ದಿನದ ಸುದ್ದಿ
ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಿನ್ನೆಲೆ ಇಲ್ಲಿದೆ ನೋಡಿ
ಸುದ್ದಿದಿನ, ಬೆಂಗಳೂರು: ಪತ್ರಕರ್ತರ ಸಂಘ ಎಂದಾಕ್ಷಣ ಕಾರ್ಯಮರೆತವರ ಸಂಖ್ಯೆಯೇ ಹೆಚ್ಚು ಎಂಬುದು ಸಂಘದಿಂದ ದೂರವಿರುವ ಕಾರ್ಯನಿರತ ಪತ್ರಕರ್ತರ ದೂರು. ಇಂತಹ ದೂರು ಬಹುತೇಕ ವರ್ಷದಿಂದ ಕೇಳಿ ಬರುತ್ತಲೇ ಇದೆ. ಇದು ಸತ್ಯವಾದ ಮಾತು ಎಂಬುದರಲ್ಲಿ ಸಂಶಯವಿಲ್ಲ. ಇದನ್ನು ಅಳಿಸಬೇಕೆಂದು ಸಂಘದಲ್ಲಿನ ಕೆಲವರ ಹೋರಾಟಕ್ಕೆ ಇಲ್ಲಿಯವರೆಗೂ ಮನ್ನಣೆ ದೊರೆತಿಲ್ಲ.
ಪೀತಪತ್ರಿಕೋದ್ಯಮ ಹೆಚ್ಚಾಗಿದ್ದು, ಆರ್ಎನ್ಐ ಪಡೆದು ವರ್ಷಕ್ಕೆ ಒಂದೆರಡು ಬಾರಿ ಪತ್ರಿಕೆತಂದಾಕ್ಷಣ ಆತ ತನ್ನ ಜೀವಿತಾವಧಿ ಕೊನೆಯವರೆಗೂ ಪತ್ರಕರ್ತನ ಪಟ್ಟ ಕಳೆದುಕೊಳ್ಳುವುದಿಲ್ಲ. ಜತೆಗೆ ಇದಕ್ಕೆ ಪತ್ರಕರ್ತ ಸಂಘದಲ್ಲಿ ಸದಸ್ಯತ್ವ ಕೂಡ ಸಾಥ್ ನೀಡುತ್ತದೆ. ಇದು ಹತ್ತಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಕೆಟ್ಟ ಪದ್ಧತಿ. ಈ ಕಾರಣಕ್ಕೆ ಕಾರ್ಯನಿರತಪತ್ರಕರ್ತರು ಸಂಘದಲ್ಲಿ ಸದಸ್ಯತ್ವ ಪಡೆಯಲು ಹಿಂಜರಿಯುತ್ತಾರೆ.
ಅದರಲ್ಲೂ ಇತ್ತೀಚೆಗೆ ರಾಜ್ಯಾಧ್ಯಕ್ಷರಾಗಿದ್ದ ಎನ್.ರಾಜು ವಿರುದ್ಧ ಗಂಭೀರ ಆರೋಪಗಳು ಕೇಳಿಬಂದು ಇಡೀ ಸಂಘವನ್ನು ಬೀದಿಗೆ ತಂದು ನಿಲ್ಲಿಸಿತ್ತು. ಜತೆಗೆ ಬೆಂಗಳೂರು ಸಮೀಪದ ಠಾಣೆಯೊಂದರಲ್ಲಿ ರಾಜ್ಯಾಧ್ಯಕ್ಷರ ವಿರುದ್ಧವೇ ದೂರು ದಾಖಲು. ಇದರಿಂದ ನೈತಿಕ ಹೊಣೆವೊತ್ತು ಎನ್.ರಾಜು ರಾಜೀನಾಮೆ ನೀಡಿದ್ದಾರೆ. ಸಂಘದ ಘನತೆ, ಗೌರವ ಉಳಿಸಲು ಅ.5ರಂದು ಬೆಂಗಳೂರಿನ ಕಂದಾಯ ಭವನದಲ್ಲಿರುವ ಸಂಘದ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ ಸಂಘದ ಹಿರಿಯ ಉಪಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ವಿಶೇಷವೆಂದರೆ ಪ್ರಥಮ ಬಾರಿಗೆ ಸಂಘದ ಸದಸ್ಯರು ಮುಕ್ತವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಸತತ ನಾಲ್ಕು ಗಂಟೆಗಳ ಕಾಲ ಸುಧೀರ್ಘ ಚರ್ಚೆ, ಅದರಲ್ಲೂ ಪ್ರತಿ ಸದಸ್ಯರೂ ಸಂಘವನ್ನು ಉಳಿಸುವ ಜತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸಹಕಾರದಿಂದ ಡಿವಿಜಿ ಅವರಿಂದ ಸ್ಥಾಪನೆಗೊಂಡ ಸಂಘವನ್ನು ಬಲಿಷ್ಠಗೊಳಿಸಬೇಕು. ಸಂಘದತ್ತ ಕಾರ್ಯನಿರತ ಪತ್ರಕರ್ತರು ಮುಖ ಮಾಡುವಂತೆ ಕಾರ್ಯಪ್ರವೃತ್ತರಾಗಬೇಕು ಎಂಬ ಕೂಗು ಹಾಕಿದರು.
ಈ ನಿಟ್ಟಿನಲ್ಲಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ತಗಡೂರು ಅವರೇ ಸೂಕ್ತ ಆಯ್ಕೆಯಾಗಿದ್ದು, ಅವರನ್ನು ಖಾಯಂ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಎಲ್ಲ ಸದಸ್ಯರೂ ಧ್ವನಿಯೆತ್ತಿದರು. ಆರಂಭದಲ್ಲಿ ಖಾಯಂ ಅಧ್ಯಕ್ಷರ ಆಯ್ಕೆಗೆ ವಿರೋಧಿಸಿದ್ದ ಇಬ್ಬರು ಸದಸ್ಯರು ಕೂಡ ಕೊನೆಗೆ ಸಮ್ಮತಿ ವ್ಯಕ್ತಪಡಿಸುವ ಮೂಲಕ ಸಭೆ ಒಮ್ಮತ ನಿರ್ಣಯಕ್ಕೆ ಬಂದಿತು. ಕೊನೆಗೂ ವಿಜಯವಾಣಿ ಪತ್ರಿಕೆ ವಿಶೇಷ ವರದಿಗಾರ ಶಿವಾನಂದ ತಗಡೂರು (ಮೊ.ನಂ: 9845087374) ರಾಜ್ಯಾಧ್ಯಕ್ಷರಾಗಿ ಸರ್ವಸಮ್ಮತದಿಂದ ಸಭೆಯಲ್ಲಿ ಆಯ್ಕೆಗೊಂಡರು.
ಈ ವೇಳೆ ಸದಸ್ಯರೆಲ್ಲರೂ ನೂತನ ಅಧ್ಯಕ್ಷರಿಗೆ ಅಭಿನಂದಿಸಿ, ಸಂಘವನ್ನು ಬಲಿಷ್ಠಗೊಳಿಸಬೇಕು. ಜತೆಗೆ ಸಂಘಕ್ಕೆ ಈಗ ಅಂಟಿರುವ ಕಳಂಕ ತೊಳೆಯಲು ಕಂಕಣಬದ್ಧರಾಗಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಮತ್ತಿಕೆರೆ ಜಯರಾಮ್, ಕಾರ್ಯದರ್ಶಿ ಲಿಥಕರ್ ಜೈನ್, ಸೊಗಡು ವೆಂಕಟೇಶ್, ಮೈಸೂರಿನ ಸಿ.ಕೆ.ಮಹೇಂದ್ರ, ಲೋಕೇಶ್ಬಾಬು, ಟೆಲೆಕ್ಸ್ ಎನ್.ರವಿಕುಮಾರ್, ರವೀಶ್, ಚಿಕ್ಕಮಗಳೂರು ಶ್ರೀನಿವಾಸ್, ದಾವಣಗೆರೆ ಚಂದ್ರಪ್ಪ, ದುರುಗೇಶಪ್ಪ, ಕುಟ್ಟಪ್ಪ, ಲೊಚೇನೇಶ್ ಹೂಗಾರ್, ನಿಂಗಪ್ಪ ಚಾವಡಿ, ಸತ್ಯನಾರಾಯಣ, ಶಿವಮೊಗ್ಗ ವೈದ್ಯ, ಸೋಮಶೇಖರ್ ಗಾಂಧಿ, ಕೆರಗೋಡು ಸೇರಿದಂತೆ ವಿವಿಧ ಜಿಲ್ಲೆಗಳ
ಅಧ್ಯಕ್ಷರು, ರಾಜ್ಯ ಸಮಿತಿ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ನೂತನ ಅಧ್ಯಕ್ಷರಾದ ಶಿವಾನಂದ ತಗಡೂರು ಹಿನ್ನೆಲೆ
ಶಿವಾನಂದ ತಗಡೂರು ಚನ್ನರಾಯಪಟ್ಟಣ ತಾಲೂಕು ತಗಡೂರಿನ ರೈತ ಕುಟುಂಬದ ಕಮಲಮ್ಮ, ವೀರೇಗೌಡ
ದಂಪತಿ ಪುತ್ರನಾಗಿ ಜುಲೈ 1, 1971ಲ್ಲಿ ಜನನ. ಎಸ್ಎಸ್ಎಲ್ಸಿ ತನಕ ಹುಟ್ಟೂರಿನಲ್ಲಿಯೇ ವಿದ್ಯಾಭ್ಯಾಸ. ಹಾಸನದಲ್ಲಿ ವಿದ್ಯಾಭ್ಯಾಸ ಮುಂದುವರಿಕೆ. ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘಟನೆ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಣೆ. ಗೊರೂರು ಹೇಮಾವತಿ ಯೋಜನೆಯಿಂದ ತುಮಕೂರು ಜಿಲ್ಲೆಗೆ ನೀರು ಹರಿಸಲು, ಭೂಮಿಯ 200 ಅಡಿ ಆಳದಲ್ಲಿ ನಿರ್ಮಾಣ ಮಾಡಿದ ಬಾಗೂರು-ನವಿಲೆ ಸುರಂಗದಿಂದಾಗಿ ಸಂತ್ರಸ್ತರಾದ ಹಳ್ಳಿಗಳ ಪರವಾಗಿ ಒಂದು ದಶಕಗಳ ಕಾಲ ಹೋರಾಟ ನಡೆಸಿದ್ದಾರೆ.
ರೈತ ಹಿತರಕ್ಷಣಾ ಸಮಿತಿ ಸಂಚಾಲಕ ಮತ್ತು ಹಾಸನ ಜಿಲ್ಲಾ ನೀರಾವರಿ ಹೋರಾಟ ಸಮಿತಿಗಳ ಒಕ್ಕೂಟದ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಣೆ. ಇಷ್ಟೇಲ್ಲ ಜನಪರ ಹೋರಾಟ ನಡೆಸುವ ಮೂಲಕ ಜಿಲ್ಲೆಯಲ್ಲಿ ಜನರ ಪ್ರೀತಿ ಗಳಿಸಿದ್ದ ಶಿವಾನಂದ ತಗಡೂರು ಬದುಕಿಗಾಗಿ ಆಯ್ಕೆ ಮಾಡಿಕೊಂಡಿದ್ದು ಪತ್ರಿಕಾ ಕ್ಷೇತ್ರವನ್ನು. ಹಾಸನ ಜಿಲ್ಲೆಯ ಜನಮಿತ್ರ ದಿನ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶ ಮಾಡಿದ ಶಿವಾನಂದ ಅವರು, ಜ್ಞಾನದೀಪ, ಈ ವಾರ ಕರ್ನಾಟಕ, ಜನವಾಹಿನಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
ವಿಶೇಷವಾಗಿ ವಿಜಯಕರ್ನಾಟಕ ಪತ್ರಿಕೆ ಪ್ರಾರಂಭದಿಂದಲೂ 12 ವರ್ಷಗಳ ಕಾಲ ಹಿರಿಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದಾರೆ. ಆನಂತರ ವಿಜಯವಾಣಿ ಪತ್ರಿಕೆ ಪ್ರಾರಂಭವಾದ ಬಳಿಕ ಬೆಂಗಳೂರಿನಲ್ಲಿ ವಿಶೇಷ ಹಿರಿಯ
ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹಾಸನದಿಂದ ಬೆಂಗಳೂರಿಗೆ ಆಗಮಿಸಿದ ಶಿವಾನಂದ ತಗಡೂರು, ಬೆಂಗಳೂರಿನಲ್ಲಿ ಕೇವಲ ಪತ್ರಿಕಾ
ಕ್ಷೇತ್ರಕ್ಕಷ್ಟೇ ಸೀಮಿತವಾಗದೇ ವೃತ್ತಿಧರ್ಮ ಜತೆಗೆ ಸಾಹಿತ್ಯ, ಸಾಂಸ್ಕೃತಿಕ ಸಂಘಟನೆಗಳಲ್ಲಿ ಸಕ್ರಿಯರಾಗಿ ಹಿರಿಯ ಸಾಹಿತಿಗಳು, ಹೋರಾಟಗಾರರು, ಸಜ್ಜನ
ರಾಜಕಾರಣಿಗಳು, ದಕ್ಷ ಅಧಿಕಾರಿಗಳ ಪ್ರೀತಿ ಗಳಿಸಿದ್ದಾರೆ. ಜನಮಿತ್ರ ಪತ್ರಿಕೆಯ 50ನೇ ವರ್ಷದ ಸಂಭ್ರಮ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಹಾಸನ
ಜಿಲ್ಲಾ ಸಮಾವೇಶಕ್ಕೆ ತಮ್ಮ ಸಂಪಾದಕತ್ವದಲ್ಲಿ ಸ್ಮರಣ ಸಂಚಿಕೆ ತಂದ ಕೀರ್ತಿ ಇವರದ್ದಾಗಿದೆ.
ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ 4 ವರ್ಷ ಕಾರ್ಯನಿರ್ವಹಿಸಿದ್ದ ವೇಳೆ, ಬಹಳ ವರ್ಷದ ಕನಸಾಗಿದ್ದ ಪತ್ರಕರ್ತರ ಭವನ ನಿರ್ಮಾಣ ಕೈಗೆತ್ತಿಕೊಂಡು, ಒಂದೇ ವರ್ಷದಲ್ಲಿ ಶಂಕುಸ್ಥಾಪನೆ ಮಾಡಿ ಕಟ್ಟಡ ಪೂರ್ಣಗೊಳಿಸಿ ಉದ್ಘಾಟಿಸಿದ್ದು ಇಡೀ ರಾಜ್ಯಕ್ಕೆ ಮಾದರಿ ಆಗಿದೆ.
ಶ್ರವಣಬೆಳಗೊಳದಲ್ಲಿ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸಿದ ಹೆಗ್ಗಳಿಕೆ. ಬೇಲೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಸಂಘದ ಪದಾಧಿಕಾರಿಗಳ ಸಮಾವೇಶ. ಮಾಧ್ಯಮ ಅಕಾಡೆಮಿ ಜತೆಯಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮ.
2011ರಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾಗಿದ್ದು, ಪ್ರಸ್ತುತ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.
ಹತ್ತು ಹಲವಾರು ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ ಶಿವಾನಂದ ತಗಡೂರು ಅವರಿಗೆ ಅತ್ಯುತ್ತಮ ವಿಮರ್ಶಾತ್ಮಕ ವರದಿಗಾಗಿ ನೀಡುವ ಖಾದ್ರಿಶಾಮಣ್ಣ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂಘ ಸಂಸ್ಥೆಗಳಿಂದ ಸನ್ಮಾನಗಳು ಹುಡುಕಿಕೊಂಡು ಬಂದಿವೆ. ಹಲವಾರು ಬಾರಿ ವಿದೇಶ ಪ್ರವಾಸ. ಶ್ರೀಲಂಕಾ ಪ್ರಧಾನಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿರುವುದು ವಿಶೇಷ.
ಪತ್ರಕರ್ತರಲ್ಲಿ ಬೆಟ್ಟದಷ್ಟು ನಿರೀಕ್ಷೆ ಇವೆ
ಶಿವಾನಂದ ತಗಡೂರು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂಬ ಸುದ್ದಿ ರಾಜ್ಯದ ಬಹಳಷ್ಟು ಪತ್ರಕರ್ತರಲ್ಲಿ ನೂರಾರು ಕನಸುಗಳನ್ನು ಬಿತ್ತಿವೆ. ಕಾರ್ಯನಿರತ ಪತ್ರಕರ್ತರಿಗೆ ಸದಸ್ಯತ್ವ ನೀಡುವ ಜತೆಗೆ, ಸಂಘವನ್ನು ಶುದ್ಧೀಕರಿಸುವ ಸವಾಲು ನೂತನ
ಅಧ್ಯಕ್ಷರ ಮುಂದಿದೆ.
ಸಂಘದಿಂದ ನೀಡುವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ ಆಯ್ಕೆ ಮಾಡುವುದು, ಸಂಘದ
ಹಣಕಾಸು ವಹಿವಾಟು ಪಾರದರ್ಶಕವಾಗಿರುವಂತೆ ಜಾಗ್ರತೆ ವಹಿಸಬೇಕಾಗಿದೆ. ಮಾನ್ಯತೆ ಪಡೆದ ಪತ್ರಕರ್ತರಿಗೆ ದೊರೆಯುತ್ತಿರುವ ಉಚಿತ ಬಸ್ ಸೌಲಭ್ಯ, ಆರೋಗ್ಯ ವಿಮೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ರಾಜ್ಯದ ಎಲ್ಲ ಪತ್ರಕರ್ತರಿಗೂ ದೊರೆಯುವಂತೆ ಮಾಡಬೇಕಾಗಿದೆ.
ರೈತಕುಟುಂಬದ ಹಿನ್ನೆಲೆಯಿಂದ ಪತ್ರಿಕಾ ಕ್ಷೇತ್ರಕ್ಕೆ ಬಂದಿರುವ ಶಿವಾನಂದ ತಗಡೂರು ಇಂತಹ ಹತ್ತಾರು ಸವಾಲುಗಳನ್ನು ದಿಟ್ಟವಾಗಿ ಎದುರಿಸಿ, ಸಂಘದ ಘನತೆ ಹೆಚ್ಚಿಸಬೇಕಾಗಿದೆ. ಇದು ರಾಜ್ಯದ ಎಲ್ಲ ಪತ್ರಕರ್ತರೆಲ್ಲರ ಆಶಯ, ಒತ್ತಾಸೆ.

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.
ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.
ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


