Connect with us

ಲೋಕಾರೂಢಿ

ಪ್ರಜಾಪ್ರಭುತ್ವವಾದೀ ಹೋರಾಟದ ಮುಂಚೂಣಿಯಲ್ಲಿ ವಿದ್ಯಾರ್ಥಿಗಳು

Published

on

  • ಅವೈಚಾರಿಕತೆ ಮತ್ತು ಕಾರ್ಪೊರೇಟ್-ಹಣಕಾಸು ಕುಳಗಳ ನಡುವೆ ಏರ್ಪಟ್ಟಿರುವ ಮೈತ್ರಿ ಕೂಟವು ಬಿಜೆಪಿ ಸರ್ಕಾರಕ್ಕೆ ಬಲ ಒದಗಿಸುತ್ತಿರುವುದನ್ನು ನಾವು ಕಾಣುತ್ತೇವೆ. ವಾಸ್ತವವಾಗಿ, ಇಂತಹ ಮೈತ್ರಿ ಕೂಟಗಳೇ ಎಲ್ಲ ಫ್ಯಾಸಿಸ್ಟ್ ತೆರನ ಸರ್ಕಾರಗಳಿಗೂ ಬಲ ತುಂಬುವ ಶಕ್ತಿಗಳು. ಇಂತಹ ಒಂದು ಸರ್ಕಾರವನ್ನು ವರ್ಗ ಹೋರಾಟದ ಮೂಲಕ ಪ್ರತಿರೋಧಿಸುವ ಕಾರ್ಯಭಾರವು ಕಾರ್ಮಿಕರು, ರೈತರು, ಸಣ್ಣ ಉತ್ಪಾದಕರು, ಕೃಷಿ ಕಾರ್ಮಿಕರ ಹೆಗಲ ಮೇಲಿದ್ದರೂ ಸಹ, ವೈಚಾರಿಕ ಸಮುದಾಯವೂ ಒಟ್ಟಾಗಿ ನಿಂತು ಈ ಅವೈಚಾರಿಕತೆಯನ್ನು ಎದುರಿಸಬೇಕಿದೆ. ಯೌವನದ ಹೊಸ್ತಿಲಲ್ಲಿರುವ ವಿದ್ಯಾರ್ಥಿಗಳು ಅತಿ ಹೆಚ್ಚು ಹುರುಪುಳ್ಳವರೂ, ಉತ್ಸಾಹಿಗಳೂ ಮತ್ತು ಶಕ್ತಿಯುತ ಕ್ರಿಯಾಶೀಲರೂ ಆಗಿರುವುದರಿಂದ, ಹಿಂದುತ್ವದ ಅವೈಚಾರಿಕತೆಯ ವಿರುದ್ಧ ಶಕ್ತಿಶಾಲಿಯಾಗಿ ಹೋರಾಡಬಲ್ಲರು. ಇಂತಹ ಶಕ್ತಿಶಾಲಿ ಎದುರಾಳಿಯನ್ನು ನಿರಾಯಧರನ್ನಾಗಿಸುವುದೇ ಭಾಜಪದ ಗುರಿ. ಅದರ ಪಾಶವೀ ಹಲ್ಲೆಗೂ ಅಂಜದೆ,ಅಳುಕದೆ ವಿದ್ಯಾರ್ಥಿಗಳು, ಹೋರಾಡುತ್ತಿರುವುದು ಮನಸ್ಸನ್ನು ಉಲ್ಲಸಿತಗೊಳಿಸಿರುವ ಸಂಗತಿ.

ಪ್ರೊ.ಪ್ರಭಾತ್ ಪಟ್ನಾಯಕ್
ಅನು: ಕೆ.ಎಂ.ನಾಗರಾಜ್

ವಿದ್ಯಾರ್ಥಿಗಳ ಉದ್ದೇಶ-ಕರ್ತವ್ಯ-ಪಾತ್ರಗಳ ಕುರಿತಂತೆ ಒಬ್ಬ ವಿದ್ಯಾರ್ಥಿಯ ಪರಿಕಲ್ಪನೆ, ಮತ್ತು, ಅದೇ ರೀತಿಯಲ್ಲಿ, ವಿಶ್ವವಿದ್ಯಾಲಯಗಳ ಉದ್ದೇಶ-ಕರ್ತವ್ಯ-ಪಾತ್ರಗಳ ಕುರಿತಂತೆ ಒಂದು ವಿಶ್ವವಿದ್ಯಾಲಯದ ಪರಿಕಲ್ಪನೆ, ಈ ಪರಿಕಲ್ಪನೆಗಳ ಬಗ್ಗೆ ದೇಶದ ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳಲ್ಲಿ ಈಗ ಒಂದು ವೈಚಾರಿಕ ಸಂಘರ್ಷ ನಡೆಯುತ್ತಿದೆ. ಭಾಜಪ ಸರ್ಕಾರವು, ವಿದ್ಯಾರ್ಥಿಗಳು ಶಿಕ್ಷಣವನ್ನು ಕೊಳ್ಳುವವರಾಗಿ, ಸದಾ ಸ್ವಹಿತದಲ್ಲೇ ಮುಳುಗಿ ಸ್ವಾರ್ಥಿಗಳಾಗಿಯೇ ಉಳಿದು, ಉದ್ಯೋಗ ಮಾರುಕಟ್ಟೆಯಲ್ಲಿ ತಮ್ಮ ಶ್ರಮಶಕ್ತಿಯನ್ನು ಮಾರುವವರಾಗಿ ಇರಬೇಕೆಂದು ಬಯಸುತ್ತದೆ.

ಭಾಜಪದ ಈ ಪರಿಕಲ್ಪನೆಗೆ ಪರ್ಯಾಯವಾಗಿ ಇನ್ನೊಂದು ಪರಿಕಲ್ಪನೆಯೂ ಇದೆ. ಈ ಪರಿಕಲ್ಪನೆಯು, ವಿದ್ಯಾರ್ಥಿಯು ಒಬ್ಬ ಸಾಮಾಜಿಕ ಸಂವೇದನೆಯುಳ್ಳ ವ್ಯಕ್ತಿಯಾಗಿ ಮತ್ತು ನಮ್ಮ ಸಂವಿಧಾನದ ಪ್ರಜಾಸತ್ತಾತ್ಮಕ, ಧರ್ಮನಿರಪೇಕ್ಷ ಮತ್ತು ಮನುಷ್ಯ ಮನುಷ್ಯರ ನಡುವೆ ಸಮಾನತೆಯ ಮೌಲ್ಯಗಳ ಭಾರತವನ್ನು ಕಟ್ಟುವ ಕೈಂಕರ್ಯಕ್ಕಾಗಿ ಶಿಕ್ಷಣವನ್ನು ಬಳಸಿಕೊಳ್ಳುವ ವ್ಯಕ್ತಿಯಾಗಿ; ಮತ್ತು ಅದರ ಜೊತೆಯಲ್ಲಿ ಸರ್ಕಾರದ ನೀತಿಗಳೂ ಸೇರಿದಂತೆ ಎಲ್ಲ ಸಾಮಾಜಿಕ ವಿಷಯಗಳನ್ನೂ ವಿಮರ್ಶಾತ್ಮಕವಾಗಿ ಪರಿಶೀಲನೆಗೊಳಪಡಿಸುವ ವ್ಯಕ್ತಿಯಾಗಿ ಹೊರ ಹೊಮ್ಮಬೇಕು, ಎಂದು ಬಯಸುತ್ತದೆ.

ಅದೇ ರೀತಿಯಲ್ಲಿ, ವಿಶ್ವವಿದ್ಯಾಲಯದ ಬಗ್ಗೆಯೂ ಬೇರೆ ಬೇರೆ ಪರಿಕಲ್ಪನೆಗಳಿವೆ: ವಿಶ್ವವಿದ್ಯಾಲಯವು ಕೌಶಲ್ಯಗಳನ್ನು (ಶಿಕ್ಷಣ ಮತ್ತು ಕೌಶಲ್ಯಗಳು ಒಂದೇ ಅಲ್ಲ, ಶಿಕ್ಷಣವೇ ಬೇರೆ; ಕೌಶಲ್ಯವೇ ಬೇರೆ) ಮಾರುವ ಒಂದು ತಾಣವಾಗಿ ನೋಡುವ; ಅಥವಾ, ಪರ್ಯಾಯವಾಗಿ, ವಿಶ್ವವಿದ್ಯಾಲಯವು, ಕಲಿಕೆಯ ಜೊತೆಗೆ ನಮ್ಮ ಕಾಲದ ಜ್ವಲಂತ ಸಮಸ್ಯೆಗಳೊಂದಿಗೆ ವಿಮರ್ಶಾತ್ಮಕವಾಗಿ ಸಂವಾದಗಳಲ್ಲಿ ತೊಡಗುವ ತಾಣವಾಗಿ ನೋಡುವ ಪರಿಕಲ್ಪನೆಯೂ ಇದೆ. ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ, ನಮ್ಮ ದೇಶದ ಅಗ್ರ ಮಾನ್ಯ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಈ ಎರಡನೆಯ ಪರಿಕಲ್ಪನೆಗೆ ಸೇರುತ್ತಾರೆ – ನಮ್ಮ ಕಾಲದ ಜ್ವಲಂತ ಸಮಸ್ಯೆಗಳ ಬಗ್ಗೆ ಅವರು ತಮ್ಮ ಸಂವೇದನೆಯನ್ನು ವ್ಯಕ್ತಪಡಿಸಿದ್ದಾರೆ.

ಪೌರತ್ವ ಕಾಯ್ದೆಯ ತಿದ್ದುಪಡಿಯ ಬಗ್ಗೆ ಇತ್ತೀಚೆಗೆ ಭುಗಿಲೆದ್ದಿರುವ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಬಲು ದೊಡ್ಡ ಪಾತ್ರ ವಹಿಸಿದ್ದಾರೆ. ಅದಕ್ಕೂ ಹಿಂದೆ, ಕಳೆದ ಕೆಲವು ವರ್ಷಗಳಲ್ಲಿ, ಅನೇಕ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ವೈಚಾರಿಕ ಸಂಘರ್ಷ ವ್ಯಕ್ತಗೊಂಡಿದೆ: ಜೆಎನ್‌ಯು, ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯ, ಪುಣೆಯ ಫಿಲಂ & ಟಿ ವಿ ಟೆಕ್ನಾಲಜಿ ಇನ್‌ಸ್ಟಿಟೂಟ್; ಬರೋಡಾದ ಸಯ್ಯಾಜಿ ರಾವ್ ವಿಶ್ವವಿದ್ಯಾಲಯದ ಲಲಿತಕಲಾ ವಿಭಾಗ; ಇಂತಹ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಸಂವಿಧಾನದ ಮೌಲ್ಯಗಳನ್ನು ಆಳುವವರು ಪುರಸ್ಕರಿಸದ ಮತ್ತು ತಮ್ಮ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗಳಲ್ಲಿ ತೊಡಗಿದ್ದರು. ಅದರಲ್ಲಿ ಆಶ್ಚರ್ಯವೇನಿಲ್ಲ.

ಆದರೆ, ವಿದ್ಯಾರ್ಥಿಗಳನ್ನು ಕೇವಲ ಕೌಶಲ್ಯಗಳನ್ನು ಕೊಳ್ಳುವ ಒಂದು ನಿಷ್ಕ್ರಿಯ ಸಮೂಹವಾಗಿ ಪರಿವರ್ತಿಸುವ ಪ್ರಯತ್ನದಲ್ಲಿ, ಭಾಜಪ ಸರ್ಕಾರವು ಯಾವ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಸಾಮಾಜಿಕವಾಗಿ ಸಂವೇದನಾಶೀಲತೆಗೆ ಹೆಸರಾಗಿದ್ದರೋ ಅಂತಹ ಈ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳ ಮೇಲೆ ನಿಖರ ಗುರಿ ಇಟ್ಟು ದಾಳಿ ಮಾಡಿತು. ನಿಜವಾಗಿಯೂ, ಈ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳ ಸಾಮಾಜಿಕ ಸಂವೇದನಾಶೀಲತೆಯ ಕೊಡುಗೆಯಿಂದಲೇ ಈ ವಿಶ್ವವಿದ್ಯಾಲಯಗಳು ಶ್ರೇಷ್ಠ ವಿದ್ಯಾ ಸಂಸ್ಥೆಗಳ ಎತ್ತರಕ್ಕೆ ಬೆಳೆದವು.

ಕ್ಯಾಂಪಸ್‌ಗಳು ರಾಜಕೀಯದಿಂದ ದೂರವಿರಬೇಕೆ?

ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳನ್ನು ರಾಜಕೀಯದಿಂದ ದೂರ ಇರುವಂತೆ ಮಾಡುವ ಸಲುವಾಗಿ ಸರ್ಕಾರವು ಅನೇಕ ವಿಧಾನಗಳನ್ನು ಅನುಸರಿಸಿದೆ. ಅವುಗಳಲ್ಲಿ ಬಹಳ ಮುಖ್ಯವಾದ ವಿಧಾನವೆಂದರೆ: ಶ್ರೀಮಂತ ಮತ್ತು ವೃತ್ತಿ-ಅಭಿಮುಖ ವಿದ್ಯಾರ್ಥಿಗಳು ಮಾತ್ರ ವಿಶ್ವವಿದ್ಯಾಲಯ ಪ್ರವೇಶಿಸಬೇಕು ಎಂಬ ಉದ್ದೇಶದಿಂದ ಶುಲ್ಕ ಹೆಚ್ಚಳ (ಜೆಎನ್‌ಯುನಲ್ಲಿ ಮಾಡಿದಂತೆ) ಮಾಡುವ ಮೂಲಕ ವಿದ್ಯಾರ್ಥಿಗಳ ಸಾಮಾಜಿಕ ಸಂಯೋಜನೆಯಲ್ಲಿ(ಅಂದರೆ, ಬೇರೆ ಬೇರೆಯ ಧರ್ಮ, ಜಾತಿ, ಲಿಂಗ, ಬಡ, ಪ್ರದೇಶ ಮುಂತಾದ ಹಿನ್ನೆಲೆಯಿಂದ ಬಂದವರು) ಬದಲಾವಣೆ, ವಿಶ್ವವಿದ್ಯಾಲಯಗಳಲ್ಲಿ ಮಾನವಿಕ ವಿಷಯಗಳು, ಸಮಾಜ ವಿಜ್ಞಾನ ಮತ್ತು ಮೂಲ ವಿಜ್ಞಾನಗಳು ಮುಂತಾದ ವಿಮರ್ಶಾತ್ಮಕ ಶಿಸ್ತುಗಳ ಮಹತ್ವವನ್ನು ಕುಗ್ಗಿಸುವ, ಹೊಸ ಶಾಖೆಗಳನ್ನು ಆರಂಭಿಸುವುದು; ಸಾಮಾಜಿಕವಾಗಿ ವಂಚಿತ ಸಮುದಾಯದ ವಿದ್ಯಾರ್ಥಿಗಳಿಗೆ ಮೀಸಲಾತಿ ಕಿತ್ತುಹಾಕಿ ಕ್ಯಾಂಪಸ್‌ಗಳ ಒಳಗೊಳ್ಳುವಿಕೆಯ ಸ್ವರೂಪವನ್ನು ಹಾಳುಗೆಡವಿರುವುದು.

ಇನ್ನೊಂದು ವಿಧಾನವೆಂದರೆ, ವಿದ್ಯಾರ್ಥಿಗಳು ಪ್ರತಿಭಟನೆಗಳಲ್ಲಿ ಭಾಗವಹಿಸದಂತೆ ತಡೆಯುವುದು, ಮತ್ತು ಸಂಘ ಪರಿವಾರಕ್ಕೆ ಒಪ್ಪಿಗೆಯಾಗದ ವ್ಯಕ್ತಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸದಂತೆ ವಿದ್ಯಾರ್ಥಿಗಳನ್ನು ತಡೆಯುವುದು. ಹೆಚ್ಚು ಹೆಚ್ಚಾಗಿ ಬಳಕೆಯಾಗುತ್ತಿರುವ ಮತ್ತೊಂದು ವಿಧಾನವೆಂದರೆ, ಪೋಲೀಸರನ್ನು ಕ್ಯಾಂಪಸ್‌ಗೆ ನುಗ್ಗಿಸಿ ವಿದ್ಯಾರ್ಥಿಗಳನ್ನು ಹಿಗ್ಗಾ ಮುಗ್ಗಾ ಥಳಿಸುವುದು ಮತ್ತು ಸರ್ಕಾರ ಅಥವಾ ಕುಲಪತಿಯನ್ನು ಫಜೀತಿಗೊಳಪಡಿಸುವ ಛಾತಿ ಇರುವ ವಿದ್ಯಾರ್ಥಿ ನಾಯಕರನ್ನು ಒಂದಲ್ಲಾ ಒಂದು ಉಗ್ರ ಕಾನೂನಿನಡಿಯಲ್ಲಿ ರಾಷ್ಟ್ರ-ವಿರೋಧಿ ಅಥವಾ ರಾಜದ್ರೋಹ ಅಥವಾ ಯಾವುದಾದರೂ ಸರಿಯೇ ಒಂದು ಕ್ರಿಮಿನಲ್ ಆಪಾದನೆಯ ಮೇಲೆ ಬಂಧಿಸಿ ಜೈಲಿನಲ್ಲಿ ಕೊಳೆಯುವಂತೆ ಮಾಡುವುದು.

ಈ ಎಲ್ಲ ವಿಧಾನಗಳನ್ನೂ ಸಂಘ ಪರಿವಾರ- ನಿಷ್ಠ ವ್ಯಕ್ತಿಗಳನ್ನು ಈ ಸಂಸ್ಥೆಗಳ ಮುಖ್ಯಸ್ತರಾಗಿ ನೇಮಿಸುವ ಮೂಲಕ ಜಾರಿ ಮಾಡಲಾಗುತ್ತಿದೆ. ಈ ವ್ಯಕ್ತಿಗಳಿಗೆ ವಿದ್ಯಾರ್ಥಿಗಳ ಬಗ್ಗೆ ಸ್ವಲ್ಪವೂ ಕರುಣೆ ಇಲ್ಲ, ತಾವು ಮುಖ್ಯಸ್ಥರಾಗಿರುವ ಸಂಸ್ಥೆಗಳ ಬಗ್ಗೆಯೇ ಗೌರವ, ಪ್ರೀತಿ, ಅಭಿಮಾನ, ಹೆಮ್ಮೆ, ಯಾವುದೂ ಇಲ್ಲ. ಅಷ್ಟೇ ಅಲ್ಲ, ಅವರು, ವಿಶ್ವವಿದ್ಯಾಲಯದ ಇಡೀ ಸಮುದಾಯದ ಯಾರೊಬ್ಬರಿಗೂ ಸಂಪರ್ಕಿಸಲು ಉದ್ದೇಶಪೂರ್ವಕವಾಗಿ ಒದಗದವರು.

ಉದಾಹರಣೆಗೆ ಹೇಳುವುದಾದರೆ, ಜೆಎನ್‌ಯುನ ವಿದ್ಯಾರ್ಥಿ ಸಂಘಕ್ಕೆ ಮನ್ನಣೆ ನೀಡಬೇಕು ಮತ್ತು ಅದರ ನಾಯಕರೊಂದಿಗೆ ಮಾತುಕತೆ ನಡೆಸಬೇಕು ಎಂಬುದಾಗಿ ಸರ್ಕಾರವೇ ನೇಮಕ ಮಾಡಿದ ತಜ್ಞರ ಸಮಿತಿಯ ಶಿಫಾರಸನ್ನು ಜೆಎನ್‌ಯು ಕುಲಪತಿ ಕಡೆಗಣಿಸಿದ್ದಾರೆ. ವಿದ್ಯಾರ್ಥಿ ಸಮುದಾಯದ ಕಣ್ಣೋಟವನ್ನು ಅಭಿವ್ಯಕ್ತಿಸುವ ವೇದಿಕೆಯಾದ ವಿದ್ಯಾರ್ಥಿ ಸಂಘವನ್ನು ಮನ್ನಣೆ ಮಾಡುವುದು ಬಿಜೆಪಿಗೆ ಹಿಡಿಸದ ಅಂಶ. ಅದು, ವಿದ್ಯಾರ್ಥಿ ಎಂದರೆ ಹೀಗೆಯೇ ಇರಬೇಕು ಎಂದು ಆದೇಶಿಸುವ ಭಾಜಪದ ಪರಿಕಲ್ಪನೆಗೆ ಹೊಂದುವುದಿಲ್ಲ.

ಒಂದು ಪ್ರಶ್ನೆ ಏಳುತ್ತದೆ: ನಮ್ಮ ವಿಶ್ವವಿದ್ಯಾಲಯಗಳಲ್ಲಿ ರಾಜಕೀಯದಿಂದ ದೂರ ಇರುವಂತೆ ಮತ್ತು ಹೇಳಿದಂತೆ ಕೇಳುವ ವಿದ್ಯಾರ್ಥಿಗಳಿಂದಲೇ ತುಂಬಿರುವಂತೆ ಮಾಡಲು ಸರ್ಕಾರವು ಅದೇಕೆ ಅಷ್ಟೊಂದು ಉತ್ಸುಕವಾಗಿದೆ? ಉತ್ತರ: ಏಕೆಂದರೆ, ಒಂದು ದಬ್ಬಾಳಿಕೆಯ ಸರ್ಕಾರಕ್ಕೆ ವಿಧೇಯತೆ ಇರಬೇಕೆಂದು ಬಯಸುವ ಸಮಾಜ ಮತ್ತು ರಾಜ್ಯಾಡಳಿತಗಳಿಗೆ ಅಂತಹ ವಿದ್ಯಾರ್ಥಿಗಳೇ ಅಗತ್ಯವಾಗಿ ಬೇಕಾಗುತ್ತಾರೆ. ನಮ್ಮ ವಿಶ್ವವಿದ್ಯಾಲಯಗಳಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಜಾರಿಯಾಗುತ್ತಿರುವ ಬದಲಾವಣೆಗಳ ಉದ್ದೇಶವೇ ಇಂತಹ ಸರ್ವಾಧಿಕಾರಶಾಹಿ ಆಳ್ವಿಕೆಗೆ ಬದಲಾವಣೆ ಹೊಂದಲು ಸಹಾಯಕವಾಗುವುದು.

ಅವೈಚಾರಿಕತೆಗೆ ಸವಾಲು

ಪ್ರಸ್ತುತದಲ್ಲಂತೂ ಅವೈಚಾರಿಕತೆ ಕುಣಿದು ಕುಪ್ಪಳಿಸುತ್ತಿದೆ. ಭಾಜಪ ಸರ್ಕಾರವು ಎರಡು ಅಪರೂಪದ ಶಕ್ತಿಗಳ ಸಂಗಮವನ್ನು ಪ್ರತಿನಿಧಿಸುತ್ತದೆ – ಒಂದು ಕಡೆಯಲ್ಲಿ ಕಾರ್ಪೊರೇಟ್-ಹಣಕಾಸು ಕುಳಗಳು ಮತ್ತು ಇನ್ನೊಂದೆಡೆಯಲ್ಲಿ ನಮ್ಮ ಪ್ರಜಾಪ್ರಭುತ್ವವಾದೀ ಮತ್ತು ಧರ್ಮನಿರಪೇಕ್ಷ ಸಂವಿಧಾನವನ್ನು ಕಿತ್ತೆಸೆಯುವ ಮೂಲಕ ದೇಶವನ್ನು ಒಂದು ಹಿಂದೂ ರಾಷ್ಟ್ರವಾಗಿ ಪರಿವರ್ತಿಸುವ ಗುರಿ ಹೊಂದಿದ ಹಿಂದುತ್ವ ಶಕ್ತಿಗಳು-ಇವೆರಡರ ಸಂಗಮ.

ಹಿಂದೂರಾಷ್ಟ್ರದ ಸಮರ್ಥನೆಯಾಗಿ ಹಿಂದುತ್ವ ಶಕ್ತಿಗಳು ಬಳಸುತ್ತಿರುವ ಇಡೀ ಕಥನವು ಅವೈಚಾರಿಕತೆಯ ಮೇಲೆ ನಿಂತಿದೆ. ಯಾವ ಅರ್ಥದಲ್ಲಿ ಅದು ಅವೈಚಾರಿಕವಾಗಿದೆ ಎಂದರೆ, ಹಿಂದುತ್ವವು ತನ್ನ ಯಥಾರ್ಥತೆ/ಸತ್ಯತೆ-ಮೌಲ್ಯವನ್ನು ಅಂಗೀಕೃತ ವಾಗುವಂತೆ ಮಾಡುವಲ್ಲಿ ಪುರಾವೆಯ ಪಾತ್ರವನ್ನು ಒಪ್ಪಿಕೊಳ್ಳುವುದಿಲ್ಲ. ಈ ರೀತಿಯಲ್ಲಿ, ಅವೈಚಾರಿಕತೆ ಮತ್ತು ಕಾರ್ಪೊರೇಟ್-ಹಣಕಾಸು ಕುಳಗಳ ನಡುವೆ ಒಂದು ಮೈತ್ರಿ ಕೂಟ ಏರ್ಪಟ್ಟಿರುವುದನ್ನು ಮತ್ತು ಈ ಮೈತ್ರಿ ಕೂಟವು ಭಾಜಪ ಸರ್ಕಾರಕ್ಕೆ ಬಲ ಒದಗಿಸುತ್ತಿರುವುದನ್ನು ನಾವು ಕಾಣುತ್ತೇವೆ. ವಾಸ್ತವವಾಗಿ, ಇಂತಹ ಮೈತ್ರಿ ಕೂಟಗಳೇ ಎಲ್ಲ ಫ್ಯಾಸಿಸ್ಟ್ ತೆರನ ಸರ್ಕಾರಗಳಿಗೂ ಬಲ ತುಂಬುವ ಶಕ್ತಿಗಳು.

ಇಂತಹ ಒಂದು ಸರ್ಕಾರವನ್ನು ವರ್ಗ ಹೋರಾಟದ ಮೂಲಕ ಪ್ರತಿರೋಧಿಸುವ ಕಾರ್ಯಭಾರವು ಕಾರ್ಮಿಕರು, ರೈತರು, ಸಣ್ಣ ಉತ್ಪಾದಕರು, ಕೃಷಿ ಕಾರ್ಮಿಕರ ಹೆಗಲ ಮೇಲಿದ್ದರೂ ಸಹ, ವೈಚಾರಿಕ ಸಮುದಾಯವೂ ಒಟ್ಟಾಗಿ ನಿಂತು ಈ ಅವೈಚಾರಿಕತೆಯನ್ನು ಎದುರಿಸಬೇಕಿದೆ. ಚಾಲ್ತಿಯಲ್ಲಿರುವ ಈ ಅವೈಚಾರಿಕತೆಯು, ಚರಿತ್ರೆಯನ್ನು ಪುರಾಣದ ಮೂಲಕ ವ್ಯಾಖ್ಯಾನಿಸುತ್ತದೆ, ವಾಸ್ತವಾಂಶಗಳಿಗೆ ಬದಲಾಗಿ ನಂಬಿಕೆಗಳಿಗೆ ಜೋತುಬೀಳುತ್ತದೆ, ವೈಜ್ಞಾನಿಕ ಮನೋಭಾವದ ಬದಲಾಗಿ ಮೂಢ ನಂಬಿಕೆಗಳನ್ನು ಹರಡುತ್ತದೆ. ಈ ರೀತಿಯಲ್ಲಿ ವೈಚಾರಿಕತೆಯನ್ನು ನಾಶಪಡಿಸುವ ಭೂಮಿಕೆಯನ್ನು ಅದು ನಿರ್ಮಿಸುತ್ತಿದೆ. ಏಕೆಂದರೆ, ಕೋಮುವಾದಿ-ಸರ್ವಾಧಿಕಾರಶಾಹೀ ಯೋಜನೆಗೆ ಈ ಭೂಮಿಕೆಯೇ ಬೆನ್ನೆಲುಬು.

ಯೌವನದ ಹೊಸ್ತಿಲಲ್ಲಿರುವ ವಿದ್ಯಾರ್ಥಿಗಳು ಅತಿ ಹೆಚ್ಚು ಹುರುಪುಳ್ಳವರೂ, ಉತ್ಸಾಹಿಗಳೂ ಮತ್ತು ಶಕ್ತಿಯುತ ಕ್ರಿಯಾಶೀಲರೂ ಆಗಿರುವುದರಿಂದ, ಅವರು ಬುದ್ಧಿಜೀವಿ ವರ್ಗದ ಮೂಲಾಂಶಗಳೂ ಆಗಿರುತ್ತಾರೆ. ಆದ್ದರಿಂದ, ಅವರು ಹಿಂದುತ್ವದ ಅವೈಚಾರಿಕತೆಯ ವಿರುದ್ಧ ಶಕ್ತಿಶಾಲಿಯಾಗಿ ಹೋರಾಡಬಲ್ಲರು. ಇಂತಹ ಶಕ್ತಿಶಾಲಿ ಎದುರಾಳಿಯನ್ನು ನಿರಾಯಧರನ್ನಾಗಿಸುವುದೇ ಭಾಜಪದ ಗುರಿ. ವೃತ್ತಿ-ಭವಿಷ್ಯದ ಬೆನ್ನತ್ತಿ ಹೋಗುವ ವಿದ್ಯಾರ್ಥಿಗಳಿಂದ ಹಿಂದುತ್ವ ಯೋಜನೆಗೆ ಅಪಾಯವಿಲ್ಲ. ಅಪಾಯ ಒಡ್ಡುವವರು ಯಾರು ಎಂದರೆ, ಸಾಮಾಜಿಕ ಸಂವೇದನೆ ವ್ಯಕ್ತಪಡಿಸುವ ವಿದ್ಯಾರ್ಥಿಗಳು ಮತ್ತು ಧರ್ಮನಿರಪೇಕ್ಷತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬದ್ಧರಾಗಿರುವ ವಿದ್ಯಾರ್ಥಿಗಳು. ಏಕೆಂದರೆ, ಯೌವನದ ಹುರುಪು, ಉತ್ಸಾಹ ಮತ್ತು ಛಲಗಳ ಜೊತೆಗೆ ಶಿಕ್ಷಣದ ಮೂಲಕ ಜ್ಞಾನ ಸಂಪನ್ನರೂ ಆಗಿರುವ ಅವರು ಹಿಂದುತ್ವದ ವಿರುದ್ಧ ಒಂದು ಬಲವಾದ ತಡೆಯಂತೆ ನಿಲ್ಲುತ್ತಾರೆ.

ಖಾಸಗೀಕರಣ-ವ್ಯಾಪಾರೀಕರಣದ ಆಯುಧ

ಶಿಕ್ಷಣವನ್ನು ಖಾಸಗೀಕರಣಗೊಳಿಸುವ ಮತ್ತು ವ್ಯಾಪಾರೀಕರಣಗೊಳಿಸುವ ಬಯಕೆಯು, ವಿದ್ಯಾರ್ಥಿಗಳನ್ನು ನಿರಾಯುಧರನ್ನಾಗಿ ಮಾಡುವ ಯೋಜನೆಯ ಭಾಗವಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ವಸೂಲಿ ಮಾಡುವ ದುಬಾರಿ ಶುಲ್ಕದಿಂದಾಗಿ ದುಡ್ಡಿಲ್ಲದವರು ಶಿಕ್ಷಣದಿಂದ ಹೊರಗುಳಿಯುತ್ತಾರೆ ಮತ್ತು ಅಲ್ಲಿ ಸೇರಿಕೊಳ್ಳುವ ಶ್ರೀಮಂತರ ಮಕ್ಕಳಿಗೆ ಬಡವರ ಹೊಟ್ಟೆ ಬಟ್ಟೆಯ ಕಷ್ಟಗಳ ಬಗ್ಗೆ ಅರಿವಿಲ್ಲದಿರುವುದರಿಂದ ಅವರು ಸಾಮಾಜಿಕವಾಗಿ ಸಂವೇದನೆ ಇಲ್ಲದವರಾಗುತ್ತಾರೆ. ಹೊಟ್ಟೆ ಬಟ್ಟೆಯ ಕಷ್ಟಗಳನ್ನು ಅನುಭವಿಸಿದ ಮಕ್ಕಳಿಗೆ ಸಾಮಾಜಿಕ ಸಂವೇದನೆ ಮೂಡುವುದು ಸ್ವಾಭಾವಿಕ.

ಒಂದು ವೇಳೆ, ಜೆಎನ್‌ಯು ರೀತಿಯಲ್ಲಿ, ಸಾರ್ವಜನಿಕ ಶಿಕ್ಷಣಗಳಲ್ಲೂ ಶುಲ್ಕ ಹೆಚ್ಚಳ ಮಾಡಿದರೆ, ಈ ಸಂಸ್ಥೆಗಳ ಪಾಡೂ ಅದೇ ಆಗುತ್ತದೆ. ಬೇರೆಯವರಿಗಿಂತ ಕಡಿಮೆ ಸೌಕರ್ಯ, ಪ್ರಯೋಜನ, ರಕ್ಷಣೆ ಮುಂತಾದವುಗಳನ್ನು ಹೊಂದಿದ ಕುಟುಂಬ ಹಿನ್ನೆಲೆಯಿಂದಾಗಿ ಸಾಲ ಮಾಡಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಾಲದ ಹೊರೆಯ ಹಿಂಸೆ ಆವರಿಸಿರುವುದರಿಂದ, ಅವರಿಗೆ ಸಾಮಾಜಿಕವಾಗಿ ಅಥವಾ ರಾಜಕೀಯವಾಗಿ ಕ್ರಿಯಾಶೀಲರಾಗಿ ತೊಡಗಿಕೊಳ್ಳುವುದು ಸಾಧ್ಯವಾಗುವುದಿಲ್ಲ. ವಿದ್ಯಾರ್ಥಿ ಸಾಲಗಳು ರಾಜಕೀಯ ಕ್ರಿಯಾಶೀಲತೆಯ ಮೇಲೆ ಉಂಟುಮಾಡುವ ಪರಿಣಾಮಗಳ ಉತ್ತಮ ಚಿತ್ರಣ ಅಮೇರಿಕಾದಲ್ಲಿ ಸಿಗುತ್ತದೆ.

ಅಮೇರಿಕಾದಲ್ಲಿ, ವಿದ್ಯಾರ್ಥಿಗಳು ವಿಯಟ್ನಾಂ ಯುದ್ಧ-ವಿರೋಧ ಪ್ರತಿಭಟನೆ ನಡೆಸಿದ ಸಮಯದ ನಂತರದ ಅವಧಿಯಲ್ಲಿ, ಅಲ್ಲಿನ ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳು ಹೋಲಿಕೆಯಲ್ಲಿ ಶಾಂತವಾಗಿ ಕಾಣುತ್ತವೆ. ಕ್ಯಾಂಪಸ್‌ಗಳು ಶಾಂತವಾಗಿ ಉಳಿದಿರುವುದಕ್ಕೆ, ಖಂಡಿತವಾಗಿಯೂ, ವಿದ್ಯಾರ್ಥಿಗಳ ಮೇಲಿರುವ ಸಾಲದ ಹೊರೆಯೇ ಕಾರಣ.

ಭಾರತದಲ್ಲಿ, ಅದೃಷ್ಟವಷಾತ್, ಸಂಘ ಪರಿವಾರದ ಶಿಸ್ತು ಹೇರುವ ವ್ಯಕ್ತಿಗಳ ಹರ ಸಾಹಸದ ಬಳಿಕವೂ, ವಿದ್ಯಾರ್ಥಿಗಳು ತಮ್ಮ ಸಾಮಾಜಿಕ ಸಂವೇದನೆಯನ್ನು ಕಳೆದುಕೊಂಡಿಲ್ಲ. ಆಗಿರುವುದು ಏನೆಂದರೆ, ಕ್ಯಾಂಪಸ್ ಡೆಮಾಕ್ರಸಿಯಿಂದ ಹಿಡಿದು, ಇಡೀ ಜನತೆಯನ್ನು ತಟ್ಟುವ ಸಮಸ್ಯೆಗಳಾದ ಸಿಎಎ ಮತ್ತು ಎನ್‌ಆರ್‌ಸಿಯವರೆಗೆ ವಿದ್ಯಾರ್ಥಿಗಳು ಕ್ರಿಯಾಶೀಲವಾಗಿ ತೊಡಗಿಕೊಂಡಿದ್ದಾರೆ. ಅವರ ಈ ಚಟುವಟಿಕೆಗಳಲ್ಲಿ ಎದ್ದು ಕಾಣುವ ಅಂಶವೆಂದರೆ, ತಮ್ಮ ತಮ್ಮ ನಡುವೆ ಬೆಸಗೊಳ್ಳುವಿಕೆಯು (ಒಳಗೊಳ್ಳುವಿಕೆಯ ಸ್ಪಂದನೆ), ಸಮಾಜವು ಯಾವ ರೀತಿಯ ಒಳಗೊಳ್ಳುವಿಕೆಯನ್ನು ಮೈಗೂಡಿಸಿಕೊಳ್ಳಬೇಕು ಎಂಬುದರ ದಿಕ್ಸೂಚಿಯಂತಿದೆ.

ಬೇರೊಂದು ಧಾರ್ಮಿಕ ಹಿನ್ನೆಲೆಯ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿಗಳೊಂದಿಗೆ ಸಿಎಎ ಮತ್ತು ಎನ್‌ಆರ್‌ಸಿಯ ವಿರುದ್ಧವಾಗಿ ಹೋರಾಡುತ್ತಿರುವುದು, ಶ್ರೀಮಂತ ಹಿನ್ನೆಲೆಯ ವಿದ್ಯಾರ್ಥಿಗಳು ಶುಲ್ಕ ಹೆಚ್ಚಳದ ವಿರುದ್ಧವಾಗಿ ತಮ್ಮ ಬಡ ಸಹಪಾಠಿಗಳೊಂದಿಗೆ ಹೋರಾಡುತ್ತಿರುವ ಅಂಶಗಳು, ಆಪ್ತಗೆಳೆತನ ಮತ್ತು ಸೌಹಾರ್ಧತೆಯ ಅತ್ಯುತ್ತಮ ಉದಾಹರಣೆಗಳಾಗಿವೆ.

ವಿದ್ಯಾರ್ಥಿಗಳು ಶರಣಾಗಲು ನಿರಾಕರಿಸುತ್ತಿರುವುದರಿಂದ ಅವರನ್ನು ಪಳಗಿಸಲು ಪೋಲೀಸರು ಪಾಶವೀ ಹಲ್ಲೆ ನಡೆಸುತ್ತಿದ್ದಾರೆ. ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳ ಮೇಲೆ ಕೇಂದ್ರ ಗೃಹ ಸಚಿವರ ನೇರ ಹಿಡಿತದಲ್ಲಿರುವ ದಿಲ್ಲಿ ಪೋಲಿಸರು ಪಾಶವೀ ಹಲ್ಲೆ ನಡೆಸಿದ್ದಾರೆ. ಅಲಿಘರ್ ಮುಸ್ಲಿಂ ಯೂನಿವರ್ಸಿಟಿಯಲ್ಲಿ ಉತ್ತರ ಪ್ರದೇಶದ ಭಾಜಪದ ಯೋಗಿ ಆದಿತ್ಯನಾಥರ ಸರ್ಕಾರದ ಪೋಲಿಸರು ಪಾಶವೀ ಹಲ್ಲೆ ನಡೆಸಿದ್ದಾರೆ.

ಜೆಎನ್‌ಯುನಲ್ಲಿ, ಘಟನಾ ಸ್ಥಳದಲ್ಲಿ ವಿಶ್ವವಿದ್ಯಾಲಯದ ಸ್ವಂತ ರಕ್ಷಣಾ ಸಿಬ್ಬಂದಿಯ ನಿಗೂಢ ಅನುಪಸ್ಥಿತಿಯಲ್ಲಿ ಮತ್ತು ಆಂತರಿಕ ಮಾಹಿತಿ ಒದಗಿಸುವವರು ಬೆಟ್ಟು ಮಾಡಿ ತೋರಿಸಿದವರನ್ನು ಕ್ಯಾಂಪಸ್ ಹೊರಗಿನಿಂದ ಬಂದ ಮುಖ ಮುಸುಕು ಹೊದ್ದ ಪುಂಡರು ದಿಲ್ಲಿ ಪೋಲೀಸರ ಕಣ್ಣೆದುರಿನಲ್ಲೇ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಇಂತಹ ಪಾಶವೀ ಹಲ್ಲೆಗೂ ಅಳುಕದ ವಿದ್ಯಾರ್ಥಿಗಳು, ಆಧುನಿಕ ಭಾರತದ ಬುನಾದಿ ಹಾಕಿದ ಮೌಲ್ಯಗಳನ್ನು ಹಿಂದುತ್ವವು ಗುಪ್ತವಾಗಿ ಹಾಳುಗೆಡವಲು ಪ್ರಯತ್ನ ಮಾಡುತ್ತಿರುವ ಸನ್ನಿವೇಶದಲ್ಲಿ, ಭಾರತ ಸಂವಿಧಾನದ ಮೌಲ್ಯಗಳನ್ನು ರಕ್ಷಿಸಲು ವಿದ್ಯಾರ್ಥಿಗಳು ಹೋರಾಡುತ್ತಿರುವುದು ಮನಸ್ಸನ್ನು ಉಲ್ಲಸಿತಗೊಳಿಸಿರುವ ಸಂಗತಿ. ಇದು, ಪ್ರಸ್ತುತದಲ್ಲಿ ಎಷ್ಟೇ ಕಷ್ಟ ನಷ್ಟಗಳು ಎದುರಾದರೂ, ದೇಶದ ಭವಿಷ್ಯ ಸುರಕ್ಷಿತವಾಗಿರಬಲ್ಲದು ಎಂಬ ಭರವಸೆ ಹುಟ್ಟಿಸುತ್ತದೆ.

(‘ಜನಶಕ್ತಿ’ ವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ

ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ ಪ್ರಜಾಪ್ರಭುತ್ವವು ‘ನಿಷ್ಪಕ್ಷಪಾತ’ ಮನೋಭಾವವನ್ನು ಪ್ರತಿಪಾದಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವು ಕೇವಲ ಕಾಗದದ ಮೇಲಿನ ವಾಕ್ಯವಾಗದೆ, ಹುಟ್ಟಿನಿಂದ ಹೇರಲ್ಪಟ್ಟ ಶ್ರೇಣೀಕೃತ ವ್ಯವಸ್ಥೆಯ ಗೋಡೆಗಳನ್ನು ಕೆಡವುವ ಶಕ್ತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ದೇಶದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಾನಕ್ಕೇರಲು ಸಾಧ್ಯವಿರುವುದು ಈ ವ್ಯವಸ್ಥೆಯ ಅತಿದೊಡ್ಡ ಯಶಸ್ಸು.

ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಬಲ

ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವದ ಅಂತರಾತ್ಮವಿದ್ದಂತೆ. ಐತಿಹಾಸಿಕವಾಗಿ ಶೋಷಣೆಗೆ ಒಳಗಾದ ಸಮುದಾಯಗಳಿಂದ ಬಂದ ವ್ಯಕ್ತಿಗಳು ನಾಯಕತ್ವದ ಸ್ಥಾನಕ್ಕೇರುವುದು ಹೊರನೋಟಕ್ಕೆ ಒಂದು ಪವಾಡದಂತೆ ಭಾಸವಾಗಬಹುದು. ಆದರೆ, ವಾಸ್ತವದಲ್ಲಿ ಇದು ಸಂವಿಧಾನ ನೀಡಿರುವ ‘ಮತದಾನದ ಹಕ್ಕು’ ಮತ್ತು ‘ಪ್ರಾತಿನಿಧ್ಯದ ಅವಕಾಶ’ಗಳ ಫಲಶೃತಿಯಾಗಿದೆ. ಪ್ರಜಾಪ್ರಭುತ್ವವು ಕೇವಲ ಬಹುಮತದ ಆಡಳಿತವಲ್ಲ, ಬದಲಿಗೆ ಅಲ್ಪಸಂಖ್ಯಾತ ಮತ್ತು ದಮನಿತ ಧ್ವನಿಗಳಿಗೂ ನೀತಿ ನಿರೂಪಣೆಯಲ್ಲಿ ಸಮಾನ ವೇದಿಕೆ ಕಲ್ಪಿಸುವ ಒಳಗೊಳ್ಳುವಿಕೆಯ (Inclusion) ಪ್ರಕ್ರಿಯೆಯಾಗಿದೆ. ಅಧಿಕಾರವು ಕೆಲವೇ ಜನರ ಕೈಯಲ್ಲಿ ಕೇಂದ್ರಿಕೃತವಾಗದೆ, ವಿಕೇಂದ್ರೀಕರಣದ ಮೂಲಕ ಸಾಮಾನ್ಯ ಜನರಿಗೂ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳುತ್ತದೆ.

ನಾಯಕತ್ವದ ನೈತಿಕತೆ ಮತ್ತು ಸಾಂವಿಧಾನಿಕ ಬದ್ಧತೆ

ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಅಂಶವೆಂದರೆ ಅಧಿಕಾರವನ್ನು ಪಡೆದವರ ನೈತಿಕ ನಡೆ. ಪ್ರಜಾಪ್ರಭುತ್ವದ ಒತ್ತಾಸೆಯಿಂದ ಅವಕಾಶ ಮತ್ತು ಅಧಿಕಾರವನ್ನು ಪಡೆಯುವ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ನಿಲುವುಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನೈತಿಕತೆಯನ್ನು ಹೊಂದಿರಬೇಕಾಗುತ್ತದೆ. ಅಧಿಕಾರವು ಒಂದು ಸೌಲಭ್ಯವಲ್ಲ, ಅದೊಂದು ಜವಾಬ್ದಾರಿ. ಯಾವ ವ್ಯವಸ್ಥೆಯು ಒಬ್ಬ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಯಿಂದ ನಾಯಕತ್ವದ ಸ್ಥಾನಕ್ಕೆ ಏರಿಸುತ್ತದೆಯೋ, ಅದೇ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು ಆ ನಾಯಕನ ಪರಮ ಧರ್ಮ. ಸಾಂವಿಧಾನಿಕ ಆಶಯಗಳಿಗೆ ದ್ರೋಹ ಬಗೆಯದೆ, ವೈಯಕ್ತಿಕ ಹಿತಾಸಕ್ತಿಗಿಂತ ಜನಹಿತವೇ ದೊಡ್ಡದು ಎಂಬ ನಿಲುವು ತಳೆದಾಗ ಮಾತ್ರ ಅಧಿಕಾರಕ್ಕೆ ಸಾರ್ಥಕತೆ ದೊರೆಯುತ್ತದೆ.

ಐತಿಹಾಸಿಕ ಪ್ರೇರಣೆ: ಅಬ್ರಹಾಂ ಲಿಂಕನ್ ಎಂಬ ಮಾದರಿ

ಪ್ರಜಾಪ್ರಭುತ್ವದ ಇತಿಹಾಸವನ್ನು ಚರ್ಚಿಸುವಾಗ ಅಬ್ರಹಾಂ ಲಿಂಕನ್ ಅವರ ಹೆಸರು ಅನಿವಾರ್ಯ. “ಜನರಿಗಾಗಿ, ಜನರಿಂದ, ಜನರಿಗೋಸ್ಕರ” ಎಂಬ ಅವರ ಸರಳ ವ್ಯಾಖ್ಯಾನವು ಜಗತ್ತಿನಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಭದ್ರ ಬುನಾದಿ ಹಾಕಿತು. ಒಬ್ಬ ಸಾಮಾನ್ಯ ಹಿನ್ನೆಲೆಯ ವ್ಯಕ್ತಿ ಅಮೆರಿಕದ ಅಧ್ಯಕ್ಷನಾಗಿ ಗುಲಾಮಗಿರಿಯ ವಿರುದ್ಧ ಹೋರಾಡಿದ್ದು, ಪ್ರಜಾಪ್ರಭುತ್ವದ ಗುಣಕ್ಕೆ (Flexibility) ಸಾಕ್ಷಿಯಾಗಿದೆ. ಲಿಂಕನ್ ಅವರ ಹೋರಾಟವು ಮಾನವೀಯತೆ ಮತ್ತು ಸಮಾನತೆಯನ್ನು ಪ್ರಜಾಪ್ರಭುತ್ವದ ಅನಿವಾರ್ಯ ಅಂಗವನ್ನಾಗಿಸಿತು, ಇದು ಇಂದಿಗೂ ಜಾಗತಿಕ ರಾಜಕೀಯಕ್ಕೆ ದಾರಿದೀಪವಾಗಿದೆ.

ಸಿನಿಮಾ, ಸಮಾಜ ಮತ್ತು ರಾಜಕೀಯ ನಾಯಕತ್ವದ ಮನ್ವಂತರ

ತಮಿಳುನಾಡಿನಂತಹ ರಾಜ್ಯಗಳಲ್ಲಿ ರಾಜಕೀಯವು ಯಾವಾಗಲೂ ಸಾಮಾಜಿಕ ನ್ಯಾಯದ ಪ್ರಯೋಗಶಾಲೆಯಾಗಿ ಕಾರ್ಯನಿರ್ವಹಿಸಿದೆ. ದ್ರಾವಿಡ ಚಳವಳಿಯ ಹಿನ್ನೆಲೆಯಲ್ಲಿ ಬೆಳೆದು ಬಂದ ಇಲ್ಲಿನ ರಾಜಕೀಯ ಸಂಸ್ಕೃತಿಯಲ್ಲಿ, ಸಿನಿಮಾ ರಂಗದ ವ್ಯಕ್ತಿಗಳನ್ನು ಕೇವಲ ನಟರನ್ನಾಗಿ ನೋಡದೆ, ತಮ್ಮ ಸಾಮಾಜಿಕ ಆಶೋತ್ತರಗಳನ್ನು ಈಡೇರಿಸುವ ‘ಪ್ರತಿನಿಧಿ’ಗಳಾಗಿ ಜನರು ಸ್ವೀಕರಿಸುತ್ತಾ ಬಂದಿದ್ದಾರೆ. ಇತ್ತೀಚಿನ ವಿದ್ಯಮಾನಗಳಲ್ಲಿ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಂತಹ ವ್ಯಕ್ತಿಗಳು ರಾಜಕೀಯ ಪ್ರವೇಶದ ಹಾದಿಯಲ್ಲಿರುವುದು ಈ ಪರಂಪರೆಯ ಮುಂದುವರಿಕೆಯಾಗಿದೆ. ಜನರು ಇಂತಹ ನಾಯಕರಲ್ಲಿ ಒಬ್ಬ ‘ಸ್ಟಾರ್’ಗಿಂತ ಹೆಚ್ಚಾಗಿ, ಶೋಷಿತರ ಪರವಾಗಿ ಧ್ವನಿ ಎತ್ತುವ ಮತ್ತು ಅಧಿಕಾರದ ವಿಕೇಂದ್ರೀಕರಣಕ್ಕೆ ಶ್ರಮಿಸುವ ನಾಯಕತ್ವವನ್ನು ನಿರೀಕ್ಷಿಸುತ್ತಾರೆ.

ಭವಿಷ್ಯದ ಆಶಯ

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಜಾಪ್ರಭುತ್ವವು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ರೂಪಿಸಿಕೊಳ್ಳುತ್ತಿದೆ. ಅಧಿಕಾರವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಾಧನವಾಗಬೇಕೇ ಹೊರತು, ಅದು ಕೇವಲ ಆಡಳಿತ ನಡೆಸುವ ಅಧಿಕಾರವಲ್ಲ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಧಿಕಾರಸ್ಥರ ನೈತಿಕ ಬದ್ಧತೆಯ ಮೂಲಕ ಮಾತ್ರ ಒಂದು ಸಮಾಜವು ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವದ ಯಶಸ್ಸನ್ನು ಸಂಭ್ರಮಿಸಲು ಸಾಧ್ಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending