ದಿನದ ಸುದ್ದಿ
ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ
- ಸಂಜಯ್ ಹೊಯ್ಸಳ
ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ ಮೊಸಳೆ ಸಂತತಿಗಳಿವೆ. ಅವುಗಳೆಂದರೆ..
ಉಪ್ಪು ನೀರಿನ ಮೊಸಳೆ (Saltwater crocodile)
ಮಗ್ಗರ್/ಮಾರ್ಷ್ (Mugger)
ಘಾರಿಯಲ್ (Gharial)
ಇವುಗಳಲ್ಲಿ ಕರ್ನಾಟಕದಲ್ಲಿನ ನದಿಗಳಲ್ಲಿ, ಕೆಲವು ದೊಡ್ಡ ಕೆರೆಗಳಲ್ಲಿ ಕಂಡುಬರುವ ಮೊಸಳೆಗಳು ಮಗ್ಗರ್/ಮಾರ್ಷ್ ಮೊಸಳೆಗಳಾಗಿವೆ. ಕರ್ನಾಟಕದಲ್ಲಿ ಮೊಸಳೆಗಳು ಹೆಚ್ಚಾಗಿ ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ಪಾತ್ರದಲ್ಲಿ ಕಂಡುಬರುತ್ತವೆ. ಇತ್ತೀಚೆಗೆ ಮೊಸಳೆಯ ದವಣೆಗೆ ಸಿಲುಕಿ ಕೆಲವು ಸಾವು ನೋವಿನ ಪ್ರಕರಣಗಳು ಆ ಭಾಗದಲ್ಲಿ ವರದಿಯಾಗಿವೆ.
ಇನ್ನು ಉತ್ತರ ಕರ್ನಾಟಕದ ಭಾಗದ ಕೆಲವು ಪ್ರಮುಖ ನದಿಗಳ ಪಾತ್ರದಲ್ಲೂ ಮೊಸಳೆಗಳು ಆಗಾಗ್ಗೆ ಕಂಡುಬರುತ್ತವೆ. ನಾನು ನೋಡಿದಂತೆ ಉತ್ತರ ಕರ್ನಾಟಕ ಭಾಗಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಮೊಸಳೆಗಳ ದಾಳಿ ಪ್ರಕರಣಗಳು ತುಂಬಾ ಕಡಿಮೆ ಎನ್ನಬಹುದು. ಈ ಭಾಗದ ನದಿಗಳಲ್ಲಿ ಮೊಸಳೆಗಳ ಸಂಖ್ಯೆ ಕಡಿಮೆ ಇರುವುದು ಇದಕ್ಕೆ ಕಾರ ಇರಬಹುದು.
ಕಾವೇರಿ ನದಿಯಲ್ಲಿ ಅತಿಹೆಚ್ಚು ಮೊಸಳೆಗಳು ಕಂಡು ಬರುವುದು ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ವಿಶ್ವವಿಖ್ಯಾತ ಪಕ್ಷಿ ಧಾಮವಾದ ರಂಗನತಿಟ್ಟು ಪಕ್ಷಿಧಾಮದಲ್ಲಿ. ಹಿಂದೆ ಪಂಚತಂತ್ರದಲ್ಲಿ ಮೊಸಳೆ ಮತ್ತು ಕೋತಿಕತೆಯಲ್ಲಿ ಮೊಸಳೆಯ ಹೆಂಡತಿಗೆ ಕೋತಿ ನೇರಳೆ ಹಣ್ಣುಗಳನ್ನು ಹೊತ್ತೊಯ್ಯುವ ಕತೆಯಲ್ಲಿ ಗಂಡ ಮತ್ತು ಹೆಂಡತಿ ಮೊಸಳೆಯನ್ನು ಕಲ್ಪಿಸಿಕೊಂಡು ಮಾತ್ರ ನಾನು ಮೊದಲು ಅವುಗಳ ಸಹಜ ಆವಾಸಸ್ಥಾನದಲ್ಲಿ ಮೊಸಳೆಯನ್ನು ನೋಡಿದ್ದು ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಹರಿಯುವ ಲಕ್ಷ್ಮಣತೀರ್ಥ ನದಿಯಲ್ಲಿ. ನಂತರ ಬಂಡೀಪುರ ದಟ್ಟಡವಿಯಲ್ಲಿ ಹರಿಯುವ ಮೂಲೆಹೊಳೆ/ ನುಗು ನದಿಯಲ್ಲಿ… ನಂತರದ ದಿನಗಳಲ್ಲಿ ಕಬಿನಿ, ಪಾಲರ್ ಸೇರಿ ಬಹಳಷ್ಟು ಕಡೆ ಬಹಳಷ್ಟು ಮೊಸಳೆಗಳನ್ನು ನೋಡುವ ಅವಕಾಶ ಸಿಕ್ಕಿತು.
ಘಾರಿಯಲ್ ಗಳು ತುಂಬಾ ಅಪರೂಪದ ಮೊಸಳೆ ಸಂತತಿಗಳಾಗಿದ್ದು, ಸದ್ಯ ಉತ್ತರ ಭಾರತದ ಕೆಲವು ನದಿಗಳು ಹಾಗೂ ನೇಪಾಳದಲ್ಲಿ ಮಾತ್ರ ಇವು ಕಾಣಸಿಗುತ್ತಿವೆ. ಇವುಳನ್ನು IUCN red list ಗೆ ಸೇರಿಸಿದ್ದು, ಇವುಗಳ ಸಂರಕ್ಷಣೆಗೆ ವಿಶೇಷ ಗಮನ ನೀಡಲಾಗಿದೆ.
ನಮಗೆಲ್ಲಾ ಗೊತ್ತಿರುವಂತೆ ಜೀವವೈವಿಧ್ಯತೆಯ ರಕ್ಷಣೆಯಲ್ಲಿ ಎಲ್ಲಾ ಜೀವಿಗಳ ಇರುವಿಕೆ ಬಹಳ ಮುಖ್ಯ. ಜಲಚರಗಳಲ್ಲಿ ಅಗ್ರ ಪರಪಕ್ಷಕಗಳಲ್ಲಿ ಒಂದೆನಿಸಿದ ಮೊಸಳೆ ಜಲಚರ ಜೀವಿಗಳ ಸಮತೋಲನ ಸಾಧಿಸಿ ಅಲ್ಲಿನ ಜೀವವೈವಿಧ್ಯ ಕಾಪಾಡುವಲ್ಲಿ ಇವು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ನಾವು ಮೊಸಳೆಗಳನ್ನು ಕೂಡ ಇತರ ಪ್ರಾಣಿಗಳಂತೆ ರಕ್ಷಿಸಬೇಕು.
ಮುಖ್ಯವಾಗಿ ಅವುಗಳ ಆವಾಸಸ್ಥಾನವಾದ ನದಿ, ಸರೋವರದಂತಹ ಜಲಮೂಲಗಳನ್ನು ಸಂರಕ್ಷಿಸಬೇಕು. ಅಲ್ಲಿ ಅಕ್ರಮ ಮರಳುಗಾರಿಗೆ ತಡೆದು, ಜಲಮಾಲಿನ್ಯ ನಿಯಂತ್ರಣ ಮಾಡಬೇಕು. ಹಾಗೆ ಪ್ಲಾಸ್ಟಿಕ್ ತ್ಯಾಜ್ಯಗಳು ನದಿ, ಸರೋವರಗಳನ್ನು ಸೇರದಂತೆ ಕ್ರಮವಹಿಸಬೇಕು. ಹಾಗೆಯೇ ಎಲ್ಲಾದರೂ ಮೊಸಳೆಗಳು ಕಂಡುಬಂದರೆ ಗಾಬರಿಯಾಗದೆ ತಕ್ಷಣ ಅರಣ್ಯ ಇಲಾಖೆಯ ಗಮನಕ್ಕೆ ತರಬೇಕು. (ಬರಹ:ಸಂಜಯ್ ಹೊಯ್ಸಳ,ಫೇಸ್ ಬುಕ್ ನಿಂದ)
ಸುದ್ದಿದಿನ.ಕಾಂ|ವಾಟ್ಸಾಪ್|9980346243