ದಿನದ ಸುದ್ದಿ
ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಿನ್ನೆಲೆ ಇಲ್ಲಿದೆ ನೋಡಿ
ಸುದ್ದಿದಿನ, ಬೆಂಗಳೂರು: ಪತ್ರಕರ್ತರ ಸಂಘ ಎಂದಾಕ್ಷಣ ಕಾರ್ಯಮರೆತವರ ಸಂಖ್ಯೆಯೇ ಹೆಚ್ಚು ಎಂಬುದು ಸಂಘದಿಂದ ದೂರವಿರುವ ಕಾರ್ಯನಿರತ ಪತ್ರಕರ್ತರ ದೂರು. ಇಂತಹ ದೂರು ಬಹುತೇಕ ವರ್ಷದಿಂದ ಕೇಳಿ ಬರುತ್ತಲೇ ಇದೆ. ಇದು ಸತ್ಯವಾದ ಮಾತು ಎಂಬುದರಲ್ಲಿ ಸಂಶಯವಿಲ್ಲ. ಇದನ್ನು ಅಳಿಸಬೇಕೆಂದು ಸಂಘದಲ್ಲಿನ ಕೆಲವರ ಹೋರಾಟಕ್ಕೆ ಇಲ್ಲಿಯವರೆಗೂ ಮನ್ನಣೆ ದೊರೆತಿಲ್ಲ.
ಪೀತಪತ್ರಿಕೋದ್ಯಮ ಹೆಚ್ಚಾಗಿದ್ದು, ಆರ್ಎನ್ಐ ಪಡೆದು ವರ್ಷಕ್ಕೆ ಒಂದೆರಡು ಬಾರಿ ಪತ್ರಿಕೆತಂದಾಕ್ಷಣ ಆತ ತನ್ನ ಜೀವಿತಾವಧಿ ಕೊನೆಯವರೆಗೂ ಪತ್ರಕರ್ತನ ಪಟ್ಟ ಕಳೆದುಕೊಳ್ಳುವುದಿಲ್ಲ. ಜತೆಗೆ ಇದಕ್ಕೆ ಪತ್ರಕರ್ತ ಸಂಘದಲ್ಲಿ ಸದಸ್ಯತ್ವ ಕೂಡ ಸಾಥ್ ನೀಡುತ್ತದೆ. ಇದು ಹತ್ತಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಕೆಟ್ಟ ಪದ್ಧತಿ. ಈ ಕಾರಣಕ್ಕೆ ಕಾರ್ಯನಿರತಪತ್ರಕರ್ತರು ಸಂಘದಲ್ಲಿ ಸದಸ್ಯತ್ವ ಪಡೆಯಲು ಹಿಂಜರಿಯುತ್ತಾರೆ.
