ದಿನದ ಸುದ್ದಿ
ಜಾಗತಿಕ ಶಾಂತಿಗೆ ಯೋಗದ ಕೊಡುಗೆ ಅನನ್ಯ : ಪ್ರಧಾನಮಂತ್ರಿ ನರೇಂದ್ರ ಮೋದಿ
ಸುದ್ದಿದಿನ ಡೆಸ್ಕ್ : ಜಾಗತಿಕ ಶಾಂತಿಗೆ ಯೋಗದ ಕೊಡುಗೆ ಅನನ್ಯ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಮೈಸೂರಿನ ಅರಮನೆಯ ಅವರಣದಲ್ಲಿಂದು ನಡೆದ 8 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯೋಗದಿಂದ ಸಮಾಜ, ದೇಶ ಮತ್ತು ವಿಶ್ವಕ್ಕೆ ಶಾಂತಿ ದೊರೆಯುತ್ತದೆ ಯೋಗ ಇಡಿ ಜಗತ್ತಿನಲ್ಲಿ ಜನಪ್ರಿಯವಾಗಿದೆ. ಭಾರತ ಸದಾ ಕಾಲ ವಿಶ್ವದ ಒಳಿತನ್ನು ಬಯಸುತ್ತದೆ. ಈ ಬಾರಿ ವಿಶ್ವ ಯೋಗ ದಿನಾಚರಣೆಯ ಆಶಯ ಇದಕ್ಕೆ ಪೂರಕವಾಗಿದೆ. ಮಾನವೀಯತೆಗಾಗಿ ಯೋಗ ಎಂಬುದು ಈ ವರ್ಷದ ಧ್ಯೇಯವಾಕ್ಯವಾಗಿದೆ ಎಂದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ದೇಶದ 75ವಿವಿಧ ನಗರಗಳಲ್ಲಿನ ಐತಿಹಾಸಿಕ ಸ್ಥಳಗಳಲ್ಲಿ ಯೋಗದಿನಾಚರಣೆ ನಡೆಯುತ್ತಿದೆ ಎಂದರು. ನಂತರ ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.
ಬಳಿಕ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಯೋಗದ ಪ್ರಯೋಜನ ಕುರಿತು ಅರಿವು ಮೂಡಿಸಲು ಆಧುನಿಕ ಸಂವಹನ ತಂತ್ರಗಳ ಬಳಕೆಯ ಮೂಲಕ ಡಿಜಿಟಲ್ ಪ್ರದರ್ಶನ, ಯೋಗದ ಭವ್ಯತೆ, ಇತರ ಆಯುಷ್ ಪದ್ಧತಿಗಳು ಹಾಗೂ ಯೋಗ ನವೋದ್ಯಮಗಳ ಕುರಿತು ತಿಳುವಳಿಕೆ ನೀಡುವ ಪ್ರದರ್ಶನಕ್ಕೆ ಪ್ರಧಾನಿ ಚಾಲನೆ ನೀಡಿದರು.
We are greatly inspired by the thoughts and ideals of Jagadguru Basaveshwara, particularly the emphasis on serving others and acquiring knowledge. pic.twitter.com/HVOfV6b7FL
— Narendra Modi (@narendramodi) June 21, 2022
ರಾಜ್ಯದ ಹಲವೆಡೆ ಯೋಗ ದಿನಾಚರಣೆ
ಕಾರವಾರ ನೌಕಾನೆಲೆಯಲ್ಲಿ ಯೋಗದಿನ ಆಚರಿಸಲಾಯಿತು. ದೇಶದ ಅತಿ ದೊಡ್ಡ ಏರ್ ಕ್ರಾಫ್ಟ್ ಕ್ಯಾರಿಯರ್ ಐ.ಎನ್.ಎಸ್ ವಿಕ್ರಮಾಧಿತ್ಯ ಸೇರಿದಂತೆ ನೌಕಾನೆಲೆಯ ವಿವಿಧ ಕಡಲತಾಣಗಳಲ್ಲಿ ಒಟ್ಟು ೩ ಸಾವಿರ ಮಂದಿ ಏಕಕಾಲಕ್ಕೆ ಯೋಗಾಭ್ಯಾಸ ಮಾಡಿದರು. ಕರ್ನಾಟಕ ನೌಕಾವಲಯದ ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ಅತುಲ್ ಆನಂದ, ನೌಕಾದಳದ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಯೋಗದ ಮಹತ್ವ ಕುರಿತು ಅರಿವು ಮೂಡಿಸಲು ಚಿತ್ರಕಲೆ, ರಸಪ್ರಶ್ನೆ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ನೌಕಾನೆಲೆಯಲ್ಲಿ ಹಮ್ಮಿಕೊಂಡಿದ್ದು ವಿಶೇಷವಾಗಿತ್ತು. ಹಂಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗಣಿ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಯೋಗ ಜೀವನದ ಒಂದು ಭಾಗವಾಗಬೇಕು ಎಂದು ಹೇಳಿದರು.
ಇಂದು ವಿಶ್ವ ಯೋಗ ದಿನಾಚರಣೆ ಅಂಗವಾಗಿ ವಿಶ್ವ ಪರಂಪರೆಯ ತಾಣ ಹಂಪಿಯ ವಿರುಪಾಕ್ಷೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಆಯುಷ್ ಇಲಾಖೆ ಹಾಗು ವಿವಿಧ ಸಂಘ ಸಂಸ್ಥೆಗಳು ಹಮ್ಮಿಕೊಂಡಿದ್ದ ೮ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ವಚನಾನಂದ ಶ್ರೀಗಳ ನೇತೃತ್ವದಲ್ಲಿ ಯೋಗಾಭ್ಯಾಸ ನಡೆಯಿತು. ಸಚಿವರಾದ ಆನಂದ್ ಸಿಂಗ್, ಶಶಿಕಲಾ ಜೊಲ್ಲೆ, ಮತ್ತಿತರರು ಪಾಲ್ಗೊಂಡಿದ್ದರು. ಬಾಗಲಕೋಟೆ ಜಿಲ್ಲೆಯ ಪಟ್ಟದಕಲ್ಲು ದೇವಾಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಯೋಗಭ್ಯಾಸ ಒಂದು ದಿನಕ್ಕೆ ಸೀಮಿತವಾಗಬಾರದು ಎಂದು ಕರೆ ನೀಡಿದರು. ವಿಜಯಪುರದ ಐತಿಹಾಸಿಕ ಗೋಲಗುಮ್ಮಟದ ಆವರಣದಲ್ಲಿ ೮ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಉದ್ಘಾಟಿಸಿದರು.
ಬಳಿಕ ಅವರು ಮಾತನಾಡಿ, ಯೋಗದ ಮಹತ್ವವನ್ನು ಪ್ರದಾನಿ ನರೇಂದ್ರ ಮೋದಿ ಅವರು ವಿಶ್ವಕ್ಕೆ ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಪ್ರತಿ ವರ್ಷ ಜೂನ್ ೨೧ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ವಿಶ್ವದ ೧೯೦ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಆಚರಿಸಲಾಗುತ್ತಿದೆ. ಇದು ಭಾರತೀಯರಿಗೆ ಅಭಿಮಾನದ ಸಂಗತಿ ಎಂದು ಹೇಳಿದರು.
ದಾವಣಗೆರೆ ಜಿಲ್ಲೆಯ 3 ಪಾರಂಪರಿಕ ತಾಣಗಳಲ್ಲಿ ಜಿಲ್ಲಾಡಳಿತದ ವತಿಯಿಂದ ಏಕಕಾಲಕ್ಕೆ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಚನ್ನಗಿರಿ ತಾಲ್ಲೂಕು ಸಂತೆ ಬೆನ್ನೂರಿನ ಐತಿಹಾಸಿಕ ಪುಷ್ಕರಣಿ ಆವರಣದಲ್ಲಿ ಹಮ್ಮಿಕೊಂಡಿದ್ದ ಯೋಗ ಕಾರ್ಯಕ್ರಮಕ್ಕೆ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚಾಲನೆ ನೀಡಿದರು.
ಹರಿಹರೇಶ್ವರ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಶಾಸಕ ಎಸ್.ರಾಮಪ್ಪ ಉದ್ಘಾಟಿಸಿದರು. ಗದಗ ಜಿಲ್ಲೆಯ ನಾಗಾವಿ ಗ್ರಾಮದಲ್ಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಮೈದಾನದಲ್ಲಿ ಯೋಗ ದಿನಾಚರಣೆ ನಡೆಯಿತು.
ಯಾದಗಿರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ವೆಂಕಟರೆಡ್ಡಿ ಮುದ್ನಾಳ್ ಮಾತನಾಡಿ, ನಿತ್ಯ ಯೋಗ ಮಾಡುವುದರಿಂದ ಉತ್ತಮ ಜೀವನ ನಡೆಸಬಹುದು ಎಂದು ಹೇಳಿದರು.
ರಾಯಚೂರು ಜಿಲ್ಲಾಡಳಿತದ ವತಿಯಿಂದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು. ಶಾಸಕ ಡಾ.ಶಿವರಾಜ ಪಾಟೀಲ್, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ಮೊದಲಾದವರು ಭಾಗಿಯಾಗಿದ್ದರು. ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಯೋಗ ದಿನಾಚರಣೆಗೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪುರ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ತಾಲ್ಲೂಕುಗಳಲ್ಲಿ ಸ್ಥಳೀಯ ಆಡಳಿತದ ವತಿಯಿಂದ ಯೋಗ ದಿನಾಚರಣೆ ನಡೆಯಿತು. ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್ ಮಾತನಾಡಿ, ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ವರದಾನವಾಗಿದೆ ಎಂದು ಹೇಳಿದರು.
ಕೊಡಗು ಜಿಲ್ಲಾಡಳಿತದ ವತಿಯಿಂದ ಮಡಿಕೇರಿಯಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್, ಸೇರಿಂದಂತೆ ನೂರಾರು ಯೋಗಪಟುಗಳು ಭಾಗವಹಿಸಿದ್ದರು. ಮಂಗಳೂರಿನ ಪುರಭವನದಲ್ಲಿ ಆಯುಷ್ ಇಲಾಖೆ, ನೆಹರೂ ಯುವಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಯೋಗ ದಿನಾಚರಣೆಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು. ಚಿಕ್ಕಮಗಳೂರು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಯೋಗ ದಿನಾಚರಣೆಯನ್ನು ಶಾಸಕ ಸಿ.ಟಿ ರವಿ ಉದ್ಘಾಟಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ5 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ3 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ3 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ4 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ3 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ

