ದಿನದ ಸುದ್ದಿ
ಮಧ್ಯ ಕರ್ನಾಟಕದ ಯಕ್ಷಗಾನ ಯುವಪ್ರತಿಭೆ ‘ಅಮೂಲ್ಯ ಸಿ.’
- ಡಾ.ಕೆ.ಎ.ಓಬಳೇಶ್
ಕರ್ನಾಟಕದ ಬಹುತ್ವವೆಲ್ಲ ಸಮನ್ವಯತೆಯನ್ನು ಕಂಡುಕೊಂಡಿರುವುದು ಮಧ್ಯ ಕರ್ನಾಟಕದಲ್ಲಿ. ಈ ಭಾಗವು ಯಾವುದೇ ಅನ್ಯ ಗಡಿಪ್ರಾಂತ್ಯ, ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಿರುವುದು ಕಂಡುಬರುವುದಿಲ್ಲ. ಆದರೆ ಇವೆಲ್ಲವುಗಳನ್ನು ಸಮನ್ವಯದ ನೆಲೆಯಲ್ಲಿ ಕಾಪಾಡಿಕೊಂಡು ಬಂದ ವಿಶೇಷತೆ ಇದಕ್ಕಿದೆ. ಹಾಗೆಯೇ ಇದು ಸಾಂಸ್ಕೃತಿಕ ಸಮನ್ವಯತೆಗೂ ವಿಶೇಷತೆ ಮನ್ನಣೆಯನ್ನು ಕಲ್ಪಿಸಿಕೊಂಡು ಬಂದಿದೆ.
ಇಲ್ಲಿ ಹಲವಾರು ಸಾಂಸ್ಕೃತಿಕ ವೈಶಿಷ್ಟ್ಯತೆಗಳು ತನ್ನ ಅನನ್ಯತೆಯನ್ನು ಕಾಯ್ದುಕೊಂಡಿವೆ. ಉತ್ತರ ಕರ್ನಾಟಕಕ್ಕೆ ಹೋದರೆ ಬಯಲಾಟ, ದಕ್ಷಿಣ ಕರ್ನಾಟಕದಲ್ಲಿ ಕಂಸಾಳೆ, ಕರಾವಳಿ ಕರ್ನಾಟಕದಲ್ಲಿ ಯಕ್ಷಗಾನ ಕಲೆಗಳು ವಿಶಿಷ್ಟವಾಗಿ ಗುರುತಿಸಿಕೊಂಡಿವೆ. ಆದರೆ ಮಧ್ಯ ಕರ್ನಾಟಕ ಮಾತ್ರ ಇವೆಲ್ಲವುಗಳನ್ನು ತನ್ನ ಆಂತರ್ಯದಲ್ಲಿ ಪ್ರಾಂತ್ಯಬೇಧ ಮರೆತು ಹುದುಗಿಸಿಕೊಂಡಿದೆ. ಹೀಗಾಗಿ ಮಧ್ಯ ಕರ್ನಾಟಕದಲ್ಲಿ ವಿವಿಧ ಸಾಂಸ್ಕೃತಿಕ ವಲಯದಲ್ಲಿ ಸಾಧನೆಗೈದ ವಿಭಿನ್ನ ಕಲಾ ಪ್ರತಿಭೆಗಳು ಕಂಡುಬರುತ್ತವೆ.
ಇಂತಹ ಕಲಾ ಪ್ರತಿಭೆಗಳಲ್ಲಿ ಅಮೂಲ್ಯ ಸಿ, ಅವರು ಒಬ್ಬರಾಗಿದ್ದಾರೆ. ಮಧ್ಯ ಕರ್ನಾಟಕದ ದಾವಣಗೆರೆ ಭಾಗದಲ್ಲಿ ಯಕ್ಷಗಾನದ ಮೂಲಕ ತನ್ನ ವಿಶಿಷ್ಟ ಪ್ರತಿಭೆಯನ್ನು ಅನಾವರಣಗೊಳಿಸುತ್ತಿರುವ ಅಮೂಲ್ಯ ಅವರ ಕಲಾ ಬದುಕನ್ನು ಅನಾವರಣಗೊಳಿಸುವುದು ಪ್ರಸ್ತುತ ಲೇಖನದ ಆಶಯವಾಗಿದೆ.