ಅದರಲ್ಲೂ ಇತ್ತೀಚೆಗೆ ರಾಜ್ಯಾಧ್ಯಕ್ಷರಾಗಿದ್ದ ಎನ್.ರಾಜು ವಿರುದ್ಧ ಗಂಭೀರ ಆರೋಪಗಳು ಕೇಳಿಬಂದು ಇಡೀ ಸಂಘವನ್ನು ಬೀದಿಗೆ ತಂದು ನಿಲ್ಲಿಸಿತ್ತು. ಜತೆಗೆ ಬೆಂಗಳೂರು ಸಮೀಪದ ಠಾಣೆಯೊಂದರಲ್ಲಿ ರಾಜ್ಯಾಧ್ಯಕ್ಷರ ವಿರುದ್ಧವೇ ದೂರು ದಾಖಲು. ಇದರಿಂದ ನೈತಿಕ ಹೊಣೆವೊತ್ತು ಎನ್.ರಾಜು ರಾಜೀನಾಮೆ ನೀಡಿದ್ದಾರೆ. ಸಂಘದ ಘನತೆ, ಗೌರವ ಉಳಿಸಲು ಅ.5ರಂದು ಬೆಂಗಳೂರಿನ ಕಂದಾಯ ಭವನದಲ್ಲಿರುವ ಸಂಘದ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ ಸಂಘದ ಹಿರಿಯ ಉಪಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ವಿಶೇಷವೆಂದರೆ ಪ್ರಥಮ ಬಾರಿಗೆ ಸಂಘದ ಸದಸ್ಯರು ಮುಕ್ತವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಸತತ ನಾಲ್ಕು ಗಂಟೆಗಳ ಕಾಲ ಸುಧೀರ್ಘ ಚರ್ಚೆ, ಅದರಲ್ಲೂ ಪ್ರತಿ ಸದಸ್ಯರೂ ಸಂಘವನ್ನು ಉಳಿಸುವ ಜತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸಹಕಾರದಿಂದ ಡಿವಿಜಿ ಅವರಿಂದ ಸ್ಥಾಪನೆಗೊಂಡ ಸಂಘವನ್ನು ಬಲಿಷ್ಠಗೊಳಿಸಬೇಕು. ಸಂಘದತ್ತ ಕಾರ್ಯನಿರತ ಪತ್ರಕರ್ತರು ಮುಖ ಮಾಡುವಂತೆ ಕಾರ್ಯಪ್ರವೃತ್ತರಾಗಬೇಕು ಎಂಬ ಕೂಗು ಹಾಕಿದರು.
ಈ ನಿಟ್ಟಿನಲ್ಲಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ತಗಡೂರು ಅವರೇ ಸೂಕ್ತ ಆಯ್ಕೆಯಾಗಿದ್ದು, ಅವರನ್ನು ಖಾಯಂ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಎಲ್ಲ ಸದಸ್ಯರೂ ಧ್ವನಿಯೆತ್ತಿದರು. ಆರಂಭದಲ್ಲಿ ಖಾಯಂ ಅಧ್ಯಕ್ಷರ ಆಯ್ಕೆಗೆ ವಿರೋಧಿಸಿದ್ದ ಇಬ್ಬರು ಸದಸ್ಯರು ಕೂಡ ಕೊನೆಗೆ ಸಮ್ಮತಿ ವ್ಯಕ್ತಪಡಿಸುವ ಮೂಲಕ ಸಭೆ ಒಮ್ಮತ ನಿರ್ಣಯಕ್ಕೆ ಬಂದಿತು. ಕೊನೆಗೂ ವಿಜಯವಾಣಿ ಪತ್ರಿಕೆ ವಿಶೇಷ ವರದಿಗಾರ ಶಿವಾನಂದ ತಗಡೂರು (ಮೊ.ನಂ: 9845087374) ರಾಜ್ಯಾಧ್ಯಕ್ಷರಾಗಿ ಸರ್ವಸಮ್ಮತದಿಂದ ಸಭೆಯಲ್ಲಿ ಆಯ್ಕೆಗೊಂಡರು.
ಈ ವೇಳೆ ಸದಸ್ಯರೆಲ್ಲರೂ ನೂತನ ಅಧ್ಯಕ್ಷರಿಗೆ ಅಭಿನಂದಿಸಿ, ಸಂಘವನ್ನು ಬಲಿಷ್ಠಗೊಳಿಸಬೇಕು. ಜತೆಗೆ ಸಂಘಕ್ಕೆ ಈಗ ಅಂಟಿರುವ ಕಳಂಕ ತೊಳೆಯಲು ಕಂಕಣಬದ್ಧರಾಗಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಮತ್ತಿಕೆರೆ ಜಯರಾಮ್, ಕಾರ್ಯದರ್ಶಿ ಲಿಥಕರ್ ಜೈನ್, ಸೊಗಡು ವೆಂಕಟೇಶ್, ಮೈಸೂರಿನ ಸಿ.ಕೆ.ಮಹೇಂದ್ರ, ಲೋಕೇಶ್ಬಾಬು, ಟೆಲೆಕ್ಸ್ ಎನ್.ರವಿಕುಮಾರ್, ರವೀಶ್, ಚಿಕ್ಕಮಗಳೂರು ಶ್ರೀನಿವಾಸ್, ದಾವಣಗೆರೆ ಚಂದ್ರಪ್ಪ, ದುರುಗೇಶಪ್ಪ, ಕುಟ್ಟಪ್ಪ, ಲೊಚೇನೇಶ್ ಹೂಗಾರ್, ನಿಂಗಪ್ಪ ಚಾವಡಿ, ಸತ್ಯನಾರಾಯಣ, ಶಿವಮೊಗ್ಗ ವೈದ್ಯ, ಸೋಮಶೇಖರ್ ಗಾಂಧಿ, ಕೆರಗೋಡು ಸೇರಿದಂತೆ ವಿವಿಧ ಜಿಲ್ಲೆಗಳ
ಅಧ್ಯಕ್ಷರು, ರಾಜ್ಯ ಸಮಿತಿ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ನೂತನ ಅಧ್ಯಕ್ಷರಾದ ಶಿವಾನಂದ ತಗಡೂರು ಹಿನ್ನೆಲೆ
ಶಿವಾನಂದ ತಗಡೂರು ಚನ್ನರಾಯಪಟ್ಟಣ ತಾಲೂಕು ತಗಡೂರಿನ ರೈತ ಕುಟುಂಬದ ಕಮಲಮ್ಮ, ವೀರೇಗೌಡ
ದಂಪತಿ ಪುತ್ರನಾಗಿ ಜುಲೈ 1, 1971ಲ್ಲಿ ಜನನ. ಎಸ್ಎಸ್ಎಲ್ಸಿ ತನಕ ಹುಟ್ಟೂರಿನಲ್ಲಿಯೇ ವಿದ್ಯಾಭ್ಯಾಸ. ಹಾಸನದಲ್ಲಿ ವಿದ್ಯಾಭ್ಯಾಸ ಮುಂದುವರಿಕೆ. ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘಟನೆ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಣೆ. ಗೊರೂರು ಹೇಮಾವತಿ ಯೋಜನೆಯಿಂದ ತುಮಕೂರು ಜಿಲ್ಲೆಗೆ ನೀರು ಹರಿಸಲು, ಭೂಮಿಯ 200 ಅಡಿ ಆಳದಲ್ಲಿ ನಿರ್ಮಾಣ ಮಾಡಿದ ಬಾಗೂರು-ನವಿಲೆ ಸುರಂಗದಿಂದಾಗಿ ಸಂತ್ರಸ್ತರಾದ ಹಳ್ಳಿಗಳ ಪರವಾಗಿ ಒಂದು ದಶಕಗಳ ಕಾಲ ಹೋರಾಟ ನಡೆಸಿದ್ದಾರೆ.
ರೈತ ಹಿತರಕ್ಷಣಾ ಸಮಿತಿ ಸಂಚಾಲಕ ಮತ್ತು ಹಾಸನ ಜಿಲ್ಲಾ ನೀರಾವರಿ ಹೋರಾಟ ಸಮಿತಿಗಳ ಒಕ್ಕೂಟದ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಣೆ. ಇಷ್ಟೇಲ್ಲ ಜನಪರ ಹೋರಾಟ ನಡೆಸುವ ಮೂಲಕ ಜಿಲ್ಲೆಯಲ್ಲಿ ಜನರ ಪ್ರೀತಿ ಗಳಿಸಿದ್ದ ಶಿವಾನಂದ ತಗಡೂರು ಬದುಕಿಗಾಗಿ ಆಯ್ಕೆ ಮಾಡಿಕೊಂಡಿದ್ದು ಪತ್ರಿಕಾ ಕ್ಷೇತ್ರವನ್ನು. ಹಾಸನ ಜಿಲ್ಲೆಯ ಜನಮಿತ್ರ ದಿನ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶ ಮಾಡಿದ ಶಿವಾನಂದ ಅವರು, ಜ್ಞಾನದೀಪ, ಈ ವಾರ ಕರ್ನಾಟಕ, ಜನವಾಹಿನಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
ವಿಶೇಷವಾಗಿ ವಿಜಯಕರ್ನಾಟಕ ಪತ್ರಿಕೆ ಪ್ರಾರಂಭದಿಂದಲೂ 12 ವರ್ಷಗಳ ಕಾಲ ಹಿರಿಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದಾರೆ. ಆನಂತರ ವಿಜಯವಾಣಿ ಪತ್ರಿಕೆ ಪ್ರಾರಂಭವಾದ ಬಳಿಕ ಬೆಂಗಳೂರಿನಲ್ಲಿ ವಿಶೇಷ ಹಿರಿಯ
ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹಾಸನದಿಂದ ಬೆಂಗಳೂರಿಗೆ ಆಗಮಿಸಿದ ಶಿವಾನಂದ ತಗಡೂರು, ಬೆಂಗಳೂರಿನಲ್ಲಿ ಕೇವಲ ಪತ್ರಿಕಾ
ಕ್ಷೇತ್ರಕ್ಕಷ್ಟೇ ಸೀಮಿತವಾಗದೇ ವೃತ್ತಿಧರ್ಮ ಜತೆಗೆ ಸಾಹಿತ್ಯ, ಸಾಂಸ್ಕೃತಿಕ ಸಂಘಟನೆಗಳಲ್ಲಿ ಸಕ್ರಿಯರಾಗಿ ಹಿರಿಯ ಸಾಹಿತಿಗಳು, ಹೋರಾಟಗಾರರು, ಸಜ್ಜನ
ರಾಜಕಾರಣಿಗಳು, ದಕ್ಷ ಅಧಿಕಾರಿಗಳ ಪ್ರೀತಿ ಗಳಿಸಿದ್ದಾರೆ. ಜನಮಿತ್ರ ಪತ್ರಿಕೆಯ 50ನೇ ವರ್ಷದ ಸಂಭ್ರಮ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಹಾಸನ
ಜಿಲ್ಲಾ ಸಮಾವೇಶಕ್ಕೆ ತಮ್ಮ ಸಂಪಾದಕತ್ವದಲ್ಲಿ ಸ್ಮರಣ ಸಂಚಿಕೆ ತಂದ ಕೀರ್ತಿ ಇವರದ್ದಾಗಿದೆ.
ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ 4 ವರ್ಷ ಕಾರ್ಯನಿರ್ವಹಿಸಿದ್ದ ವೇಳೆ, ಬಹಳ ವರ್ಷದ ಕನಸಾಗಿದ್ದ ಪತ್ರಕರ್ತರ ಭವನ ನಿರ್ಮಾಣ ಕೈಗೆತ್ತಿಕೊಂಡು, ಒಂದೇ ವರ್ಷದಲ್ಲಿ ಶಂಕುಸ್ಥಾಪನೆ ಮಾಡಿ ಕಟ್ಟಡ ಪೂರ್ಣಗೊಳಿಸಿ ಉದ್ಘಾಟಿಸಿದ್ದು ಇಡೀ ರಾಜ್ಯಕ್ಕೆ ಮಾದರಿ ಆಗಿದೆ.
ಶ್ರವಣಬೆಳಗೊಳದಲ್ಲಿ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸಿದ ಹೆಗ್ಗಳಿಕೆ. ಬೇಲೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಸಂಘದ ಪದಾಧಿಕಾರಿಗಳ ಸಮಾವೇಶ. ಮಾಧ್ಯಮ ಅಕಾಡೆಮಿ ಜತೆಯಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮ.
2011ರಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾಗಿದ್ದು, ಪ್ರಸ್ತುತ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.
ಹತ್ತು ಹಲವಾರು ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ ಶಿವಾನಂದ ತಗಡೂರು ಅವರಿಗೆ ಅತ್ಯುತ್ತಮ ವಿಮರ್ಶಾತ್ಮಕ ವರದಿಗಾಗಿ ನೀಡುವ ಖಾದ್ರಿಶಾಮಣ್ಣ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂಘ ಸಂಸ್ಥೆಗಳಿಂದ ಸನ್ಮಾನಗಳು ಹುಡುಕಿಕೊಂಡು ಬಂದಿವೆ. ಹಲವಾರು ಬಾರಿ ವಿದೇಶ ಪ್ರವಾಸ. ಶ್ರೀಲಂಕಾ ಪ್ರಧಾನಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿರುವುದು ವಿಶೇಷ.
ಪತ್ರಕರ್ತರಲ್ಲಿ ಬೆಟ್ಟದಷ್ಟು ನಿರೀಕ್ಷೆ ಇವೆ
ಶಿವಾನಂದ ತಗಡೂರು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂಬ ಸುದ್ದಿ ರಾಜ್ಯದ ಬಹಳಷ್ಟು ಪತ್ರಕರ್ತರಲ್ಲಿ ನೂರಾರು ಕನಸುಗಳನ್ನು ಬಿತ್ತಿವೆ. ಕಾರ್ಯನಿರತ ಪತ್ರಕರ್ತರಿಗೆ ಸದಸ್ಯತ್ವ ನೀಡುವ ಜತೆಗೆ, ಸಂಘವನ್ನು ಶುದ್ಧೀಕರಿಸುವ ಸವಾಲು ನೂತನ
ಅಧ್ಯಕ್ಷರ ಮುಂದಿದೆ.
ಸಂಘದಿಂದ ನೀಡುವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ ಆಯ್ಕೆ ಮಾಡುವುದು, ಸಂಘದ
ಹಣಕಾಸು ವಹಿವಾಟು ಪಾರದರ್ಶಕವಾಗಿರುವಂತೆ ಜಾಗ್ರತೆ ವಹಿಸಬೇಕಾಗಿದೆ. ಮಾನ್ಯತೆ ಪಡೆದ ಪತ್ರಕರ್ತರಿಗೆ ದೊರೆಯುತ್ತಿರುವ ಉಚಿತ ಬಸ್ ಸೌಲಭ್ಯ, ಆರೋಗ್ಯ ವಿಮೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ರಾಜ್ಯದ ಎಲ್ಲ ಪತ್ರಕರ್ತರಿಗೂ ದೊರೆಯುವಂತೆ ಮಾಡಬೇಕಾಗಿದೆ.
ರೈತಕುಟುಂಬದ ಹಿನ್ನೆಲೆಯಿಂದ ಪತ್ರಿಕಾ ಕ್ಷೇತ್ರಕ್ಕೆ ಬಂದಿರುವ ಶಿವಾನಂದ ತಗಡೂರು ಇಂತಹ ಹತ್ತಾರು ಸವಾಲುಗಳನ್ನು ದಿಟ್ಟವಾಗಿ ಎದುರಿಸಿ, ಸಂಘದ ಘನತೆ ಹೆಚ್ಚಿಸಬೇಕಾಗಿದೆ. ಇದು ರಾಜ್ಯದ ಎಲ್ಲ ಪತ್ರಕರ್ತರೆಲ್ಲರ ಆಶಯ, ಒತ್ತಾಸೆ.

ದಿನದ ಸುದ್ದಿ
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.
ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.
ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.
ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.
ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

- ಪುರಂದರ್ ಲೋಕಿಕೆರೆ
ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.
ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.
100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.
ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.
ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.
ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.
ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ5 days ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ4 days ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ
-
ದಿನದ ಸುದ್ದಿ7 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು