ದಿನದ ಸುದ್ದಿ
ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಿನ್ನೆಲೆ ಇಲ್ಲಿದೆ ನೋಡಿ
ಸುದ್ದಿದಿನ, ಬೆಂಗಳೂರು: ಪತ್ರಕರ್ತರ ಸಂಘ ಎಂದಾಕ್ಷಣ ಕಾರ್ಯಮರೆತವರ ಸಂಖ್ಯೆಯೇ ಹೆಚ್ಚು ಎಂಬುದು ಸಂಘದಿಂದ ದೂರವಿರುವ ಕಾರ್ಯನಿರತ ಪತ್ರಕರ್ತರ ದೂರು. ಇಂತಹ ದೂರು ಬಹುತೇಕ ವರ್ಷದಿಂದ ಕೇಳಿ ಬರುತ್ತಲೇ ಇದೆ. ಇದು ಸತ್ಯವಾದ ಮಾತು ಎಂಬುದರಲ್ಲಿ ಸಂಶಯವಿಲ್ಲ. ಇದನ್ನು ಅಳಿಸಬೇಕೆಂದು ಸಂಘದಲ್ಲಿನ ಕೆಲವರ ಹೋರಾಟಕ್ಕೆ ಇಲ್ಲಿಯವರೆಗೂ ಮನ್ನಣೆ ದೊರೆತಿಲ್ಲ.
ಪೀತಪತ್ರಿಕೋದ್ಯಮ ಹೆಚ್ಚಾಗಿದ್ದು, ಆರ್ಎನ್ಐ ಪಡೆದು ವರ್ಷಕ್ಕೆ ಒಂದೆರಡು ಬಾರಿ ಪತ್ರಿಕೆತಂದಾಕ್ಷಣ ಆತ ತನ್ನ ಜೀವಿತಾವಧಿ ಕೊನೆಯವರೆಗೂ ಪತ್ರಕರ್ತನ ಪಟ್ಟ ಕಳೆದುಕೊಳ್ಳುವುದಿಲ್ಲ. ಜತೆಗೆ ಇದಕ್ಕೆ ಪತ್ರಕರ್ತ ಸಂಘದಲ್ಲಿ ಸದಸ್ಯತ್ವ ಕೂಡ ಸಾಥ್ ನೀಡುತ್ತದೆ. ಇದು ಹತ್ತಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಕೆಟ್ಟ ಪದ್ಧತಿ. ಈ ಕಾರಣಕ್ಕೆ ಕಾರ್ಯನಿರತಪತ್ರಕರ್ತರು ಸಂಘದಲ್ಲಿ ಸದಸ್ಯತ್ವ ಪಡೆಯಲು ಹಿಂಜರಿಯುತ್ತಾರೆ.
ಅದರಲ್ಲೂ ಇತ್ತೀಚೆಗೆ ರಾಜ್ಯಾಧ್ಯಕ್ಷರಾಗಿದ್ದ ಎನ್.ರಾಜು ವಿರುದ್ಧ ಗಂಭೀರ ಆರೋಪಗಳು ಕೇಳಿಬಂದು ಇಡೀ ಸಂಘವನ್ನು ಬೀದಿಗೆ ತಂದು ನಿಲ್ಲಿಸಿತ್ತು. ಜತೆಗೆ ಬೆಂಗಳೂರು ಸಮೀಪದ ಠಾಣೆಯೊಂದರಲ್ಲಿ ರಾಜ್ಯಾಧ್ಯಕ್ಷರ ವಿರುದ್ಧವೇ ದೂರು ದಾಖಲು. ಇದರಿಂದ ನೈತಿಕ ಹೊಣೆವೊತ್ತು ಎನ್.ರಾಜು ರಾಜೀನಾಮೆ ನೀಡಿದ್ದಾರೆ. ಸಂಘದ ಘನತೆ, ಗೌರವ ಉಳಿಸಲು ಅ.5ರಂದು ಬೆಂಗಳೂರಿನ ಕಂದಾಯ ಭವನದಲ್ಲಿರುವ ಸಂಘದ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ ಸಂಘದ ಹಿರಿಯ ಉಪಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ವಿಶೇಷವೆಂದರೆ ಪ್ರಥಮ ಬಾರಿಗೆ ಸಂಘದ ಸದಸ್ಯರು ಮುಕ್ತವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಸತತ ನಾಲ್ಕು ಗಂಟೆಗಳ ಕಾಲ ಸುಧೀರ್ಘ ಚರ್ಚೆ, ಅದರಲ್ಲೂ ಪ್ರತಿ ಸದಸ್ಯರೂ ಸಂಘವನ್ನು ಉಳಿಸುವ ಜತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸಹಕಾರದಿಂದ ಡಿವಿಜಿ ಅವರಿಂದ ಸ್ಥಾಪನೆಗೊಂಡ ಸಂಘವನ್ನು ಬಲಿಷ್ಠಗೊಳಿಸಬೇಕು. ಸಂಘದತ್ತ ಕಾರ್ಯನಿರತ ಪತ್ರಕರ್ತರು ಮುಖ ಮಾಡುವಂತೆ ಕಾರ್ಯಪ್ರವೃತ್ತರಾಗಬೇಕು ಎಂಬ ಕೂಗು ಹಾಕಿದರು.
ಈ ನಿಟ್ಟಿನಲ್ಲಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ತಗಡೂರು ಅವರೇ ಸೂಕ್ತ ಆಯ್ಕೆಯಾಗಿದ್ದು, ಅವರನ್ನು ಖಾಯಂ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಎಲ್ಲ ಸದಸ್ಯರೂ ಧ್ವನಿಯೆತ್ತಿದರು. ಆರಂಭದಲ್ಲಿ ಖಾಯಂ ಅಧ್ಯಕ್ಷರ ಆಯ್ಕೆಗೆ ವಿರೋಧಿಸಿದ್ದ ಇಬ್ಬರು ಸದಸ್ಯರು ಕೂಡ ಕೊನೆಗೆ ಸಮ್ಮತಿ ವ್ಯಕ್ತಪಡಿಸುವ ಮೂಲಕ ಸಭೆ ಒಮ್ಮತ ನಿರ್ಣಯಕ್ಕೆ ಬಂದಿತು. ಕೊನೆಗೂ ವಿಜಯವಾಣಿ ಪತ್ರಿಕೆ ವಿಶೇಷ ವರದಿಗಾರ ಶಿವಾನಂದ ತಗಡೂರು (ಮೊ.ನಂ: 9845087374) ರಾಜ್ಯಾಧ್ಯಕ್ಷರಾಗಿ ಸರ್ವಸಮ್ಮತದಿಂದ ಸಭೆಯಲ್ಲಿ ಆಯ್ಕೆಗೊಂಡರು.
ಈ ವೇಳೆ ಸದಸ್ಯರೆಲ್ಲರೂ ನೂತನ ಅಧ್ಯಕ್ಷರಿಗೆ ಅಭಿನಂದಿಸಿ, ಸಂಘವನ್ನು ಬಲಿಷ್ಠಗೊಳಿಸಬೇಕು. ಜತೆಗೆ ಸಂಘಕ್ಕೆ ಈಗ ಅಂಟಿರುವ ಕಳಂಕ ತೊಳೆಯಲು ಕಂಕಣಬದ್ಧರಾಗಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಮತ್ತಿಕೆರೆ ಜಯರಾಮ್, ಕಾರ್ಯದರ್ಶಿ ಲಿಥಕರ್ ಜೈನ್, ಸೊಗಡು ವೆಂಕಟೇಶ್, ಮೈಸೂರಿನ ಸಿ.ಕೆ.ಮಹೇಂದ್ರ, ಲೋಕೇಶ್ಬಾಬು, ಟೆಲೆಕ್ಸ್ ಎನ್.ರವಿಕುಮಾರ್, ರವೀಶ್, ಚಿಕ್ಕಮಗಳೂರು ಶ್ರೀನಿವಾಸ್, ದಾವಣಗೆರೆ ಚಂದ್ರಪ್ಪ, ದುರುಗೇಶಪ್ಪ, ಕುಟ್ಟಪ್ಪ, ಲೊಚೇನೇಶ್ ಹೂಗಾರ್, ನಿಂಗಪ್ಪ ಚಾವಡಿ, ಸತ್ಯನಾರಾಯಣ, ಶಿವಮೊಗ್ಗ ವೈದ್ಯ, ಸೋಮಶೇಖರ್ ಗಾಂಧಿ, ಕೆರಗೋಡು ಸೇರಿದಂತೆ ವಿವಿಧ ಜಿಲ್ಲೆಗಳ
ಅಧ್ಯಕ್ಷರು, ರಾಜ್ಯ ಸಮಿತಿ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ನೂತನ ಅಧ್ಯಕ್ಷರಾದ ಶಿವಾನಂದ ತಗಡೂರು ಹಿನ್ನೆಲೆ
ಶಿವಾನಂದ ತಗಡೂರು ಚನ್ನರಾಯಪಟ್ಟಣ ತಾಲೂಕು ತಗಡೂರಿನ ರೈತ ಕುಟುಂಬದ ಕಮಲಮ್ಮ, ವೀರೇಗೌಡ
ದಂಪತಿ ಪುತ್ರನಾಗಿ ಜುಲೈ 1, 1971ಲ್ಲಿ ಜನನ. ಎಸ್ಎಸ್ಎಲ್ಸಿ ತನಕ ಹುಟ್ಟೂರಿನಲ್ಲಿಯೇ ವಿದ್ಯಾಭ್ಯಾಸ. ಹಾಸನದಲ್ಲಿ ವಿದ್ಯಾಭ್ಯಾಸ ಮುಂದುವರಿಕೆ. ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘಟನೆ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಣೆ. ಗೊರೂರು ಹೇಮಾವತಿ ಯೋಜನೆಯಿಂದ ತುಮಕೂರು ಜಿಲ್ಲೆಗೆ ನೀರು ಹರಿಸಲು, ಭೂಮಿಯ 200 ಅಡಿ ಆಳದಲ್ಲಿ ನಿರ್ಮಾಣ ಮಾಡಿದ ಬಾಗೂರು-ನವಿಲೆ ಸುರಂಗದಿಂದಾಗಿ ಸಂತ್ರಸ್ತರಾದ ಹಳ್ಳಿಗಳ ಪರವಾಗಿ ಒಂದು ದಶಕಗಳ ಕಾಲ ಹೋರಾಟ ನಡೆಸಿದ್ದಾರೆ.
ರೈತ ಹಿತರಕ್ಷಣಾ ಸಮಿತಿ ಸಂಚಾಲಕ ಮತ್ತು ಹಾಸನ ಜಿಲ್ಲಾ ನೀರಾವರಿ ಹೋರಾಟ ಸಮಿತಿಗಳ ಒಕ್ಕೂಟದ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಣೆ. ಇಷ್ಟೇಲ್ಲ ಜನಪರ ಹೋರಾಟ ನಡೆಸುವ ಮೂಲಕ ಜಿಲ್ಲೆಯಲ್ಲಿ ಜನರ ಪ್ರೀತಿ ಗಳಿಸಿದ್ದ ಶಿವಾನಂದ ತಗಡೂರು ಬದುಕಿಗಾಗಿ ಆಯ್ಕೆ ಮಾಡಿಕೊಂಡಿದ್ದು ಪತ್ರಿಕಾ ಕ್ಷೇತ್ರವನ್ನು. ಹಾಸನ ಜಿಲ್ಲೆಯ ಜನಮಿತ್ರ ದಿನ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶ ಮಾಡಿದ ಶಿವಾನಂದ ಅವರು, ಜ್ಞಾನದೀಪ, ಈ ವಾರ ಕರ್ನಾಟಕ, ಜನವಾಹಿನಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
ವಿಶೇಷವಾಗಿ ವಿಜಯಕರ್ನಾಟಕ ಪತ್ರಿಕೆ ಪ್ರಾರಂಭದಿಂದಲೂ 12 ವರ್ಷಗಳ ಕಾಲ ಹಿರಿಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದಾರೆ. ಆನಂತರ ವಿಜಯವಾಣಿ ಪತ್ರಿಕೆ ಪ್ರಾರಂಭವಾದ ಬಳಿಕ ಬೆಂಗಳೂರಿನಲ್ಲಿ ವಿಶೇಷ ಹಿರಿಯ
ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹಾಸನದಿಂದ ಬೆಂಗಳೂರಿಗೆ ಆಗಮಿಸಿದ ಶಿವಾನಂದ ತಗಡೂರು, ಬೆಂಗಳೂರಿನಲ್ಲಿ ಕೇವಲ ಪತ್ರಿಕಾ
ಕ್ಷೇತ್ರಕ್ಕಷ್ಟೇ ಸೀಮಿತವಾಗದೇ ವೃತ್ತಿಧರ್ಮ ಜತೆಗೆ ಸಾಹಿತ್ಯ, ಸಾಂಸ್ಕೃತಿಕ ಸಂಘಟನೆಗಳಲ್ಲಿ ಸಕ್ರಿಯರಾಗಿ ಹಿರಿಯ ಸಾಹಿತಿಗಳು, ಹೋರಾಟಗಾರರು, ಸಜ್ಜನ
ರಾಜಕಾರಣಿಗಳು, ದಕ್ಷ ಅಧಿಕಾರಿಗಳ ಪ್ರೀತಿ ಗಳಿಸಿದ್ದಾರೆ. ಜನಮಿತ್ರ ಪತ್ರಿಕೆಯ 50ನೇ ವರ್ಷದ ಸಂಭ್ರಮ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಹಾಸನ
ಜಿಲ್ಲಾ ಸಮಾವೇಶಕ್ಕೆ ತಮ್ಮ ಸಂಪಾದಕತ್ವದಲ್ಲಿ ಸ್ಮರಣ ಸಂಚಿಕೆ ತಂದ ಕೀರ್ತಿ ಇವರದ್ದಾಗಿದೆ.
ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ 4 ವರ್ಷ ಕಾರ್ಯನಿರ್ವಹಿಸಿದ್ದ ವೇಳೆ, ಬಹಳ ವರ್ಷದ ಕನಸಾಗಿದ್ದ ಪತ್ರಕರ್ತರ ಭವನ ನಿರ್ಮಾಣ ಕೈಗೆತ್ತಿಕೊಂಡು, ಒಂದೇ ವರ್ಷದಲ್ಲಿ ಶಂಕುಸ್ಥಾಪನೆ ಮಾಡಿ ಕಟ್ಟಡ ಪೂರ್ಣಗೊಳಿಸಿ ಉದ್ಘಾಟಿಸಿದ್ದು ಇಡೀ ರಾಜ್ಯಕ್ಕೆ ಮಾದರಿ ಆಗಿದೆ.
ಶ್ರವಣಬೆಳಗೊಳದಲ್ಲಿ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸಿದ ಹೆಗ್ಗಳಿಕೆ. ಬೇಲೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಸಂಘದ ಪದಾಧಿಕಾರಿಗಳ ಸಮಾವೇಶ. ಮಾಧ್ಯಮ ಅಕಾಡೆಮಿ ಜತೆಯಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮ.
2011ರಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾಗಿದ್ದು, ಪ್ರಸ್ತುತ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.
ಹತ್ತು ಹಲವಾರು ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ ಶಿವಾನಂದ ತಗಡೂರು ಅವರಿಗೆ ಅತ್ಯುತ್ತಮ ವಿಮರ್ಶಾತ್ಮಕ ವರದಿಗಾಗಿ ನೀಡುವ ಖಾದ್ರಿಶಾಮಣ್ಣ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂಘ ಸಂಸ್ಥೆಗಳಿಂದ ಸನ್ಮಾನಗಳು ಹುಡುಕಿಕೊಂಡು ಬಂದಿವೆ. ಹಲವಾರು ಬಾರಿ ವಿದೇಶ ಪ್ರವಾಸ. ಶ್ರೀಲಂಕಾ ಪ್ರಧಾನಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿರುವುದು ವಿಶೇಷ.
ಪತ್ರಕರ್ತರಲ್ಲಿ ಬೆಟ್ಟದಷ್ಟು ನಿರೀಕ್ಷೆ ಇವೆ
ಶಿವಾನಂದ ತಗಡೂರು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂಬ ಸುದ್ದಿ ರಾಜ್ಯದ ಬಹಳಷ್ಟು ಪತ್ರಕರ್ತರಲ್ಲಿ ನೂರಾರು ಕನಸುಗಳನ್ನು ಬಿತ್ತಿವೆ. ಕಾರ್ಯನಿರತ ಪತ್ರಕರ್ತರಿಗೆ ಸದಸ್ಯತ್ವ ನೀಡುವ ಜತೆಗೆ, ಸಂಘವನ್ನು ಶುದ್ಧೀಕರಿಸುವ ಸವಾಲು ನೂತನ
ಅಧ್ಯಕ್ಷರ ಮುಂದಿದೆ.
ಸಂಘದಿಂದ ನೀಡುವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ ಆಯ್ಕೆ ಮಾಡುವುದು, ಸಂಘದ
ಹಣಕಾಸು ವಹಿವಾಟು ಪಾರದರ್ಶಕವಾಗಿರುವಂತೆ ಜಾಗ್ರತೆ ವಹಿಸಬೇಕಾಗಿದೆ. ಮಾನ್ಯತೆ ಪಡೆದ ಪತ್ರಕರ್ತರಿಗೆ ದೊರೆಯುತ್ತಿರುವ ಉಚಿತ ಬಸ್ ಸೌಲಭ್ಯ, ಆರೋಗ್ಯ ವಿಮೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ರಾಜ್ಯದ ಎಲ್ಲ ಪತ್ರಕರ್ತರಿಗೂ ದೊರೆಯುವಂತೆ ಮಾಡಬೇಕಾಗಿದೆ.
ರೈತಕುಟುಂಬದ ಹಿನ್ನೆಲೆಯಿಂದ ಪತ್ರಿಕಾ ಕ್ಷೇತ್ರಕ್ಕೆ ಬಂದಿರುವ ಶಿವಾನಂದ ತಗಡೂರು ಇಂತಹ ಹತ್ತಾರು ಸವಾಲುಗಳನ್ನು ದಿಟ್ಟವಾಗಿ ಎದುರಿಸಿ, ಸಂಘದ ಘನತೆ ಹೆಚ್ಚಿಸಬೇಕಾಗಿದೆ. ಇದು ರಾಜ್ಯದ ಎಲ್ಲ ಪತ್ರಕರ್ತರೆಲ್ಲರ ಆಶಯ, ಒತ್ತಾಸೆ.

ದಿನದ ಸುದ್ದಿ
ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.
ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.
COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.
ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.
‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.
ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


