ ತಮ್ಮ ವಿಷಯ ಅನುಸಾರ ಆ ಬಗ್ಗೆಯೇ ಜಾಸ್ತಿ ಓದುವುದು. ಅದರ ಬಗ್ಗೆಯೇ ಹೆಚ್ಚು ಆಸಕ್ತಿ ಕೊಟ್ಟು ಬೇರೆಯದನ್ನ ಓದೋದಿಲ್ಲ. ಆ ರೀತಿ ಮಾಡಬಾರದು. ನಿಮ್ಮ ಆಯ್ಕೆಯ ವಿಷಯದಲ್ಲಿ ಯಾವುದಕ್ಕೆ ಎಷ್ಟು ಅಂಕ ಬರುತ್ತೆ. 2020 ರ ಪ್ರಿಲಿಮ್ಸ್ ನಲ್ಲಿ ಜನರಲ್ ಪೇಪರ್ ಗೆ ಸೈನ್ಸ್ ನಿಂದ 5 ಪ್ರಶ್ನೆಗಳು, ಇತಿಹಾಸದಿಂದ 18 ಪ್ರಶ್ನೆಗಳು ಬಂದಿದ್ದವು.
ಇತಿಹಾಸದಲ್ಲಿ ಪುರಾತನ, ಮಧ್ಯಮ, ಪ್ರಸ್ತುತ ಮೂರು ಮಾಡಲ್ ಗಳಿದ್ದು18 ಅಂಕಗಳಿಗೆ ಉತ್ತರ ಬರೆಯಬೇಕು.ಜಿಯಾಗ್ರೋಫಿ 14 ಪ್ರಶ್ನೆಗಳಿಗೆ ಉತ್ತರ ಬರೆಯಬೇಕು. ಅರ್ಥಶಾಸ್ತ್ರ 10 ರಿಂದ 12 ಪ್ರಶ್ನೆಗಳು. ಪ್ರಸ್ತುತ ವಿದ್ಯಮಾನ ಪ್ರಮುಖವಾಗಿದ್ದು 25 ಅಂಕಗಳಿಗೆ ಉತ್ತರ ಬರೆಯಬೇಕು. ಪಾಲಿಟಿಕ್ಸ್ 12 ರಿಂದ 13 ಅಂಕ. ಪರಿಸರ 8 ಪ್ರಶ್ನೆ, ಮಿಸ್ಸೆಲೇನಿಯಸ್ 8 ಪ್ರಶ್ನೆಗಳು ಇರುತ್ತವೆ.
ಸಾಮಾನ್ಯವಾಗಿ ಎಲ್ಲರೂ ಹೆಚ್ಚಿನ ಅಂಕಗಳು ಇರುವ ಪ್ರಶ್ನೆಗಳಿಗೆ ಹೆಚ್ಚು ಗಮನಕೊಡುತ್ತಾರೆ. ಉಳಿದದ್ದ ನೆಗೆಲೇಟ್ ಮಾಡುತ್ತಾರೆ. ಅದು ಆಗಬಾರದು. ಯಾವುದಕ್ಕೆ ಎಷ್ಟು ಸಮಯ ಕೊಡಬೇಕು, ಎಷ್ಟು ಮಾರ್ಕ್ಸ್ ಗೆ ಏನೇನು ಬರುತ್ತದೆ ಆ ಪ್ರಕಾರ ಸ್ಟೇಡಿ ಮಾಡಬೇಕು.ಪ್ರಿಲಿಮ್ಸ್ ಗೆ ದಿನಕ್ಕೆ 20 ಗಂಟೆ ಓದುತ್ತೇನೆ. ತಣ್ಣೀರು ಸ್ನಾನ ಮಾಡುತ್ತೇನೆ, ಮಧ್ಯರಾತ್ರಿ ಎದ್ದು ಓದುತ್ತೇನೆ ಎಂಬದು ಪದ್ದತಿ ಅಲ್ಲ. ಬದಲಾಗಿ ಸ್ಮಾರ್ಟ್ ಆಗಿ ಹಾರ್ಡ್ ವರ್ಕ್ ಮಾಡಬೇಕು.
ಯುಪಿಎಸ್ಸಿ ಪ್ರಿಲಿಮ್ಸ್ ಗೆ 10 ಲಕ್ಷ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕುತ್ತಾರೆ. ಇದರಲ್ಲಿ ಎಕ್ಸಾಂ ಬರೆಯೋರು ಐದರಿಂದ ಆರು ಲಕ್ಷ ಜನ ಮಾತ್ರ. ಇದರಲ್ಲಿ ಶೇ 80 ರಷ್ಟು ಜನ ಲಕ್ ನಂಬಿ ಬರೆಯುತ್ತಾರೆ..! ಚಾನ್ಸ್ ಇದ್ದರೆ ಮುಂದೆ ಹೋಗಬಹುದು ಎಂಬ ಭ್ರಮೆಯಲ್ಲಿರುತ್ತಾರೆ. ಐವತ್ತರಿಂದ ಆರವತ್ತು ಸಾವಿರ ಜನ ಮಾತ್ರ ಸೀರಿಯಸ್ ಆಗಿ ಯುಪಿಎಸ್ಸಿ ಎಕ್ಸಾಂ ಬರೆಯುತ್ತಾರೆ. ಇವರ ನಡುವೆ ಮಾತ್ರ ಕಾಂಪಿಟೇಶನ್ ನಡೆಯುತ್ತದೆ.
ಎರಡನೇ ಪೇಪರ್ ಸಿ ಸ್ಯಾಟ್. ಇದು ಕ್ವಾಲಿಫೈಯಿಂಗ್ ಪೇಪರ್ ಆಗಿದ್ದು, ಇದರಲ್ಲಿ ಗಣಿತಕ್ಕೆ ಸಂಬಂಧ ಪಟ್ಟ ಸಾಮಾನ್ಯ ಜ್ಞಾನ ಪ್ರಶ್ನೆ , ಬೇಸಿಕ್ ಇಂಗ್ಲೀಷ್ ಪ್ರಶ್ನೆ ಕೇಳಲಾಗುತ್ತದೆ. ಕನ್ನಡ ಮೀಡಿಯಂ ವಿದ್ಯಾರ್ಥಿಗಳು ಉತ್ತರ ಬರೀಬಹುದು. ಎಂಭತ್ತು ಪ್ರಶ್ನೆಗಳಿಗೆ ಉತ್ತರ ಬರೆಯಬೇಕು. ಇದರಲ್ಲಿ ಸಿಂಪಲ್ ಪ್ರಶ್ನೆಗಳಿರುತ್ತವೆ. ಆದ್ದರಿಂದ ಪ್ರಿಲಿಮ್ಸ್ ಪಾಸ್ ಆಗಬೇಕಾದರೆ ಎಲ್ಲ ವಿಷಯಗಳನ್ನ ಚೆನ್ನಾಗಿ ಓದಬೇಕು.
ಪ್ರಿಲಿಮ್ಸ್ ಪಾಸಾಗಲು ಮೆಟಿರಿಯಲ್ ಬಹಳ ಮುಖ್ಯ. ಎಲ್ಲವನ್ನೂ ಓದುವ ಅಗತ್ಯವಿಲ್ಲ. ನಿಮಗೆ ಅಗತ್ಯವಿರುವ ಮೆಟಿರಿಯಲ್ ಸೆಲೆಕ್ಟ್ ಮಾಡುವುದೂ ಮುಖ್ಯ. ರಿವೀಷನ್ ಇರಬೇಕು. ಆಗ ಮಾತ್ರ ಬಹು ಆಯ್ಕೆ ಪ್ರಶ್ನೆಗಳಿಗೆ ಉತ್ತರಿಸಬಹುದು. ಈ ಮೆಟಿರಿಯಲ್ ನ್ನು ಮಿನಿಮಮ್ ಎರಡು ಸಲ ಓದಬೇಕು. ಪ್ರಸ್ತುತ ವಿದ್ಯಮಾನಗಳ ಪ್ರಶ್ನೆಗೆ ಉತ್ತರಿಸಲು ಕಳೆದ ನಾಲ್ಕೈದು ವರ್ಷಗಳ ಹಿಂದಿನ ಪ್ರಶ್ನೆ ಪತ್ರಿಕೆ ನೋಡಿ, ಓದಬೇಕು.ಅಲ್ಲದೇ ಪರೀಕ್ಷೆ ಬರೆಯುವ ವರ್ಷದ ಪ್ರಸ್ತುತಗಳ ಬಗ್ಗೆ ಹೆಚ್ಚು ತಿಳಿದುಕೊಂಡಿರಬೇಕು.
ದಿನಪತ್ರಿಕೆಯಲ್ಲಿ ಬರುವ ಕ್ರೈಂ, ರಾಜಕೀಯ ಸುದ್ದಿಗಳೇ ಯುಪಿಎಸ್ಸಿಗೆ ಪ್ರಮುಖವಲ್ಲ. ಬಜೆಟ್, ಎಕಾನಿಮಿಕ್, ಸ್ಯಾಟಲೈಟ್, ವಿಜ್ಞಾನ, ಹಣಕಾಸು, ಮಾನ್ಸೂನ್, ಇತಿಹಾಸ, ಇವುಗಳ ಬಗ್ಗೆ ಓದಿ ನೋಟ್ ಮಾಡಿಕೊಳ್ಳಬೇಕು. ದಿನ ಪತ್ರಿಕೆಯ ಈ ಸುದ್ದಿ ಕಲೆಕ್ಟ್ ಮಾಡಿ ಇಟ್ಕೊಬೇಕು. ಕರೆಂಟ್ ಅಫೇರ್ಸ್ ಬುಕ್ ಬರುತ್ತದೆ. ದಿನಪತ್ರಿಕೆ ಯಾಕೆ ಓದಬೇಕು ಎಂದು ಅನೇಕರು ಕೇಳುತ್ತಾರೆ, ಆದರೆ ನಾವು ಸ್ವಂತ ಓದಿ ಪಾಯಿಂಟ್ಸ್ ಮಾಡುವುದಕ್ಕೂ, ಬುಕ್ ನ ಪಾಯಿಂಟ್ಸ್ ಓದುವುದಕ್ಕೂ ವ್ಯತ್ಯಾಸವಿದೆ.
ನಾವು ಸ್ವಂತ ಓದಿದರೆ ನಾಲ್ಕು ಪ್ಯಾರದಲ್ಲಿ ಎರಡು ಪಾಯಿಂಟ್ಸ್ ನೆನಪಿರುತ್ತದೆ. ಶೇ.80ರಷ್ಟು ದಿನಪತ್ರಿಕೆಯಲ್ಲಿನ ಪ್ರಸ್ತುತಗಳ ಸುದ್ದಿ ಬಗ್ಗೆ ಪ್ರಶ್ನೆ ಕೇಳಲಾಗುತ್ತದೆ .ಶೇ.20 ರಷ್ಟು ಮಾತ್ರ ಬುಕ್ ನಲ್ಲಿರುವ ಪ್ರಸ್ತುತಗಳ ಬಗ್ಗೆ ಪ್ರಶ್ನೆ ಕೇಳಲಾಗುತ್ತದೆ.
ಯುಪಿಎಸ್ಸಿಗೆ ಓದುವಾಗ ಏಳು ಗಂಟೆ ನಿದ್ದೆ ಮಾಡಬೇಕು. ಬೆಳಗಿನ ಜಾವ ಎದ್ದಾಗ ಮೈಂಡ್ ಫ್ರೀ ಇದ್ದು, ಆ ಟೈಮ್ ನಲ್ಲಿ ಓದಬೇಕು. ಸ್ವಲ್ಪ ಕಷ್ಟವಾದ ವಿಷಯ ಬೆಳಗ್ಗೆ ಓದಿದರೆ ಒಳ್ಳೆಯದು. ಅದಕ್ಕಾಗಿ ನಾನು ಸಂಜೆ ದಿನಪತ್ರಿಕೆಗಳನ್ನು ಓದುತ್ತಿದ್ದೆ. ಒಟ್ಟಾರೆ ವ್ಯವಸ್ಥಿತವಾಗಿ ಓದಬೇಕು. ಒಂದೇ ದಿನ ಎಲ್ಲವನ್ನೂ ಓದಿ ಐದು ದಿನ ಓದದೇ ಇರುವುದು ಸರಿಯಲ್ಲ. ರೆಗ್ಯೂಲರ್ ಆಗಿ ಓದಬೇಕು. 365 ದಿನಗಳಲ್ಲಿ ಹೇಗೆ ಓದಬೇಕೆಂದು ಚಾರ್ಟ್ ಹಾಕಿಕೊಳ್ಳಬೇಕು. ಫ್ರೆಂಡ್ಸ್ ದೂರ ಇಡಬೇಕು. ಆಯಾ ದಿನ ಓದಿದ್ದನ್ನು ರಾತ್ರಿ ಮತ್ತೆ ರಿವಿಷನ್ ಮಾಡಬೇಕು ಆಗ ಮಾತ್ರ ಪ್ರಿಲಿಮ್ಸ್ ಪಾಸಾಗಬಹುದು.
ಮೇನ್ಸ್ ಎಕ್ಸಾಂ
ಪ್ರಿಲಿಮ್ಸ್ ಪಾಸಾದವರು ಮೇನ್ಸ್ ಎಕ್ಸಾಂ ಬರೆಯಬೇಕು. ಇಲ್ಲಿ ಯಾವುದೇ ಬಹು ಆಯ್ಕೆಯ ವಸ್ತುನಿಷ್ಠ ಪ್ರಶ್ನೆಗಳು ಇರೋದಿಲ್ಲ. ಇಲ್ಲಿ ಇಷ್ಟು ಅಂಕದ ಪ್ರಶ್ನೆಗಳಿಗೆ ಉತ್ತರಿಸಿ ಎಂದು ಕೇಳುತ್ತಾರೆ. ಆ ಅಂಕಗಳಿಗೆ ತಕ್ಕಂತೆ ಇಂತಿಷ್ಟು ಪದಗಳಲ್ಲಿ ಉತ್ತರಿಸಬೇಕು. ಇಲ್ಲಿ ಪಾಸಾದವರು ಮೌಖಿಕ ಸಂದರ್ಶನಕ್ಕೆ ಹೋಗಬೇಕು. ಸಂದರ್ಶನದಲ್ಲಿ ಹತ್ತು ಪ್ಯಾನಲ್ ಟೀಮ್ ಇರುತ್ತದೆ. ಒಂದು ಟೀಮ್ ನಲ್ಲಿ ಹತ್ತು ಜನ ಇರುತ್ತಾರೆ.
ಸಂದರ್ಶನಕ್ಕೆ ಹೋಗುವ ವೇಳೆ ಅಭ್ಯರ್ಥಿ ಯಾವ ಟೀಮ್ ಗೆ ಹೋಗಬೇಕೆಂದು ರ್ಯಾಂಡಮ್ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನದಲ್ಲಿ ಯುಪಿಎಸ್ಸಿ ಬೋರ್ಡ್ ಚೇರ್ಮನ್ ಇದ್ದು, ತಾಳ್ಮೆ, ಸಿಟ್ಟು, ವೈಯಕ್ತಿಕ, ಹಾಬೀಸ್, ಸೇರಿದಂತೆ ಯುಪಿಎಸ್ಸಿ ಫಾರಂ ತುಂಬುವ ವೇಳೆ ಭರ್ತಿ ಮಾಡಿದ ವಿಷಯಗಳ ಬಗ್ಗೆಯೂ ಸಂದರ್ಶನ ನಡೆಯುತ್ತದೆ..!
ಇದಾದ ಬಳಿಕ ಆಯ್ಕೆಯಾದವರಿಗೆ ದೆಹಲಿಯಲ್ಲಿ ಎರಡು ವರ್ಷ ತರಬೇತಿ ನಡೆಯುತ್ತದೆ..ಅಲ್ಲಿಂದ ಪೊಲೀಸ್, ಕಂದಾಯ, ಕೋರ್ಟ್ ಸೇರಿದಂತೆ ಎಲ್ಲ ವಿಭಾಗದಲ್ಲಿ ತರಬೇತಿ ನೀಡಲಾಗುತ್ತದೆ. ಅಂತಿಮವಾಗಿ ಪೊಲೀಸ್ ಠಾಣೆ ಜವಾಬ್ದಾರಿ ನಂತರ ಡಿಎಸ್ಪಿ, ಎಎಸ್ಪಿ, ಎಸ್ಪಿಯಾಗಿ ಸಂಪೂರ್ಣ ಅಧಿಕಾರ ನೀಡಲಾಗುತ್ತದೆ ಎನ್ನುತ್ತಾರೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್.
ಎಷ್ಟು ಜನ ಬರೆಯುತ್ತಾರೆ ?
ಒಂದು ಸಲಕ್ಕೆ 10 ಲಕ್ಷ ಜನ ಎಕ್ಸಾಂ ಕಟ್ಟುತ್ತಾರೆ, 6 ಲಕ್ಷ ಜನ ಎಕ್ಸಾಂ ಬರೆಯುತ್ತಾರೆ. ಅದರಲ್ಲಿ 9 ಸಾವಿರ ಪ್ರಿಲಿಮ್ಸ್ ಪಾಸಾಗುತ್ತಾರೆ. ಇದರಲ್ಲಿ 3 ಸಾವಿರ ಮೇನ್ಸ್ ಪಾಸಾಗುತ್ತಾರೆ. ಆದರೆ ಸಂದರ್ಶನಕ್ಕೆ ಹೋಗೋರು ಮಾತ್ರ ನೂರು ಮಂದಿ ಮಾತ್ರ. ಇದರಲ್ಲಿ 1:3 ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
ಹುದ್ದೆಗಳು
150- IFS
150- IAS
150- IPS ಹುದ್ದೆಗಳು ಇರುತ್ತವೆ.
ಅವಕಾಶ ಎಷ್ಟು..?
ಜನರಲ್ ಕೆಟಗರಿ ವಿದ್ಯಾರ್ಥಿಗಳಿಗೆ 32 ವರ್ಷ ವಯೋಮಿತಿ. ಈ ಅವಧಿಯಲ್ಲಿ ನಾಲ್ಕು ಅವಕಾಶ ಸಿಗಲಿವೆ. ಇನ್ನು ಎಸ್ಸಿ ಎಸ್ಟಿಗಳಿಗೆ 37 ವರ್ಷ. ಒಟ್ಟು ನಾಲ್ಕು ಅವಕಾಶಗಳಲ್ಲಿ ಯುಪಿಎಸ್ಸಿ ಪಾಸ್ ಮಾಡಬೇಕು.
- ಸಿವಿಲ್ ಸರ್ವೀಸ್ ಸುಮ್ಮನೇ ಅಲ್ಲ. ಕಷ್ಟ ಪಡಬೇಕು. ಸಂದರ್ಶನಕ್ಕೆ ಹೋಗುವಷ್ಟರಲ್ಲಿ ಸಾಕಷ್ಟು ಓದಿರಬೇಕು. ನನಗೆ ಚೆಸ್ ಆಟ ಇಷ್ಟವಿದ್ದ ಕಾರಣ ಫಾರಂನಲ್ಲಿ ನನಗೆ ಇಷ್ಟವಾದ ಕ್ರೀಡೆ ಎಂದಿದ್ದೆ. ಅದರ ಬಗ್ಗೆ ಪ್ರಶ್ನೆ ಕೇಳಿದ್ದರು. ನನ್ನ ಜತೆ ಏಳು ಜನ ಕರ್ನಾಟಕ ಕೇಡರ್ ಪಾಸಾದರು. ಹೆಚ್ಚು ಅಂಕಗಳು ಬಂದವರಿಗೆ ಹೋಮ್ ಟೌನ್ ನೀಡುತ್ತಾರೆ. ಹಾಗಾಗಿ ನನಗೆ ಹೋಮ್ ಟೌನ್ ಸಿಕ್ಕಿತ್ತು.
| ಸಿ.ಬಿ.ರಿಷ್ಯಂತ್, ದಾವಣಗೆರೆ ಎಸ್ಪಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243