ಕುಮಾರಿ ಅಮೂಲ್ಯ ಅವರು ಚಂದ್ರಶೇಖರ್ ಹಾಗೂ ಸವಿತಾ ದಂಪತಿಗಳ ಪುತ್ರಿಯಾಗಿ ದಿನಾಂಕ 4 ಜನವರಿ 2001 ರಂದು ದಾವಣಗೆರೆಯಲ್ಲಿ ಜನಿಸಿದರು. ಇವರ ತಂದೆ ಹೊಸದುರ್ಗ ಮೂಲದವರಾಗಿದ್ದು, ಇವರ ತಾಯಿಯು ಕರಾವಳಿ ಮೂಲದವರಾಗಿದ್ದಾರೆ. ಇವರ ತಾಯಿಯ ತಂದೆ ಉಡುಪಿ ಜಿಲ್ಲೆ ಮುನಿಯಾಲ ಸಮೀಪದ ಕಾಡೊಳೆಯವರು.
ಇವರು ಬಾಲ್ಯದಲ್ಲಿಯೇ ಜೀವನ ನಿರ್ವಹಣೆಗಾಗಿ ದಾವಣಗೆರೆಯಲ್ಲಿ ನೆಲೆಯನ್ನು ಕಂಡುಕೊಂಡರು. ಹಾಗೆಯೇ ಈ ಭಾಗದಲ್ಲಿಯೇ ವಿವಾಹವಾಗಿ ತಮ್ಮ ಬದುಕನ್ನು ಕಟ್ಟಿಕೊಂಡವರು. ಕುಮಾರಿ ಅಮೂಲ್ಯ ಅವರ ತಾಯಿಯ ಮೂಲವು ಕರಾವಳಿ ಮೂಲವಾಗಿದ್ದರು ಯಕ್ಷಗಾನ ಕಲೆಯ ಯಾವುದೇ ನೇರ ಪ್ರಭಾವಗಳಾಗಿರುವುದಿಲ್ಲ. ಆದರೆ ಇವರು ಸೆಂಟ್ ಪಾಲ್ಸ್ ಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆಯುತ್ತಿರುವಾಗ ಯಕ್ಷಗಾನ ಕಲೆಯನ್ನು ಕಂಡು ಆಕರ್ಷಿತರಾಗಿದ್ದರು.
ಈ ಶಾಲಾ ಅವಧಿಯಲ್ಲಿನ ಯಕ್ಷಗಾನ ಪ್ರದರ್ಶನ ಕಲೆಯನ್ನು ನೋಡಿ ಪ್ರಭಾವಿತರಾದ ಅಮೂಲ್ಯ ಅವರು ನಾನು ಒಂದಲ್ಲ ಒಂದು ದಿನ ಈ ಕಲೆಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು ಎಂಬ ಹಂಬಲವನ್ನು ಮೈಗೂಡಿಸಿಕೊಂಡಿದ್ದರು. ಆದರೆ ಮಧ್ಯ ಕರ್ನಾಟಕದಲ್ಲಿ ಯಕ್ಷಗಾನವು ಅಷ್ಟೊಂದು ಪ್ರಸಿದ್ಧಿಯಾಗಿರದ ಕಾರಣ ಇವರ ಆಸೆಯು ಬಹುದಿನಗಳ ಕಾಲ ಮರೀಚಿಕೆಯಾಗಿಯೇ ಉಳಿದಿತ್ತು. ಇವರಲ್ಲಿ ಬಹುದಿನಗಳಿಂದಲೂ ಚಿಗುರಿದ ಕನಸನ್ನು ಸಾಕಾರಗೊಳಿಸಿದ್ದು ರಾಘವೇಂದ್ರ ಮಠ.
ರಾಘವೇಂದ್ರ ಗುರುಗಳಲ್ಲಿ ಅತಿಯಾದ ನಂಬಿಕೆಯನ್ನು ಹೊಂದಿದ್ದ ಅಮೂಲ್ಯ ಅವರು ಪ್ರತಿವಾರ ರಾಘವೇಂದ್ರ ಮಠಕ್ಕೆ ಹೋಗಿ ದರ್ಶನ ಪಡೆಯುತ್ತಿದ್ದರು. ಈ ಸಂದರ್ಭದಲ್ಲಿ ಒಮ್ಮೆ ರಾಯರ ಮಠದಲ್ಲಿ ಯಕ್ಷಗಾನ ತರಬೇತಿಯ ಬಗ್ಗೆ ಪ್ರದರ್ಶಿಸಿದ ಜಾಹಿರಾತು ಇವರ ಮನದ ಮೂಸೆಯಲ್ಲಿನ ಆಸೆಗೆ ವೇದಿಕೆಯೊಂದನ್ನು ಕಲ್ಪಿಸಿಕೊಟ್ಟಿತ್ತು. ಆಗ ಈ ಜಾಹಿರಾತು ನೀಡಿದ ಸೀತಾರಾಮ ಆಚಾರ್ಯ ಅವರನ್ನು ಸಂಪರ್ಕಿಸಿದಾಗ ಅಮೂಲ್ಯ ಅವರಿಗಿದ್ದ ಯಕ್ಷಗಾನ ತುಡಿತವನ್ನು ಅರಿತು ತನ್ನ ಶಿಷ್ಯೆಯಾಗಿ ಸ್ವೀಕರಿಸಿ, ‘ಯಕ್ಷ ಸೌರಭ’ ಕಲಾ ತಂಡದಿAದ ಯಕ್ಷಗಾನ ತರಬೇತಿಯನ್ನು ನೀಡುತ್ತ ಬಂದರು.
ಹೀಗೆ ಯಕ್ಷಗಾನ ಕಲಿಕೆಗೆ ಸೀತಾರಾಮ ಆಚಾರ್ಯರಿಂದ ದೀಕ್ಷೆಯನ್ನು ಪಡೆದ ಅಮೂಲ್ಯ ಅವರು ಈ ಕಲೆಯನ್ನು ತನ್ನ ಬದುಕಿನ ಒಂದು ಭಾಗವಾಗಿ ಮುಂದುವರೆಸಿಕೊAಡು ಬಂದಿದ್ದಾರೆ. ಹಾಗೆಯೇ ಈ ಯಕ್ಷಗಾನ ಕಲೆಯ ಮೇಲೆ ವಿಶಿಷ್ಟವಾದ ಕಾಳಜಿ ಮತ್ತು ಆಸ್ಥೆಯನ್ನು ಹೊಂದಿದ್ದು ಮಧ್ಯ ಕರ್ನಾಟಕದಲ್ಲಿ ಕರಾವಳಿಯ ವಿಶಿಷ್ಟ ಕಲೆಯನ್ನು ಅರಳಿಸುವಲ್ಲಿ ಮಹತ್ತರ ಪಾತ್ರವನ್ನು ನಿರ್ವಹಿಸಿಕೊಂಡು ಬಂದಿದ್ದಾರೆ.
ಅಮೂಲ್ಯ ಅವರ ತಂದೆ ಚಂದ್ರಶೇಖರ್ ಅವರು ಅನಾರೋಗ್ಯದಿಂದ ಮರಣ ಹೊಂದಿದ ತರುವಾಯದಲ್ಲಿ ಇವರಿಗೆ ಉಚಿತವಾಗಿ ತರಬೇತಿ ನೀಡುವ ಮೂಲಕ ಸೀತಾರಾಮ ಆಚಾರ್ಯರು ತಮ್ಮ ಔದಾರ್ಯತೆಯನ್ನು ಮರೆಯುತ್ತ ಬಂದಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಅಮೂಲ್ಯ ಅವರಿಗಿರುವ ಕಲಾಸಕ್ತಿ ಮತ್ತು ಬದ್ಧತೆಯಾಗಿದೆ. ಹೀಗಾಗಿ ಸೀತಾರಾಮ ಆಚಾರ್ಯರು ತಮ್ಮ ಪ್ರೀತಿಯ ಮಗಳಂತೆ ಅಮೂಲ್ಯ ಅವರನ್ನು ಮುನ್ನಡೆಸುತ್ತ ಬಂದಿದ್ದಾರೆ.
ಇದರೊಂದಿಗೆ ತನ್ನೆಲ್ಲ ಕಲೆಯನ್ನು ಸೀತರಾಮ ಆಚಾರ್ಯರು ತನ್ನ ಶಿಷ್ಯೆಗೆ ಧಾರೆಯೆರೆಯುವ ಮೂಲಕ ಮಧ್ಯ ಕರ್ನಾಟಕದಲ್ಲೊಂದು ಅಮೋಘವಾದ ಯಕ್ಷಗಾನ ಪ್ರತಿಭೆಯೊಂದನ್ನು ರೂಪಿಸಿದ್ದಾರೆ. ಇದರ ಫಲವಾಗಿ ಅಮೂಲ್ಯ ಅವರು ಜಿಲ್ಲಾಡಳಿತ, ಕಾಲೇಜು, ವಿವಿಧ ಸಂಘ ಸಂಸ್ಥೆಗಳು ಹಾಗೂ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತನ್ನ ಯಕ್ಷಗಾನ ಪ್ರತಿಭೆಯನ್ನು ಅನಾವರಣಗೊಳಿಸುತ್ತ ಬಂದಿದ್ದಾರೆ. ಇತ್ತೀಚೆಗೆ ‘ಮಲಬರ್ ಗೋಲ್ಡ್ ಅಂಡ್ ಡೈಮಂಡ್ಸ್’ ಕಂಪನಿಯವರು ಆಯೋಜಿಸಿದ್ದ ಟಾಲೆಂಟ್ ಶೋನಲ್ಲಿ ‘ಗೋಲ್ಡನ್ ಗರ್ಲ್’ ಅವಾರ್ಡ್ ಪಡೆದುಕೊಂಡಿದ್ದಾರೆ.
ಪ್ರಸ್ತುತ ಸಂದರ್ಭದಲ್ಲಿ ಅಮೂಲ್ಯ ಅವರು ದಾವಣಗೆರೆಯ ಎ.ವಿ.ಕಮಲಮ್ಮ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ ಪದವಿಯನ್ನು ಅಧ್ಯಯನ ಮಾಡುತ್ತಿದ್ದು, ಬ್ಯಾಂಕ್ ಉದ್ಯೋಗಿಯಾಗಬೇಕೆಂಬ ಹಂಬಲವನ್ನು ಮೈಗೂಡಿಸಿಕೊಂಡಿದ್ದಾರೆ. ಯಕ್ಷಗಾನ ಮತ್ತು ಶಿಕ್ಷಣವನ್ನು ತನ್ನೆರಡು ಕಣ್ಣುಗಳೆಂದು ನಂಬಿರುವ ಅಮೂಲ್ಯ ಅವರು ಕಲೆಯೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿಯೂ ಮಹತ್ತರವಾದ ಸಾಧನೆಗೈಯುವ ಹಂಬಲವೊತ್ತಿದ್ದಾರೆ.
ಪ್ರೀತಿಯ ತಂದೆಯ ಅಗಲಿಗೆಯಿಂದ ನೊಂದಿರುವ ಅಮೂಲ್ಯ ಅವರು ತನ್ನ ತಾಯಿಯ ಪ್ರೀತಿ ಮತ್ತು ಗುರುಗಳ ಮಾರ್ಗದರ್ಶನದಲ್ಲಿ ಶಿಕ್ಷಣ ಮತ್ತು ಕಲಾ ಕ್ಷೇತ್ರದಲ್ಲಿ ಮುನ್ನಡೆಯುತ್ತಿದ್ದಾರೆ. ಅಮೂಲ್ಯ ಅವರು ಯಕ್ಷಸೌರಭ ತಂಡದಿಂದ ಯಕ್ಷಗಾನ ತರಬೇತಿಯನ್ನು ಪಡೆಯುತ್ತಲೇ ಕಿರಿಯ ವಿದ್ಯಾರ್ಥಿಗಳಿಗೆ ಗುರುಗಳೊಂದಿಗೆ ತರಬೇತಿಯನ್ನು ನೀಡುವ ಮೂಲಕ ಕಲಾ ಸೇವೆಯನ್ನು ಆರಂಭಿಸಿದ್ದಾರೆ. ಅಮೂಲ್ಯಳ ಉಜ್ವಲ ಭವಿಷ್ಯಕ್ಕಾಗಿ ಮಾವ ಮತ್ತು ಸಹೋದರ ಆಸರೆಯಾಗಿ ನಿಂತಿದ್ದಾರೆ. ಇವರೆಲ್ಲರ ಆಸರೆಯಲ್ಲಿ ಶಿಕ್ಷಣದೊಂದಿಗೆ ಮಧ್ಯ ಕರ್ನಾಟಕದಲ್ಲಿ ಯಕ್ಷಗಾನ ಕಲೆಯನ್ನು ಅರಳಿಸುತ್ತಿರುವ ಅಮೂಲ್ಯ ಅವರ ಮುಂದಿನ ಬದುಕಿನಲ್ಲಿ ಯಶಸ್ಸು ಕಾಣಲೆಂಬುದು ನಮ್ಮ ಹಾರೈಕೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ16 hours agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ1 day agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ13 hours agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ1 day agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು


