ದಿನದ ಸುದ್ದಿ
ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಿನ್ನೆಲೆ ಇಲ್ಲಿದೆ ನೋಡಿ
ಸುದ್ದಿದಿನ, ಬೆಂಗಳೂರು: ಪತ್ರಕರ್ತರ ಸಂಘ ಎಂದಾಕ್ಷಣ ಕಾರ್ಯಮರೆತವರ ಸಂಖ್ಯೆಯೇ ಹೆಚ್ಚು ಎಂಬುದು ಸಂಘದಿಂದ ದೂರವಿರುವ ಕಾರ್ಯನಿರತ ಪತ್ರಕರ್ತರ ದೂರು. ಇಂತಹ ದೂರು ಬಹುತೇಕ ವರ್ಷದಿಂದ ಕೇಳಿ ಬರುತ್ತಲೇ ಇದೆ. ಇದು ಸತ್ಯವಾದ ಮಾತು ಎಂಬುದರಲ್ಲಿ ಸಂಶಯವಿಲ್ಲ. ಇದನ್ನು ಅಳಿಸಬೇಕೆಂದು ಸಂಘದಲ್ಲಿನ ಕೆಲವರ ಹೋರಾಟಕ್ಕೆ ಇಲ್ಲಿಯವರೆಗೂ ಮನ್ನಣೆ ದೊರೆತಿಲ್ಲ.
ಪೀತಪತ್ರಿಕೋದ್ಯಮ ಹೆಚ್ಚಾಗಿದ್ದು, ಆರ್ಎನ್ಐ ಪಡೆದು ವರ್ಷಕ್ಕೆ ಒಂದೆರಡು ಬಾರಿ ಪತ್ರಿಕೆತಂದಾಕ್ಷಣ ಆತ ತನ್ನ ಜೀವಿತಾವಧಿ ಕೊನೆಯವರೆಗೂ ಪತ್ರಕರ್ತನ ಪಟ್ಟ ಕಳೆದುಕೊಳ್ಳುವುದಿಲ್ಲ. ಜತೆಗೆ ಇದಕ್ಕೆ ಪತ್ರಕರ್ತ ಸಂಘದಲ್ಲಿ ಸದಸ್ಯತ್ವ ಕೂಡ ಸಾಥ್ ನೀಡುತ್ತದೆ. ಇದು ಹತ್ತಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಕೆಟ್ಟ ಪದ್ಧತಿ. ಈ ಕಾರಣಕ್ಕೆ ಕಾರ್ಯನಿರತಪತ್ರಕರ್ತರು ಸಂಘದಲ್ಲಿ ಸದಸ್ಯತ್ವ ಪಡೆಯಲು ಹಿಂಜರಿಯುತ್ತಾರೆ.
ಅದರಲ್ಲೂ ಇತ್ತೀಚೆಗೆ ರಾಜ್ಯಾಧ್ಯಕ್ಷರಾಗಿದ್ದ ಎನ್.ರಾಜು ವಿರುದ್ಧ ಗಂಭೀರ ಆರೋಪಗಳು ಕೇಳಿಬಂದು ಇಡೀ ಸಂಘವನ್ನು ಬೀದಿಗೆ ತಂದು ನಿಲ್ಲಿಸಿತ್ತು. ಜತೆಗೆ ಬೆಂಗಳೂರು ಸಮೀಪದ ಠಾಣೆಯೊಂದರಲ್ಲಿ ರಾಜ್ಯಾಧ್ಯಕ್ಷರ ವಿರುದ್ಧವೇ ದೂರು ದಾಖಲು. ಇದರಿಂದ ನೈತಿಕ ಹೊಣೆವೊತ್ತು ಎನ್.ರಾಜು ರಾಜೀನಾಮೆ ನೀಡಿದ್ದಾರೆ. ಸಂಘದ ಘನತೆ, ಗೌರವ ಉಳಿಸಲು ಅ.5ರಂದು ಬೆಂಗಳೂರಿನ ಕಂದಾಯ ಭವನದಲ್ಲಿರುವ ಸಂಘದ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ ಸಂಘದ ಹಿರಿಯ ಉಪಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ವಿಶೇಷವೆಂದರೆ ಪ್ರಥಮ ಬಾರಿಗೆ ಸಂಘದ ಸದಸ್ಯರು ಮುಕ್ತವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಸತತ ನಾಲ್ಕು ಗಂಟೆಗಳ ಕಾಲ ಸುಧೀರ್ಘ ಚರ್ಚೆ, ಅದರಲ್ಲೂ ಪ್ರತಿ ಸದಸ್ಯರೂ ಸಂಘವನ್ನು ಉಳಿಸುವ ಜತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸಹಕಾರದಿಂದ ಡಿವಿಜಿ ಅವರಿಂದ ಸ್ಥಾಪನೆಗೊಂಡ ಸಂಘವನ್ನು ಬಲಿಷ್ಠಗೊಳಿಸಬೇಕು. ಸಂಘದತ್ತ ಕಾರ್ಯನಿರತ ಪತ್ರಕರ್ತರು ಮುಖ ಮಾಡುವಂತೆ ಕಾರ್ಯಪ್ರವೃತ್ತರಾಗಬೇಕು ಎಂಬ ಕೂಗು ಹಾಕಿದರು.
ಈ ನಿಟ್ಟಿನಲ್ಲಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ತಗಡೂರು ಅವರೇ ಸೂಕ್ತ ಆಯ್ಕೆಯಾಗಿದ್ದು, ಅವರನ್ನು ಖಾಯಂ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಎಲ್ಲ ಸದಸ್ಯರೂ ಧ್ವನಿಯೆತ್ತಿದರು. ಆರಂಭದಲ್ಲಿ ಖಾಯಂ ಅಧ್ಯಕ್ಷರ ಆಯ್ಕೆಗೆ ವಿರೋಧಿಸಿದ್ದ ಇಬ್ಬರು ಸದಸ್ಯರು ಕೂಡ ಕೊನೆಗೆ ಸಮ್ಮತಿ ವ್ಯಕ್ತಪಡಿಸುವ ಮೂಲಕ ಸಭೆ ಒಮ್ಮತ ನಿರ್ಣಯಕ್ಕೆ ಬಂದಿತು. ಕೊನೆಗೂ ವಿಜಯವಾಣಿ ಪತ್ರಿಕೆ ವಿಶೇಷ ವರದಿಗಾರ ಶಿವಾನಂದ ತಗಡೂರು (ಮೊ.ನಂ: 9845087374) ರಾಜ್ಯಾಧ್ಯಕ್ಷರಾಗಿ ಸರ್ವಸಮ್ಮತದಿಂದ ಸಭೆಯಲ್ಲಿ ಆಯ್ಕೆಗೊಂಡರು.
ಈ ವೇಳೆ ಸದಸ್ಯರೆಲ್ಲರೂ ನೂತನ ಅಧ್ಯಕ್ಷರಿಗೆ ಅಭಿನಂದಿಸಿ, ಸಂಘವನ್ನು ಬಲಿಷ್ಠಗೊಳಿಸಬೇಕು. ಜತೆಗೆ ಸಂಘಕ್ಕೆ ಈಗ ಅಂಟಿರುವ ಕಳಂಕ ತೊಳೆಯಲು ಕಂಕಣಬದ್ಧರಾಗಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಮತ್ತಿಕೆರೆ ಜಯರಾಮ್, ಕಾರ್ಯದರ್ಶಿ ಲಿಥಕರ್ ಜೈನ್, ಸೊಗಡು ವೆಂಕಟೇಶ್, ಮೈಸೂರಿನ ಸಿ.ಕೆ.ಮಹೇಂದ್ರ, ಲೋಕೇಶ್ಬಾಬು, ಟೆಲೆಕ್ಸ್ ಎನ್.ರವಿಕುಮಾರ್, ರವೀಶ್, ಚಿಕ್ಕಮಗಳೂರು ಶ್ರೀನಿವಾಸ್, ದಾವಣಗೆರೆ ಚಂದ್ರಪ್ಪ, ದುರುಗೇಶಪ್ಪ, ಕುಟ್ಟಪ್ಪ, ಲೊಚೇನೇಶ್ ಹೂಗಾರ್, ನಿಂಗಪ್ಪ ಚಾವಡಿ, ಸತ್ಯನಾರಾಯಣ, ಶಿವಮೊಗ್ಗ ವೈದ್ಯ, ಸೋಮಶೇಖರ್ ಗಾಂಧಿ, ಕೆರಗೋಡು ಸೇರಿದಂತೆ ವಿವಿಧ ಜಿಲ್ಲೆಗಳ
ಅಧ್ಯಕ್ಷರು, ರಾಜ್ಯ ಸಮಿತಿ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ನೂತನ ಅಧ್ಯಕ್ಷರಾದ ಶಿವಾನಂದ ತಗಡೂರು ಹಿನ್ನೆಲೆ
ಶಿವಾನಂದ ತಗಡೂರು ಚನ್ನರಾಯಪಟ್ಟಣ ತಾಲೂಕು ತಗಡೂರಿನ ರೈತ ಕುಟುಂಬದ ಕಮಲಮ್ಮ, ವೀರೇಗೌಡ
ದಂಪತಿ ಪುತ್ರನಾಗಿ ಜುಲೈ 1, 1971ಲ್ಲಿ ಜನನ. ಎಸ್ಎಸ್ಎಲ್ಸಿ ತನಕ ಹುಟ್ಟೂರಿನಲ್ಲಿಯೇ ವಿದ್ಯಾಭ್ಯಾಸ. ಹಾಸನದಲ್ಲಿ ವಿದ್ಯಾಭ್ಯಾಸ ಮುಂದುವರಿಕೆ. ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘಟನೆ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಣೆ. ಗೊರೂರು ಹೇಮಾವತಿ ಯೋಜನೆಯಿಂದ ತುಮಕೂರು ಜಿಲ್ಲೆಗೆ ನೀರು ಹರಿಸಲು, ಭೂಮಿಯ 200 ಅಡಿ ಆಳದಲ್ಲಿ ನಿರ್ಮಾಣ ಮಾಡಿದ ಬಾಗೂರು-ನವಿಲೆ ಸುರಂಗದಿಂದಾಗಿ ಸಂತ್ರಸ್ತರಾದ ಹಳ್ಳಿಗಳ ಪರವಾಗಿ ಒಂದು ದಶಕಗಳ ಕಾಲ ಹೋರಾಟ ನಡೆಸಿದ್ದಾರೆ.
ರೈತ ಹಿತರಕ್ಷಣಾ ಸಮಿತಿ ಸಂಚಾಲಕ ಮತ್ತು ಹಾಸನ ಜಿಲ್ಲಾ ನೀರಾವರಿ ಹೋರಾಟ ಸಮಿತಿಗಳ ಒಕ್ಕೂಟದ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಣೆ. ಇಷ್ಟೇಲ್ಲ ಜನಪರ ಹೋರಾಟ ನಡೆಸುವ ಮೂಲಕ ಜಿಲ್ಲೆಯಲ್ಲಿ ಜನರ ಪ್ರೀತಿ ಗಳಿಸಿದ್ದ ಶಿವಾನಂದ ತಗಡೂರು ಬದುಕಿಗಾಗಿ ಆಯ್ಕೆ ಮಾಡಿಕೊಂಡಿದ್ದು ಪತ್ರಿಕಾ ಕ್ಷೇತ್ರವನ್ನು. ಹಾಸನ ಜಿಲ್ಲೆಯ ಜನಮಿತ್ರ ದಿನ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶ ಮಾಡಿದ ಶಿವಾನಂದ ಅವರು, ಜ್ಞಾನದೀಪ, ಈ ವಾರ ಕರ್ನಾಟಕ, ಜನವಾಹಿನಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
ವಿಶೇಷವಾಗಿ ವಿಜಯಕರ್ನಾಟಕ ಪತ್ರಿಕೆ ಪ್ರಾರಂಭದಿಂದಲೂ 12 ವರ್ಷಗಳ ಕಾಲ ಹಿರಿಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದಾರೆ. ಆನಂತರ ವಿಜಯವಾಣಿ ಪತ್ರಿಕೆ ಪ್ರಾರಂಭವಾದ ಬಳಿಕ ಬೆಂಗಳೂರಿನಲ್ಲಿ ವಿಶೇಷ ಹಿರಿಯ
ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹಾಸನದಿಂದ ಬೆಂಗಳೂರಿಗೆ ಆಗಮಿಸಿದ ಶಿವಾನಂದ ತಗಡೂರು, ಬೆಂಗಳೂರಿನಲ್ಲಿ ಕೇವಲ ಪತ್ರಿಕಾ
ಕ್ಷೇತ್ರಕ್ಕಷ್ಟೇ ಸೀಮಿತವಾಗದೇ ವೃತ್ತಿಧರ್ಮ ಜತೆಗೆ ಸಾಹಿತ್ಯ, ಸಾಂಸ್ಕೃತಿಕ ಸಂಘಟನೆಗಳಲ್ಲಿ ಸಕ್ರಿಯರಾಗಿ ಹಿರಿಯ ಸಾಹಿತಿಗಳು, ಹೋರಾಟಗಾರರು, ಸಜ್ಜನ
ರಾಜಕಾರಣಿಗಳು, ದಕ್ಷ ಅಧಿಕಾರಿಗಳ ಪ್ರೀತಿ ಗಳಿಸಿದ್ದಾರೆ. ಜನಮಿತ್ರ ಪತ್ರಿಕೆಯ 50ನೇ ವರ್ಷದ ಸಂಭ್ರಮ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಹಾಸನ
ಜಿಲ್ಲಾ ಸಮಾವೇಶಕ್ಕೆ ತಮ್ಮ ಸಂಪಾದಕತ್ವದಲ್ಲಿ ಸ್ಮರಣ ಸಂಚಿಕೆ ತಂದ ಕೀರ್ತಿ ಇವರದ್ದಾಗಿದೆ.
ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ 4 ವರ್ಷ ಕಾರ್ಯನಿರ್ವಹಿಸಿದ್ದ ವೇಳೆ, ಬಹಳ ವರ್ಷದ ಕನಸಾಗಿದ್ದ ಪತ್ರಕರ್ತರ ಭವನ ನಿರ್ಮಾಣ ಕೈಗೆತ್ತಿಕೊಂಡು, ಒಂದೇ ವರ್ಷದಲ್ಲಿ ಶಂಕುಸ್ಥಾಪನೆ ಮಾಡಿ ಕಟ್ಟಡ ಪೂರ್ಣಗೊಳಿಸಿ ಉದ್ಘಾಟಿಸಿದ್ದು ಇಡೀ ರಾಜ್ಯಕ್ಕೆ ಮಾದರಿ ಆಗಿದೆ.
ಶ್ರವಣಬೆಳಗೊಳದಲ್ಲಿ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸಿದ ಹೆಗ್ಗಳಿಕೆ. ಬೇಲೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಸಂಘದ ಪದಾಧಿಕಾರಿಗಳ ಸಮಾವೇಶ. ಮಾಧ್ಯಮ ಅಕಾಡೆಮಿ ಜತೆಯಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮ.
2011ರಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾಗಿದ್ದು, ಪ್ರಸ್ತುತ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.
ಹತ್ತು ಹಲವಾರು ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ ಶಿವಾನಂದ ತಗಡೂರು ಅವರಿಗೆ ಅತ್ಯುತ್ತಮ ವಿಮರ್ಶಾತ್ಮಕ ವರದಿಗಾಗಿ ನೀಡುವ ಖಾದ್ರಿಶಾಮಣ್ಣ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂಘ ಸಂಸ್ಥೆಗಳಿಂದ ಸನ್ಮಾನಗಳು ಹುಡುಕಿಕೊಂಡು ಬಂದಿವೆ. ಹಲವಾರು ಬಾರಿ ವಿದೇಶ ಪ್ರವಾಸ. ಶ್ರೀಲಂಕಾ ಪ್ರಧಾನಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿರುವುದು ವಿಶೇಷ.
ಪತ್ರಕರ್ತರಲ್ಲಿ ಬೆಟ್ಟದಷ್ಟು ನಿರೀಕ್ಷೆ ಇವೆ
ಶಿವಾನಂದ ತಗಡೂರು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂಬ ಸುದ್ದಿ ರಾಜ್ಯದ ಬಹಳಷ್ಟು ಪತ್ರಕರ್ತರಲ್ಲಿ ನೂರಾರು ಕನಸುಗಳನ್ನು ಬಿತ್ತಿವೆ. ಕಾರ್ಯನಿರತ ಪತ್ರಕರ್ತರಿಗೆ ಸದಸ್ಯತ್ವ ನೀಡುವ ಜತೆಗೆ, ಸಂಘವನ್ನು ಶುದ್ಧೀಕರಿಸುವ ಸವಾಲು ನೂತನ
ಅಧ್ಯಕ್ಷರ ಮುಂದಿದೆ.
ಸಂಘದಿಂದ ನೀಡುವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ ಆಯ್ಕೆ ಮಾಡುವುದು, ಸಂಘದ
ಹಣಕಾಸು ವಹಿವಾಟು ಪಾರದರ್ಶಕವಾಗಿರುವಂತೆ ಜಾಗ್ರತೆ ವಹಿಸಬೇಕಾಗಿದೆ. ಮಾನ್ಯತೆ ಪಡೆದ ಪತ್ರಕರ್ತರಿಗೆ ದೊರೆಯುತ್ತಿರುವ ಉಚಿತ ಬಸ್ ಸೌಲಭ್ಯ, ಆರೋಗ್ಯ ವಿಮೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ರಾಜ್ಯದ ಎಲ್ಲ ಪತ್ರಕರ್ತರಿಗೂ ದೊರೆಯುವಂತೆ ಮಾಡಬೇಕಾಗಿದೆ.
ರೈತಕುಟುಂಬದ ಹಿನ್ನೆಲೆಯಿಂದ ಪತ್ರಿಕಾ ಕ್ಷೇತ್ರಕ್ಕೆ ಬಂದಿರುವ ಶಿವಾನಂದ ತಗಡೂರು ಇಂತಹ ಹತ್ತಾರು ಸವಾಲುಗಳನ್ನು ದಿಟ್ಟವಾಗಿ ಎದುರಿಸಿ, ಸಂಘದ ಘನತೆ ಹೆಚ್ಚಿಸಬೇಕಾಗಿದೆ. ಇದು ರಾಜ್ಯದ ಎಲ್ಲ ಪತ್ರಕರ್ತರೆಲ್ಲರ ಆಶಯ, ಒತ್ತಾಸೆ.

ದಿನದ ಸುದ್ದಿ
ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ
ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ ಕಾಯಿಲೆಗಳ ಚಿಕಿತ್ಸಾ ಸೌಲಭ್ಯವನ್ನು ವಿಸ್ತರಿಸಿದೆ.
ಈ ಉಪಕ್ರಮದ ಮೂಲಕ, ಪಾಲಿಸಿದಾರರಿಗೆ ‘ಟಾಕ್ ಟು ಸ್ಟಾರ್’ ಸೇವೆ ಹಾಗೂ ಮನೆ ಬಾಗಿಲಿನ ಆರೋಗ್ಯ ಸೇವೆ ಕಲ್ಪಿಸಿಕೊಡಲಾಗುತ್ತಿದೆ. ಇದರ ನೆರವಿನಿಂದ ಆರಂಭಿಕ ಹಂತದಲ್ಲೇ ಅಗತ್ಯ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆಗಳ ನೆರವು ಒದಗಿಸಲಾಗುತ್ತಿದೆ. ಜೊತೆಗೆ, ಸಾರ್ವಜನಿಕರು ಸ್ಟಾರ್ ಹೆಲ್ತ್ ಕಸ್ಟಮರ್ ಆ್ಯಪ್ ಮೂಲಕ 24*7 ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಸ್ಟಾರ್ ಹೆಲ್ತ್ ಇನ್ಶುರನ್ಸ್ ಕರ್ನಾಟಕ ವಹಿವಾಟು ವಿಭಾಗದ ಮುಖ್ಯಸ್ಥ ಆದಿತ್ಯ ಓಂಪ್ರಕಾಶ್ ಬಿಯಾನಿ ಹೇಳಿದ್ದಾರೆ.
ಪಾಲಿಸಿದಾರರಿಗೆ ಅನಿಯಮಿತ ಟೆಲಿ ಸಮಾಲೋಚನೆಯಡಿ ಪಾಲಿಸಿ ಅವಧಿಯಲ್ಲಿ ಎಷ್ಟೇ ಬಾರಿ ಬೇಕಾದರೂ ದೂರವಾಣಿ ಅಥವಾ ಆನ್ಲೈನ್ ಮೂಲಕ ವೈದ್ಯರ ಸಲಹೆ ಪಡೆಯಬಹುದು. ಜ್ವರ ಅಥವಾ ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಸಲಹೆ ಪಡೆಯಲು ಇದು ನೆರವಾಗುತ್ತದೆ. ಸಾರ್ವಜನಿಕರಿಗೆ ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆಯೂ ಇರುತ್ತದೆ.
ಅಂತೆಯೇ ಪಾಲಿಸಿದಾರರು ‘ಟಾಕ್ ಟು ಸ್ಟಾರ್’ ಸೇವೆಯಡಿ 7200 222 333 ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದು. ನಗದುರಹಿತ ಮನೆ ಬಾಗಿಲಿನ ಆರೋಗ್ಯ ಸೇವೆಯಡಿ ಅರ್ಹ ಪಾಲಿಸಿದಾರರಿಗೆ ಸ್ಟಾರ್ ಹೆಲ್ತ್ ಕ್ಯಾಷ್ಲೆಸ್- ಸೌಲಭ್ಯದ ಮೂಲಕ ಮನೆ ಬಾಗಿಲಿಗೇ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ವೈದ್ಯರ ಸಲಹೆಯಂತೆ ನಸಿರ್ಂಗ್ ಸೇವೆ, ರಕ್ತ ಪರೀಕ್ಷೆ, ಆರೋಗ್ಯ ಮೇಲ್ವಿಚಾರಣೆ, ಐವಿ ಫ್ಲೂಯಿಡ್ಸ್ ಹಾಗೂ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ಮನೆಯಲ್ಲೇ ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


