ನೆಲದನಿ
ಯಮುನೆಯ ಹಿಂಬಾಲಿಸುತ್ತಾ..!
ಈ ನದಿಗಳ ಬೆನ್ನು ಹತ್ತಿ ಹೋದರೆ ಹೊಸ ಲೋಕವೇ ತೆರೆದುಕೊಳ್ಳುತ್ತದೆ. ಯಮುನಾ ನದಿಯು ಗಂಗಾ ನದಿಯ ಉಪನದಿ. ಯಮುನೋತ್ರಿಯಲ್ಲ ಹುಟ್ಟಿ, ದಕ್ಷಿಣಾಭಿಮುಖವಾಗಿ ಹರಿಯುವ ಈ ನದಿಯು ಆಗ್ರಾದ ಬಳಿ ಪೂರ್ವಾಭಿಮುಖವಾಗಿ ಹರಿದು ತೆಳ್ಳಗಾಗುತ್ತಾ ಹೋಗಿ ಕೊನೆಗೆ ಅಲಹಾಬಾದಿನಲ್ಲಿ ಗಂಗೆಯನ್ನು ಸೇರುತ್ತದೆ. ಈ ಎರಡೂ ನದಿಗಳನ್ನು ಅವಳಿ ನದಿಗಳೆಂದೇ ಭಾರತೀಯರು ಗುರುತಿಸುತ್ತಾರೆ. ಉತ್ತರ ಭಾರತದ ಉಳಿದೆಲ್ಲಾ ನದಿಗಳು ಹಿಮಾಲಯದ ತಪ್ಪಲಿನಲ್ಲಿ ಜನಿಸುತ್ತವೆ, ಆದರೆ ಈ ಎರಡು ನದಿಗಳು ಹಿಮಾಲಯದಲ್ಲಿಯೇ ಜನಿಸುತ್ತವೆ, ಕಾರಣ ಪವಿತ್ರ ನದಿಗಳೆಂದು ಪರಿಗಣಿತವಾದವು.
ಅವಳಿಗಳು ಸಾಮಾನ್ಯವಾಗಿ ಒಂದೇ ಥರ ಇರಬೇಕೆಂಬುದು ವಾಡಿಕೆ. ಆದರೆ ಗಂಗೆ – ಯಮುನೆಯರು ಗುಣ ಸ್ವಭಾವಗಳ ದೃಷ್ಟಿಯಿಂದ ತುಂಬಾ ಬೇರೆ ಬೇರೆ, ಮಾತ್ರವಲ್ಲ, ವಿರುದ್ಧ ಗುಣಗಳಿರುವ ನದಿಗಳೂ ಹೌದು. ಪೌರಾಣಿಕವಾಗಿ ನೋಡಿದರೆ, ಗಂಗಾ ನದಿಯು ಚಂದ್ರ ವಂಶಕ್ಕೆ ಸೇರಿದ ಸ್ಫಟಿಕದಂಥಾ ಬಣ್ಣದ ನದಿಯಾದರೆ, ಯಮುನೆಯು ಸೂರ್ಯವಂಶಕ್ಕೆ ಸೇರಿದ ನದಿಯಾಗಿದೆ. ಆಕೆ ವಿವಸ್ವತ ( ಸೂರ್ಯ) ನ ಮಗಳು. ಯಮನೂ ಸೂರ್ಯನ ಮಗನಾದ್ದರಿಂದ ಯಮುನಾಳು ಯಮನಿಗೆ ತಂಗಿಯಾಗಬೇಕು. ಹಾಗಾಗಿ ಆಕೆ ಕಾಳಿಂದಿ-ಕಪ್ಪು ಬಣ್ಣದವಳು.
ಈ ಅಣ್ಣ ತಂಗಿಯರ ನಡುವಣ ಸಂಬಂಧ ಮಾತ್ರ ಅತ್ಯಂತ ನಿಕಟವಾದುದು. ಯಮುನಾ ನದಿ ದಂಡೆಯಲ್ಲಿ ಪ್ರತಿವರ್ಷ ನಡೆಯುವ ಯಮುನೋತ್ಸವ ಎಂಬ ಆಚರಣೆಯೊಂದರಲ್ಲಿ ಯಮನು ಯಮುನೆಯನ್ನು ನೋಡಲು ಬರುತ್ತಾನೆ. ಅವನನ್ನು ಮೋಹದಿಂದ ಬರಮಾಡಿಕೊಳ್ಳುವ ಆಕೆ ಆತನನ್ನು ನಗ್ನಗೊಳಿಸುತ್ತಾಳೆ. ಯಮನ ತಂಗಿಯಾದ ಯಮುನಾಳು ಯಮನ ಹೆಂಡತಿಯೂ ಹೌದು. ಏನೇ ಇರಲಿ, ಯಮುನಾಳು ಸಾವಿಗೆ ಹತ್ತಿರ ( ಕೃಷ್ಣ ಕೊಂದ ಕಾಳಿಂಗ ಸರ್ಪ ಇದ್ದ ನದಿ) ಎಂಬ ಕತೆಯು ಯಮುನೆಯಲ್ಲಿ ಮಿಂದರೆ ಸಾವಿಲ್ಲ ಎಂಬ ನಂಬಿಕೆಯನ್ನು ಜನಪ್ರಿಯಗೊಳಿಸಿದೆ.
ಗಂಗೆಯ ಹಾಗೆ ಯಮುನೆಯ ಚರಿತ್ರೆಯೂ ಸುದೀರ್ಘವಾದುದು. ವೇದಗಳ ಆರಂಭಿಕ ಕಾಲಘಟ್ಟದಲ್ಲಿ ಸಿಂಧೂ ಮತ್ತು ಸರಸ್ವತಿಗಳೇ ಪ್ರಸಿದ್ಧವಾದ ನದಿಗಳು. ಗಂಗೆ ಆಗಿನ್ನೂ ಪ್ರಸಿದ್ಧಿಗೆ ಬಂದಿರಲಿಲ್ಲ. ಆದರೆ ನಿಧಾನವಾಗಿ ಸಿಂಧೂ ಸರಸ್ವತಿ ನದಿಗಳ ದಂಡೆಯಿಂದ ನಮ್ಮ ಪೂರ್ವಿಕರು ಗಂಗಾ ನದಿಯ ದಂಡೆಯಲ್ಲಿ ಪೂರ್ವಾಭಿಮುಖವಾಗಿ ಚಲಿಸಿದರು. ಆಗ ಅವರಿಗೆ ಜೀವ ಕೊಟ್ಟ ನದಿಗಳೆಂದರೆ ಗಂಗೆ ಯಮುನೆಯರು. ಆ ಹೊತ್ತಿಗೆ ಈ ನದಿಗಳು ಸಿಂಧೂ ಸರಸ್ವತಿಗಳನ್ನು ಹಿಂದಿಕ್ಕಿ ಪ್ರಾಚೀನ ನಿರೂಪಣೆಗಳಲ್ಲಿ ಸ್ಥಾನ ಪಡೆಯಲಾರಂಭಿಸಿದರು. ಅಥರ್ವ ವೇದ, ಐತರೇಯ ಬ್ರಾಹ್ಮಣ ಮತ್ತು ಶತಪಥ ಬ್ರಾಹಣಗಳಲ್ಲಿ ಯಮ ಮತ್ತು ಯಮುನೆರ ಬಗೆಗೆ ಅತೀವ ಪ್ರೀತಿ -ಉತ್ಸಾಹಗಳನ್ನು ತೋರಿಸಲಾಗಿದೆ ಎಂದು ಸಂಸ್ಕೃತ ವಿದ್ವಾಂಸರು ಹೇಳಿದ್ದಾರೆ.
ಪುರಾಣ ಮತ್ತು ಮಹಾಕಾವ್ಯಗಳಲ್ಲಿ ಯಮುನೆಯು ಗಂಗೆಯಷ್ಟು ಜನಪ್ರಿಯಳಲ್ಲ. ಮಹಾಭಾರತದಲ್ಲಿ ವಸುದೇವನು ಕೃಷ್ಣನ್ನು ಕಂಸನಿಂದ ಪಾರುಮಾಡಲು ರಾತ್ರಿಕಾಲದಲ್ಲಿ ಯಮುನೆಯನ್ನು ದಾಟಲು ಹೊರಟಾಗ, ಯಮುನೆಯು ತಾನೇ ಇಬ್ಭಾಗವಾಗಿ ಅವನಿಗೆ ಸಹಕರಿಸುತ್ತದೆ. ಮುಂದೆ ಬಾಲಕೃಷ್ಣನು ಯಮುನೆಯಲ್ಲಿ ತೊಂದರೆ ಕೊಡುತ್ತಿದ್ದ ಕಾಳಿಂಗ ಸರ್ಪವನ್ನು ಕೊಂದು, ದನಗಳನ್ನು ಸಂರಕ್ಷಿಸುತ್ತಾನೆ. ಯುವಕ ಕೃಷ್ಣನ ರಾಸ ಲೀಲೆಗೆ ಯಮುನೆಯೇ ಸಾಕ್ಷಿಯಾಗುತ್ತಾಳೆ. 16ನೇ ಶತಮಾನದಲ್ಲಿ ರಚಿತವಾಗಿದೆ ಎನ್ನಲಾದ ಪುಷ್ಟಿ ಮಾರ್ಗಕ್ಕೆ ಸೇರಿದ ವಲ್ಲಭಾಚಾರ್ಯನ ಯಮುನಾಷ್ಟಕಂ ಕೃತಿಯಲ್ಲಿ ಆಕೆ ಭಗವಾನ್ ಕೃಷ್ಣನನ್ನು ಪ್ರೇಮಿಸಿದ್ದಾಳೆ. ಇಷ್ಟಿದ್ದರೂ ಗಂಗೆಯು ಪುರಾಣಗಳಿಗೆ ಇಷ್ಟವಾದಷ್ಟು ಯಮುನೆಯು ಇಷ್ಟವಾದಂತಿಲ್ಲ.
ಗಂಗೆಯ ವಾಹನ ಮಕರವಾದರೆ, ಯಮುನೆಯ ವಾಹನ ಆಮೆ ( ಚಿತ್ರ ನೋಡಿ). ಸಮುದ್ರ ಮಥನ ಕಾಲದಲ್ಲಿ ಕಡಲಲ್ಲಿ ಮುಳುಗಿದ ಮಂದಾರ ಪರ್ವತವನ್ನು ಬೆನ್ನಲ್ಲಿ ಎತ್ತಿ ನಿಲ್ಲಿಸಿದ್ದು ಶಕ್ತಿಶಾಲಿ ಕೂರ್ಮ. ಕೆಲವು ಪುರಾಣಗಳ ಪ್ರಕಾರ ಭೂಮಿಯೂ ಆಮೆಯ ಮೇಲೆ ನಿಂತಿದೆಯಂತೆ. ಬ್ರಾಹ್ಮಣಕಗಳ ಕಾಲದಿಂದ ಆಮೆಯನ್ನು ಸೂರ್ಯನೊಂದಿಗೆ ಸಮೀಕರಿಸಲಾಗಿದೆ, ಹಾಗಾಗಿ ಆಮೆಯು ಕಾಲದ ಸಂಕೇತವೂ ಹೌದು. ಈ ನಿರೂಪಣೆಗಳು ಯಮುನೆಯು ಸುದೀರ್ಘವಾದ ಚರಿತ್ರೆಯೊಂದಿಗೆ ಹೊಂದಿದ ಗಾಢ ಸಂಬಂಧವನ್ನು ಸಂಕೇತಿಸುತ್ತದೆ. ಪುರಾಣಗಳಿಗೆ ಪ್ರಿಯವಾಗದ ಯಮುನೆಯು ಇತಿಹಾಸಕ್ಕೆ ಪ್ರಿಯವಾಗಲು ಕಾರಣ ಆಕೆ ಕನಸಿಗಿಂತ ವಾಸ್ತವದ ಕಡೆಗೇ ಹೆಚ್ಚು ವಾಲಿಕೊಂಡದ್ದು.
ಭೌಗೋಳಿಕವಾಗಿ ನೋಡಿದರೆ, ಗಂಗಾ ನದಿಯ ದಂಡೆಗಿಂತ ಯಮುನೆಯ ದಂಡೆಯೇ ಜನವಾಸಕ್ಕೆ ಮತ್ತು ಸಾಮ್ರಾಜ್ಯ ಸ್ಥಾಪನೆಗೆ ಹೆಚ್ಚು ಯೋಗ್ಯ. ಗಂಗಾ ನದಿಗೂ ಹಿಮಾಲಯ ಪರ್ವತಕ್ಕೂ ನಡುವೆ ಸಾಮ್ರಾಜ್ಯ ಸ್ಥಾಪನೆ ಮಾಡುವಷ್ಟು ವಿಸ್ತಾರವಾದ ಸ್ಥಳವೇನೂ ಇಲ್ಲ. ಆದರೆ ಗಂಗೆಯ ದಕ್ಷಿಣ ದಿಕ್ಕಿಗೆ ಯಮುನೆಯ ದಡದ ವರೆಗೂ, ಯಮುನೆಯ ದಡವನ್ನು ದಾಟಿದರೆ, ವಿಂಧ್ಯಾ ಪರ್ವತ ಶ್ರೇಣಿಗಳ ವರೆಗೂ ರಾಜ್ಯ ವಿಸ್ತರಣೆಗೆ ಅವಕಾಶವಿದೆ. ಹೀಗಾಗಿ ಗಂಗೆ ಉತ್ತರದ ಗಡಿಯಾಗಿಯಷ್ಟೇ ಉಳಿದರೆ, ಯಮುನೆಯು ಮಹಾ ನಗರಗಳ ಬೆಳವಣಿಗೆಗೆ ಕಾರಣವಾದ ಇತಿಹಾಸ ಪ್ರಸಿದ್ಧ ನದಿಯಾಗಿ ಬೆಳೆಯಿತು. ಭಾರತೀಯರಿಗೆ ಗಂಗೆ ಒಂದು ಸುಂದರ ಕನಸಾದರೆ ಯಮುನಾ ಕಟು ವಾಸ್ತವ.
ಒಂದು ಕಾಲಕ್ಕೆ ಗಂಗಾ – ಯಮುನೆಯರ ನಡುವಣ ಅತ್ಯಂತ ಫಲವತ್ತಾದ ಜಾಗವು ಮಧ್ಯ ದೇಶವೆಂದು ಪ್ರಸಿದ್ಧವಾಗಿತ್ತು. ಹರಪ್ಪಾ ಸಂಸ್ಕೃತಿ ಪತನಗೊಂಡ ಆನಂತರ ಸರಸ್ವತಿ ನದಿ ತೀರಕ್ಕೆ ಆಗಮಿಸಿದ ನಮ್ಮ ಹಿರಿಯರು, ಸರಸ್ವತಿ ನದಿ ಕಾಲನ ಗರ್ಭದಲ್ಲಿ ಮರೆಯಾದ ಆನಂತರ ಅಥವಾ ಪ್ರಖ್ಯಾತ ಮಹಾಭಾರತ ಯುದ್ಧದ ಆನಂತರ ( ಕ್ರಿಸ್ತಶಕ ಪೂರ್ವ ಸುಮಾರು 1200) ಯಮುನಾ ನದಿ ದಂಡೆಯ ಕಡೆಗೆ ವಲಸೆ ಬಂದರು. ಆ ಕಾಲದಲ್ಲಿ ಈ ಭೂಪ್ರದೇಶದಲ್ಲಿ ಪ್ರಸಿದ್ಧವಾಗಿದ್ದ ಒಂಬತ್ತು ಅರಣ್ಯಗಳ ವಿವರಗಳನ್ನು ದೇವಿಪುರಾಣವು ನೀಡುತ್ತದೆ. ಅನೇಕ ಪುರಾಣಗಳನ್ನು ಸೃಜಿಸಿದ ಮೇಧಾವಿಗಳು ಬದುಕಿದ್ದ ನೈಮಿಶಾರಣ್ಯ, ವಾಲ್ಮೀಕಿ ಮಹರ್ಷಿಗಳು ಬದುಕಿದ್ದ ಮತ್ತು ಸೀತೆ ಲವ ಕುಶರಿಗೆ ಜನ್ಮ ನೀಡಿದ್ದ ಉತ್ಪಲಾರಣ್ಯ – ಇವೆಲ್ಲ ಇದ್ದ ಮಹತ್ವದ ಸ್ಥಳವದು. ಮುಂದೆ ನಾಗರೀಕತೆ ಬೆಳೆದಂತೆ ಈ ಅರಣ್ಯಗಳು ನಾಶವಾದುವು.
ಕಾಡುಗಳನ್ನು ಬೆಂಕಿಯಲ್ಲಿ ಉರಿಸಿ, ನಾಶ ಮಾಡಿ ಹಸ್ತಿನಾಪುರ ಮತ್ತು ಇಂದ್ರಪ್ರಸ್ಥಗಳನ್ನು ಕಟ್ಟಲಾಯಿತು. ಮುಂದೆ ಯಮುನೆಯ ದಂಡೆಯಲ್ಲಿ ಕುರುಗಳು ಪ್ರಸಿದ್ಧರಾದರೆ ಅವರ ವಿರೋಧಿಗಳಾದ ಪಾಂಚಾಲರು ಪೂರ್ವ ಭಾಗದಲ್ಲಿ ರಾಜ್ಯ ಕಟ್ಟಿದರು. ಮಧ್ಯೆ ಅನೇಕ ಸಣ್ಣ ಪುಟ್ಟ ಜನಪದಗಳಿದ್ದರೂ ಕ್ರಿಸ್ತ ಶಕ ಪೂರ್ವ 6ನೇ ಶತಮಾನದಲ್ಲಿ ಅಸ್ತಿತ್ವಕ್ಕೆ ಬಂದ ಶಕ್ತಿಶಾಲೀ ಮಗಧ ಸಾಮ್ರಾಜ್ಯದಲ್ಲಿ ಇವೆಲ್ಲವೂ ಲೀನಗೊಂಡುವು. ಮುಂದೆ ಶುಂಗರು, ಮಿತ್ರರು, ಗುಪ್ತರು ಯಮುನೆಯ ದಡದಿಂದ ಆಳಿದರು. ಗುಪ್ತರ ಕಾಲದಲ್ಲಿಯೇ ಯಮುನೆಯನ್ನು ಶಿಲ್ಪಗಳಲ್ಲಿ ಕಂಡರಿಸುವ ಮತ್ತು ಪೂಜಿಸುವ ಪ್ರಕ್ರಿಯೆ ಆರಂಭವಾಯಿತು. ತಮ್ಮ ಸಂಪತ್ತಿಗೆ ಕಾರಣವಾದ ನದಿಯೊಂದನ್ನು ಅವರು ದೈವತ್ವಕ್ಕೆರಿಸಿದ್ದರಲ್ಲಿ ಅಚ್ಚರಿಯೇನೂ ಇಲ್ಲ. ಚರಿತ್ರೆಯಲ್ಲಿ ಪ್ರಸಿದ್ಧರಾಗಿರುವ ಹರ್ಷ, ಬಾಬರ, ಹುಮಾಯೂನ, ಅಕ್ಬರ, ಶಹಾಜಹಾನ ಮತ್ತಿರರು ಯಮುನೆಯ ದಡದಿಂದಲೇ ಆಳ್ವಿಕೆ ನಡೆಸಿದರು. ಅದರ ದಂಡೆಯಲ್ಲಿ ತಾಜಮಹಲು ತಲೆ ಎತ್ತಿದೆ. ಕರ್ನಾಟಕದ ಚಾಲುಕ್ಯ ಅರಸು ಮನೆತನದ ವಿಜಯಾದಿತ್ಯನು ಯಮುನೆಯ ನೀರನ್ನು ಕೆಲ ಕಾಲ ಕುಡಿದಿದ್ದಲ್ಲದೆ, ಗಂಗಾ ಯಮುನೆಯರ ವಿಗ್ರಹವನ್ನು ಉತ್ತರ ಭಾರತದ ದಿಗ್ವಿಜಯದ ದ್ಯೋತಕವಾಗಿ ಕರ್ನಾಟಕಕ್ಕೆ ತಂದದ್ದು ಕರ್ನಾಟಕ ಚರಿತ್ರೆಯ ಅಪೂರ್ವ ಘಟನೆಗಳಲ್ಲಿ ಒಂದು.
ಇಂದು ಯಮುನಾಳ ಗೋಳು ಹೇಳ ತೀರದು. ದೆಹಲಿಯ ಯಮುನಾ ಘಾಟ್ ನಲ್ಲಿ ಸುಡುವ ಹೆಣಗಳನ್ನು ನೋಡಿದರೆ, ಕಾರ್ಖಾನೆಗಳು ಆಕೆಯನ್ನು ಕಲುಷಿತಗೊಳಿಸುವ ರೀತಿಯನ್ನು ಗಮನಿಸಿದರೆ, ಸರಸ್ವತಿಯ ಹಾಗೆ ಯಮುನೆಯೂ ಕಳೆದು ಹೋದ ನದಿ ಅಂತ ಅನ್ನಿಅಹರ್ನಿಷ.
ಈ ಲೇಖನವು ನನ್ನ ಬರಲಿರುವ ಪುಸ್ತಕವೊಂದರ ( ಅಹರ್ನಿಶಿ ಪ್ರಕಾಶನ ) ಸುದೀರ್ಘ ಲೇಖನದ ಆಯ್ದ ಭಾಗ
–ಪುರುಶೋತ್ತಮ ಬಿಳಿಮಲೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.
ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ
ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.
ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.
‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.
‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.
ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ
ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.
ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
-
ಅಂಕಣ2 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ5 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ14 hours agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ

