ಅಂತರಂಗ
ಅರಿಮೆಯ ಅರಿವಿರಲಿ-47 : ತನ್ನತನದ ತನ್ನ ಭಾಷೆ
- ಯೋಗೇಶ್ ಮಾಸ್ಟರ್
ಮಾನಸಿಕವಾಗಿಯಾಗಲಿ,ಆಧ್ಯಾತ್ಮಿಕವಾಗಿಯಾಗಲಿ ಅಥವಾ ಸಾಮಾಜಿಕವಾಗಿ ಸಹಜ ಮನುಷ್ಯನಂತೆಯಾಗಲಿ ತನ್ನತನವನ್ನು ಕಂಡುಕೊಂಡವರ ಕೆಲವು ಮುಖ್ಯ ಲಕ್ಷಣಗಳು ಹೀಗಿರುತ್ತವೆ.
ತನಗೆ ತಾನೇ ಸಾಕ್ಷಿ
ತನ್ನನ್ನು ತಾನು ಉನ್ಮತ್ತನಂತೆ ಪ್ರದರ್ಶಿಸಿಕೊಳ್ಳುವುದಿಲ್ಲ. ತನ್ನ ಎಲ್ಲಾ ಪ್ರತಿಕ್ರಿಯೆ ಮತ್ತು ಪ್ರತಿವರ್ತನೆಗಳನ್ನು ತಾನು ರೂಪಿಸಿಕೊಂಡಿರುವ ವ್ಯಕ್ತಿತ್ವದ ಅರಿವಿನಲ್ಲಿ ಪ್ರದರ್ಶನಕ್ಕಿಡುತ್ತಾನೆ. ಮುಖ್ಯವಾಗಿ ತನ್ನ ಪ್ರದರ್ಶನವನ್ನು ತಾನು ನೋಡಲು ಸಮರ್ಥನಿರುತ್ತಾನೆ. ಉದಾಹರಣೆಗೆ ಯಾರೋ ಒಬ್ಬ ವ್ಯಕ್ತಿಯು ತನ್ನ ಜೊತೆಗೆ ವ್ಯತ್ಯಾಸವಾಗಿ ನಡೆದುಕೊಂಡನೆಂದರೆ ಅವನಿಗೆ ಪ್ರತಿಕ್ರಿಯಿಸುವ ತನ್ನ ನಡೆ, ನುಡಿ, ನಡವಳಿಕೆ ಅವನಿಗೆ ಮತ್ತು ತಮ್ಮಿಬ್ಬರನ್ನು ನೋಡುವವರಿಗೆ ಹೇಗೆ ಕಾಣುತ್ತಿರುತ್ತದೆ ಎಂಬುದನ್ನು ತಾನು ನೋಡುತ್ತಿರುತ್ತಾನೆ. ತನ್ನನ್ನು ಪ್ರಕಟಗೊಳಿಸಿಕೊಳ್ಳುವಾಗ ಇದು ಬಹಳ ಮುಖ್ಯವಾದ ಮತ್ತು ಉಪಯುಕ್ತವಾದ ಸಾಧನ.
ತನ್ನ ತಾನು ನೋಡಿಕೊಳ್ಳುವ ತಂತ್ರಗಾರಿಕೆ ಸಿದ್ಧಿಯಾಯಿತೆಂದರೆ ಅವನು ಆಧ್ಯಾತ್ಮಿಕವಾಗಿ ಮತ್ತು ಧಾರ್ಮಿಕವಾಗಿಯೂ ಪ್ರಾಮಾಣಿಕನಾಗಿರುವವನಲ್ಲದೇ, ಮಾನಸಿಕವಾಗಿ ಯಾವುದೇ ಸಮಸ್ಯೆಗಳಿದ್ದರೂ ಅದರಿಂದ ಮುಕ್ತನಾಗಲು ಸಾಧ್ಯ. ಇನ್ನೂ ಚೆಂದದ ವಿಷಯವೆಂದರೆ, ಈ ತನ್ನ ತಾನು ನೋಡಿಕೊಳ್ಳುವ ತಂತ್ರಗಾರಿಕೆಯನ್ನು ಅಭ್ಯಾಸ ಮಾಡುವುದರಿಂದ ಸಾರ್ವಜನಿಕವಾಗಿ ಮಾತಾಡುವವರು, ಭಾಷಣ ಮಾಡುವವರು, ತರಗತಿಗಳನ್ನು ತೆಗೆದುಕೊಳ್ಳುವವರು ತಮ್ಮ ಪ್ರದರ್ಶನಗಳನ್ನು ಉತ್ತಮ ಪಡಿಸಿಕೊಳ್ಳಬಲ್ಲರು.
ಇನ್ನು ರಂಗಭೂಮಿ, ಕಿರುತೆರೆ ಮತ್ತು ಸಿನಿಮಾ ಕಲಾವಿದರಿಗೂ ತಮ್ಮ ಪ್ರದರ್ಶನವನ್ನು ಸಂವೇದನಾಶೀಲವನ್ನಾಗಿಸಿಕೊಳ್ಳಲು ಸಾಧ್ಯ.
ತನಗೆ ತಾನೇ ಸಾಕ್ಷಿಯಾಗುವುದು; ಈ ಪರಿಕಲ್ಪನೆಯನ್ನು ಸರಳವಾಗಿ ರಂಗಭೂಮಿ ಭಾಷೆಯಲ್ಲಿ ಹೇಳುವುದಾದರೆ, ನಾನೇ ರಂಗದ ಮೇಲೆ ಅಭಿನಯಿಸುತ್ತಿರುವುದು. ಅದನ್ನು ನಾನೇ ಪ್ರೇಕ್ಷಕರಲ್ಲಿ ಕುಳಿತು ನೋಡುವುದು.
ಅಧೀನನಾಗುವುದಿಲ್ಲ
ತನ್ನತನವನ್ನು ರೂಪಿಸಿಕೊಂಡವನು ಮತ್ತು ಆ ತನ್ನತನದಲ್ಲಿ ಹರಳು ನೆಟ್ಟಿರುವ ಮೌಲ್ಯಗಳ ಜ್ಞಾನೋದಯವಾಗಿರುವವನು ಯಾರನ್ನೂ ತನ್ನ ಅಂತಿಮ ಮಾದರಿ ಎಂದಾಗಲಿ, ಆರಾಧ್ಯ ವ್ಯಕ್ತಿಯೆಂದಾಗಲಿ ಎಂದಿಟ್ಟುಕೊಳ್ಳುವುದಿಲ್ಲ. ಒಟ್ಟಾರೆ ಹಾರ್ಡ್ ಕೋರ್ ಫ್ಯಾನ್ ಅಥವಾ ಕಟ್ಟಾ ಅಭಿಮಾನಿ ಆಗುವುದಿಲ್ಲ. ಅದೇ ರೀತಿಯಲ್ಲಿ ತನ್ನ ಮನೆಯಲ್ಲಾಗಲಿ, ಕೆಲಸ ಮಾಡುವ ಕಡೆಯಲ್ಲಾಗಲಿ ಯಾವುದೇ ಮುಲಾಜಿತೆ ಯಾರೊಬ್ಬರ ಅಧೀನವಾಗಿರುವುದಿಲ್ಲ. ಗೌರವಿಸುವುದು, ವಿನಯವಾಗಿರುವುದು, ಅನುಸರಿಸಿಕೊಳ್ಳುವುದು; ಈ ಎಲ್ಲವೂ ಇರುತ್ತದೆ. ಆದರೆ ಅದು ಕಾರ್ಯಕಾರಣವಾದ ಸರಿಸಿಕೊಳ್ಳುವಿಕೆಯೇ ಹೊರತು ಯಾರಿಗೂ ಅಧೀನವಾಗಿರುವುದಿಲ್ಲ. ತಮ್ಮತನವನ್ನು ಪಣಕ್ಕಿಡುವುದಿಲ್ಲ.
ತನ್ನನ್ನು ತಾನು ಯಾರೋ ಒಬ್ಬ ನಟನ, ರಾಜಕೀಯ ವ್ಯಕ್ತಿಯ, ಧಾರ್ಮಿಕ ಪುರುಷನ, ಸಮಾಜ ಸುಧಾರಕನ ಭಕ್ತನಾಗಿಸಿಕೊಳ್ಳುವುದಿಲ್ಲ. ಯಾರು ತಮ್ಮನ್ನು ಕಟ್ಟಾ ಅಭಿಮಾನಿಗಳು ಎಂದು ಘೋಷಿಸಿಕೊಳ್ಳುತ್ತಾರೋ, ಪ್ರಾಮಾಣಿಕವಾಗಿ ಅವರಲ್ಲಿ ಅಂತಹ ಭಾವ ಇರುತ್ತದೆಯೋ ಅವರಿಗೆ ತಮ್ಮತನದ ಸಾಕ್ಷಾತ್ಕಾರವಾಗಿಲ್ಲವೆಂದೇ ಅರ್ಥ.
ತಮ್ಮತನದ ಅರಿವುಳ್ಳವರು ತಮ್ಮತನವನ್ನು ರೂಪುಗೊಳಿಸಿರುವ ಮೌಲ್ಯ ಮತ್ತು ಗುಣಗಳ ಅನುಸಾರವಾಗಿ ತಾವು ಗಮನಿಸುವ ಮಹಾನ್ ವ್ಯಕ್ತಿಗಳ, ತಮ್ಮ ಸಹಜೀವಿಗಳ, ಗುರುಗಳ ಇತ್ಯಾದಿ ಬೋಧನೆ ಮಾಡುವ ಸ್ಥಾನದಲ್ಲಿರುವವರ ಗುಣಗಳನ್ನು, ಸಲಹೆಗಳನ್ನು, ಉದಾಹರಣೆಗಳನ್ನು ಅನುಮೋದಿಸುತ್ತಾರೆ. ಹಾಗೆ ಅನುಮೋದಿಸುವ ಮೂಲಕ ತಮ್ಮ ತನ್ನತನದಲ್ಲಿ ಇರುವ ಅದೇ ಮಾದರಿಯ ಗುಣ ಸ್ವಭಾವಗಳನ್ನು ಗಟ್ಟಿಗೊಳಿಸಿಕೊಳ್ಳುತ್ತಾರೆ.
ತಮ್ಮತನದ ಗುಣ ಸ್ವಭಾವಗಳಿಗೆ ಪೂರಕವಾಗಿರುವ ವಿಷಯಗಳನ್ನು ಅವರು ಎಲ್ಲಿಂದಾದರೂ, ಯಾರಿಂದಲಾದರೂ ಅವರು ಹೆಕ್ಕಿಕೊಳ್ಳುವರು. ಆದರೆ ಯಾವುದೇ ನಿರ್ಧಿಷ್ಟ ವ್ಯಕ್ತಿಗೆ ಅವರು ಸೀಮಿತವಾದರೆ ಅಥವಾ ವ್ಯಕ್ತಿಪೂಜೆ ಮಾಡುತ್ತಿದ್ದಾರೆಂದರೆ ಅವರು ತಮ್ಮತನದ ಸಾಕ್ಷಾತ್ಕಾರವನ್ನು ಪಡೆದಿಲ್ಲವೆಂದೋ ಅಥವಾ ತಮ್ಮತನವನ್ನು ರೂಪಿಸಿಕೊಳ್ಳುವುದರಲ್ಲಿ ಗೊಂದಲದಿಂದ ಕೂಡಿದ್ದಾರೆಂದೋ ತಿಳಿಯಬಹುದು.
ತಮ್ಮತನವೆನ್ನುವುದೇ ನೈತಿಕ ಮೌಲ್ಯ, ನಿರ್ಧಿಷ್ಟ ಗುಣಗಳಿಂದ ರೂಪುಗೊಂಡಿರುವುದು. ಯಾರೋ ಒಬ್ಬ ನಟರಾಗಲಿ, ರಾಜಕಾರಣಿಯಾಗಲಿ, ಸಾಹಿತಿಯಾಗಲಿ, ಕಲಾವಿದನಾಗಲಿ, ಅವರವರತನದ ಅಭಿವ್ಯಕ್ತಿಯಾಗಿ ತಮ್ಮ ಕ್ಷೇತ್ರದಲ್ಲಿ ತಮ್ಮ ಕೆಲಸದ ಮೂಲಕ ವ್ಯಕ್ತಪಡಿಸಿರುತ್ತಾರೆ.ಅವರು ಯಾವುದೇ ರೀತಿಯ ಕೊಡುಗೆಗಳನ್ನು ನಾಡು ನುಡಿ ಮತ್ತು ಸಮಾಜಕ್ಕೆ ಕೊಟ್ಟರೂ ಅವರ ಕೊಡುಗೆಗಳನ್ನು ಸ್ವೀಕರಿಸುವ ರೀತಿಯಲ್ಲಿ ಮತ್ತು ಕೊಟ್ಟಿರುವ ಅವರನ್ನು ಗೌರವಿಸುವ ರೀತಿಯಲ್ಲಿ ಉನ್ಮತ್ತನಾಗಿ ಮಾರು ಹೋಗುವ ಸಾಮೂಹಿಕ ಸನ್ನಿಯನ್ನು ಹೊಂದಿರುವುದಿಲ್ಲ. ಇಷ್ಟು ತಿಳಿದುಕೊಳ್ಳೋಣ.
ತನ್ನತನದ ಸಾಕ್ಷಾತ್ಕಾರವಾಗಿರುವವನು ಸಾಮೂಹಿಕ ಸನ್ನಿಯಿಂದ, ಜನಪ್ರಿಯ ಅನುಸರಣೆಗಳಿಂದ ಮುಕ್ತನಾಗಿರುತ್ತಾರೆ. ಉತ್ಪ್ರೇಕ್ಷೆಗಳ ಅಮಲಿನಲ್ಲಿ ಮೈ ಮರೆಯುವುದಿಲ್ಲ. ಮಾಸ್ತಿ ಕನ್ನಡದ ಆಸ್ತಿ ಎಂಬುದೊಂದು ಮಾತು. ಅದನ್ನು ಕೇಳಿದಾಗ ಈ ತನ್ನತನದ ವ್ಯಕ್ತಿಯೊಬ್ಬ ಲೇಖಕನಾಗಿದ್ದರೆ ಅವನ ಆಂತರಿಕ ಪ್ರತಿಕ್ರಿಯೆಗಳು ಹೀಗಿದ್ದಿರಬಹುದು. “ಕನ್ನಡ ನುಡಿಯ ಅಸ್ತಿತ್ವಕ್ಕೆ ಅವರು ನೀಡಿರುವ ಕೊಡುಗೆಗಳು ನಿಜಕ್ಕೂ ಗೌರವಪೂರ್ಣವೇ. ಆದರೆ ಅವನ್ನು ಪ್ರಶಂಸಿಸುವ ಉತ್ಪ್ರೇಕ್ಷೆಯ ಧ್ವನಿ ಇದು. ಆಸ್ತಿ ಎಂದು ಕರೆಯಿಸಿಕೊಳ್ಳದಿದ್ದರೂ ಇತರ ಅನೇಕಾನೇಕರ ಕೊಡುಗೆಗಳು ಕನ್ನಡಕ್ಕೆ ಇವೆ. ಇದರಲ್ಲಿ ನಾನೂ ಹೊರತಲ್ಲ.”
ಏಕೈಕ, ನ ಭೂತೋ ನ ಭವಿಷ್ಯತಿ, ಹಿಂದೆ ಹುಟ್ಟಿಲ್ಲ ಮುಂದೆ ಹುಟ್ಟುವುದಿಲ್ಲ, ಸಮಸ್ತರ ಹೃದಯ ನಿವಾಸಿ, ನಮ್ಮೆಲ್ಲರ ಆಶಾಕಿರಣ; ಇತ್ಯಾದಿಗಳು ಅವರ ಪದ ಭಂಡಾರದಲ್ಲಿರುವುದಿಲ್ಲ. ಬಸವಣ್ಣಾ ರಾಜಾ ಬಿಜ್ಜಳನ ಗೌರವಿಸಿದರೂ, ಪ್ರೀತಿಸಿದರೂ ಅವನ ಅಧಿಕಾರದ ಹಂಗನ್ನು ತಿರಸ್ಕರಿಸಿದ್ದನ್ನು ನೆನಪಿಸಿಕೊಳ್ಳೋಣ. ಎನಗಿಂತ ಕಿರಿಯರಿಲ್ಲ ಎನ್ನುವ ಬಸವಣ್ಣ ತನ್ನ ಅನ್ನ, ಅಧಿಕಾರ ಮತ್ತು ಅಂತಸ್ತಿಗೆ ಆಶ್ರಯನಾಗಿರುವ ಬಿಜ್ಜಳನ ಓಲೈಸುವ ಹೊಗಳುಭಟ್ಟಂಗಿಯಂತಹ ಕವಿಯಾಗಿ ವಚನಗಳನ್ನು ರಚಿಸಲಿಲ್ಲ. ತಮ್ಮತನವನ್ನು ವ್ಯವಸ್ಥೆಯ ಅಧೀನಕ್ಕೆ ಬಿಟ್ಟುಕೊಡಲು ಸಿದ್ಧರಲ್ಲದ ಬಸವಣ್ಣ ಸಾಯಲೂ ಸಿದ್ಧವಾಗಿ ಮರಣವೇ ಮಹಾನವಮಿ ಎಂದರು.
“ಜೋಳವಾಳಿಯವ ನಾನಲ್ಲ, ವೇಳವಾಳಿಯವ ನಾನಯ್ಯ” ಎನ್ನುವುದು ಅವರತನದ ಧೋರಣೆ.
‘ತನ್ನ ಜೀವಿತಕ್ಕೆ ಆಧಾರವಾಗಿರುವ ಆಹಾರಾದಿಗಳನ್ನು ಕೊಡುವ ಧಣಿಗಾಗಿ ಆತ್ಮಾರ್ಪಣೆ ಮಾಡಿಕೊಳ್ಳುವ ಪದ್ಧತಿಯನ್ನು ಜೋಳವಾಳಿ ಎಂದೂ, ಯುಕ್ತ ಸಮಯಕ್ಕೆ ಸರಿಯಾಗಿ ನೆರವಿಗೆ ಬರುವ ಪದ್ಧತಿಯನ್ನು ವೇಳವಾಳಿ ಎಂದೂ ಕರೆಯಲಾಗುತ್ತಿತ್ತು.’ ಒಟ್ಟಿನಲ್ಲಿ ಇಷ್ಟು ತಿಳಿಯೋಣ ತನ್ನತನದ ಮನುಷ್ಯರು ವೇಳವಾಳಿಯವರೇ ಹೊರತು ಜೋಳವಾಳಿಯವರಲ್ಲ.
ಗುಂಪಿನ ಧ್ವನಿಯಲ್ಲ
ಎಲ್ಲರ ಮಾತನ್ನು ತನ್ನದು ಎಂಬಂತೆಯೂ, ತನ್ನ ಮಾತೇ ಎಲ್ಲರದು ಎಂಬಂತೆಯೂ ತನ್ನತನದ ಅರಿವುಳ್ಳವರು ಹೇಳುವುದಿಲ್ಲ. ಒಂದು ವೇಳೆ ಸಮೂಹಗಳು, ಸಂಘಟನೆಗಳು ಧ್ವನಿ ಎತ್ತಿದರೆ ಅವು ಸಾಂಘಿಕವಾಗಿವೆ ಎಂದೋ, ಅವರ ಬೆಂಬಲ ತನಗೆ ಬೇಕಾಗುತ್ತದೆ ಎಂದೋ ಧ್ವನಿಗೂಡಿಸುವುದಿಲ್ಲ. ತಾವು ಅದನ್ನು ಒಪ್ಪಿದ್ದರೆ ಮಾತ್ರವೇ ದನಿಗೂಡಿಸುತ್ತಾರೆ ಮತ್ತು ತಮ್ಮದೇ ಆದ ರೀತಿಯಲ್ಲಿ ಅನುಮೋದಿಸುತ್ತಾರೆ. ಸಂಘಟನೆಗಳನ್ನು ಮಾಡಿದರೂ ಅದರಲ್ಲಿ ಪ್ರಜಾತಂತ್ರಾತ್ಮಕ ರೀತಿಯನ್ನು ಅನುಸರಿಸುತ್ತಾರೆ.
ನಾಯಕನೆಂದು ಅವರಿವರೆಂದರೂ ತಾನು ತನ್ನ ವೈಯಕ್ತಿಕ ಬದ್ಧತೆಯಿಂದ ಹೊತ್ತಿರುವ ಸಂಕಲಿತ ಜವಾಬ್ದಾರಿಯ ಮುಂದಾಳು, ಮೊದಲು ಕೆಲಸ ಮಾಡಬೇಕಾಗಿರುವ ಆಳೆಂಬ ಅರಿವಿರುತ್ತದೆಯೇ ಹೊರತು, ಹಲವರನ್ನು ಅಧೀನದಲ್ಲಿಟ್ಟುಕೊಂಡಿರುವ ನಾಯಕ ತಾನು ಎಂಬ ಮೇಲರಿಮೆಯ ಭಾವ ಇರುವುದಿಲ್ಲ. ಅಷ್ಟೇ ಅಲ್ಲ, ತಮ್ಮ ಒಲವು ಮತ್ತು ನಿಲುವುಗಳನ್ನು, ಅಭಿಪ್ರಾಯಗಳನ್ನು ಸಾಮಾನ್ಯೀಕರಿಸುವುದಿಲ್ಲ. ಮತ್ತು ಯಾವುದೇ ಸಾರ್ವಜನಿಕವಾದ ವಿಷಯಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹೇಳುತ್ತಾರೆಯೇ ಹೊರತು ನಿರ್ಣಯಗಳನ್ನು ತೆಗೆದುಕೊಳ್ಳುವುದಿಲ್ಲ.
ತಮ್ಮತನದ ಅರಿವಿರುವವರು ಸದಾ ಇತರರಿಗೂ ಅವರತನವೊಂದಿರುತ್ತದೆ ಎಂಬ ಅರಿವಿನಲ್ಲಿ ಜಾಗೃತವಾಗಿರುತ್ತಾರೆ. ತಮ್ಮತನಕ್ಕೆ ಬದ್ಧವಾಗಿರುವವರು ಇತರರ ತಮ್ಮತನವನ್ನೂ ಗೌರವಿಸುತ್ತಾರೆ. ತಮ್ಮದನ್ನೇ ಹೇರುವ ಮತ್ತು ಒಪ್ಪಿಸುವ ಧಾವಂತ ಎಂದಿಗೂ ಅವರಲ್ಲಿ ಇರುವುದಿಲ್ಲ. ಒಂದು ವೇಳೆ ತಮ್ಮ ಮಾತು ಬಿದ್ದು ಹೋಗುವ ಅಥವಾ ನಗಣ್ಯವಾಗುವುದನ್ನು ಕಂಡರೂ ಭಾವೋದ್ರೇಕಗೊಳ್ಳುವುದಿಲ್ಲ.
“ನಾನೆಷ್ಟು ಕಾಳಜಿ ಮತ್ತು ಪ್ರೀತಿಯಿಂದ ವಿಷಯವನ್ನು ಪ್ರಸ್ತುತ ಪಡಿಸಿದ್ದೇನೆ. ಆದರೆ ನೀವು ಅದನ್ನು ಪರಿಗಣಿಸಿಯೇ ಇಲ್ಲ. ನನಗೆ ತುಂಬಾ ನೋವಾಯಿತು. ದಯಮಾಡಿ ಇದನ್ನು ಪರಿಶೀಲಿಸಿ, ಒಪ್ಪಿಕೊಳ್ಳಬೇಕೆಂದು ವಿನಯಪೂರ್ವಕವಾಗಿ ಆಗ್ರಹಿಸುತ್ತೇನೆ.” ಇಂತವೆಲ್ಲಾ ಅವರ ವಾಕ್ಯಗಳಲ್ಲ. ಮನವರಿಕೆ ಮಾಡಿಕೊಡುವ, ಮನದಟ್ಟು ಮಾಡಿಸುವ, ಮನವೊಲಿಸುವ ಸಂದರ್ಭಗಳು ಬಂದಾಗ ಅದಕ್ಕೆ ತಮ್ಮ ಪ್ರಯತ್ನವನ್ನು ಮಾಡುವರು. ಆದರೆ ತಮ್ಮತನವನ್ನು ಒತ್ತೆಯಿಟ್ಟಲ್ಲ. ಸರಳವಾಗಿ ಹೇಳುವುದಾದರೆ ಬಕೆಟ್ ಹಿಡಿಯುವುದಿಲ್ಲ.
ಎಲ್ಲವನ್ನೂ, ಎಲ್ಲರನ್ನೂ ಭಳಿರೇ ಭಳಿರೇ ಎಂದಂತೂ ಮೆಚ್ಚುವ ನಟನೆ ಮಾಡುತ್ತಾ ಅವರ ಮೆಚ್ಚುಗೆಗೆ ಪಾತ್ರರಾಗಲು ಯತ್ನಿಸುವುದಿಲ್ಲ. “ಸೂಳೆಗೆ ಹುಟ್ಟಿದ ಕೂಸಿನಂತೆ ಆರನಾದಡೆಯೂ ‘ಅಯ್ಯಾ ಅಯ್ಯಾ’ ಎನಲಾರೆ” ಎನ್ನುವ ಸ್ವಾಭಿಮಾನ. ಜೊತೆಗೆ, “ಚೆನ್ನಯ್ಯನೆಮ್ಮಯ್ಯನು, ಚೆನ್ನಯ್ಯನ ಮಗ ನಾನು. ಕೂಡಲಸಂಗನ ಮಹಾಮನೆಯಲಿ ಧರ್ಮಸಂತಾನಿ ಭಂಡಾರಿ ಬಸವಣ್ಣನು” ಎಂದು ಹೇಳಿಕೊಳ್ಳುವ ತನ್ನತನದ ಬದ್ಧತೆ.
ನನ್ನ ಭಾಷೆ ನನ್ನದು
ಫೇಸ್ಬುಕ್ ಮತ್ತು ವಾಟ್ಸಾಪ್ಗಳ ಅಂತರ್ಜಾಲ ವೇದಿಕೆಗಳಿಂದಾಗಿ ಸಾಮಾನ್ಯ, ಅಸಮಾನ್ಯ ಎನ್ನದೇ, ಪಂಡಿತ ಪಾಮರ ಎನ್ನದೇ ಯಾರಾದರೂ ತಮ್ಮ ಅಭಿಪ್ರಾಯಗಳನ್ನು ಮತ್ತು ಆಲೋಚನೆಗಳನ್ನು ಪ್ರಕಟಿಸಲು ಮತ್ತು ತಮ್ಮತನವನ್ನು ಪ್ರದರ್ಶಿಸಲು ಅವಕಾಶವಿದೆ. ಸಾಮಾನ್ಯವಾಗಿ ಇತರೇ ವಸ್ತುಗಳಿಗೆ ಮತ್ತು ವ್ಯವಸ್ಥೆಗಳಲ್ಲಿ ಇರುವಂತೆ ಇದರಲ್ಲಿಯೂ ಅನುಕೂಲಗಳು ಅನಾನುಕೂಲಗಳೂ ಇವೆ. ಬಳಸುವ ಬಗೆಯು ಅವರವರ ವಿವೇಚನೆಗೆ ಬಿಟ್ಟಿರುವುದೇ ಆಗಿರುತ್ತದೆ.
ವಿವೇಚನೆ ಎಂದರೇನು? ನಿಶ್ಚಿತವಾದ ತಿಳುವಳಿಕೆ ಮತ್ತು ಸ್ಪಷ್ಟವಾದ ಅರಿವು ಇದ್ದು ಅದನ್ನು ಸಾರಾಸಾರವನ್ನು ತಿಳಿದು, ಉಚಿತ ಅನುಚಿತವಾದುದು ಯಾವುದೆಂದು ಬಗೆದು ಆಲೋಚಿಸುವ, ಗ್ರಹಿಸುವ, ಪ್ರಕಟಗೊಳಿಸುವ, ಪ್ರದರ್ಶಿಸುವ ಒಬ್ಬನ ವಿವೇಕ. ತನ್ನತನದ ಸಾಕ್ಷಾತ್ಕಾರವುಳ್ಳವರಿಗೆ ಈ ವಿವೇಚನೆ ಅಥವಾ ವಿವೇಕ ಎನ್ನುವುದು ಸಹಜವಾದ ಗುಣವಾಗಿರುತ್ತದೆ ಅಥವಾ ಆಗಿರಬೇಕು.
ಫೇಸ್ಬುಕ್ಕಿನಲ್ಲಿ ಕೆಲವು ವಿಷಯಗಳು ಚರ್ಚೆಯಾಗುತ್ತಿರುತ್ತವೆ. ವಿಷಯದ ಪರವಾಗಿರುವವರೂ ಮತ್ತು ವಿರೋಧವಾಗಿರುವವರೂ ತಮ್ಮ ತಮ್ಮ ವಾದಗಳನ್ನು, ವಿಷಯಗಳನ್ನು ಮತ್ತು ಗ್ರಹಿಕೆಗಳನ್ನು ಪ್ರದರ್ಶಿಸುತ್ತಿರುತ್ತಾರೆ. ಆದರೆ ಅವರ ಮಾತುಗಳಲ್ಲಿ ಬಳಕೆಯಾಗುವ ಭಾಷೆಯನ್ನು ನೋಡಿದರೆ ಅವರ ಆಲೋಚನೆ, ಗ್ರಹಿಕೆ ಮತ್ತು ಅಧ್ಯಯನಗಳಿಗಿಂತ, ಅಥವಾ ಒಲವು ಮತ್ತು ನಿಲುವುಗಳಿಗಿಂತ ಅವರವರ ಪೂರ್ವಾಗ್ರಹಗಳು ಮತ್ತು ಮಾನಸಿಕ ಸಮಸ್ಯೆಗಳು ಪ್ರದರ್ಶನವಾಗುತ್ತಿರುತ್ತವೆ. ಆ ಪ್ರದರ್ಶನವಾಗುವುದು ಅವರು ಬಳಸುವ ಭಾಷೆಯಿಂದ.
ಬಹಳಷ್ಟು ಸಂದರ್ಭಗಳಲ್ಲಿ ವಿಷಯದ ವಿರೋಧಿಗಳೂ ಮತ್ತು ಪರವಾಗಿರುವವರಿಬ್ಬರೂ ಒಂದೇ ಭಾಷೆಯಲ್ಲಿ ಮಾತಾಡುತ್ತಿರುತ್ತಾರೆ. ಪರಸ್ಪರ ನಿಂದನೆಗಳಲ್ಲಿ, ಅವಹೇಳನಗಳಲ್ಲಿ ತೊಡಗಿರುವುದಲ್ಲದೇ ಅಭಿಪ್ರಾಯಗಳನ್ನು ಹೇಳುವ ಬದಲು ನಿರ್ಣಯಗಳನ್ನು ನೀಡುತ್ತಿರುತ್ತಾರೆ. ಅವುಗಳಲ್ಲಿ ಅವರು ವಿಷಯದ ಬಗ್ಗೆ ತಳೆದಿರುವ ಒಲವು ನಿಲುವುಗಳಿಗಿಂತ ವ್ಯಕ್ತಿಯಲ್ಲಿರುವ ಮೇಲರಿಮೆ, ಆತ್ಮರತಿ, ಕೀಳರಮೆ, ಬೈಪೋಲಾರ್ ಸಮಸ್ಯೆ, ಬಾರ್ಡರ್ ಲೈನ್ ಡಿಸಾರ್ಡರ್, ತನ್ನತನದ ಅರಿವಿಲ್ಲದೇ ಸಮೂಹ ಸನ್ನಿಗೆ ಒಳಗಾಗಿರುವ ಲಕ್ಷಣಗಳೇ ಪ್ರದರ್ಶಿತವಾಗುತ್ತಿರುತ್ತವೆ.
ಇಲ್ಲಿ ಗಮನಿಸಿ ನೋಡಿ. ಪರ ಅಥವಾ ವಿರೋಧವೇನೂ ಇಲ್ಲದ ಮೂರನೆಯ ವ್ಯಕ್ತಿಯೊಬ್ಬ ಈ ಚರ್ಚೆಯನ್ನು ಗಮನಿಸುತ್ತಿದ್ದಾಗ ಅವನಿಗೆ ಇಬ್ಬರ ಬಗ್ಗೆಯೂ ಒಲವುಂಟಾಗುವುದಿಲ್ಲ. ಬದಲಿಗೆ ಇಬ್ಬರ ಬಗ್ಗೆಯೂ ಜಿಗುಪ್ಸೆ ಹುಟ್ಟುತ್ತದೆ. ಹೀಗಾಗಿ ಅವನು ವಿಷಯದ ಪರವಾಗಿಯೂ ಮನವೊಲಿಯುವುದಿಲ್ಲ, ವಿರುದ್ಧವಾಗಿಯೂ ಮನವರಿಕೆಯಾಗುವುದಿಲ್ಲ. ಒಟ್ಟಾರೆ ಎರಡೂ ವರ್ಗಗಳ ನಡುವಿನ ಒಂದು ಸಂಘರ್ಷವಾಗಿ ಕಾಣುತ್ತದೆ.
ತನ್ನತನದ ಅರಿವಿರುವವರು ಎಂದಿಗೂ ತಮ್ಮ ಭಾಷೆಯನ್ನು ಸಡಿಲಬಿಡುವುದಾಗಲಿ, ತಾವೇ ಏಕಮೇವಾದ್ವಿತೀಯವೆಂಬಂತೆ ನಿರ್ಣಯ ತೆಗೆದುಕೊಂಡಂತೆ ಮಾತಾನಾಡುವುದಾಗಲಿ ಮಾಡುವುದಿಲ್ಲ. ನಿಂದನೆಯಂತೂ ದೂರದ ಮಾತು. ಉದಹರಿಸುವುದಾದರೆ, ಎಡಪಂಥ ಮತ್ತು ಬಲಪಂಥದವರು ಯಾವುದೋ ವಿಚಾರದ ಮೇಲೆ ಚರ್ಚೆ ಮಾಡುತ್ತಿದ್ದಾರೆಂದಿಟ್ಟುಕೊಳ್ಳಿ. ಯಾವ ಪಂಥದವರೂ ಅಲ್ಲದ ಬಹುದೊಡ್ಡ ಸಮೂಹವೊಂದು ಅದನ್ನು ನೋಡುತ್ತಿದೆ ಎಂದಿಟ್ಟುಕೊಳ್ಳಿ. ಇಬ್ಬರೂ ಬಳಸುವ ಭಾಷೆಗಳಲ್ಲಿ ಯಾರದು ಮುತ್ತಿನ ಹಾರದಂತೆ ತಾರ್ಕಿಕವಾಗಿ ಪೋಣಿಸಿಕೊಂಡು ಆಕರ್ಷಕವಾಗಿರುತ್ತದೋ, ಮಾಣಿಕ್ಯದ ದೀಪ್ತಿಯಂತೆ ಪ್ರಜ್ಞೆಯ ಬೆಳಕನ್ನು ಕೊಡುವುದೋ, ಸ್ಫಟಿಕದ ಸಲಾಕೆಯಂತೆ ವಿಷಯ ಸ್ಪಷ್ಟವಾಗಿ ಮತ್ತು ನೇರವಾಗಿರುತ್ತದೋ ಆಗ ಅಹುದಹುದು ಎಂದು ಒಪ್ಪಲಾಗುತ್ತದೆ.
ಅಲ್ಲಿ ಯಾರು ಘನತೆಯನ್ನು ಪ್ರದರ್ಶಿಸುತ್ತಾರೋ ಅವರ ಮಾತು ಘನವಾಗಿರುತ್ತದೆ. ತನ್ನತನದ ಘನತೆಯನ್ನು ಅರಿತವರು ಲಘುವಾದ ಭಾಷೆಗಳಿಂದ ಎದುರಾಳಿಯ ನಿಂದನೆಗಳನ್ನು ಮಾಡುತ್ತಾ ತನ್ನತನದ ಮೌಲ್ಯವನ್ನು, ತನ್ನತನವೆಂಬುದು ಬೆಂಬಲಿಸುವ ಮತ್ತು ಪೋಷಿಸುವ ವಿಷಯದ ಗೌರವವನ್ನು ಕಡೆಗಣಿಸುವುದಿಲ್ಲ.
ಬಹಳ ಎಚ್ಚರಿಕೆಯಿಂದ, ವಿವೇಕ ಮತ್ತು ವಿವೇಚನೆಗಳಿಂದ ಭಾಷೆಯನ್ನು ಬಳಸಲಾಗುತ್ತದೆ. ಏಕೆಂದರೆ ಅವರಿಗೆ ಸ್ಪಷ್ಟವಾಗಿ ಗೊತ್ತಿರುತ್ತದೆ ತಾವು ಗೌರವಿಸುವ ಮೌಲ್ಯವು, ಅವುಗಳಿಂದ ರೂಪುಗೊಂಡಿರುವ ತಮ್ಮತನವು ಅಮೂರ್ತವಾದದ್ದು. ಹಾಗೂ ಅದನ್ನು ಪ್ರಕಟಿಸುವ ಮೂರ್ತಸ್ವರೂಪವೆಂದರೆ ಭಾಷೆ. ವ್ಯಕ್ತಿಯು ಉಪಯೋಗಿಸುವ ಭಾಷೆ ಮತ್ತು ಪರಿಭಾಷೆಗಳ ಆಧಾರದಲ್ಲಿ ಆತನು ತನ್ನತನವನ್ನು ಅದೆಷ್ಟರಮಟ್ಟಿಗೆ ಪ್ರದರ್ಶಿಸುತ್ತಾನೆ, ಗೌರವಿಸಿಕೊಳ್ಳುತ್ತಾನೆ ಎಂಬುದು ನಿರ್ಣಯವಾಗುತ್ತದೆ.
ಬಹಳಷ್ಟು ಸಲ ಹೊಟ್ಟನ್ನು ತೂರುವುದೇ ಆಗಿರುತ್ತದೆ. ಕಾಳನ್ನು ಎರಚುವುದಾಗಿರುವುದೇ ಇಲ್ಲ. ವಿವೇಕಿಯು ಬೀಜಗಳನ್ನು ಅಥವಾ ಕಾಳುಗಳನ್ನು ಎರಚಬೇಕು. ಏಕೆಂದರೆ ಅವು ಮೊಳೆತಾವು, ಬೆಳೆದಾವು, ಮುಂದೊಂದು ದಿನ ಬೆಳೆ ಕೊಟ್ಟಾವು. ತನ್ನತನದ ಸತ್ಯವೆಂಬುದು ಕೂರಲಗಾಗಿದ್ದರೂ ಅದರಿಂದ ತೊಂದರೆ, ನಷ್ಟವಾಗಬಹುದೆಂಬ ಭಯವಿಲ್ಲದೇ ಅದನ್ನು ಹಿಡಿದಿರುವುದೇ ತನ್ನ ಗೆಲುವು ಎಂದು ತನ್ನತನದ ಪ್ರಜ್ಞೆಯುಳ್ಳವರು ಅರಿತಿರುತ್ತಾರೆ. ಅವರಿಗೆ ಸೋಲಿನ ಭಯವೋ ಆತಂಕವೋ ಇರುವುದಿಲ್ಲ. ತನ್ನ ದೌರ್ಬಲ್ಯಗಳ ಪ್ರದರ್ಶನವಾಗುವುದು ಅವರಿಗೆ ಬೇಕಿಲ್ಲ.
ಜಂಬೂದ್ವೀಪ ನವಖಂಡ ಪೃಥ್ವಿಯೊಳಗೆ ಕೇಳಿರಯ್ಯಾ,
ಎರಡಾಳಿನ ಭಾಷೆಯ ಕೊಲುವೆನೆಂಬ ಭಾಷೆ ದೇವನದು
ಗೆಲುವೆನೆಂಬ ಭಾಷೆ ಭಕ್ತನದು
ಸತ್ಯವೆಂಬ ಕೂರಲಗನೆ ಹಿಡಿದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವಾ.
ಒಟ್ಟಾರೆ ತನ್ನತನವ ಅರಿತವನ ಭಾಷೆ ಕೊಲುವೆನೆಂಬುದಾಗಿರುವುದಿಲ್ಲ. ಬದಲಿಗೆ ಗೆಲುವೆನೆಂದಾಗಿರುತ್ತದೆ. ಈ ಗೆಲುವೆಂಬುದು ಸವಾಲಿಗೆ ಸವಾಲೊಡ್ಡುವುದಲ್ಲ. ತನ್ನತನವನ್ನು ಕಳೆದುಕೊಳ್ಳುವ ಸೋಲನ್ನುಣ್ಣದಿರುವುದು. ಏಕೆಂದರೆ, “ನುಡಿಯೊಳಗಾಗಿ ನಡೆಯದಿದ್ದರೆ” ತಮ್ಮ ಆತ್ಮಸಾಕ್ಷಿಯು ಒಲಿಯುವುದಿಲ್ಲ ಎಂಬ ಅರಿವು ಅವರಿಗಿರುತ್ತದೆ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ2 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ2 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ



